Home / ಕವನ / ಕವಿತೆ / ಕೋಗಿಲೆಯ ಪಾಡು

ಕೋಗಿಲೆಯ ಪಾಡು

ನಿಶಿಯ ನೀರವ ಮೌನದೆದೆಯ ಏಕಾಂತವನು
ಭೇದಿಸುತ ಗಾಳಿಯಲಿ ತೂರಿಬಂತು
ಯಾವುದೋ ನೋವಿನಲಿ ತನ್ನ ಬಾಳಿನ ಹಣತೆ
ತೇಲಿಬಿಟ್ಟೊಂದು ಕಿರು ಕೋಗಿಲೆಯ ಕೊರಗು.

“ಕೋಗಿಲೆಯೆ ಇಂದೇಕೆ -ಈ ಋತು ವಸಂತದಲಿ
ನಿನ್ನಿನಿಯನೊಲವಿನೆದೆ ಮಡಿಲೊಳಿರದೆ
ಇಲ್ಲಿ ಏಕಾಂತದಲಿ ತುಂಬು ನೋವಿನೊಳೆದೆಯ
ಹರಿಸಿ ಹಾಯಿಸುತಿರುವೆ – ನನ್ನೊಲವ ನೋವೆ

ನಿನ್ನೊಲವ ಪರಿಯೇನು? – ನಾ ಕಳೆದುಕೊಂಡಿರುವ
ಬೆಳಕ ಕಾತರದಲ್ಲಿ ಹಾಡುತಿಂದು
ನನ್ನ ಹೃದಯದೊಳೇಕೆ ಬಿರುಗಾಳಿಯೆಬ್ಬಿಸಿಹೆ?
ಹೋಗು ದೂರಕೆ ಹುಚ್ಚೆ” ಎಂದೆ ನಾನಾಗ!

ಅಯ್ಯೋ! ನನ್ನೀ ಬಾಳ ನೋವ ಕೇಳುವರಿಲ್ಲ
ವಿಶ್ವದೊಳಗೆನಗೆ ವಿಧಿಯಿತ್ತುದಿನಿತೆ?
ನಾನೇಕೆ ಉಳಿದೆನೋ ನನ್ನವರ ಜತೆಯಲೇ
ನನ್ನನೂ ಕೊಂಡಿದ್ದರೆನಿತು ಸುಖವಿತ್ತು!

ಓ ವಿರಹಿ ಕವಿ, ನಿನ್ನ ನೋವಿನೇಕಾಕಿತನ
ನನಗೆ ಅರಿವಿದೆ; ನನ್ನ ನೋವ ಕೇಳು
ಬಾಳು ಎಂತಿಹುದೆಂದು, ಬಾಳು ಎಂತಹುದೆಂದು.
ಬಾಳ್ಗೆ ಬಾಳುವೆಯುಂಟೆ ಒಲವಿಲ್ಲದಂದು?

ಹಿಂದೊಂದು ದಿನ ಒಂದು ಕಾಗೆಗಳ ಹಿರಿ ತಂಡ
ಕೋಗಿಲೆಯ ಗೂಡೊಂದ ದಾಳಿಯಿಡಲು
ಗಂಡು ಕೋಗಿಲೆ ತನ್ನ ಹೆಂಡತಿಯ ಕಾಪಿಡಲು
ಹೋರಾಡಿ, ಹೋರಾಡಿ, ಜೀವ ಪಣವಿಡಲು,

ಹೆಣ್ಣು ಹೃದಯದ ನೋವು, ಕಾತರತೆ, ಭೀತಿಯಲಿ
ಕಾಗೆಗಳ ಕೂಗಿನಲಿ- ತಲ್ಲಣದಲಿ
ಹಿಮ್ಮೆಟ್ಟಿ ಹಾರುತಿರೆ-ಕೋರಿ ಕಾಗೆಯದೊಂದು
ಮೃತ್ಯುವೊಲು ಚಿಮ್ಮಿತದರೆದೆಯ ಕುಕ್ಕಿಡಲು.

ಹೂಂಕರಿಸಿ, ಹೇಂಕರಿಸಿ, ಕುಕ್ಕಿ ಜೀವವ ಹಿಂಡಿ,
ಕೋಗಿಲೆಯ ನೆತ್ತರಲಿ ತನ್ನ ಕೊಕ್ಕು
ಕೆಂಪಡರೆ, ಸಂತಸದಿ, ಕಾಗೆ ಗೂಡಿಗೆ ಬಂದು,
ಮೂಲೆಯೊಳಗಿದ್ದೊಂದು ಮೊಟ್ಟೆಯನ್ನು ಕಂಡು,

ಹಿಗ್ಗಿನಲಿ ಕೊಂಡೊಯ್ದು, ತನ್ನ ಗೂಡಿನಲದಕೆ
ಕಾವಿತ್ತು, ಮರಿಮಾಡಿ, ಗುಟುಕನಿತ್ತು,
ತನ್ನಂತೆಯೇ ಅದಕು ‘ಕಾ’ ಎನಲು ಕಲಿಸುವೆನು
ಎನುತ ಯತ್ನಿಸುತಿರಲು- ಮರಿಯ ದನಿ ಬೇರೆ!

ಜಗದ ಕರ್ಕಶವೆಲ್ಲ ಕೂಡಿ ಮಾಡಿಸಿದಂತೆ
ಕಾಗೆ ತನ್ನಯ ಕೊರಳ ಹೊರಳಿಸಿರಲು
ಕೋಗಿಲೆಯ ಮರಿ ಹಾಡೆ ಜಗದಿ ಜೀವದ ತಾರೆ
ಪುಲಕಿಸಿತು. ಅರಳಿತ್ತು ಋತು ಕಾಮಬಣ್ಣ!

ನನ್ನಂತೆಯೇ ಹಾಡು ಎನುತ ಎಳ ಕೋಗಿಲೆಯ
ಕತ್ತ ನುಲಿಚಿತು ಕಾಗೆ ಈರ್ಷ್ಯೆಯಲ್ಲಿ
ಕಾಗೆಯೊಲು ಕೂಗಲೆಂದೆನಿತು ಯತ್ನಿಸಲೇನು!
ಮಧುರ ಗೀತವೆ ಮರಿಯ ಕೂರಳ ದನಿಯೊಳಗು!

ಕಾಗೆಗಳು ದ್ವೇಷದಲ್ಲಿ ಗುಂಪುಗೂಡುತ ಎಳೆಯ
ಕೋಗಿಲೆಯ ಕತ್ತಿನಲಿ ಕೊಕ್ಕನಿಟ್ಟು
ಚುಚ್ಚಿದುವು, ತಮ್ಮಂತೆ ಕಂಠ ಒಡಕಾದೊಡದು
ಹಾಡುವುದ ನಿಲ್ಲಿಪುದು, ಆಗ ಸರಿಯೆಂದು!

ಈ ನೋವ ಮುಗಿಸಲೆಂದೆಂದಿರುಳು ಕೋಗಿಲೆಯು
ಹಾರಿತ್ತು ದೂರಕ್ಕೆ ಗೂಡಿನಿಂದ;
ಇಂದದಕೆ ನೆಲೆಯಿಲ್ಲ- ಜಗದಲ್ಲಿ ಒಲವಿಲ್ಲ,
ಅದರ ಹಾಡಿನ ಹುರುಳು ಬರಿಯ ನೋವಾಯ್ತು!

ಎನುತ ಹಾಡಿತು ಹಕ್ಕಿ ತನ್ನ ಬಾಳಿನ ಹಾಡು
ಕೇಳಲಿಲ್ಲಾನದರ ಉಲಿಯ ಮತ್ತೆ,
ಎಲ್ಲಿ ಹೋಯಿತೊ ಏನೊ! ಬಾಳನೇ ಬಿಟ್ಟಿತೋ?
ಕೋಗಿಲೆಗೆ ಇರಲಿಲ್ಲವೇನೋ ನೆಲೆಯಿಲ್ಲಿ!

ಇಂತ ಹಾಡಲು ಬೇಕು, ಅಂತ ನುಡಿಯಲು ಬೇಕು;
ಎಂತಾದರೂ ಸರಿಯೇ ನಮ್ಮ ಬಗೆಯ
ಅನುಸರಿಸಿ ಕವಿಯಾಗು, ಇಲ್ಲದೊಡೆ ನೆಲೆಯಿಲ್ಲ!
ನಿನ್ನ ಹಾಡನು ಕೇಳಿ ಮೆಚ್ಚುವವರಿಲ್ಲ!

ಎನುತ ಕವಿಗಳಿಗೆಲ್ಲ ಹಸಿವ ಬಂಧನದಲ್ಲಿ
ಹಿಡಿದು, ಹಿಡಿತದಿ ಹಿಗ್ಗಿ, ತಗ್ಗಿ ದುಡಿಸಿ,
ದೂರಿಡುವ ಕನ್ನಡದ ನಾಡ ಕವಿಗಳ ಪಾಡೆ
ಕೋಗಿಲೆಯ ಪಾಡೇನೊ ಎನಿಸಿತೆನಗೆ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...