ದನಿಗಳು

ನಡುರಾತ್ರಿಯ ನಾಭಿಯಲ್ಲಿ
ನೆಲ ಜಲ ಮಾತಾಡಿತ ?
ಹಗಲಿನ ಹದ್ದುಗಳು ಹಾರಿ
ಹಮ್ಮಿಗೆ ಗದ್ಗದ ಮೂಡಿ
ತರ್ಕ ಚಿತೆಗೆ ಬಿದ್ದಿತ ?
ತಳದ ಹುತ್ತ ಬಾಯಿ ತೆರೆದು
ನಿದ್ದೆಯಿದ್ದ ನಾಗರಾಗ
ಮೂಕಸನ್ನೆ ತಾಕಲಾಡಿ ಎಚ್ಚರಕ್ಕೆ ಚೆಲ್ಲಿತ ?
ಬಾನಿನ ಮಹೇಂದ್ರಕಾಯ
ಅಸಂಖ್ಯ ನೇತ್ರವ ಬಿಚ್ಚಿ
ಉಳುಕಿದ ಮಣ್ಣೆದೆಯನ್ನು ಚಂದ್ರಹಸ್ತ ಸವರಿತ ?

ಬಂದಿರೇ, ಆಹ!
ಬನ್ನಿರೇ
ಏಕಾಂತಕ್ಕೆಳೆವ ಒಗಟುಗಳೇ
ಬಗೆಹರಿಯದ ಜಿಗಟುಗಳೇ
ಯಾಕೆ ಹೀಗೆ ಕಾಡುತ್ತೀರಿ ?
ಮೋಡದಲ್ಲಿ ನಿಧಾನ ಮೂಡುವ ಅರ್ಥಾತೀತ ಗೂಢಗಳೆ
ಹೊಳೆ ಬೆಟ್ಟ ಬಿಕ್ಕಿದ ಅನುಕ್ತ ಗಾಢಗಳೆ
ನೇಗಿಲು ಹೂಡುತ್ತೀರಿ ಯಾಕೆ ಎದೆಗೆ ನಿಷ್ಕರುಣಿಗಳೆ?
ನಿದ್ದೆ ಹಬ್ಬದ ನೋವ ಬೆಳೆಯುತ್ತೀರಿ ಯಾಕೆ ?
ತಬ್ಬಿದ ಮಣ್ಣಿನ ಸುಖಕ್ಕೆ ಮುಳಿಯುತ್ತೀರಿ ಯಾಕೆ ?
ನಿಂತ ಮುಖ ನಿಂತಂತೆ ಚಲಿಸುವ ನೀವು
ದಯಾಕ್ಷಿ ಭಯಗಳೆ
ರಾಕ್ಷಸ ನಯಗಳೆ
ಲಕ್ಷಣಗೆರೆ ದಾಟಿಸಬರುವಿರೆ ?
ವ್ಯವಹಾರ ಕೊಯಿಲಾಗುವ ಮುನ್ನ
ಮಳೆ ನಷ್ಟದಲ್ಲಿ ಹುಟ್ಟುವ
ಹೆಸರಿಲ್ಲದ ಇಷ್ಟಗಳೆ
ಯಾಕೆ ಕಾಡುತ್ತೀರಿ ಹೀಗೆ ?
ಕಾಡಿ, ಮುಖ ದೀನಮಾಡಿ
ಬೇಡುವ ಧಾಟಿಯಲ್ಲಿ ನೀಡಿಬಿಡುತ್ತೀರಿ ಹೇಗೆ ?

ಉರಿವ ಹಗಲ ಆರಿಸಿದ
ಇರುಳ ಪನ್ನೀರೇ ಘನಿಸಿತೆ ?
ಕಿರುತಿಂಗಳ ಕೊರಗುಬೆಳಕಲ್ಲಿ ಮುಗಿಲು
ಮುಡಿಗಡ್ಡದ ಮುನಿಗಳ ರೂಪಿಸಿತೆ ?
ಮುನಿಗಳೆ!
ಪಾತಾಳ ಜಯಿಸಿದ ದನಿಗಳೆ
ನಿಮ್ಮ ಕೈಕಾಲಿಗೆ ನೀರೆರೆಯಲಿ ಹೇಗೆ
ಕಲಿತ ವೇದಾಂತವೆಲ್ಲ ಬಚ್ಚಲ ಕೊಚ್ಚೆ;
ನಿಮಗೆ ಏನ ತೊಡಿಸಲಿ ಹೇಗೆ
ನಕ್ಷತ್ರಗಂಗೆ ಉದ್ದಸಾಲದ ಕಚ್ಚೆ;
ಕ್ಷಣಸತ್ಯದ ಹೆಣ ಮೆಟ್ಟಿ ಬರುವ
ಅಮೂರ್ತ ಗುರಿಗಳೆ
ಕಡಲೊಡಲಿಗೆ ತಣ್ಣಗೆ ಹರಿದು
ಗಿರಿನೆತ್ತಿ ಕಾರುವ ವಿರೋಧದುರಿಗಳೆ
ಕೋಟ್ಯಂತರ ಇಳೆಕಣಗಳ ಗುಡಿಸುವ ಬರಲುಗಳೆ
ಮಣ್ಣನಾಲಿಗೆಯಿಂದ ಹಿಡಿಯಲಿ ಹೇಗೆ ?
ನಿಮ್ಮನ್ನು ಹಿಡಿಯದ ನುಡಿ
ಬರಿ ನಾದದ ಬೇಗೆ.

ಗೋಳದ ಗುರುತ್ವದಾಚೆಗೆ
ಗಿರಿತೂಕವೆ ಜಳ್ಳು,
ಬೆಳಕಿನ ವೇಗಕ್ಕೆಳೆದರೆ
ಕಾಯದ ರೂಪವೆ ಸುಳ್ಳು,
ಬಣ್ಣಗಳೋ ಕಣ್ಣ ಭ್ರಮೆ
ಕಣ್ಣೋ ಅದಕ್ಕೆ ನಲಿಯುವ ಬೆಳ್ಳು,
ಇಲ್ಲಿಯ ಹಗಲು ಎಲ್ಲಿಗೊ
ಇರುಳೂ ಅಲ್ಲವಾಗಿ
ಈವರೆಗೆ ಕಂಡದ್ದೆಲ್ಲ
ಕಾಣದ್ದರ ನೆರಳು.

ಎಂಬ ಬಗೆ ಕವಿಸುವ
ಕವಿಸಿ ಕುದಿಸುವ
ಕುದಿಸಿ ಉದಿಸುವ ಧಗ ಧಗ ಚಂದ್ರರೆ
ಸತ್ಯದ ಮೈಯಲ್ಲಿ ಸುಳಿಯುವ
ಸುಳ್ಳಿನ ಚಹರೆ ನೀಡಿ ಯಾಕೆ
ಶಂಕೆಯಲ್ಲಿ ಅದ್ದುತ್ತೀರಿ ?
ಬೆಳಕು ಹರಿಯಲು ಕರಗುವ
ಅಸ್ಪಷ್ಟ ಚೀರುಗಳೆ
ಅಯ್ಯೋ!
ಯಾಕೆ ಹಾಗೆ ತೀರುತ್ತೀರಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಘಾಟಿ ಹೆಂಗಸು
Next post ಕಳೆದವು ಹತ್ತು ದಿನ

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

cheap jordans|wholesale air max|wholesale jordans|wholesale jewelry|wholesale jerseys