ಒಂದು ಹಾಡು ಒಂದು ಕಥೆ

ಒಂದೂರಿನಲ್ಲಿ ಒಬ್ಬ ಗೃಹಿಣಿಯಿದ್ದಳು. ಆಕೆಗೆ ಒಂದು ಕಥೆ ಗೊತ್ತಿತ್ತು.  ಒಂದು ಹಾಡು ಬರುತ್ತಿತ್ತು. ಆದರೆ ಅವಳು ತನಗೆ ಗೊತ್ತಿದ್ದ ಕಥೆಯನ್ನು
ಯಾರಮುಂದೆಯೂ ಹೇಳಿದವಳಲ್ಲ. ತಾನು ಕಲಿತ ಹಾಡನ್ನು ಯಾರಮುಂದೆಯೂ ಹಾಡಿದವಳಲ್ಲ.

ಆಕೆಯ ಮನಸ್ಸಿನಲ್ಲಿ ಸೆರೆಸಿಕ್ಕಿ ಆ ಕಥೆ ಆ ಹಾಡು ಅಲ್ಲಿಂದ ಕಾಲ್ತೆಗೆದು ಓಡಿ ಹೋಗಬೇಕೆಂದು ಮಾಡಿದವು. ಅಲ್ಲಿ ನಿಲ್ಲುವುದೇ ಬೇಡವಾಗಿತ್ತು ಅವುಗಳಿಗೆ. ಯಾವ ಬಗೆಯಿಂದ ಹೊರಬೀಳಬೇಕು – ಎಂದು ಯೋಚಿಸಿ ಕಡೆಗೆ ಕಥೆಯು ಹೊರಬಿದ್ದು ಅಂಗಳದಲ್ಲಿ ಎರಡು ಬೂಟುಗಳಾಗಿ ಕುಳಿತಿತು. ಹಾಡು ಒಂದು ಕೋಟು ಆಗಿ ಗೂಟಿಗೆ ನೇತು ಬಿದ್ದಿತು.

ಆ ಗೃಹಿಣಿಯ ಪತಿಯು ಮನೆಗೆ ಬಂದಾಗ ಅಂಗಳದೊಳಗಿನ ಬೂಟುಗಳನ್ನೂ ಗೂಟಕ್ಕೆ ತೂಗಬಿದ್ದ ಕೋಟನ್ನೂ ಕಂಡು ಹೆಂಡತಿಗೆ ಕೇಳಿದನು – “ಯಾರು ಬಂದಿದ್ದಾರೆ ಮನೆಗೆ?”

“ಯಾರೂ ಬಂದಿಲ್ಲವಲ್ಲ!” ಎಂದಳು ಹೆಂಡತಿ.

“ಹಾಗಾದರೆ ಈ ಬೂಟು ಈ ಕೋಟು ಯಾರವು?” ಪತಿಯ ಪ್ರಶ್ನೆ.

“ನನಗೂ ತಿಳಿಯದು” ಎಂದು ಸತಿ ಹೇಳಿದ ಉತ್ತರದಿಂದ ಗಂಡನಿಗೆ ಸಮಾಧಾನವೆನಿಸಲಿಲ್ಲ. ಸಂಶಯವೇ ಹುಟ್ಟಿಕೊಂಡಿತು. ಅದರಿಂದ ಅವರ ಮಾತುಕತೆಗಳಲ್ಲಿ ವಿರಸವು ಮೊಳೆಯಿತು. ವಿರಸವು ಕದನವಾಗಿ ಪರಿಣಮಿಸಿತು.  ಗಂಡನು ಹೆಂಡತಿಯ ಮೇಲೆ ಮುನಿಸಾಗಿ, ತನ್ನ ಕಂಬಳಿಯನ್ನು ತೆಗೆದುಕೊಂಡವನೇ ಹೊರಬಿದ್ದು ಹನುಮಂತ ದೇವರ ಗುಡಿಗೆ ಮಲಗಲು ಹೋದನು.

ಗೃಹಿಣಿಗೇನೂ ತಿಳಿಯಲಿಲ್ಲ. ಮನೆಯಲ್ಲಿ ಒಬ್ಬಳೇ ಅಡ್ಡಾದಳು. ನಿದ್ರೆಯೇ ಬರಲೊಲ್ಲದು. ಅದೇ ಚಿಂತೆ; ಅದೇ ವಿಚಾರ, ತಿರುತಿರುಗಿ ಬಂದು ನಿಲ್ಲುವದು. ಆ ಬೂಟು ಆ ಕೋಟು ಯಾರವು ? ಬಹಳ ಹೊತ್ತಿನ ಮೇಲೆ ಬೇಸತ್ತು ದೀಪವನ್ನಾರಿಸಿ ಮಲಗಿಕೊಂಡಳು.

ಆ ಊರೊಳಗಿನ ಹಣತಿಗಳೆಲ್ಲ ರಾತ್ರಿಯನ್ನು ಕಳೆಯಲು ಹನುಮಂತ ದೇವರ ಗುಡಿಗೆ ತೆರಳುವುದು ವಾಡಿಕೆಯಾಗಿತ್ತು. ಎಲ್ಲ ಮನೆಗಳಿಂದ ಹಣತಿಗಳು ಬಂದು ಬಂದು ನೆರೆದವು. ಬಹಳ ತಡಮಾಡಿ ಒಂದು ಹಣತಿ ಬಂದಿತು.  ಅದಕ್ಕೆ ಉಳಿದ ಹಣತಿಗಳೆಲ್ಲ ಕೇಳಿದವು – “ಇಷ್ಟೇಕೆ ತಡ ಬರಲಿಕ್ಕೆ ?”

“ನಮ್ಮ ಮನೆಯಲ್ಲಿ ಗಂಡಹೆಂಡರು ಜಗಳಾಡುತ್ತ ಕುಳಿತಿದ್ದರಿಂದ ರಾತ್ರಿಯಾಯಿತು” ಎಂದಿತು ಆ ಹಣತಿ.

“ಏಕೆ ಜಗಳಾಡಿದರು ಆ ಗಂಡಹೆಂಡಿರು ?”

“ಗಂಡನಿಲ್ಲದಾಗ ಅವರ ಮನೆಯಂಗಳಕ್ಕೆ ಜೋಡು ಬೂಟುಗಳು ಪಡಸಾಲೆಯ ಗೂಟಿಗೆ ಒಂದು ಕೋಟು ಬಂದಿದ್ದವು. ಅವು ಯಾರವು ಎಂದು ಗಂಡ ಕೇಳಿದರೆ, ನನಗೆ ಗೊತ್ತಿಲ್ಲವೆಂದು ಹೆಂಡತಿ ಹೇಳಿದಳು. ಅದಕ್ಕಾಗಿ ಜಗಳಾಡಿದರು” ಎಂದಿತು ಹಣತಿ.

“ಹಾಗಾದರೆ ಆ ಬೂಟು ಕೋಟು ಎಲ್ಲಿಂದ ಬಂದವು ?”

“ನಮ್ಮ ಮನೆಯೊಡತಿಗೆ ಒಂದು ಕಥೆ, ಒಂದು ಹಾಡು ಗೊತ್ತಿದೆ. ಎಷ್ಟು ಚಾಲುವರೆದರೂ ತಾನು ಕಲಿತ ಕಥೆ ಹೇಳಿದವಳಲ್ಲ.  ತನ್ನ ಹಾಡು ಅಂದು ತೋರಿಸಿದವಳಲ್ಲ. ಸೆರೆಸಿಕ್ಕ ಆ ಕಥೆ ಹಾಡುಗಳು ಬೂಟುಕೋಟುಗಳಾಗಿ ಹೊರಬಿದ್ದಿವೆ. ಅದು ಆಕೆಗೆ ಗೊತ್ತಾಗಿಲ್ಲ.”

ಆ ಹಣತಿಯ ವಿವರಣೆಯನ್ನೆಲ್ಲ ಕಂಬಳಿ ಮುಸುಕಿನಲ್ಲಿಯೇ ಕೇಳಿದ ಆ ಗಂಡನ ಸಂಶಯವೆಲ್ಲ ನಿವಾರಣೆ ಆಯ್ತು.  ನಿಶ್ಚಿಂತೆಯಿಂದ ಮಲಗಿ ನಿದ್ದೆಮಾಡಿ ಮುಂಜಾನೆ ಮನೆಗೆ ಹೋದನು. ಕಥೆ ಹಾಡಿನ ಸುದ್ದಿ ತೆಗೆದು ಹೆಂಡತಿಗೆ ಮಾತಾಡಿಸಿ ನೋಡಿದನು. ಆದರೆ ಆಕೆಗೆ ಬರುತ್ತಿದ್ದ ಕಥೆ ಹಾಡು ಎರಡೂ ಮರೆತುಹೋದವೆಂದು ತಿಳಿಯಿತು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತುಂತುರು ಮಳೆಯ
Next post ಅಂಬಾರ್ದಲಾವಿಗೆ ಶಾಂಭವಿ

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

cheap jordans|wholesale air max|wholesale jordans|wholesale jewelry|wholesale jerseys