ಧ್ವಜ

ಚಿತ್ರ: ಪಿಕ್ಸಾಬೇ
ಚಿತ್ರ: ಪಿಕ್ಸಾಬೇ

ಆ ಊರಿನಲ್ಲಿ ಅನೇಕ ಧರ್ಮಗಳಿಗೆ ಸೇರಿದ ಜನರಿದ್ದರು. ಅವರೆಲ್ಲರೂ ಮನುಷ್ಯರಾಗಿದ್ದರು. ಧರ್ಮದ ಆಚರಣೆಗಳನ್ನು ಶ್ರದ್ಧೆಯಿಂದಲೇ ಪಾಲಿಸುತ್ತಿದ್ದರು. ಅವೆಲ್ಲ ಅವರ ಮನೆಯ ಪರಿಧಿಗೆ ಸೀಮಿತಗೊಂಡಿದ್ದವು. ಹೊರಗೆ ಅವರೆಲ್ಲರೂ ಪರಸ್ಪರ ಪ್ರೀತಿಯಿಂದ ವ್ಯವಹರಿಸುತ್ತಿದ್ದರು. ಅವರ ಸಂಬಂಧ ತೀರ ಮಾನವೀಯವಾಗಿತ್ತು. ಒಂದೇ ಊರಿನವರು ಎಂಬ ಅಭಿಮಾನವಿತ್ತು. ಊರಿನ ಯಾವುದೇ ಕೆಲಸಗಳಲ್ಲಿ ಪ್ರತಿಯೊಬ್ಬರು ಪ್ರೀತಿ, ವಿಶ್ವಾಸದಿಂದ ಪಾಲ್ಗೊಳ್ಳುವರು. ಒಬ್ಬರಿಗೊಬ್ಬರು ಕಷ್ಟ-ಸುಖಗಳನ್ನು ಹಂಚಿಕೊಳ್ಳುತ್ತಿದ್ದರು.

ಶಾಂತಿ, ನೆಮ್ಮದಿಯ ಆ ಊರಿನ ದುರಾದೃಷ್ಟವೊ ಎಂಬಂತೆ ಒಂದಿನ ಅಲ್ಲಿ ಯಾರೋ ಬಂದು ಕೇಸರಿ ಧ್ವಜ ನೆಟ್ಟರು. ಸ್ವಲ್ಪ ದಿನಕ್ಕೆ ಹಸಿರು ಧ್ವಜ ಹಾರಾಡಿತು. ಮತ್ತೆ ಎಂಟು ದಿನಕ್ಕೆ ಬಿಳಿ ಧ್ವಜ ಕಂಡಿತು. ಜನರು ಧ್ವಜಗಳನ್ನು ಅಚ್ಚರಿಯಿಂದ ನೋಡಿದರೆ ಹೊರತು ಅವುಗಳ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಆದರೆ ಧ್ವಜ ನೆಟ್ಟವರು ಸುಮ್ಮನೆ ಕೂಡಲಿಲ್ಲ. ಹಗಲೆಂಬೊ ಹಗಲು, ರಾತ್ರಿಯೊಂಬೊ ರಾತ್ರಿ ಊರಿನ ಮನೆ, ಮಠ, ಮಂದಿರ, ಮಸೀದಿ, ಚರ್ಚು, ಬಸದಿ, ವಿಹಾರ, ಮರ, ಗೋಪುರ, ಅಂಗಡಿ, ಗಲ್ಲಿಗಲ್ಲಿ ರಸ್ತೆಗಳ ಚೌಕುಗಳಲ್ಲಿ ಹಸಿರು, ಕೇಸರಿ, ಬಿಳಿ ಧ್ವಜಗಳು ಪೈಪೋಟಿಯಲ್ಲಿ ಹಾರತೊಡಗಿದವು.

ಸಾವಕಾಶವಾಗಿ ಅವುಗಳ ಹೆಸರಲ್ಲಿ ವಾದ-ವಿವಾದ ಶುರುಗೊಂಡವು. ಅಂಥದ್ದನ್ನೇ ತಮ್ಮ ಜೀವನಕ್ಕೆ ಆಧಾರ ಮಾಡಿಕೊಂಡ ದರಿದ್ರ ಜನ ಸಮಸ್ಯೆಗಳನ್ನು ಹುಟ್ಟುಹಾಕಿ ಕೋಮುಕೋಮುಗಳ ನಡುವೆ ಬಿರುಕು ಮೂಡಿಸಿದರು. ಕಾಲು ಕೆದರಿ ಜಗಳ ತೆಗೆಯುವಂತೆ ಉತ್ಸವ, ಮೆರವಣಿಗೆ, ಜುಲೂಸು ಹೊರಡಿಸಿ ಪರಸ್ಪರ ಜಿಂದಾಬಾದ್, ಮುರ್ದಾಬಾದ್ ಎಂದು ಗಂಟಲು ಹರಿದುಕೊಳ್ಳುತ್ತ ಕಿಡಿಗೇಡಿಗಳು ಕಲ್ಲು ಎಸೆದಾಡಿದರು. ಮಂದಿರದಲ್ಲಿ ಆಕಳ ಮಾಂಸ, ಮಸೀದಿಯಲ್ಲಿ ಹಂದಿಯ ಮಾಂಸ ಬಿದ್ದಿರುವುದೆಂದು ಗುಲ್ಲು ಎಬ್ಬಿಸಿದರು. ಗೋಡೆಗಳ ಮೇಲೆ ರಕ್ತ ಕುದಿಸುವ, ಕಿಚ್ಚು ಹಬ್ಬಿಸುವ ಬರಹಗಳನ್ನು ಬರೆಸಿದರು. ಮಾರಕಾಸ್ತ್ರಗಳು ಜನರ ಕೈಗಳಿಗೆ ಬಂದವು. ಊರೆಂಬೊ ಊರು ರಣರಂಗವಾಗುತ್ತಿದ್ದಂತೆ ಹಿಂಡುಗಟ್ಟಲೇ ಪೋಲಿಸರು ವ್ಯಾನ್ ಇಳಿದರು. ಕರ್ಫ್ಯೂ ಸಾರಿದರು. ಓಡಾಡುವ ಜನರಿಗೆ ಲಾಠಿಯ ರುಚಿ ತೋರಿಸಿದರು. ಗಾಳಿಯಲ್ಲಿ ಗುಂಡು ಹಾರಿಸಿದರು.

ಜನಜೀವನ ಅಸ್ತವ್ಯಸ್ತಗೊಮಡಿತು, ತಮ್ಮ ಊರು ಹೀಗೇಕೆ ರಾಕ್ಷಸವಾಯಿತು? ಮನೆಯೊಳಗೆ ಕುಳಿತು ತಹತಹಿಸಿದರು ಪ್ರಜ್ಞಾವಂತ ಜನ. ಅವರಿಗೆ ಕೇಸರಿ, ಹಸಿರು, ಬಿಳಿಯ ಧ್ವಜಗಳು ನೆನಪಾದವು.

ನಾಲ್ಕಾರು ದಿನಗಳ ಬಳಿಕ ಕರ್ಫ್ಯೂ ಸಡಿಲುಗೊಂಡಿತು.

ಒಬ್ಬೊಬ್ಬರಾಗಿ ಜನ ಹೊರಗೆ ಬಂದರು.

ಸ್ಮಶಾನದಂತೆ ಗೋಚರಿಸುತ್ತಿದ್ದ ಊರನ್ನು ನೋಡಲಾಗಲಿಲ್ಲ ಅವರಿಗೆ.

ಎತ್ತರೆತ್ತರವಾಗಿ ಹಾರಾಡುತ್ತಿರುವ ಧ್ವಜಗಳು ಅನಾಥಪ್ರಜ್ಞೆಯ ಸಂಕೇತದಂತೆ, ಜನರ ಬದುಕನ್ನು ನಾಶ ಮಾಡುವ ಪ್ರತೀಕದಂತೆ ಕಂಡವು.

ಮೊದಲಿನಂತೆ ಸುಮ್ಮನೆ ಕೂಡಲಿಲ್ಲ ಜನ. ಗುಂಪುಗುಂಪಾಗಿ ನೆರೆದು ಹಾರುತ್ತಿರುವ ಧ್ವಜಗಳನ್ನು ನಿರ್ಭಾವುಕರಾಗಿ ಇಳಿಸಿದರು. “ನಮಗೆ ಬೇಕಾಗಿದ್ದು ಬರಿ ಕೇಸರಿ ಧ್ವಜವಲ್ಲ, ಹಸಿರು, ಬಿಳಿ ಧ್ವಜಗಳಲ್ಲ. ಈ ಮೂರು ಬಣ್ಣಗಳ ಸಂಗಮದ ನಡುವೆ ಅಶೋಕ ಚಕ್ರದ ರಾಷ್ಟ್ರಧ್ವಜ ಬೇಕು. ಅದು ಯಾವಾಗಲೂ ಅರಳಿ ಕೊಂಡಿರಬೆಕು. ಮುಗಿಲೆತ್ತರಕ್ಕೆ ಹಾರಬೇಕು. ನಮ್ಮ ಅಭಿಮಾನದ, ಪ್ರೀತಿ, ಸಂತೋಷದ ಸಂದೇಶ ಸಾರಬೇಕು” ಎಂದು ಒಕ್ಕೊರಲಲ್ಲಿ ಉಲಿದರು.

“ಭಾರತ ಮಾತಾಕಿ ಜೈ” “ಮೇರಾ ಭಾರತ್ ಮಹಾನ್” ಅವರ ಜಯಘೋಷ ಆಕಾಶದಲ್ಲಿ ಮೊಳಗಿತ್ತು. ಧ್ವಜ ನೆಟ್ಟವರು ಅಲ್ಲಿಂದ ಕಿಮಿಕ್ ಎನ್ನದೆ ಕಾಲ್ದೆಗೆದಿದ್ದರು.
*****

 

 

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...