Home / ಕಥೆ / ಕಿರು ಕಥೆ / ದೇವರಿಗೆ ಬಿಟ್ಟಿದ್ದು

ದೇವರಿಗೆ ಬಿಟ್ಟಿದ್ದು

ಬಿರು ಬೇಸಿಗೆ ಒಂದು ಮಧ್ಯಾಹ್ನ ಪಾಟೀಲ್ ಸರ್‍ ಭೇಟಿಯಾದರು. ಹೊರ ಜಿಲ್ಲೆಯ ಹಳ್ಳಿಯ ಶಾಲೆಯೊಂದರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕವಾದ ನಂತರ ಅವರು ಕಂಡದ್ದು ಅದೇ ಮೊದಲು. ಉಭಯಕುಶಲೋಪರಿ ತರುವಾಯ ಹೊಟೇಲಿಗೆ ಹೋಗಿ ಕಾಫಿಗೆ ಆರ್ಡರ್‍ ಕೊಟ್ಟು ಪಾಟೀಲರನ್ನು ಕೇಳಿದೆ:

“ನಿಮ್ಮ ಶಿಕ್ಷಕ ವೃತಿ ಹೇಗೆ ನಡೆದಿದೆ?”
“ಬಹಳ ಆರಾಮಾಗಿದೆ” ಎಂದರು ಪಾಟೀಲ ಸರ್‍.
“ನಿಮ್ಮ ಶಾಲೆಯಲ್ಲಿ ಎಷ್ಟು ತರಗತಿಗಳಿವೆ?”
“ಒಂದರಿಂದ ಐದು”
“ಸ್ಟಾಫ್?”
“ಫುಲ್ ಇದೆ”.
“ಕಟ್ಟಡ?”
“ಬಾಗಿಲು, ಕಿಟಕಿ, ಸೂರಿನ ಹಂಚು ಪೂರ್ತಿ ಇಲ್ಲದಿದ್ದರೂ ಸ್ವಂತ ಕಟ್ಟಡ ಇದೆ.”
“ಮಕ್ಕಳ ಸಂಖ್ಯೆ?”
“ಸಾಕಷ್ಟಿದೆ.”
“ದಾಖಲಾತಿ…. ಹಾಜರಾತಿ?”
“ಹಾಜರಾತಿಯದೇ ಸಮಸ್ಯೆ.”
“ಉಚಿತ ಪುಸ್ತಕ, ಬಟ್ಟೆ, ಬಿಸಿಯೂಟ ವ್ಯವಸ್ಥೆ ಇಲ್ಲವೆ?”
“ಎಲ್ಲ ಅನುಕೂಲವೂ ಇದೆ.”
“ಹಾಗಾದರೆ ಮಕ್ಕಳ ಹಾಜರಾತಿ ಕಮ್ಮಿ ಏಕೆ?”
“ಊಟದ ವೇಳೆಯಲ್ಲಿ ಹಾಜರಾತಿ ಹೆಚ್ಚಿಗಿರುವುದು.”
“ಮಕ್ಕಳ ಕಲಿಕೆಯ ಮಟ್ಟ.”
“ಆರಕ್ಕೇರದು ಮೂರಕ್ಕಿಳಿಯದು.”
“ಈ ಬಗ್ಗೆ ಸಹೇಬರು ಗಮನ ಹರಿಸುವುದಿಲ್ಲವೆ?”
“ಮಕ್ಕಳು ಶಾಲೆಗೆ ಬರಲಿ ಬಿಡಲಿ ವಾರ್ಷಿಕ ಪರೀಕ್ಷೆಯಲ್ಲಿ ಅವರೆಲ್ಲ ಪಾಸು.”
“ಓದು – ಬರಹ ಇಲ್ಲದೆ ಪಾಸಾಗುತ್ತಾರೆಯೇ ಅವರು?”
“ಮಕ್ಕಳಿಗೆ ಪರೀಕ್ಷೆಯ ಭಯ ಇರಬಾರದು. ಅವರನ್ನು ನಪಾಸೂ ಮಾಡಬಾರದು.”
“ಅವರ ಪ್ರಗತಿಯ ಬಗ್ಗೆ ಕಾಳಜಿ ವಹಿಸುವುದಿಲ್ಲವೆ ನೀವು?”
“ಹೆಡ್‌ಮಾಸ್ಟರ್‍ ಆ ಕಾಗದ ಈ ಕಾಗದ ಎಂದು ಆಫೀಸಿಗೆ ಅಲೆದಾಡುವರು. ನಮ್ಮಲ್ಲಿ ಕೆಲವರು ತರಬೇತಿಗೆ ಹೋಗುವರು. ಕೆಲವರಿಗೆ ಗಣತಿ ಕಾರ್ಯ ಅದು-ಇದು ಎಂದಿರುವುದು ಮಕ್ಕಳಿಗೆ ಕಲಿಸಲು ಪುರುಸೊತ್ತೇ ಸಿಗುವುದಿಲ್ಲ”
“ಸಾಹೇಬರು ನಿಮ್ಮ ಶಾಲೆಯ ತಪಾಸಣೆಗೆ ಬರುವುದಿಲ್ಲವೆ?”
“ಹಿರಿಯ ಸಾಹೇಬರು ವರ್ಷಕ್ಕೊಮ್ಮೆ ಬರುತ್ತಾರೆ, ಕಿರಿಯ ಸಾಹೇಬರು ಬೇಕೆನಿಸಿದಾಗ ದಿಢೀರನೆ ಪ್ರತ್ಯಕ್ಷರಾಗುತ್ತಾರೆ.”
“ಅವರಿಗೆ ಸಮಸ್ಯೆ ಅರ್ಥವಾಗುವುದಿಲ್ಲವೆ?”
“ತಮ್ಮ ವೈಯಕ್ತಿಕ ಬೇಡಿಕೆಗಳನ್ನು ಪೂರೈಸಿಕೊಂಡು ಹೋಗುವ ಅವರು ಕಲಿಸುವುದರ ಬಗ್ಗೆ ಚಕಾರವೆತ್ತುವುದಿಲ್ಲ. ವಿಜಿಟ್ ಪುಸ್ತಕದಲ್ಲಿ ಎಲ್ಲವೂ ಉತ್ತಮವಾಗಿರುತ್ತದೆ. ನಮ್ಮ ಶಾಲೆ ಬಹಳ ನೆಮ್ಮದಿಯಾಗಿದೆ.”
“ಊರಿನವರು ಲಕ್ಷ್ಯ ಕೊಡುವುದಿಲ್ಲವೆ?”
“ನಮ್ಮದು ಸರಕಾರಿ ಶಾಲೆ, ಅದರ ಮೇಲೆ ಅವರ ಹಕ್ಕು ಇಲ್ಲ.”
“ಇದೆಲ್ಲ ವಿಚಿತ್ರವಲ್ಲವೇ?”
“ಅದೆಲ್ಲ ಕವರಿನ ಮಹಿಮೆ!”
“ಕವರು … ಏನದು?”
“ಸಾಹೇಬರಿಗೆ ನಾವು ಕವರು ಮುಟ್ಟಿಸುತ್ತೇವೆ.”
“ಏಕೆ?”
“ಕವರಿನಲ್ಲಿ ನಮ್ಮ ದುಡ್ಡಿರುವುದು.”
“ಸಾಹೇಬರಿಗೆ ಹಣ ಏಕೆ? ಅವರಿಗೆ ಪಗಾರ ಇರುವುದಿಲ್ಲವೆ?”
“ಪಗಾರ ಅವರ ಸಂಸಾರಕ್ಕೆ ನಮ್ಮ ದುಡ್ಡು ಅವರ ಇತರೆ ಖರ್ಚಿಗೆ.”
‘ಇದೆಂಥ ವ್ಯವಸ್ಥೆ?”
“ನಮ್ಮ ದೋಷಗಳನ್ನು ಸಾಹೇಬರು ಮುಚ್ಚಿಕೊಳ್ಳುತ್ತಾರೆ. ಸಾಹೇಬರ ದೋಷಗಳನ್ನು ದೊಡ್ಡ ಸಾಹೇಬರು. ಅವರ ಮೇಲಿನವರ ದೋಷಗಳನ್ನು ಅದಕ್ಕೂ ಮೇಲಿನವರು ಬೇರಿನಿಂದ ಟೊಂಗೆಯ ತುದಿತನಕ ಇದೇ ವ್ಯವಸ್ಥೆ ಇರುವುದು.”
“ಶಾಲೆ ಮತ್ತು ಮಕ್ಕಳ ಗತಿ?”
“ದೇವರಿಗೇ ಬಿಟ್ಟದ್ದು!”

 

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...