Home / ಕವನ / ಕವಿತೆ / ಕುಂಬಳೆ ಕೋಟೆ

ಕುಂಬಳೆ ಕೋಟೆ

ಎತ್ತದಿರು ಕಲ್ಲುಗಳ ಮೆಟ್ಟದಿರು ಹುಲ್ಲುಹಾಸುಗಳ
ಮುಟ್ಟದಿರು ಅಲ್ಲಿ ಮಲಗಿರುವ ಹಸುಳೆಗಳ
ಎಷ್ಟೋ ವರ್ಷಗಳಿಂದ ಮಲಗಿರುವರವರು
ಮಳೆಗಾಳಿಗೊಮ್ಮೊಮ್ಮೆ ಕನವರಿಸುವರು
ಇನ್ನು ಈ ತೆರೆಗಳ ನಿರಂತರ ಶಬ್ದ
ಅದನುಳಿದರೆ ಬಾಕಿ ಎಲ್ಲವೂ ಸ್ತಬ್ದ

ಪಾರ್ವತಿಸುಬ್ಬನೆಂಬ ಕವಿಯೊಬ್ಬನಿದ್ದ
ಯಾರಿಗೂ ಕೇಳಿಸದ ಶಬ್ದಗಳ ಕೇಳಿದ್ದ
ಬಂದವೆತ್ತಣಿಂದ ಹೊರಟವೆತ್ತ ಕಡೆ?
ಇದು ಮಾಯಾಮೃಗದ್ದೆ ಕಾಲ್ನಡೆ
ಅತ್ತ ಪಂಚವಟಿ ಇತ್ತ ಹಾತೊರೆವ ತೊರೆ
ಅಂದು ಹಾಡಿದವರು ಇಂದು ಹಾಡುವರೆ ?

ಹಾಡು ಗಾಯಕನೆ ಹಾಡು ಎದ್ದು ಕುಣಿಯಲಿ ನಾಡು
ಕುಂಬಳೆ ಮಂಜೇಶ್ವರ ಕಾಸರಗೋಡು
ಪೆರಡಾಲ ಪುತ್ತೂರು ಮಂಗಲವಾಡಿ
ನಿನ್ನ ಗಾನದ ಅಲೆ ಎತ್ತಲೂ ಹರಡಿ
ಕೈಯ ಕಂಕಣ ಕಾಲ ಝಣಝಣ
ಅಹಾ! ಒಂದು ಶಬ್ದಕ್ಕೆ ಎಷ್ಟೊಂದು ಅನುರಣ!

ಚಿಕ್ಕ ಪ್ರಾಯದ ಬಾಲೆ ಚದುರೆ ನಿನ್ನಂಗವ-
ನೆಷ್ಟೆಂದು ಬಣ್ಣಿಸಲಿ ಬಯಸಲಿ ಸಂಗವ
ನಿನ್ನಂಥ ಚೆಲುವೆಯರು ಏಳು ಲೋಕದೊಳಿಲ್ಲ
ಇದನು ಬಣ್ಣಿಸಲಾವ ರೂಪಕವು ಸಲ್ಲ
ಆದ್ದರಿಂದಲೆ ಬಂದೆ ಎಲ್ಲರಿಗಿಂತ ಮುಂದೆ
ಅತಿರಥರೆಲ್ಲರ ಬಿಟ್ಟು ಯೋಜನ ಹಿಂದೆ

ಚಿಕ್ಕ ಪ್ರಾಯದ ಬಾಲೆ ಚದುರೆ ನೀನಾದರೆ
ಏರು ಬಾ ನನ್ನ ಈ ಅತಿವೇಗದ ಕುದುರೆ
ಭಾಗವತರಿಗೆಲ್ಲ ಗೊತ್ತಾಗುವ ಮೊದಲೆ
ಹೊರಡೋಣ ನೋಡು ಈಗಾಗಲೆ
ಮುಂಜಾವದ ಬೆಳಕಿನಲಿ ಕಾಣಿಸುವುದೇನು?
ಒಂದರ ಮೇಲೊಂದು ಘಟ್ಟಗಳ ಸಾನು!

ಅರರೆ! ಇದೇನು ಕೇಳಿಸುತಿದೆ ಗೋಳು!
ಎಲೋ ವಿದೂಷಕನೆ ಈಗೇಕೆ ಬಂದೆ ಹೇಳು
ಇಂಥ ರಾಜಾಂಗಣಕ್ಕೆ ಹೀಗೆ ಬರುವುದಕ್ಕೆ
ಯಾರಿಗೇನು ಬಂತಯ್ಯ ಅಂಥ ಧಕ್ಕೆ
ದೂತನೊ ಸಾರಥಿಯೊ ಗುಪ್ತಚಾರನೊ ನೀನು
ಒದರು ಬೇಗನೆ ಬಂದ ಕಾರ್ಯವೇನು?

ಅದೇನಾಕ್ರಂದನ! ಕೂಗಿ ಕರೆದವರಾರು?
ಅಂತಃಪುರದಿಂದ ರಾಣಿಯಲ್ಲದಿನ್ನಾರು?
ನವಮಾಸ ತುಂಬಿ ನರಳುತಿಹಳು
ಇಡಿಯ ರಾಜ್ಯದ ಭವಿಷ್ಯವನು ಹಡೆವವಳು
ಏಳು ಅಂಬಿಗನೆ ಏಳು! ಕಣ್ಣ ತೆರೆ ಏನು ನೆರೆ!
ಏನಾದರೂ ಸರಿಯೆ ಸೂಲಗಿತ್ತಿಯನೊಡನೆ ಕರೆ

ವೃಷಭ ಮಾಸದಲಿ ಬಂದರು ವೃಷಭೇಂದ್ರ ಸ್ವಾಮಿಗಳು
ಮಿಥುನ ಮಾಸದಲಿ ಮೈಥುನದ ರಾತ್ರಿಗಳು
ಮೀನದಲಿ ಜನಿಸಿದರು ನೋಡಿ ಮೂರು ಕನ್ನಿಕೆಯರು
ಮೀನುಗಣ್ಣಿನ ಚೆಲುವೆಯರು ಅವರು
ಹೊಳೆಗೊಬ್ಬಳಾಯ್ತು ಕಡಲಿಗಿನ್ನೊಬ್ಬಳು
ಉಳಿದವಳ ಕತೆಯೇನು ಹೇಳು ಕವಿಯೆ ಹೇಳು

ಹೊದಲಿಗೆಚ್ಚರಗೊಂಡವನೆ ಅರಮನೆಯ ಸ್ಥಪತಿ
ರಾಜಧಾನಿಯ ಹೊರಗೆ ಶಿಲ್ಪಶಾಲೆಯಲವನ ವಸತಿ
ಎದ್ದು ಸರಿಸುವನು ಕಣ್ಣುಗಳ ಪರದೆ
ನೋಡಿದರೆ ಏನು ಉಳಿದಿದೆ ಏನು ಅಳಿದಿದೆ
ಆಹಾ! ರಾಣಿ ನೆಫರತಿತಿ ರಾಣಿ ನೆಫರತಿತಿ
ಎಂಥ ಕಲ್ಪನೆಗೆ ಎಂಥ ಗತಿ!

ಅತಿದೂರದಿಂದ ಬಂದಿದ್ದವು ಶಿಲಾಖಂಡ
ಒಂದೊಂದರಲ್ಲು ಒಂದೊಂದು ರೂಪವ ಕಂಡ
ರಾಜಾಂಗಣಕ್ಕೆ ಸೋಪಾನದ ಸಾಲುಗಳು
ಸಾಲುಸಾಲಿಗೆ ನಿಂತ ಸಾಲಭಂಜಿಕೆಗಳು
ಒಂದು ಮಾತ್ರವೆ ಇತ್ತು ರೂಪು ಹುಡುಕುತ್ತ
ಒಂದೊಂದು ಮಗ್ಗುಲಿಗು ಅರ್ಥ ಬದಲುತ್ತ

ಯಾರ ಕುಚ ಚಂಚುಕವ ತೊಡಿಸಿದೆ
ಶಿಲ್ಪಿ ನೀನಾಕೆಗೆ ಯಾರ ಬಿಂಕ
ಬಿನ್ನಾಣಗಳ ಬೆರೆಸಿ ಮರೆಸಿದೆ-
ಯವಳ ಭಂಗಿಯಲಿ ಯಾರ ಆತಂಕ-
ವನಡಗಿಸಿದೆ ಆ ತುಂಬಿದೆದೆ-
ಯೊಳಗೆ ಯಾವ ಅರಸೊತ್ತಿಗೆಯ ಅಂಕ!

ನಿಧಾನ ಹರಿಯುವುದು ಕುಂಬಳೆ ಹೊಳೆ
ಯಾರಿಗೂ ತಿಳಿಯದೆಯೆ ಸರಿಯುವುದು ವೇಳೆ
ನೆತ್ತಿಯ ಮೇಲಿದ್ದ ಸೂರ್ಯನೀಗೆಲ್ಲಿ?
ಪರ್ವತಗಳು ಹೊತ್ತಿ ಉರಿಯುವಲ್ಲಿ
ಕಾಯುವಂತಿದೆ ಕಡಲು ಚಂದ್ರೋದಯವ
ಹಿಡಿದಿಟ್ಟುಕೊಂಡು ಎಲ್ಲ ಕಳವಳವ

ಕಂಡಿದ್ದೆಯ ನೀನು ನಿನ್ನ ಶಿಲಾಬಾಲಿಕೆಯ
ಇನ್ನು ಯಾರೂ ಕಾಣದಂಥ ಭವಿಷ್ಯ?
ಕಣ್ಣುಗಳು ಕಡಲಾಚೆ ಹೋಗುವುವು
ಯುಗಯುಗಗಳನ್ನು ಕಾಡುವುವು
ಕಾಲಾಂತರಕ್ಮೆ ಕಾಲನಿರಿಸಿದ ಲಯ
ಯಾರನ್ನೂ ಬಿಡವು ಎಂಬ ವಿಷಯ

ಎಲ್ಲ ಮುಚ್ಚಿದೆ ಆಳೆತ್ತರದ ಹುಲ್ಲು
ಬಿಟ್ಟು ಅಲ್ಲಲ್ಲಿ ಹಾಸುಗಲ್ಲು
ಸ್ನಾನದ ಕೊಳದಲ್ಲಿ ನೀರಿಲ್ಲ ತಾವರೆಯಿಲ್ಲ
ಯಾರ ಕಾಲಿನ ಗುರುತೂ ಈಗ ಉಳಿದಿಲ್ಲ
ಉಳಿದಿಲ್ಲ ಅರಮನೆ ಉಳಿದಿಲ್ಲ ಬಂದೀಖಾನೆ
ಉಳಿದಿರುವುದು ಕೇವಲ ಕವಿಕಲ್ಪನೆ

ಕಲ್ಪನೆಯ ರಥವಾದರೂ ನಿಲ್ಲಿಸೆಲೆ ಸಾರಥಿಯೆ
ಇಳಿದುಬಿಡುವೆವು ನಾವು ಇದೋ ಇಲ್ಲಿಯೆ
ದಾರಿ ಕಿರಿದಾದರೂ ನಡೆದೆ ಹೋಗುವೆವು
ನಮ್ಮ ಮಂದಿಯ ನೋವ ಖುದ್ದಾಗಿ ತಿಳಿಯುವೆವು
ಅರೆ! ಬೆಳಕು ಯಾಕಿಲ್ಲ ಬೆಳಕು ಇರಬೇಕಾದಲ್ಲಿ ?
ನಡೆಯುವುದು ಹೇಗೆ ಇಂಥ ಕತ್ತಲೆಯಲ್ಲಿ?

ಕರೆದವರು ಯಾರು ಓಹೊ ಭಾಗವತರಿರಬೇಕು
ಗೊರಲು ಧ್ವನಿಯೊಂದು ಗುರುತುಹಿಡಿಯಲು ಸಾಕು
ತಡೆಯದಿರಿ ಸ್ವಾಮಿ ತಲೆಮರೆಸಿ ನಾವು
ರಾಜ್ಯವನೊಂದು ಬಾರಿ ಸುತ್ತಿ ಬರುವೆವು
ಅದೊ ಕಾಣಿಸುತಿದೆಯಲ್ಲ ಕಮ್ಮಾರ ಸಾಲೆ
ವೆಂಕಣಾಚಾರಿ ಉರಿಸುತಿರುವನು ಒಲೆ

ಉರಿಯುವುದು ಬೆಂಕಿ ನಳನಳಿಸುವುದು ಕೆಂಡ
ಕಬ್ಬಿಣದ ತುಂಡಿನಲಿ ಉಜ್ವಲ ಸೂರ್ಯಖಂಡ
ವೆಂಕಣಾಚಾರಿ ಹೊಡೆಯುವನು ಬಾರಿ ಬಾರಿ
ಒಂದೊಂದು ಹೊಡೆತಕೂ ಶಕ್ತಿ ಮೀರಿ
ನೇಗಿಲ ಗುಳ ಖೈದಿಗಳ ಕೈಕೊಳ
ಲೋಹ ತಾಳುವುದು ಬಯಸಿದ ರೂಪಗಳ

ಏನಿದೇನಿದು ಧುತ್ತೆಂದು ಎದ್ದ ಆಕಾರ
ಬಯಸದಿದ್ದರು ಬರುವ ವಿದೂಷಕನ ಅವತಾರ
ನೆರೆಯಲ್ಲಿ. ಹೋದವನು ನೆರಳಾಗಿ ಬರುವ
ಪ್ರತಿ ರಾತ್ರಿಯೂ ಸೂಲಗಿತ್ತಿಯನು ತರುವ
ರಾಣಿ ನೆಫರತಿತಿ ರಾಣಿ ನೆಫರತಿತಿ
ಯಾಕೆ ಹೀಗೆ ನನ ನೋಡತಿ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...