Home / ಕವನ / ಕವಿತೆ / ಹೃಷೀಕೇಶಕ್ಕೆ

ಹೃಷೀಕೇಶಕ್ಕೆ

ಋಷಿಗಳಿದ್ದರು ಹೃಷೀಕೇಶದಲಿ ವಿವಿಧ ವೇಷದಲಿ
ಗಡ್ಡಕೂದಲ ಬಿಟ್ಟವರು ಕಾಷಾಯ ತೊಟ್ಟವರು
ಕೆಲರು ತಲೆ ಮರೆಸಿ ಯಾರು ಯಾರನೊ ಅರಸಿ
(ಪ್ರತಿಯೊಂದು ತಲೆ ಹುಡುಕದೇ ತನ್ನ ನೆಲೆ?)
ತಮಾಲವೃಕ್ಷಚ್ಛಾಯೆ ಆಹ ತಣ್ಣನೆ ಹಾಯೆ
ಇದು ಧ್ಯಾನಾಸಕ್ತಿಯೊ ಕೇವಲ ಧೂಮಪಾನಾಸಕ್ತಿಯೊ
ಹೇಳುವುದು ಹೇಗೆ ಅಂಥ ದಟ್ಟದ ಹೊಗೆ!

ಬಣ್ಣಿಸಲೆಂತು ಲಕ್ಷ್ಮಣಜೂಲವೆಂಬ ಮಾಯಾಜಾಲ
ಸುರನದಿಯ ಮೇಲೆ ತೂಗಿ ತೊನೆವುಯ್ಯಾತಿ
ಬೆಟ್ಟ ಕಣಿವೆಯ ಗಾಳಿಗಿದು ಕುಣಿವ ಜೋಕಾಲಿ
ಮನಸು ಡೋಲಾಯಮಾನ ಹೆಜ್ಜೆ ಜೋಪಾನ
ನೋಡಬಾರದು ಕೆಳಗೆ ಗಂಗೆ ಕರೆವಳು ಒಳಗೆ
ಕಂಡವರು ಯಾರವಳ ಅಂತರಂಗದ ಆಳ!
ಅಡಿಯ ಮುಂದೆಯ ಸ್ವರ್ಗ–ಇದೊಂದೆ ಮಾರ್ಗ

ದಾಟು ಎಂದೊಡೆ ಅದರ ಅರ್ಥಕಿನ್ನೆಷ್ಟು ಪದರ!
ಜೂಲ ದಾಟಲು ನಾವು ಏನೇನ ದಾಟಿದೆವು?
ದಾಟಿದೆವೆ ಸಂಸಾರವೆಂಬ ಮಹಾಸಾಗರವ?
ದಾಟದೆವೆ ಮರ್ತ್ಯವನು ದಾಟಿದೆವೆ ಮೃತ್ಯುವನು?
ದಕ್ಷಿಣದೇಶದಿಂದ ಬಂದು ಉತ್ತರಕೆ ಸಂದು
ಸೇರಿ ಅಪರಂಪಾರ ಹೊಂದಿ ರೂಪಾಂತರ
ಫಲಬಿಟ್ಟ ಶ್ರಮವೆ ನಮ್ಮ ಸ್ವರ್ಗಾಶ್ರಮವೆ!

ಎಲಲ ಯಾರಿವನು ವಲಲ! ಇವನೆ ಛೋಟಿವಾಲ
ಕುಳಿತಿರುವ ಹೇಗೆ ನೋಡಿ ಹಾಕಿ ಜನರಿಗೆ ಮೋಡಿ
ಮೈಯೆಲ್ಲ ಬಣ್ಣದ ಹಿಟ್ಟು ಸಟೆದು ನಿಂತಿದೆ ಜುಟ್ಟು
ಸೊಂಟದಲಷ್ಟೆ ಬಟ್ಟೆ ಉಳಿದುದೆಲ್ಲವು ಹೊಟ್ಟೆ
ಜೀವಂತ ಜಾಹೀರು ಖಾನಾವಳಿಯ ಎದುರು
ಮೊದಲಿಗೆ ತಿಂಡಿತೀರ್ಥ ನಂತರವೆ ಪರಮಾರ್ಥ
ಕೊನೆ ಮೊದಲಿಲ್ಲದ ವೃತ್ತ ಕವಿಯುತಿತ್ತು ಸುತ್ತ

ಒಬ್ಬಾತನಿಂತೆಂದ : “ಸುರಲೋಕದಿಂದ
ಗಂಗೆಯನು ತಂದವರು ನನ್ನದೇ ಪೂರ್ವಜರು
ದಾಖಲೆಯಿಲ್ಲ ಏನಿಲ್ಲ, ನನ್ನ ಗತಿ ಯಾರಿಗು ಸಲ್ಲ
ಅನಿಶ್ಚಿತತೆಯ ದಿಗಿಲು ಎಲ್ಲಕಿಂತಲು ಮಿಗಿಲು!”
ಉರಿಯುತಿತ್ತವನ ಕಣ್ಣುಗಳಲಿ ಭಗೀರಥತನ
ಕಾಯುತಿರುವಂತಿತ್ತು, ನಡು ಮಧ್ಯಾಹ್ನದ ಹೊತ್ತು
ಗಂಗಾನದಿಯ ತೀರ ಕೊನೆಯ ಅವತಾರ

ಆಮೇಲೆ ನಡೆದೆವು ನಾವು ನದಿಯ ತಾವು
ಇಳಿದು ಸೋಪಾನಗಳ ಇಳಿಸಿದೆವು ಪಾದಗಳ
ಅರೆ! ಎಂಥ ಸಳೆತ ಈ ನೀರಿಗೆಷ್ಟು ಶೀತ!
ಹಿಮದ ಕಂದರ ಇಳಿದು ಬಂದ ನದಿಯೆ ಸರಿ ಇದು
ಕೊರೆಯುವುದು ಕೆಳಗೆ ಮೇಲೆಯೋ ಬಿಸಿಲ ಧಗೆ
ಮುಳುಗಲಾರೆವು ಮುಳುಗದೆಯೆ ಇರದ ಕಾವು
ಎರಡು ಸ್ಥಿತಿಗಳ ನಡುವೆ ತೊನೆದುದು ನಾವೆ

ಅವತಾರವೆಂದೆನೆ? ಅವತಾರಕುಂಟೆ ಕೊನೆ!
ಬರಿಮೈಯ ಅಬಲೆ ತಿಕ್ಕಿತೊಳದು ಮೊಲೆ
ಬಟ್ಟಬಯಲಿನ ಮರೆಗೆ ಉಟ್ಟುಕೊಳ್ಳುವವರೆಗೆ
ಎಷ್ಟು ಸಾವಿರ ಹುಣ್ಣು ಬಿಟ್ಟಿಕೊಂಡಿತು ಕಣ್ಣು ?
(ಛೇ ಛೇ! ಇದು ಸರಿಯಲ್ಲ ಬಿಡುವೆನೀ ಸೊಲ್ಲ
ಕವಿತೆಗೆ ಬೇಕಿಂದು ವಾಸ್ತವದ ಬಿಗುವೆಂದು
ಬಿಟ್ಟು ನೋಡಿದರೆ ಮತ್ತೇಕೆ ನಡುಗುತಿದೆ ಧರೆ ?)

ಓಹೊ! ನೆಲೆತಪ್ಪಿ ಅಂಡಲೆಯುತಿಹನು ಪಾಪಿ
ಪ್ರಥಮಾವತಾರದಲೆ ಎಷ್ಟು ಬೆಳೆದಿದೆ ತಲೆ!
ಇದ್ದಿಲು ಸುಟ್ಟ ಬೂದಿ ಬಿದ್ದ ಬೀದಿಯ ರಾಡಿ
ಹಾಸುಗಲ್ಲುಗಳ ನಡುವೆ ಸೆಳೆದುದೇನವನ ಗೊಡವೆ
ಯಾರೊ ಚೆಲ್ಲಿದ ಪುಣ್ಯ ರೂಪಾಯಿಯ ನಾಣ್ಯ
ಒಂದು ಕ್ಷಣ ನಿಂತನೀ ಯುಗಾಂತರದ ಸಂತ
ಅದದೊ ನಿಂತಿತು ಯುಗ ಅವನು ನಿಂತಾಗ!
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...