Home / ಕವನ / ಕವಿತೆ / ಹೃಷೀಕೇಶಕ್ಕೆ

ಹೃಷೀಕೇಶಕ್ಕೆ

ಋಷಿಗಳಿದ್ದರು ಹೃಷೀಕೇಶದಲಿ ವಿವಿಧ ವೇಷದಲಿ
ಗಡ್ಡಕೂದಲ ಬಿಟ್ಟವರು ಕಾಷಾಯ ತೊಟ್ಟವರು
ಕೆಲರು ತಲೆ ಮರೆಸಿ ಯಾರು ಯಾರನೊ ಅರಸಿ
(ಪ್ರತಿಯೊಂದು ತಲೆ ಹುಡುಕದೇ ತನ್ನ ನೆಲೆ?)
ತಮಾಲವೃಕ್ಷಚ್ಛಾಯೆ ಆಹ ತಣ್ಣನೆ ಹಾಯೆ
ಇದು ಧ್ಯಾನಾಸಕ್ತಿಯೊ ಕೇವಲ ಧೂಮಪಾನಾಸಕ್ತಿಯೊ
ಹೇಳುವುದು ಹೇಗೆ ಅಂಥ ದಟ್ಟದ ಹೊಗೆ!

ಬಣ್ಣಿಸಲೆಂತು ಲಕ್ಷ್ಮಣಜೂಲವೆಂಬ ಮಾಯಾಜಾಲ
ಸುರನದಿಯ ಮೇಲೆ ತೂಗಿ ತೊನೆವುಯ್ಯಾತಿ
ಬೆಟ್ಟ ಕಣಿವೆಯ ಗಾಳಿಗಿದು ಕುಣಿವ ಜೋಕಾಲಿ
ಮನಸು ಡೋಲಾಯಮಾನ ಹೆಜ್ಜೆ ಜೋಪಾನ
ನೋಡಬಾರದು ಕೆಳಗೆ ಗಂಗೆ ಕರೆವಳು ಒಳಗೆ
ಕಂಡವರು ಯಾರವಳ ಅಂತರಂಗದ ಆಳ!
ಅಡಿಯ ಮುಂದೆಯ ಸ್ವರ್ಗ–ಇದೊಂದೆ ಮಾರ್ಗ

ದಾಟು ಎಂದೊಡೆ ಅದರ ಅರ್ಥಕಿನ್ನೆಷ್ಟು ಪದರ!
ಜೂಲ ದಾಟಲು ನಾವು ಏನೇನ ದಾಟಿದೆವು?
ದಾಟಿದೆವೆ ಸಂಸಾರವೆಂಬ ಮಹಾಸಾಗರವ?
ದಾಟದೆವೆ ಮರ್ತ್ಯವನು ದಾಟಿದೆವೆ ಮೃತ್ಯುವನು?
ದಕ್ಷಿಣದೇಶದಿಂದ ಬಂದು ಉತ್ತರಕೆ ಸಂದು
ಸೇರಿ ಅಪರಂಪಾರ ಹೊಂದಿ ರೂಪಾಂತರ
ಫಲಬಿಟ್ಟ ಶ್ರಮವೆ ನಮ್ಮ ಸ್ವರ್ಗಾಶ್ರಮವೆ!

ಎಲಲ ಯಾರಿವನು ವಲಲ! ಇವನೆ ಛೋಟಿವಾಲ
ಕುಳಿತಿರುವ ಹೇಗೆ ನೋಡಿ ಹಾಕಿ ಜನರಿಗೆ ಮೋಡಿ
ಮೈಯೆಲ್ಲ ಬಣ್ಣದ ಹಿಟ್ಟು ಸಟೆದು ನಿಂತಿದೆ ಜುಟ್ಟು
ಸೊಂಟದಲಷ್ಟೆ ಬಟ್ಟೆ ಉಳಿದುದೆಲ್ಲವು ಹೊಟ್ಟೆ
ಜೀವಂತ ಜಾಹೀರು ಖಾನಾವಳಿಯ ಎದುರು
ಮೊದಲಿಗೆ ತಿಂಡಿತೀರ್ಥ ನಂತರವೆ ಪರಮಾರ್ಥ
ಕೊನೆ ಮೊದಲಿಲ್ಲದ ವೃತ್ತ ಕವಿಯುತಿತ್ತು ಸುತ್ತ

ಒಬ್ಬಾತನಿಂತೆಂದ : “ಸುರಲೋಕದಿಂದ
ಗಂಗೆಯನು ತಂದವರು ನನ್ನದೇ ಪೂರ್ವಜರು
ದಾಖಲೆಯಿಲ್ಲ ಏನಿಲ್ಲ, ನನ್ನ ಗತಿ ಯಾರಿಗು ಸಲ್ಲ
ಅನಿಶ್ಚಿತತೆಯ ದಿಗಿಲು ಎಲ್ಲಕಿಂತಲು ಮಿಗಿಲು!”
ಉರಿಯುತಿತ್ತವನ ಕಣ್ಣುಗಳಲಿ ಭಗೀರಥತನ
ಕಾಯುತಿರುವಂತಿತ್ತು, ನಡು ಮಧ್ಯಾಹ್ನದ ಹೊತ್ತು
ಗಂಗಾನದಿಯ ತೀರ ಕೊನೆಯ ಅವತಾರ

ಆಮೇಲೆ ನಡೆದೆವು ನಾವು ನದಿಯ ತಾವು
ಇಳಿದು ಸೋಪಾನಗಳ ಇಳಿಸಿದೆವು ಪಾದಗಳ
ಅರೆ! ಎಂಥ ಸಳೆತ ಈ ನೀರಿಗೆಷ್ಟು ಶೀತ!
ಹಿಮದ ಕಂದರ ಇಳಿದು ಬಂದ ನದಿಯೆ ಸರಿ ಇದು
ಕೊರೆಯುವುದು ಕೆಳಗೆ ಮೇಲೆಯೋ ಬಿಸಿಲ ಧಗೆ
ಮುಳುಗಲಾರೆವು ಮುಳುಗದೆಯೆ ಇರದ ಕಾವು
ಎರಡು ಸ್ಥಿತಿಗಳ ನಡುವೆ ತೊನೆದುದು ನಾವೆ

ಅವತಾರವೆಂದೆನೆ? ಅವತಾರಕುಂಟೆ ಕೊನೆ!
ಬರಿಮೈಯ ಅಬಲೆ ತಿಕ್ಕಿತೊಳದು ಮೊಲೆ
ಬಟ್ಟಬಯಲಿನ ಮರೆಗೆ ಉಟ್ಟುಕೊಳ್ಳುವವರೆಗೆ
ಎಷ್ಟು ಸಾವಿರ ಹುಣ್ಣು ಬಿಟ್ಟಿಕೊಂಡಿತು ಕಣ್ಣು ?
(ಛೇ ಛೇ! ಇದು ಸರಿಯಲ್ಲ ಬಿಡುವೆನೀ ಸೊಲ್ಲ
ಕವಿತೆಗೆ ಬೇಕಿಂದು ವಾಸ್ತವದ ಬಿಗುವೆಂದು
ಬಿಟ್ಟು ನೋಡಿದರೆ ಮತ್ತೇಕೆ ನಡುಗುತಿದೆ ಧರೆ ?)

ಓಹೊ! ನೆಲೆತಪ್ಪಿ ಅಂಡಲೆಯುತಿಹನು ಪಾಪಿ
ಪ್ರಥಮಾವತಾರದಲೆ ಎಷ್ಟು ಬೆಳೆದಿದೆ ತಲೆ!
ಇದ್ದಿಲು ಸುಟ್ಟ ಬೂದಿ ಬಿದ್ದ ಬೀದಿಯ ರಾಡಿ
ಹಾಸುಗಲ್ಲುಗಳ ನಡುವೆ ಸೆಳೆದುದೇನವನ ಗೊಡವೆ
ಯಾರೊ ಚೆಲ್ಲಿದ ಪುಣ್ಯ ರೂಪಾಯಿಯ ನಾಣ್ಯ
ಒಂದು ಕ್ಷಣ ನಿಂತನೀ ಯುಗಾಂತರದ ಸಂತ
ಅದದೊ ನಿಂತಿತು ಯುಗ ಅವನು ನಿಂತಾಗ!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...