Home / ಕವನ / ಕವಿತೆ / ಶಿವಮೊಗ್ಗೆಯಲ್ಲಿ ಮಳೆ – ೧೯೪೬

ಶಿವಮೊಗ್ಗೆಯಲ್ಲಿ ಮಳೆ – ೧೯೪೬

ಹತ್ತು ದಿನದಿಂದ ಊರಲ್ಲಿ
ರಚ್ಚಿಟ್ಟು ರಾಚುತ್ತಿದೆ ಮಳೆ
ಬಡಿದಂತೆ ನೆಲಕ್ಕೆ
ಏಕಕಾಲಕ್ಕೆ ಸಹಸ್ರಮೊಳೆ!
ಊರಿನ ಕೆನ್ನೆಗೆ ಪಟಪಟ
ಬಾರಿಸಿ
ರೇಗಿಸಿ
ಛೇಡಿಸಿ
ಕೂಗಿ ತರಿಸುತ್ತಿದೆ ಎಲ್ಲರ
ಎದೆಯಲ್ಲೂ ದಿಗಿಲು
ತಿಂಗಳ ಹಿಂದೆ
ಮಾತೇ ಬರದೆ ಉಗ್ಗುತ್ತಿದ್ದ
ಕಪ್ಪನೆ ಮುಗಿಲು!

ಕುಂಬಾರಗುಂಡಿಯ ಸಣ್ಣ ಹೊಂಡಗಳೆಲ್ಲ
ಸಾರಿನ ದೊನ್ನೆ
ಕೆಂಪನೆ ಸೊನ್ನೆ
ಪ್ರಿಯನ ಮೊದಲ ಮುತ್ತಿಗೆ ನಾಚಿದ
ಕನ್ನೆಯ ಕೆನ್ನೆ
ಒಮ್ಮೊಮ್ಮೆ ಕದಡಾರತಿಯ ನೀರು
ಜೀರಿಗೆ ಬೆಲ್ಲದ ಸಾರು
ಬಕೀಟುಗಟ್ಟಲೆ ಕುಡಿದಿವೆ
ಭತ್ತದಗದ್ದೆ ಅಡಿಕೆ, ಮಾವಿನ ಬೇರು.

ಮಳೆ ಹೊಡೆತಕ್ಕೆ ಕಂಗಾಲು
ಮುಚ್ಚಿದೆ ಮನೆ ಮನೆ ಬಾಗಿಲು,
ಸಿಳ್ಳು ಹಾಕುತ್ತ ಓಣಿಗಳಲ್ಲಿ
ಪುಂಡಗಾಳಿಯ ಇರಿಚಲು ಕಾವಲು.
ತೆರೆದಿದ್ದರೆ ಕಿಟಕಿ,
ಕೊಂಚ ಒಳಕ್ಕೆ ಹಣಿಕಿ
ಪೋಲಿ ಕೂಗುವ ತೆವಲು
ಪಡ್ಡೆಗಾಳಿಗೆ,
ಕನಸುತ್ತದೆ ಗೂಳಿ ಮನಸ್ಸು
ಕಾಮದ ಹೋಳಿಗೆ.

ನುಗ್ಗಿದೆ ದೊಡ್ಡ ಬ್ರಾಹ್ಮಣರ ಬೀದಿಗೂ
ಬೀರಿನ ಬಣ್ಣದ ನೀರು.
ಹೊಳೆ ಚರಂಡಿ ಒಂದಾಗಿ
ಗುಂಡಾಭಟ್ಟರ ಮಡಿ ಬಂದಾಗಿ
ಸ್ನಾನಕ್ಕೆ ರಜ,
ಪೂಜೆ ಸಂಧ್ಯಾವಂದನೆ ವಜ.
ಕಾಫಿ ನೀರಿಗೇ ತತ್ವಾರವಾಗಿ
ಭಟ್ಟರ ಮಡಿಯ ವ್ಯಾಖ್ಯಾನ ವಿಸ್ತಾರವಾಗಿ
ಹಿಂದೆ ತಿವಿಸಿಕೊಂಡಿದ್ದ ನಲ್ಲಿಯ ಮುಖಕ್ಕೇ ಈಗ
ಕುಂಕುಮ ಹೂವು ಏರಿಸಿ ಸತ್ಕಾರ,
ಅದು ಹರಿಸಿದ ನೀರಿನಲ್ಲೇ
ಪಾನಕ ಪನಿವಾರ.

ತುಂಗೆಗೆ ಗಂಗೆಯಾಗುವ ಮನ

ಭಾಗೀರಥೀ ಹಬ್ಬದ ದಿನ.
ಹೊಳೆ ಮೆಟ್ಟಿಲಲ್ಲಿ,
ರಾಮಣ್ಣ ಶೆಟ್ಟಿ ಪಾರ್ಕಿನ ಇಳಿ ಘಟ್ಟದಲ್ಲಿ
ನೂಕು ನುಗ್ಗಲು ಜನ.
ತುಂಗೆಯ ಸರ್ಕಸ್ಸು ಅವರೆದುರಿಗೆ :
ಪ್ರಶಾಂತಲಯದ ಬ್ಯಾಂಡು ನಡಿಗೆ ಈ ಗಳಿಗೆ,
ಹೆಡಿಗೆ ಮುಚ್ಚಳ ಸರಿಸಿ
ಸರಸರನೆ ನೆಲಕ್ಕೆ ಹರಿವ
ಸರ್ಪಗತಿ ತೆರೆಗೆ
ಮರುಗಳಿಗೆ;
ಹೆಡೆಯೆತ್ತಿ
ರಪ್ಪನೆ ಬಡಿದು ದಡಕ್ಕೆ,
ಸರಿ ದೂರ ಎನ್ನುವ ರೋಷ ;
ನಿಮಿಷಕ್ಕೊಂದು ಮೆಟ್ಟಲ ಮುಳುಗು
ಜಲಕ್ಕೆ ನೆಲ ನುಂಗುವ ಆವೇಶ!

ಇಂಥ ನೆರೆಯಲ್ಲೂ
ಸುರಿಯುವ ಮಳೆಯಲ್ಲೂ
ಜೀವದ ಜೊತೆ ಅಂಬಿಗರ ಹುಚ್ಚಾಟ,
ತೇಲುವ ಕಳ್ಳನಾಟಾ ಹಿಡಿಯಲು
ಹೊಳೆಗಿಳಿದಾನೆಗಳ ಮೋಜಿನ ನೀರಾಟ.
ಆಡುವ ಆನೆ ಒಮ್ಮೊಮ್ಮೆ ಗಾಢ, ನಿಶ್ಚಲ
ಮುಳುಗದ ಬೆನ್ನು, ತಲೆ. ಮೇಲೆ ಕೂಗುವ ಕಾಗೆ
ಆನೆಯೋ ಬಂಡೆಯೋ ?
ಬೆರಗಿನ
ಆನೆಬಂಡೆ ಕಾಗೆಬಂಡೆ ಪದಕ್ಕೆ
ಹೊಸ ಅರ್ಥಸ್ಪರ್ಶ!

ಎಸೆಯುತ್ತಾರೆ ಜನ ಕೈ ಮುಗಿದು ತಾಯ ಒಡಲಿಗೆ
ಹೂವು ಅಕ್ಷತೆ ಕಾಸು,
ಹಚ್ಚಿಡುತ್ತಾರೆ ಧೂಪ.
ತೇಲಿಬಿಡುತ್ತಾರೆ ಹೆಂಗಳೆಯರು
ನೂರಾರು ದೊನ್ನೆದೀಪ,
ಹಾಡುವ ನೀರಲ್ಲಿ ಆಡುವ ಬೆಂಕಿಯ ಪುಟಾಣಿಪಾಪ!
ನೋಡುವ ಭಾವುಕರಿಗೆ ಕವಿಸುತ್ತ ಬೆರಗು
ದೂರ ಕಡಲಲ್ಲಿ ಯುದ್ಧಕ್ಕೆ ಹೊರಟಿವೆ
ಪಂಜುಬೆಳಕಿನ ಸಾಲುಹಡಗು.

ಸಂಜೆ ರಸ್ತೆಯ ತುಂಬ
ಅರಳಿದ ಛತ್ರಿಗಳ ವಾಕಿಂಗು,
ಕೆಸರು ರಸ್ತೆಯಲ್ಲಿ ಎಂಕ ಸೀನರಿಗೆ ಸ್ಕೇಟಿಂಗು!
ಚಿಕ್ಕೆಯ ಬೆಳಕೂ ಇಲ್ಲದ ಕಕ್ಕಾಬಿಕ್ಕಿರಾತ್ರಿ,
ಊಟದ ಹೊತ್ತಿಗೇ ಕರೆಂಟು ಹೋಗುವುದು ಖಾತ್ರಿ.

ಬುಡ್ಡಿ ಬೆಳಕಿನಲ್ಲಿ ಬೆಚ್ಚನೆ ಊಟ
ಎಲ್ಲಿಲ್ಲದ ಸ್ನೇಹ
ಹಬೆ ಅನ್ನಕ್ಕೆ ಹಾಗಲಗೊಜ್ಜಿಗೆ.
ಇದ್ದರೆ ಒಂದೆರಡು ಮೆಣಸಿನ ಬಜ್ಜಿಗೆ,
ನಲಿಯುತ್ತದೆ ಕಿವಿ
ಹಪ್ಪಳ ಬಾಳಕ ಮುರಿಯುವ ಸದ್ದಿಗೆ!

ಆಹಾ :
ಎಲ್ಲಪ್ಪಾ ಸುರಿದೀತು ಇನ್ನೊಮ್ಮೆ ಅಂಥ ಮಳೆ
ಆಹಾ,
ಎಲ್ಲಪ್ಪಾ ಹರಿದೀತು ಇನ್ನೊಮ್ಮೆ ಹಾಗೆ ಹೊಳೆ!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...