Home / ಕವನ / ಕವಿತೆ / ಯಾರು ಬಂದರೆ ತಾನೆ ಏನು ?

ಯಾರು ಬಂದರೆ ತಾನೆ ಏನು ?

ನಿನಗೆ ಅರವತ್ತಾಯಿತಾ ಎಂದದ್ದು
‘ಬರೋ ಹೊತ್ತಾಯಿತಾ’ ಎಂದು ಕೇಳಿಸಿ
ಸಣ್ಣಗೆ ಬೆಚ್ಚಿದೆ ಒಳಗೆ,
ಯಾರು ಕೇಳಿದ್ದು ಹಾಗೆ ?
ಜೊತೆಗಿದ್ದ ಅಳಿಯನ ? ಮಗನ ? ಅಥವಾ
ಸಿನಿಮಾ ರೇಸು ಕಾರು ಬಾರು ಎಂದು
ಸದಾ ಜೊತೆಗೆ ಪೋಲಿ ಅಲೆಯುವ
ಅವನ ಗೆಳೆಯನ ?
ಏನು ಕೇಳಿದರೊ ?
ಈ ಬೆಚ್ಚನೆ ಆರೋಗ್ಯ ಕಂಡು
ಮೆಚ್ಚಿಗೆ ಹುಟ್ಟಿ ಕೇಳಿದರೊ ?
ಯಾರಿಗೆ ಗೊತ್ತು
ಹುಚ್ಚು ಜನ ಅಸೂಯೆಪಟ್ಟೇ ಆಡಿದರೊ ?

ಯಾರು ಬಂದಾರೆಂದು ಇದ್ದೀತು ?
ಯಾರು ಬಂದರು ತಾನೆ ಏನು ದಿಗಿಲು ?
ಬಂದವರು ತಂದ ಋಣದಲ್ಲಿ ತೂಗಾಡುತಿವೆ
ನೂರು ಉರುಳಿನ ನೆರಳು ;
ಕನಸು ಕಲಿಸಿದ ಅಮ್ಮ
ಕಂಡು ತೀರಿದ ಅಪ್ಪ
ಕೈ ಹಿಡಿದ ಕಣ್ಮಣಿಯೊ
ತನ್ನ ಲೆಕ್ಕಗಳಲ್ಲಿ ನನ್ನ ಎತ್ತರ ಅಳೆದು
ನಟ್ಟನಡು ಚೌಕದಲಿ ಹರಾಜು ಹಾಕಿದ ಮಾಯೆ
ನುಂಗಲಾಗದೆ ಸುಟ್ಟ ಬಿಸಿ ಬಿಸೀ ತುಪ್ಪ
ಮಿಠಾಯಿ ಮಕ್ಕಳು, ಜೊತೆಗೆ ಕಠಾರಿ ನಂಟರು
ವೃತ್ತಿ ಹವ್ಯಾಸ ನೆರೆಹೊರೆಗೆ ಹುಟ್ಟಿದ ಎಷ್ಟೋ
ಪಟಾಕಿ ಗೆಳೆಯರು,

ಬೆಳಗಿನ ತುಷಾರ ಸರಿದು
ಕೆರಳಿದ ಮಧ್ಯಾಹ್ನ ಬೆಳೆದು
ಕನಸಿದ್ದ ಮುಖದಲ್ಲಿ ಸತ್ಯದ
ಕಠೋರ ದಾಡೆಗಳು !

ತುಂಬುತಿಂಗಳ ಬದುಕು
ಬರಿ ತಂಗಳು ಈಗ.
ನಿನ್ನೆ ಮೊನ್ನೆಯ, ಇವತ್ತು ನಿನ್ನೆಯ
ನಾಳೆ ಇಂದಿನ ಕಾರ್ಬನ್ ಕಾಪಿ.
ತರ್ಕಕ್ಕೆ ಗಣಿತಕ್ಕೆ ಅಂಕೆಗಳ ಮಣಿತಕ್ಕೆ ಸಿಕ್ಕು
ಬದುಕಲ್ಲಿ ಸುಖ ಸಿಗದ ಪಾಪಿ.
ಇದೆಲ್ಲ ಮೀಟಿ
ತಾರೆಗಳನ್ನೇ ದಾಟಿ
ನಿಂತ ಅನಂತದ ಹನಿ ಹನಿ ಆಮಂತ್ರಣ.
ಕಳ್ಳ ಹೆಜ್ಜೆಯನಿಟ್ಟು ಬಂದ ಕಾಮದ ಬೆಕ್ಕು
ಕತ್ತಲಲ್ಲಿ ತಿಂದು ಬಿಕ್ಕಿದ ಬದುಕಿನ
ಮೂಳೆಯವಶೇಷಕ್ಕೆ
ಅನಿರೀಕ್ಷಿತ ಅದ್ಭುತದ ಸಿಂಚನ.

ಹೀಗಿರುತ್ತ
ಯಾರು ಬಂದರೆ ತಾನೆ ಏನಂತೆ ?
ಬಾ ಎಂದು ಕರೆದರೂ ಇಲ್ಲ ಚಿಂತೆ.
ಬಂದು ಮುಟ್ಟಲಿ ನನ್ನ,
ಮುಟ್ಟಿ ಬಿಡಿಸಲಿ ಸಣ್ಣ
ಪಂಜರದಿ ಸೆರೆಸಿಕ್ಕ
ಗುಟ್ಟುಗಳ ಸಂತೆ.
ಹಕ್ಕಿ ಹಾರಲಿಬಿಡಿ ಬಾನಿನಲ್ಲಿ
ಸುಖವುಕ್ಕಿ ಈಜಲಿ ಬೆಳಕುಗಡಲಿನಲ್ಲಿ
ದೂರ ಮಣಿಯಾಗುತ್ತ ಸಮೆದು ಕಣವಾಗುತ್ತ
ತಾನೆ ಬಾನಾಗುತ್ತ ಕಾಣದಲ್ಲಿ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...