Home / ಕವನ / ಕವಿತೆ / ಟೀವಿ (T.V.) ಆಶು ಕವಿತ್ವ- ೧೯೮೯

ಟೀವಿ (T.V.) ಆಶು ಕವಿತ್ವ- ೧೯೮೯

ಟೀವಿಯ ಆಶುಕವಿತ್ವದ ಕರೆಗೆ
ಛೇ ಛೇ ಎಂದರು ಜಿ.ಎಸ್.ಎಸ್;
ಅಡಿಗರೊ ತಲೆ ತಲೆ ಚಚ್ಚಿಕೊಂಡರು
ಅಲ್ಲೆ ಮಾಡಿದರು ಅದ ಡಿಸ್‌ಮಿಸ್.
ಕಂಗಾಲಾದರು ಕಂಬಾರ
ನಿಟ್ಟುಸಿಟ್ಟರು ನಿಸ್ಸಾರ
ಕೆಟ್ಟೇ ಎಂದರು ಭಟ್ಟರು ಒಳಗೇ
ಬಂತಲ್ಲಪ್ಪಾ ಗ್ರಹಚಾರ!
ಆದರು ಏನು, ಬಿಡಲಾದೀತೇ?
ಗೋಕಾಕರ ಕವಿದರ್ಬಾರ ?
ಯುಗಾದಿ ಟೀವಿ ಗೋಷ್ಠಿಯ ಬಿಟ್ಟರೆ
ಹೊಸವರ್ಷಕ್ಕೆ ಅಪಚಾರ!
ಹೀಗೆಲ್ಲಾ ಬಲು ತರ್ಕವ ಮಾಡಿ
ಬಯಕೆಯ ಬಾವಿಗೆ ಬುದ್ಧಿಯ ದೂಡಿ
ಕಡೆಗೂ ಭಟ್ಟರು ಮಾಡಿಯೆ ಬಿಟ್ಟರು
ಪದ್ಯವ ಹೊಸೆಯುವ ನಿರ್ಧಾರ,
ನುಂಗಿತು ಹನಿಮಸಿ ಚಿತ್ತಾರ.

* * *

ಕೂತ ಕವಿಗಣವ ಅಣಕಿಸುವಂತೆ
ಸರಸ್ವತಿಯನೇ ಛೇಡಿಸುವಂತೆ
ಬಗೆ ಬಗೆ ವಿಷಯದ ಚೀಟಿಗಳನ್ನು
ತಂದು ಹಿಡಿಯಲು ಕವಿಗಳ ಮುಂದೆ
ಭಟ್ಟರು ಒಂದನು ಎತ್ತಿದರು.
ಕೈ ನಡುಗುತ್ತ ಬಿಚ್ಚಿದರು.
ವಿಘ್ನೇಶ್ವರನಿಗೆ ಮನದಲೆ ನಮಿಸಿ
ನೂರು ಮೋದಕದ ಹರಕೆಯ ಇರಿಸಿ
ಹಣೆಬರಹವನೇ ಓದುವ ಹಾಗೆ
ಕಡೆ ಕಾಳಗವನೆ ಕಾದುವ ಹಾಗೆ
ಓದಿ ಬೆವರಿ ತುಟಿಕಚ್ಚಿದರು,
ದೆವ್ವ ಕಂಡಂತೆ ಬೆಚ್ಚಿದರು.

ವಿಷಯ ಹೀಗಿತ್ತು ಚೀಟಿಯ ಒಳಗೆ
‘ಬೈಟೂ ಕಾಫಿ ಹೊಟೇಲಿನೊಳಗೆ’.
ಏನು ಬರೆದಾರು ಭಟ್ಟರು ಸದ್ಯ,
ಪದ್ಯವಿರಲಿ ದಕ್ಕೀತೇ ಗದ್ಯ ?
ವಿಷಯ ನೋಡಿ ಕವಿ ಗೊಣಗುಟ್ಟಿದರು
ಗೋಕಾಕರ ಮನದಲ್ಲೇ ಕುಟ್ಟಿದರು
ಈ ಕವಿಗೋಷ್ಟಿಗೆ ಸಲಹೆಯ ಮಾಡಿದ
ಅವರನು ವಿನಯದಲೇ ಛೇಡಿಸಿದರು.
“ಎಂಥ ವಿಷಯ ಇದು ಗೋಕಾಕ್ ಹೇಳಿ.
ಕವಿಯ ಹೀಗೆ ಮಾಡುವುದೇ ಗೇಲಿ ?
ಬರೆಯಲಾರೆ ನಾ ಒಂದೂ ಸಾಲು,
ನೀವೆ ಹೊದಿಸಿದರೂ ಭರ್ಜರಿ ಶಾಲು.
ಬೇಯಲು ಬೇಕು ಬದನೇಕಾಯಿಗು
ಅಷ್ಟಿಟ್ಟಾದರು ಪುರುಸೊತ್ತು
ಬೇಡವೆ ಹೇಳಿ ಬರೆಯುವ ಕವಿಗೂ
ಪದಗಳ ನೇಯಲು ತುಸುಹೊತ್ತು?”

“ಬೇಡ” ಎಂದರು ಕವಿ ಗೋಕಾಕ್ !
“ಕವಿ ನೀನಾದರೆ ಬರೆದೇ ಬರೆಯುವೆ,
ಯಾತಕೆ ಈ ಥರ ಹಲ್ ಹಲ್ ಕಿರಿಯುವೆ ?
ಏನಾದರು ಬರಿ, ಎಂತಾದರು ಬರಿ,
ಲಯಪ್ರಾಸಗಳನು ಬಿಡದಿದ್ದರೆ ಸರಿ.
ಢಿಕ್ಕೀ ಹೊಡಿ ನೀ ಕಲ್ಪನೆಗೆ;
ತಾನೆ ತಾನಾಗಿ ಸುರಿವುದು ಕವಿತೆ
ಜಳಜಳ ತೊರೆ ಥರ ಹರಿಯುತ್ತ
ಯೋಚಿಸಲೇನದು ಗೋಕಾಕ್ ವರದಿಯೆ,
ಕಾಲ ಯಾಕೆ ಕವಿತೆಗೆ ವ್ಯರ್ಥ?”

* * *

ಕೂತರು ಭಟ್ಟರು ಆಶುಕವಿತ್ವಕೆ
ವೇದಮಂತ್ರಗಳ ಜಪಿಸುತ್ತ
ಕರೆದರು ಪದಗಳ ಕೈಬೀಸಿ
ಮುಖದಲಿ ಪ್ರೀತಿಯ ನಗೆ ಹಾಸಿ.
ಆದರೆ ಏನಿದು ಬಲು ಚೋದ್ಯ,
ಭಟ್ಟರಿಗೂ ತಿಳಿಯಲಸಾಧ್ಯ!
ಹಿಂದೆಲ್ಲಾ ಮನೆನಾಯಿಯ ಹಾಗೆ
ಬಾಲವ ಆಡಿಸಿ, ಕೆರೆದರೆ ಬಳಿಗೆ
ಓಡಿಬರುತಿದ್ದ ಶಬ್ಧಗಳು,
ಓಟ ಕಿತ್ತವು ಕಳ್ಳರ ಹಾಗೆ
ಭಟ್ಟರು ಪೋಲೀಸ್ ಎನ್ನುವೊಲು.
ಬಿಡುವರೊ ಭಟ್ಟರು ಬಲುಗಟ್ಟಿ
ಹೊರಟರು ಬೇಟೆಗೆ ಬೆನ್ನಟ್ಟಿ!

ಪದಗಳು ಲಯಗಳು ಪ್ರಾಸಗಳೆಲ್ಲಾ
ಓಟಕಿತ್ತವು ಮುಂದುಗಡೆ;
ಭಟ್ಟರೂ ಪಂಚೆಯ ಮೇಲಕೆ ಕಟ್ಟಿ
ಓಡಿದರವುಗಳ ಹಿಂದುಗಡೆ.
ಕನ್ನಡ ಪದಗಳು ಮುಂದುಗಡೆ
ವಿಪ್ರವರೇಣ್ಯ ಹಿಂದುಗಡೆ!
ರಸ್ತೆಯ ಮಧ್ಯೆ ಬರಿಗಾಲಲ್ಲೇ
ಬಸ್ಸನು ತಪ್ಪಿಸಿ ಓಡಿದರು;
ಪುಟ್‌ಪಾತ್ ಹತ್ತಿ ಮರಕ್ಕೆ ಜನಕ್ಕೆ
ಢಿಕ್ಕೀ ಹೊಡೆಯುತ ತೂರಿದರು;

ಸರ್ಕಲ್ ಗಟಾರ, ಗಲ್ಲೀ ಜಲ್ಲೀ
ಓಡಿ ಓಡಿ ಎಲ್ಲೆಂದರೆ ಅಲ್ಲಿ
ಸುಸ್ತಾಗಲು ಭಟ್ಟರ ಎದೆಯಲ್ಲಿ
ಬಡಿಯತೊಡಗಿದವು ಭೇರಿಗಳು!
ಗಟ್ಟಿಪದಗಳೊ ಓಡಿಯೆಬಿಟ್ಟವು
ಕರುಣೆಯೆ ಇಲ್ಲದ ಕ್ರೂರಿಗಳು;
ದುಷ್ಟಪದಗಳೋ ಹಿಡಿದರು ಕಿರುಚಿ
ಭಟ್ಟರ ಮೈ ಕೈ ಎಲ್ಲಾ ಪರಚಿ

ತಪ್ಪಿಸಿಕೊಂಡವು ದ್ರೋಹಿಗಳು.
ಆದರೆ ಭಟ್ಟರು ಹಿಡಿದೇ ಬಿಟ್ಟರು
ಪಿಳ ಪಿಳ ಕಣ್ಣಿನ ಪೀಚುಗಳ,
ಕಾಲೇ ಬಲಿಯದ ಹೀಚುಗಳ;
ಕಷ್ಟಪಟ್ಟರೂ ಹಿಡಿದರು ಕವಿಶ್ರೀ
ಟೈಲ್ ಎಂಡರ್‌ಗಳ ಕ್ಯಾಚುಗಳ!
ಅವನ್ನೆ ಹಿಡಿದು, ಅತ್ತರೆ ಬಡಿದು
ಕೂರಿಸಿ ಏಳಿಸಿ ಕೈಕಾಲ್ ಎಳೆದು
ಮಾಡಿಸಿದರು ಕವಿ ಡ್ರಿಲ್ಲನ್ನು;
ಕೊಟ್ಟೀತೇ ಈ ‘ಠೀವಿಯ’ ಕವಿತೆ
ಯುಗಾದಿ ಹಬ್ಬದ ಥ್ರಿಲ್ಲನ್ನು ?
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...