ರೂಪ

ಬಾಯ್ದೆರೆದು ಮುತ್ತಿರುವ
ದಳ್ಳುರಿಯ ಮಧ್ಯದೊಳು
ಚಿಚ್ಛಕ್ತಿಯೊಂದೆದ್ದಿತು

ಇದೆ ಸಮಯ ಇದೆ ಸಮಯ
ತಡಮಾಡದಿರು ಏಳು
ರೂಪವನು ಇಳಿಸೆಂದಿತು

ರೂಪವೆಂದರೆ ಏನೊ
ಚಿತ್ರವಾಗಿದೆ ಮಾತು
ಶಿಲ್ಪಿಯೇ ನಾನೆಂದೆನು

ಪರಿಹರಿಪೆ ಸಂಶಯವ
ನೋಡೆನುತ ಬಹುತರದ
ಭಾವಗಳ ತಂದೊಡ್ಡಿತು

ರೂಪಗಳ ಭಟ್ಟಿ ಇದು
ಆನಂದವಿಲ್ಲಿಹುದು
ಬಿತ್ತರಿಸು ಏಳೆಂದಿತು

ಇರಲಿರಲು ಬಹುದೆಂದು
ಗೈಮೆ ಇದು ಸುಖವೆಂದು
ಚಟಪಟಿಸಿ ನಾನೆದ್ದೆನು

ಭಾವನೋದ್ರೇಕದೊಳು
ಉಲ್ಲಾಸವುಕ್ಕೇರಿ
ಬಹುದೂರ ನಾ ಸಾಗಿದೆ

ಆನಂದ ಸಿಗದಾಗೆ
ಅತ್ತಿತ್ತ ಸುಳಿದಾಡಿ
ಕಂಗೆಟ್ಟು ಬೆದಕಾಡಿದೆ

ಓ ರೂಪವೇ ನಿನ್ನ
ಕಾಣಲೋಸುಗವೆಂದು
ಪೊಸರಾಜ್ಯಕೈತಂದೆನು

ಭಾವಶೃಂಗವೆ ನಿನ್ನ
ಬೀಡಿನಿಂದೆನಗೊಸೆದು
ಇಳಿದು ಬಾ ಬಳಿಗೆಂದೆನು

ಕೂಗದಿರು ಕಂಡತ್ತ
ಓಡದಿರು ಬಾ ಇಲ್ಲಿ
ವಾಹಿನಿಯು ಸೆಳೆದೊಯ್ವುದು

ತಾನಾಗಿ ಬಂದುದನು
ಪುಟವಿಟ್ಟು ಬೆಲೆಕಟ್ಟಿ
ರೂಪಕೊಡು ಅದಕೆಂದಿತು

ರೂಪಿಸುವ ಬಗೆ ಏನೊ
ಬಣ್ಣಗಳ ನಾನರಿಯೆ
ಪಾಠವೆನಗಿಲ್ಲೆಂದೆನು

ಭಾವವನು ಕಟ್ಟಿರಿಸಿ
ಅರ್ಥವನು ಬಿಚ್ಚಿಡುವ
ಪದಗಳನು ತಾರೆಂದಿತು

ನಿನ್ನ ಕಲ್ಪನೆಯೊಳಗೆ
ಚಿತ್ರ ತಾನೇಳುವುದು
ನವನೀತವುದಯಿಪಂತೆ

ಭಾವದೊಳು ಕಾಂತಿಯುತ
ಔಪಾಸನೆಯು ಮೂಡೆ
ಸಾವಿಲ್ಲ ಆ ರೂಪಕೆ

ಭಾವಗಳು ಉನ್ನತದ
ವಜ್ರಗಳು ಇದ್ದಂತೆ
ವಾಕ್ಯಗಳು ಚಿನ್ನದಂತೆ

ನಿನ್ನ ನಿಪುಣತೆಯೊಡನೆ
ಕಟ್ಟಡವ ಕಟ್ಟಿರಿಸೆ
ಪೂರ್ಣತೆಯು ಬಹುದೆಂದಿತು

ಕಟ್ಟದಿರು ಕಬ್ಬಿಣದ
ಕಟ್ಟಡದಿ ಪುಷ್ಪವನು
ಮಕರಂದವಿಹುದು ಒಳಗೆ

ಮಕರಂದವಿಲ್ಲದೊಡೆ
ಸಮದೊಳಗೆ ಸುಖವಿಲ್ಲ
ಪೋಗದಿರು ಆ ಗೊಡವೆಗೆ

ಅನುಭವದ ಕ್ಷೇತ್ರವನು
ಹೊಕ್ಕು ನೋಡಿದೊಡಲ್ಲಿ
ನುಡಿಗಳಿಗೆ ಕ್ಷಾಮವಿಲ್ಲ

ಸುಲಭ ಶೈಲಿಯ ಸೊಗದ
ಕಬ್ಬಿನಂತಹ ಸವಿಯ
ವಾಕ್ಯಗಳ ತಾರೆಂದಿತು

ದಿಶೆ ದಿಶೆಯೊಳಲೆದಲೆದು
ವಾಕ್ಯಗಳನಾಯ್ದಾಯ್ದು
ಸಡಗರದಿ ನಾ ತಂದೆನು

ಸುಲಭ ಶೈಲಿಯ ಸೊಗದ
ಕಬ್ಬಿನಂತಹ ಸವಿಯ
ವಾಕ್ಯಗಳೊ ನೋಡೆಂದೆನು

ಸಾಕು ಬಿಡು ಸಾಕು ಬಿಡು
ಏನ ತಂದೆಯೊ ಕಾಣೆ
ಈ ಭಾವಕೀ ಪದಗಳೆ?

ಕಡಿವಾಣವಿಲ್ಲದಿಹ
ಪದಗಳಿವು ‘ಛೀ’ ಯೆಂದು
ಮೂದಲಿಸಿ ಸಿಡುಗುಟ್ಟಿತು

ನಿನ್ನಂತೆ ಕಂಡವರು
ಸಿಡುಗುಟ್ಟುವರೊ ಏನೋ
ರೂಪವೇ ಬೇಡೆಂದೆನು

ಅನ್ಯರಾಡುವುದೇನು
ನಿನ್ನ ಕತೆ ನಿನದಿರಲು
ಅಳುಕುಬಗೆ ಬೇಡೆಂದಿತು

ರೂಪವದು ನಮದಲ್ಲ
ಟೀಕಿಪರ ಸೊತ್ತಲ್ಲ
ಗಣಿಯೊಡೆಯ ವಿಶ್ವನಾಥ

ಆಳಕ್ಕೆ ತಕ್ಕಂತೆ
ಏಳುವುದು ಆನಂದ
ಜನಕಜೇ, ಕೇಳೆಂದಿತು
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...