Home / ಕವನ / ಕವಿತೆ / ಯಾತ್ರಿಕ

ಯಾತ್ರಿಕ

ಜಡ ಮಾನಸವ ತಟ್ಟಿ
ಚೇತನವ ಬಿತ್ತರಿಸಿ
ಸಾಗುತಿಹ ಓ ಯಾತ್ರಿಕ

ತಾಳಣ್ಣ ನಾ ಬರುವೆ
ಹಿಂದಿಷ್ಟು ಸೋತಿರುವೆ
ದಿಬ್ಬಗಳ ಹಾಯ್ವತನಕ

ಮುಳ್ಳೆಷ್ಟೊ ತುಳಿದಿಹೆನು
ಕಲ್ಲೆಷ್ಟೊ ಎಡವಿದೆನು
ಹಸಿವಿನಿಂ ಸೊರಗುತಿಹೆನು

ನಿಲ್ಲಣ್ಣ ನಿಲ್ಲಣ್ಣ
ನಿನ್ನಂಥ ಪಯಣಿಗರ
ಹಾದಿಯನೆ ಕಾದಿದ್ದೆನು

ಕೇಳಿಸಿತು ಹುಚ್ಚು ನುಡಿ
ಕಾಣಿಸಿತು ಹುಚ್ಚು ನಡೆ
ಓಡೋಡಿ ನಾ ಬಂದೆನು

ಅಕ್ಕರೆಯ ಈ ನಿನ್ನ
ಮಾತೊಂದೆ ಸಾಕಣ್ಣ
ಬೇಡೆ ಮತ್ತೊಂದೇನನು

ಒಳ್ಳ ಮನವುಳ್ಳವನು
ಎಲ್ಲರನು ನಲಿಸುವನು
ಮನಗಂಡೆ ಕರುಣಿ ನೀನು

ಕಲ್ಲು ಕರಗಿಸುವಂಥ
ಅದ್ಭುತದ ಬಲವೊಂದು
ತುಂಬಿಹುದು ನಿನ್ನೊಳೇನೊ

ಜೀವಿ ಜೀವಿಯ ಬಯಸಿ
ಬಾಯ್ಬಿಡುವ ಮಿಡುಕುಗುಣ
ವೆನ್ನೊಳಗೆ ಅಣಗುವತನಕ

ಸಾಯಮಾಗಿರು ಎನಗೆ
ನಿನ್ನೊಡನೆ ನಾ ಬರುವೆ
ಸ್ವಸ್ಥಾನ ಸಿಗುವ ತನಕ

ಹೊತ್ತೇರಿ ಬರುತಿಹುದು
ಸುತ್ತಲೂ ಸುಡುತಿಹುದು
ಮರುಭೂಮಿ ನಾ ಬಂದುದು

ಕತ್ತಲಾಗುವ ಮುನ್ನ
ಸುತ್ತಿ ಸಂತೆಯನಣ್ಣ
ಬುತ್ತಿ ಉಂಬುವ ತಂದುದು

ಕುದಿಯೊಳಗೆ ಈ ಮರದ
ನೆಳಲೆಷ್ಟು ತಣುವಿಹುದು
ಈಶಕೃಪೆ ಹರಡಿದಂತೆ

ಚಣಕಾಲ ವಿಶ್ರಮಿಸಿ
ಅರುಹುವೆನು ನಿನಗೆನ್ನ
ಗತಪಯಣಗಳ ಭೀಕರ

ನಾ ಬಿದ್ದ ಕೂಪಗಳ
ನಾ ಗೆದ್ದ ಕೋಟೆಗಳ
ಸೊದೆಯನೆಲ್ಲವ ಪೇಳ್ವೆನು

ಕುರುಡು ಸಡಗರದಿಂದ
ಮುಳುಗಿ ತೇಲುತ ಬಂದ
ಹರುಕು ಮುರುಕಿನ ಕಥೆಯನು

ನೀನೆತ್ತಣಿಂ ಬಂದೆ
ಎಲ್ಲಿಗಿದೆ ಗುರಿ ಮುಂದೆ
ಏನೇನ ಕಂಡೆ ಹಿಂದೆ?

ಮಾನವರ ಕೃತ್ಯಮೇನ್?
ಜಗದೊಡೆಯನಿಚ್ಛೆಯೇನ್?
ಅರುಹು ನೀನರಿತುದಿಂದು

ಅರಿತವರ ನುರಿತವರ
ಒಡನಾಟವಂ ಬಯಸಿ
ನಾನಿತ್ತ ಪೊರಮಟ್ಟೆನು

ನಿರ್ಮಲದ ನಿಶ್ಚಲದ
ಕಾಂತಿಮಯದೈಸಿರಿಯ
ಕರುಣಿಸನು ಪರಮಾತ್ಮನು

ಕಣ್ ಕಟ್ಟಿ ಆಡಿಸುವ
ಕಪಟನಾಟಕ ಸೂತ್ರಿ
ಕಂಡನೇ ನಿನ ದೃಷ್ಟಿಗೆ?

ಕಾಣದಿಹನಾ ಕಳ್ಳ
ಇಟ್ಟಿಹನು ಬೇಗುದಿಯ
ಮಾಯೆಯನು ಬಿತ್ತಿ ಒಳಗೆ

ಅವನಿರುವು ಅಂತಿರಲಿ
ಅವನ ಕೃತಿ ಎಂತಿಹುದೊ
ನೋಡಿದೆಯ ಈ ಶಕ್ತಿಯ?

ಬುವಿ ಬಾನ ಮೂಸೆಯೊಳು
ಜೀವರಾಶಿಯ ಸೃಜಿಸಿ
ತುಂಬಿಹನು ಜಿಜ್ಞಾಸೆಯ

ಮದ ಮತ್ಸರಗಳೇನು
ಮಾಯಜಾಲಗಳೇನು
ನನದೆಂಬ ಭ್ರಾಂತಿಯೇನು

ಕಾಂಬುದೆಲ್ಲವು ಈತ
ನಿನ ರೂಪವೇ ಎಂಬ
ಜ್ಞಾನಿಯೇ ಆನಂದನು

ಆನಂದವಂ ನಿರುತ
ಅನುಭವಿಸುವನು ಜ್ಞಾನಿ
ಅಜ್ಞಾನಿಗೆ ಗತಿಯದೇನು?

ಪಾಮರತ್ವವ ಬಿತ್ತಿ
ಪೈರು ಬೆಳಸಿಹನಿಲ್ಲಿ
ಕುಹುಕನೇಂ ಪರಮ ಶಿವನು?

ಅಲ್ಲದೊಡೆ ಜೀವನಿಗೆ
ಸ್ವಾತಂತ್ರ್‍ಯವುಂಟೇನು
ಊಳಿಗದಿ ತೊಡಗಿದವನು!

ವಿಧಿಯಂತ್ರ ಸೆಳೆದತ್ತ
ಬುದ್ಧಿ, ಮನ ಓಡುತಿರೆ
ಜೀವಿ ತಾನೇಗೈವನು?

ಒಡೆಯಲಾರದ ಒಗಟೆ
ಎಷ್ಟೊ ಉಳಿದಿಹುದಿಂತು
ಬೆಳೆಯುತಿದೆ ಗ್ರಂಥರಾಸಿ

ನುಂಗಲಾರದ ತುತ್ತ
ನೂಕಿದರೆ ಫಲವೇನು?
ಶ್ರಮೆಗೊಳದ ಮಿತವೆ ಲೇಸು

ಅಂತಿರಲಿ ಆ ಮಾತು
ಅವನಿರಲು ಎಮಗೇಕೆ?
ನೀ ದೊರೆತುದೆನ್ನ ಪುಣ್ಯ

ನೆಳಲೊಳಗೆ ನಿನ ಜೊತೆಗೆ
ಮೆಲ್ಲ ಮೆಲ್ಲನೆ ನಡೆವೆ
ಸೊಗವಹುದು ಪಯಣವಿನ್ನು

ಒಬ್ಬರೊಬ್ಬರ ಹಿಂಡಿ
ಈರ್ಷ್ಯೆಯಿಂದುರಿಯದಿಹ
ಹೊಸ ರಾಜ್ಯದೊಳಗೆ ಸುಳಿದು

ಕಂಡುದನು ಬಣ್ಣಿಸುತ
ಕಾಣದುದ ಶೋಧಿಸುತ
ನಡೆವ ನಾವ್ ನಕ್ಕುನಲಿದು

ಆ ಜಾಣನದ್ಭುತದ
ಕೌಶಲವ ಪರಿಕಿಸುವ!
ಶೃಂಗಾರಮೆಂತಿಪ್ಪುದೊ!

ಭೀಭತ್ಸ ಶರಧಿಯಂ
ಮಥಿಸಿ ನೋಡುವ ಅಣ್ಣ
ಹಾಸಾದಮೇಮ್ ದೊರೆವುದೊ!

ನವರಸಗಳೆಲ್ಲವಂ
ಒರೆಗಿಟ್ಟು ಶೋಧಿಸುವ
ಈ ಬುದ್ಧಿ ಯಂತ್ರದೊಳಗೆ

ಜೀವಿ ತಾಂ ಬಯಸಿರುವ
ತಿಳಿಮಧುವನೀಕ್ಷಿಸುವ
ಗುಪ್ತಸಂಧಾನದೊಳಗೆ

ಗೀತೆಯದು ಬೋಧಿಸುವ
ಸಾಹಸದ ಕಾರ್ಯದೊಳ್
ಧೈರ್‍ಯದಿಂ ಮುನ್ನುಗ್ಗುವ

ಮುರವೈರಿ ತೋರಿಸಿದ
ವಿಶ್ವರೂಪದ ಧೃತಿಯ
ನಾವೊಮಮೆ ಕಂಡುಬರುವ

ಇಲ್ಲಿರುವ ಚೆಲುವೇನೊ?
ಅಲ್ಲಿರುವ ತಿಳಿವೇನೊ?
ಎಲ್ಲವಂ ಪರಿಶೋಧಿಸಿ

ನೀನರಿತ ವಿಷಯಗಳ
ತಂಗಿ ಜನಕಜೆಗರುಹಿ
ಸಂತಸದಿ ಯಾತ್ರೆ ನಡೆಸು!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...