Home / ಕವನ / ಕವಿತೆ / ಯಾತ್ರಿಕ

ಯಾತ್ರಿಕ

ಜಡ ಮಾನಸವ ತಟ್ಟಿ
ಚೇತನವ ಬಿತ್ತರಿಸಿ
ಸಾಗುತಿಹ ಓ ಯಾತ್ರಿಕ

ತಾಳಣ್ಣ ನಾ ಬರುವೆ
ಹಿಂದಿಷ್ಟು ಸೋತಿರುವೆ
ದಿಬ್ಬಗಳ ಹಾಯ್ವತನಕ

ಮುಳ್ಳೆಷ್ಟೊ ತುಳಿದಿಹೆನು
ಕಲ್ಲೆಷ್ಟೊ ಎಡವಿದೆನು
ಹಸಿವಿನಿಂ ಸೊರಗುತಿಹೆನು

ನಿಲ್ಲಣ್ಣ ನಿಲ್ಲಣ್ಣ
ನಿನ್ನಂಥ ಪಯಣಿಗರ
ಹಾದಿಯನೆ ಕಾದಿದ್ದೆನು

ಕೇಳಿಸಿತು ಹುಚ್ಚು ನುಡಿ
ಕಾಣಿಸಿತು ಹುಚ್ಚು ನಡೆ
ಓಡೋಡಿ ನಾ ಬಂದೆನು

ಅಕ್ಕರೆಯ ಈ ನಿನ್ನ
ಮಾತೊಂದೆ ಸಾಕಣ್ಣ
ಬೇಡೆ ಮತ್ತೊಂದೇನನು

ಒಳ್ಳ ಮನವುಳ್ಳವನು
ಎಲ್ಲರನು ನಲಿಸುವನು
ಮನಗಂಡೆ ಕರುಣಿ ನೀನು

ಕಲ್ಲು ಕರಗಿಸುವಂಥ
ಅದ್ಭುತದ ಬಲವೊಂದು
ತುಂಬಿಹುದು ನಿನ್ನೊಳೇನೊ

ಜೀವಿ ಜೀವಿಯ ಬಯಸಿ
ಬಾಯ್ಬಿಡುವ ಮಿಡುಕುಗುಣ
ವೆನ್ನೊಳಗೆ ಅಣಗುವತನಕ

ಸಾಯಮಾಗಿರು ಎನಗೆ
ನಿನ್ನೊಡನೆ ನಾ ಬರುವೆ
ಸ್ವಸ್ಥಾನ ಸಿಗುವ ತನಕ

ಹೊತ್ತೇರಿ ಬರುತಿಹುದು
ಸುತ್ತಲೂ ಸುಡುತಿಹುದು
ಮರುಭೂಮಿ ನಾ ಬಂದುದು

ಕತ್ತಲಾಗುವ ಮುನ್ನ
ಸುತ್ತಿ ಸಂತೆಯನಣ್ಣ
ಬುತ್ತಿ ಉಂಬುವ ತಂದುದು

ಕುದಿಯೊಳಗೆ ಈ ಮರದ
ನೆಳಲೆಷ್ಟು ತಣುವಿಹುದು
ಈಶಕೃಪೆ ಹರಡಿದಂತೆ

ಚಣಕಾಲ ವಿಶ್ರಮಿಸಿ
ಅರುಹುವೆನು ನಿನಗೆನ್ನ
ಗತಪಯಣಗಳ ಭೀಕರ

ನಾ ಬಿದ್ದ ಕೂಪಗಳ
ನಾ ಗೆದ್ದ ಕೋಟೆಗಳ
ಸೊದೆಯನೆಲ್ಲವ ಪೇಳ್ವೆನು

ಕುರುಡು ಸಡಗರದಿಂದ
ಮುಳುಗಿ ತೇಲುತ ಬಂದ
ಹರುಕು ಮುರುಕಿನ ಕಥೆಯನು

ನೀನೆತ್ತಣಿಂ ಬಂದೆ
ಎಲ್ಲಿಗಿದೆ ಗುರಿ ಮುಂದೆ
ಏನೇನ ಕಂಡೆ ಹಿಂದೆ?

ಮಾನವರ ಕೃತ್ಯಮೇನ್?
ಜಗದೊಡೆಯನಿಚ್ಛೆಯೇನ್?
ಅರುಹು ನೀನರಿತುದಿಂದು

ಅರಿತವರ ನುರಿತವರ
ಒಡನಾಟವಂ ಬಯಸಿ
ನಾನಿತ್ತ ಪೊರಮಟ್ಟೆನು

ನಿರ್ಮಲದ ನಿಶ್ಚಲದ
ಕಾಂತಿಮಯದೈಸಿರಿಯ
ಕರುಣಿಸನು ಪರಮಾತ್ಮನು

ಕಣ್ ಕಟ್ಟಿ ಆಡಿಸುವ
ಕಪಟನಾಟಕ ಸೂತ್ರಿ
ಕಂಡನೇ ನಿನ ದೃಷ್ಟಿಗೆ?

ಕಾಣದಿಹನಾ ಕಳ್ಳ
ಇಟ್ಟಿಹನು ಬೇಗುದಿಯ
ಮಾಯೆಯನು ಬಿತ್ತಿ ಒಳಗೆ

ಅವನಿರುವು ಅಂತಿರಲಿ
ಅವನ ಕೃತಿ ಎಂತಿಹುದೊ
ನೋಡಿದೆಯ ಈ ಶಕ್ತಿಯ?

ಬುವಿ ಬಾನ ಮೂಸೆಯೊಳು
ಜೀವರಾಶಿಯ ಸೃಜಿಸಿ
ತುಂಬಿಹನು ಜಿಜ್ಞಾಸೆಯ

ಮದ ಮತ್ಸರಗಳೇನು
ಮಾಯಜಾಲಗಳೇನು
ನನದೆಂಬ ಭ್ರಾಂತಿಯೇನು

ಕಾಂಬುದೆಲ್ಲವು ಈತ
ನಿನ ರೂಪವೇ ಎಂಬ
ಜ್ಞಾನಿಯೇ ಆನಂದನು

ಆನಂದವಂ ನಿರುತ
ಅನುಭವಿಸುವನು ಜ್ಞಾನಿ
ಅಜ್ಞಾನಿಗೆ ಗತಿಯದೇನು?

ಪಾಮರತ್ವವ ಬಿತ್ತಿ
ಪೈರು ಬೆಳಸಿಹನಿಲ್ಲಿ
ಕುಹುಕನೇಂ ಪರಮ ಶಿವನು?

ಅಲ್ಲದೊಡೆ ಜೀವನಿಗೆ
ಸ್ವಾತಂತ್ರ್‍ಯವುಂಟೇನು
ಊಳಿಗದಿ ತೊಡಗಿದವನು!

ವಿಧಿಯಂತ್ರ ಸೆಳೆದತ್ತ
ಬುದ್ಧಿ, ಮನ ಓಡುತಿರೆ
ಜೀವಿ ತಾನೇಗೈವನು?

ಒಡೆಯಲಾರದ ಒಗಟೆ
ಎಷ್ಟೊ ಉಳಿದಿಹುದಿಂತು
ಬೆಳೆಯುತಿದೆ ಗ್ರಂಥರಾಸಿ

ನುಂಗಲಾರದ ತುತ್ತ
ನೂಕಿದರೆ ಫಲವೇನು?
ಶ್ರಮೆಗೊಳದ ಮಿತವೆ ಲೇಸು

ಅಂತಿರಲಿ ಆ ಮಾತು
ಅವನಿರಲು ಎಮಗೇಕೆ?
ನೀ ದೊರೆತುದೆನ್ನ ಪುಣ್ಯ

ನೆಳಲೊಳಗೆ ನಿನ ಜೊತೆಗೆ
ಮೆಲ್ಲ ಮೆಲ್ಲನೆ ನಡೆವೆ
ಸೊಗವಹುದು ಪಯಣವಿನ್ನು

ಒಬ್ಬರೊಬ್ಬರ ಹಿಂಡಿ
ಈರ್ಷ್ಯೆಯಿಂದುರಿಯದಿಹ
ಹೊಸ ರಾಜ್ಯದೊಳಗೆ ಸುಳಿದು

ಕಂಡುದನು ಬಣ್ಣಿಸುತ
ಕಾಣದುದ ಶೋಧಿಸುತ
ನಡೆವ ನಾವ್ ನಕ್ಕುನಲಿದು

ಆ ಜಾಣನದ್ಭುತದ
ಕೌಶಲವ ಪರಿಕಿಸುವ!
ಶೃಂಗಾರಮೆಂತಿಪ್ಪುದೊ!

ಭೀಭತ್ಸ ಶರಧಿಯಂ
ಮಥಿಸಿ ನೋಡುವ ಅಣ್ಣ
ಹಾಸಾದಮೇಮ್ ದೊರೆವುದೊ!

ನವರಸಗಳೆಲ್ಲವಂ
ಒರೆಗಿಟ್ಟು ಶೋಧಿಸುವ
ಈ ಬುದ್ಧಿ ಯಂತ್ರದೊಳಗೆ

ಜೀವಿ ತಾಂ ಬಯಸಿರುವ
ತಿಳಿಮಧುವನೀಕ್ಷಿಸುವ
ಗುಪ್ತಸಂಧಾನದೊಳಗೆ

ಗೀತೆಯದು ಬೋಧಿಸುವ
ಸಾಹಸದ ಕಾರ್ಯದೊಳ್
ಧೈರ್‍ಯದಿಂ ಮುನ್ನುಗ್ಗುವ

ಮುರವೈರಿ ತೋರಿಸಿದ
ವಿಶ್ವರೂಪದ ಧೃತಿಯ
ನಾವೊಮಮೆ ಕಂಡುಬರುವ

ಇಲ್ಲಿರುವ ಚೆಲುವೇನೊ?
ಅಲ್ಲಿರುವ ತಿಳಿವೇನೊ?
ಎಲ್ಲವಂ ಪರಿಶೋಧಿಸಿ

ನೀನರಿತ ವಿಷಯಗಳ
ತಂಗಿ ಜನಕಜೆಗರುಹಿ
ಸಂತಸದಿ ಯಾತ್ರೆ ನಡೆಸು!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...