Home / ಕವನ / ಕವಿತೆ / ರಸ್ತೆ ಹೋಗುವುದೆಲ್ಲಿಗೆ?

ರಸ್ತೆ ಹೋಗುವುದೆಲ್ಲಿಗೆ?

ಬೂದು ಬಣ್ಣದ ಚಳಿಗೆ
ಮುಂಜಾವದ ತುಟಿಯೊಡೆದಿದೆ
ಆಕಾಶ ಚಂದಿರನನ್ನು
ಹಣೆಯಲ್ಲಿ ಧರಿಸಿ ನಸುನಗುತಿದೆ
ಮಿಲ್ಲುಗಳಿಂದ ಹೊಗೆಯನ್ನೂ
ಹುಣ್ಣುಗಳನ್ನೂ
ಬಳುವಳಿಯಾಗಿ ಪಡೆದಿರುವ ಭದ್ರೆ
ಮುದಿಸೂಳೆಯ ಹಾಗೆ ನಡುಗುತ್ತಿದ್ದಾಳೆ
ಜಿಪುಣಶೆಟ್ಟಿ ಸೂರ್ಯನದು
ತೂಕದ ವ್ಯವಹಾರ
ಒಂದೊಂದೆ ಕಿರಣ ಚೆಲ್ಲುತ್ತಿದ್ದಾನೆ
ನೆಲದ ಕೊರಳಿಗೆ ಹಾರ.

ಅಂದವಾಗಿ ಅಲಂಕರಿಸಿಕೊಂಡು
ಅಚ್ಚುಕಟ್ಟಾಗಿ ಕುಳಿತುಕೊಂಡಿರುವ
ಹಾಲಿನ ಬಾಟಲಿಗಳಿಗೆ
ಮೈತುಂಬಾ ನಿರೀಕ್ಷೆ
ಯಾರೋ ಮಡಿವಂತರು
ಸಾರಿಸಿ ಗುಡಿಸಿದ ಅಂಗಳ
ಗುಬ್ಬಚ್ಚಿಗಳಿಗೆ ರಂಗಸಜ್ಜಿಕೆ.

ಕೈಗಾಡಿಯ ಬೈಟೂ ಕಾಫಿಯಲ್ಲಿ
ಬೋನಸ್ಸು ಮುಷ್ಕರ ಹಬೆಯಾಡುತ್ತಿದೆ
ದೂರದ ಚರ್ಚಿನ ಗಂಟೆ
ಎಂಟು ಹೊಡೆದಿದೆ.
ಪುಸ್ತಕದ ಬೆಟ್ಟ ಹೊತ್ತ
ಪುಟಾಣಿಗಳಿಂದ ಪ್ರಾರ್ಥನಾಗೀತೆ
ಕಾಡಿನ ಕಡವೆಯ ಮರಿಗಳು
ಊರ ಉದ್ಯಾನವನದ
ಕಬ್ಬಿಣದ ಕಂಬಗಳಿಗೆ
ಹತಾಶೆಯಿಂದ ಕೊರಳು ಉಜ್ಜುತ್ತಿವೆ
ಬತ್ತಲಾದ ಪುಟ್ಟ ಗಿಡಗಳು
ವನಮಹೋತ್ಸವದ ದಿನ ಎಣಿಸುತ್ತಿವೆ.

ಚಪ್ಪಲಿ, ಚೀಲ, ಕೊಡೆ
ಚದುರಿ ಚೆಲ್ಲಾಪಿಲ್ಲಿಯಾಗಿವೆ.
ವರದಕ್ಷಿಣೆ ತರದ ಹುಡುಗಿಯ ಹಾಗೆ
ಇಡಿಯಾಗಿ ಮೈಸುಟ್ಟುಕೊಂಡಿರುವ
ಕಾರು ಮುಖ ಮಾತ್ರ ಉಳಿಸಿಕೊಂಡಿದೆ.
ಕೈಗಾಡಿಗೆ ಕಾಲಿಲ್ಲ
ಶನಿದೇವರ ರಥ ಕಾಣೆಯಾಗಿದೆ.
ಚುರುಮುರಿ ಉಂಡೆಯನ್ನು
ಸುತ್ತಿರುವ ಮಾಸಲು ಹಾಳೆಯಲ್ಲಿ
ಉಲ್ಲಾಸಭರಿತ ಕವಿತೆ.

ಒಂದಿಷ್ಟು ಕದನ-ಕುತೂಹಲ
ಆಮೇಲೆ-
ಲಾಠಿ ಬೂಟುಗಳ ಟಪ ಟಪ
ಸದ್ದಿನ ಹಿನ್ನೆಲೆಯಲ್ಲಿ
ಟೋಪಿಗಳ ಶಾಂತಿಸಭೆ.

ಭಜನೆ, ತಾಳ, ಬೆಂಕಿ
ಸಣ್ಣಗೆ ಉಸಿರು ಕಟ್ಟಿಸುವ ಹೊಗೆ.
ಯಾರದ್ದೊ….
ಕೊನೆಯ ಮೆರವಣಿಗೆ.
ಸೀಳಿಹೋದ ಅಭಯಹಸ್ತದ ಮಗ್ಗುಲಲ್ಲಿ
ಚಿಂದಿಚಿಂದಿಯಾದ
ನೇಗಿಲು ಹೊತ್ತ ರೈತನ ಚಿತ್ರ.

ಕಣ್ಣರಳಿಸಿ ನೋಡುತ್ತಿದ್ದಾನೆ
ಹಸಿರು ರುಮಾಲಿನ ಹುಡುಗ
ಮಾಕ್ಸ್, ಬುದ್ಧ, ಗಾಂಧಿ
ಚಿಂತನೆಯಲ್ಲಿ ಗಡ್ಡ ಹಣ್ಣಾಗುತ್ತಿದೆ
ಮೈಮರೆತು ನಿಂತಿದ್ದಾನೆ ಹುಡುಗ!

ಗಾಳಿಯೊಳಗೆ ತೇಲಿದಂತೆ
ಚೆಲುವಾಗಿ ಹೂವಿನ ಹಾಗೆ
ಪರಿಮಳಿಸುತ್ತ ನಡೆದು ಬರುತ್ತಿದ್ದಾಳೆ
ಸೇಬು ಕೆನ್ನೆಯ ಹುಡುಗಿ
ಉತ್ಸವದ ಮೂರುತಿಯ ಹಾಗೆ ಶಿಸ್ತಾಗಿ
ಉತ್ಸಾಹ ಉಕ್ಕುಕ್ಕಿ ಚೆಲ್ಲುವ ಹಾಗೆ
ಹರಿದು ಬರುತ್ತಿದ್ದಾಳೆ ಹುಡುಗಿ
ಮೊಟ್ಟ ಮೊದಲ ಹೆಜ್ಜೆ ಇಟ್ಟ
ಮಗುವಿನ ಸಂಭ್ರಮದಲ್ಲಿ
ಅವರಿವರನ್ನು ಕೇಳುತ್ತಿದ್ದಾಳೆ….
ಈ ರಸ್ತೆ ಹೋಗುವುದೆಲ್ಲಿಗೆ?


Tagged:

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...