Home / ಕವನ / ಕವಿತೆ / ಅಹಲ್ಯೆ

ಅಹಲ್ಯೆ

ಇಂದ್ರ:

ಹಚ್ಚಿ ಹೊಗೆಬತ್ತಿ ನೋಡುವೆನು ಕಣ್ಣೆತ್ತಿ
ಬಾರಿಬಾರಿಗು ಜೀವದ ಪವಾಡ ಕೋರಿ
ನಿನ್ನೆಯಷ್ಟೇ ಬದುಕು ಮೈತುಂಬಿ ಉದ್ದಕು
ನಿಂತಿದ್ದ ಒಡಲು ಇಂದು ಕೇವಲ ಕಲ್ಲು
ಎಂದರೆ ನಂಬುವೆನೆ ನೊಡುವ ಕಣ್ಣುಗಳನೆ
ಒಬ್ಬಾತನ ಸ್ನೇಹದಲಿ ಇನ್ನೊಬ್ಬನ ಮೋಹ
ಹಿಡಿಯಬಯಸಿದವಳೆ ಎರಡನೊಮ್ಮೆಲೆ
ಎಳಸಿದವಳೆ ಕೇಳು ನನ್ನ ಕರೆ! ಏಳು
ಎದ್ದೇಳು ನಿದ್ದೆಯಿಂದ ಹುಟ್ಟು ಶಿಲೆಯೊಳಗಿಂದ
ನಡೆಯಲಿ ಪಾದ ಕೇಳಿಸಲಿ ಕಂಠದ ನಾದ
ಮರ್ತ್ಯದ ಸಕಲ ಸಾರ ಪಡೆಯೆ ಆಕಾರ
ಎಲೆ ಚೆಲುವೆ ನೀ ಯಾರ ಕಾಯುತಿರುವೆ
ಯಾವ ಯುಗದ ದೈವ ಕೊಡುವುದು ಜೀವ?

ಆಹಲ್ಯೆ:

ಪಾಷಾಣವೆಂಬ ಸ್ಥಿತಿ ಎಷ್ಟೊಂದು ಕಠಿಣ-
ವೆಂಬುದನು ಯಾರಿಗೆ ತಿಳಿಸುವೆನು ಹೇಗೆ!
ಚಲಿಸಲಾರೆನು ಕೈಯ ಸ್ಪಂದಿಸದು ಹೃದಯ
ತಡವಲಾರದ ಬೆರಳು ಸರಿಸಲಾರದ ಕುರುಳು
ಯುಗವೆ ಕಳೆದಿದೆ ಮೈಯ ಹೊರಳಿಸದೆ
ಮಾತು ಮರೆತಿರುವೆ ಇದ್ದರೂ ಇರದಿರುವೆ
ತೆರೆದು ಮಳೆಬಿಸಿಲಿಗೆ ಬಿದ್ದರೂ ಹೀಗೆ
ಮುದುಡುವಂತಿಲ್ಲ ಬಾಡುವಂತಿಲ್ಲ
ಸಕಲ ದಾಹಗಳನೊಮ್ಮೆಲೆ ತಣಿಸಿದಂತಿದೆ ದೇಹ
ಅಹ್! ಇನ್ನೇಕೆ ಮಾತು ದಾಹದ ಕುರಿತು?
ನೆನಪುಗಳಿರದ ಯಾವ ಭಯವೂ ಇರದ
ಎಷ್ಟೊಂದು ಮಾಗಿ ಮೈಮೇಲೆ ಸಾಗಿ
ಇನ್ನೊಂದು ಯುಗದಲ್ಲಿ ಎಷ್ಟೊಂದು ಮನದಲ್ಲಿ
ಏಳಲೇಕೆ ಇಂಥ ಗತಿ ಮತ್ತೆ ಬೇಕೆ?

ಗೌತಮ:

ಇಷ್ಟು ಬೇಗನೆ ಮೂಡಿತೆ ಮುಂಜಾನೆ-
ಯೆಂದು ಬರಿಗಾಲಿನಲಿ ನಿದ್ದೆಗಣ್ಣಿನಲಿ
ನದಿಯ ತೀರಕೆ ಬಂದು ಎಂದಿನಂತೆಯ ಮಿಂದು
ನೋಡಿದರೆ ರಾತ್ರಿ. ಇನ್ನೂ ಮೂರನೆ ಪಹರೆ
ಕೋಳಿ ಕೂಗಿದ ಸದ್ದು ಕಿವಿಯಾರೆ ಕೇಳಿದ್ದು
ಸುಳ್ಳಿರಬಹುದೆ? ಅಹ ಮೋಸ ಹೋದೆ-
ನೆಂದು ಮರಳಿದರೆ ಮನೆಗೆ ಏನದು ಒಳಗೆ
ಯಾಕೆ! ನನ್ನ ನಾನೆ ಕಂಡು ಬೆಚ್ಚೆದೆನೆ
ನಿಂತಿದ್ದ ನಿಚ್ಛಾರೂಪಿ ತದ್ವತ್‌ಸ್ವರೂಪಿ
ಕತ್ತಲಿನ ಮರೆಯಲ್ಲಿ ನನ್ನನಣಕಿಸುವ ರೀತಿಯಲಿ
ಸ್ವಂತ ಬಯಕೆಗಳಭಿವ್ಯಕ್ತಿಯಂತೊಬ್ಬ ವ್ಯಕ್ತಿ!
ಸಿಡಿದೆದ್ದ ಕೋಪವೆ ಕೈಬಿಟ್ಟ ಶಾಪವೆ
ಹಿಂದೆ ಬರುವುದೆಂತು ತುಟಿಮೀರಿದ ಮಾತು
ಕಲ್ಲಾದವನು ನೀನಲ್ಲ ನಾನು!

ಇಂದ್ರ:

ಬೆಳಕು ಮೂಡಿರಲಿಲ್ಲ ಕೋಳಿ ಕೂಗಿರಲಿಲ್ಲ-
ಕೂಗಿದುದು ಕಾಮ ಎಲೆ ಗೌತಮ
ಕೇಳು! ಕಾನನ ತುಂಬ ತುಂಬಿ ಕಡುಮೌನ
ನೆಲವೆಲ್ಲ ಹರಡಿದ್ದ ದಟ್ಟ ಎಲೆಗಳ ಮೆಲ್ಲ
ಸದ್ದಾಗದ ತರದಿ ಮೆಟ್ಟಿ ನಡೆದೆನು ಹಾದಿ
ಮಲಗಿದ್ದ ಮನದನ್ನೆ ಕಂಡ ಕನಸನ್ನೆ
ಹೊಕ್ಕವನು ನಾನು ತನುವಿರದವನು
ನನಗಿಲ್ಲ ನೆರಳು ನಾನು ಕೇವಲ ಮರುಳು
ಉದಯದ ಆಸೆಯಲಿ ಸಂಜೆಯ ನಿರಾಸೆಯಲಿ
ಕರೆದವಳು ಯಾರೀಕೆ ಅಂತರಂಗದ ಸನಿಯಕೆ
ನದಿಯೋ ಭೂಮಿಯೊ ಕೇವಲ ಕಲ್ಪನೆಯೊ
ನಾದವೊ ವರ್ಣವೊ ಸ್ಪರ್ಶದ ಸೆಳವೊ
ತಿಳಿಯಲಿ ಹೇಗೆ ತಿಳಿಯದೆ ಪಡೆಯಲಿ ಹೇಗೆ
ಪಡೆಯಲೆಂದೇ ಬಂದು ಪಡೆದುಕೊಂಡಂದು
ನನ್ನ ಕನಸನೆ ನಾನು ಒಡೆದುಕೊಂಡೆನೆ
ಹೇಳು ಮನವೆ ಇದು ಇನ್ನೊಂದು ದಿನವೆ?

ಕವಿ:

ದೈವವಿರಲಿಲ್ಲ ಯಾವ ದೇವರೂ ಬರಲಿಲ್ಲ
ಬಂದವನೊಬ್ಬ ಮಾನವ ಶಿಲೆಯಿಂದ ಶಿಲ್ಪವ
ತೆಗೆಯ ಬಯಸಿದನು, ಬಿಡಿಸಬಬಯಸಿದನು
ಶಾಪದ ಸರೆಯಿಂದ ಆ ಅಂಥ ಛಂದ
ಕಣ್ಣುಗಳೆಲ್ಲಿ ತುಟಿಗಳೆಲ್ಲಿ ತೋಳುಗಳೆಲ್ಲಿ
ಎಲ್ಲಿ ಮರ್ತ್ಯಕ್ಕೆ ಸ್ವರ್ಗವ ತಂದ ನಿಸರ್ಗ
ಎವೆಯದುರಿತೆ ಮುಟ್ಟಿದ ಕೈ ಕಂಪಿಸಿತೆ
ಉಳಿಯ ಹೊಡೆತವೊ ಅದು ನಾಡಿ ಮಿಡಿತವೊ
ಯಾರೂ ಇರದಲ್ಲಿ ಉತ್ತರಿಸುವವರಾರಿಲ್ಲ
ಅವರವರ ಭಾವಕ್ಕೆ ತಕ್ಕಂತೆ ರೆಕ್ಕೆ
ತೆರೆಯುವ ಮನಸ್ಸು ಹೂಡುವ ಪ್ರತ್ಯೇಕ ತಪಸ್ಸು
ಅದೋ ಅದೋ! ನೋಡಿ ಸಾವಿರ ಕಣ್ಣು ಒಮ್ಮೆಲೆ ಮೂಡಿ
ಆಹ! ಪ್ರತಿಯೊಂದು ಕಲ್ಪಕೂ ಪ್ರತ್ಯೇಕ ಶಿಲ್ಪ
ಪ್ರತಿಯೊಂದು ಅಬ್ದಕೂ ಅದರದೇ ಶಬ್ದ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...