Home / ಕವನ / ಕವಿತೆ / ಅಹಲ್ಯೆ

ಅಹಲ್ಯೆ

ಇಂದ್ರ:

ಹಚ್ಚಿ ಹೊಗೆಬತ್ತಿ ನೋಡುವೆನು ಕಣ್ಣೆತ್ತಿ
ಬಾರಿಬಾರಿಗು ಜೀವದ ಪವಾಡ ಕೋರಿ
ನಿನ್ನೆಯಷ್ಟೇ ಬದುಕು ಮೈತುಂಬಿ ಉದ್ದಕು
ನಿಂತಿದ್ದ ಒಡಲು ಇಂದು ಕೇವಲ ಕಲ್ಲು
ಎಂದರೆ ನಂಬುವೆನೆ ನೊಡುವ ಕಣ್ಣುಗಳನೆ
ಒಬ್ಬಾತನ ಸ್ನೇಹದಲಿ ಇನ್ನೊಬ್ಬನ ಮೋಹ
ಹಿಡಿಯಬಯಸಿದವಳೆ ಎರಡನೊಮ್ಮೆಲೆ
ಎಳಸಿದವಳೆ ಕೇಳು ನನ್ನ ಕರೆ! ಏಳು
ಎದ್ದೇಳು ನಿದ್ದೆಯಿಂದ ಹುಟ್ಟು ಶಿಲೆಯೊಳಗಿಂದ
ನಡೆಯಲಿ ಪಾದ ಕೇಳಿಸಲಿ ಕಂಠದ ನಾದ
ಮರ್ತ್ಯದ ಸಕಲ ಸಾರ ಪಡೆಯೆ ಆಕಾರ
ಎಲೆ ಚೆಲುವೆ ನೀ ಯಾರ ಕಾಯುತಿರುವೆ
ಯಾವ ಯುಗದ ದೈವ ಕೊಡುವುದು ಜೀವ?

ಆಹಲ್ಯೆ:

ಪಾಷಾಣವೆಂಬ ಸ್ಥಿತಿ ಎಷ್ಟೊಂದು ಕಠಿಣ-
ವೆಂಬುದನು ಯಾರಿಗೆ ತಿಳಿಸುವೆನು ಹೇಗೆ!
ಚಲಿಸಲಾರೆನು ಕೈಯ ಸ್ಪಂದಿಸದು ಹೃದಯ
ತಡವಲಾರದ ಬೆರಳು ಸರಿಸಲಾರದ ಕುರುಳು
ಯುಗವೆ ಕಳೆದಿದೆ ಮೈಯ ಹೊರಳಿಸದೆ
ಮಾತು ಮರೆತಿರುವೆ ಇದ್ದರೂ ಇರದಿರುವೆ
ತೆರೆದು ಮಳೆಬಿಸಿಲಿಗೆ ಬಿದ್ದರೂ ಹೀಗೆ
ಮುದುಡುವಂತಿಲ್ಲ ಬಾಡುವಂತಿಲ್ಲ
ಸಕಲ ದಾಹಗಳನೊಮ್ಮೆಲೆ ತಣಿಸಿದಂತಿದೆ ದೇಹ
ಅಹ್! ಇನ್ನೇಕೆ ಮಾತು ದಾಹದ ಕುರಿತು?
ನೆನಪುಗಳಿರದ ಯಾವ ಭಯವೂ ಇರದ
ಎಷ್ಟೊಂದು ಮಾಗಿ ಮೈಮೇಲೆ ಸಾಗಿ
ಇನ್ನೊಂದು ಯುಗದಲ್ಲಿ ಎಷ್ಟೊಂದು ಮನದಲ್ಲಿ
ಏಳಲೇಕೆ ಇಂಥ ಗತಿ ಮತ್ತೆ ಬೇಕೆ?

ಗೌತಮ:

ಇಷ್ಟು ಬೇಗನೆ ಮೂಡಿತೆ ಮುಂಜಾನೆ-
ಯೆಂದು ಬರಿಗಾಲಿನಲಿ ನಿದ್ದೆಗಣ್ಣಿನಲಿ
ನದಿಯ ತೀರಕೆ ಬಂದು ಎಂದಿನಂತೆಯ ಮಿಂದು
ನೋಡಿದರೆ ರಾತ್ರಿ. ಇನ್ನೂ ಮೂರನೆ ಪಹರೆ
ಕೋಳಿ ಕೂಗಿದ ಸದ್ದು ಕಿವಿಯಾರೆ ಕೇಳಿದ್ದು
ಸುಳ್ಳಿರಬಹುದೆ? ಅಹ ಮೋಸ ಹೋದೆ-
ನೆಂದು ಮರಳಿದರೆ ಮನೆಗೆ ಏನದು ಒಳಗೆ
ಯಾಕೆ! ನನ್ನ ನಾನೆ ಕಂಡು ಬೆಚ್ಚೆದೆನೆ
ನಿಂತಿದ್ದ ನಿಚ್ಛಾರೂಪಿ ತದ್ವತ್‌ಸ್ವರೂಪಿ
ಕತ್ತಲಿನ ಮರೆಯಲ್ಲಿ ನನ್ನನಣಕಿಸುವ ರೀತಿಯಲಿ
ಸ್ವಂತ ಬಯಕೆಗಳಭಿವ್ಯಕ್ತಿಯಂತೊಬ್ಬ ವ್ಯಕ್ತಿ!
ಸಿಡಿದೆದ್ದ ಕೋಪವೆ ಕೈಬಿಟ್ಟ ಶಾಪವೆ
ಹಿಂದೆ ಬರುವುದೆಂತು ತುಟಿಮೀರಿದ ಮಾತು
ಕಲ್ಲಾದವನು ನೀನಲ್ಲ ನಾನು!

ಇಂದ್ರ:

ಬೆಳಕು ಮೂಡಿರಲಿಲ್ಲ ಕೋಳಿ ಕೂಗಿರಲಿಲ್ಲ-
ಕೂಗಿದುದು ಕಾಮ ಎಲೆ ಗೌತಮ
ಕೇಳು! ಕಾನನ ತುಂಬ ತುಂಬಿ ಕಡುಮೌನ
ನೆಲವೆಲ್ಲ ಹರಡಿದ್ದ ದಟ್ಟ ಎಲೆಗಳ ಮೆಲ್ಲ
ಸದ್ದಾಗದ ತರದಿ ಮೆಟ್ಟಿ ನಡೆದೆನು ಹಾದಿ
ಮಲಗಿದ್ದ ಮನದನ್ನೆ ಕಂಡ ಕನಸನ್ನೆ
ಹೊಕ್ಕವನು ನಾನು ತನುವಿರದವನು
ನನಗಿಲ್ಲ ನೆರಳು ನಾನು ಕೇವಲ ಮರುಳು
ಉದಯದ ಆಸೆಯಲಿ ಸಂಜೆಯ ನಿರಾಸೆಯಲಿ
ಕರೆದವಳು ಯಾರೀಕೆ ಅಂತರಂಗದ ಸನಿಯಕೆ
ನದಿಯೋ ಭೂಮಿಯೊ ಕೇವಲ ಕಲ್ಪನೆಯೊ
ನಾದವೊ ವರ್ಣವೊ ಸ್ಪರ್ಶದ ಸೆಳವೊ
ತಿಳಿಯಲಿ ಹೇಗೆ ತಿಳಿಯದೆ ಪಡೆಯಲಿ ಹೇಗೆ
ಪಡೆಯಲೆಂದೇ ಬಂದು ಪಡೆದುಕೊಂಡಂದು
ನನ್ನ ಕನಸನೆ ನಾನು ಒಡೆದುಕೊಂಡೆನೆ
ಹೇಳು ಮನವೆ ಇದು ಇನ್ನೊಂದು ದಿನವೆ?

ಕವಿ:

ದೈವವಿರಲಿಲ್ಲ ಯಾವ ದೇವರೂ ಬರಲಿಲ್ಲ
ಬಂದವನೊಬ್ಬ ಮಾನವ ಶಿಲೆಯಿಂದ ಶಿಲ್ಪವ
ತೆಗೆಯ ಬಯಸಿದನು, ಬಿಡಿಸಬಬಯಸಿದನು
ಶಾಪದ ಸರೆಯಿಂದ ಆ ಅಂಥ ಛಂದ
ಕಣ್ಣುಗಳೆಲ್ಲಿ ತುಟಿಗಳೆಲ್ಲಿ ತೋಳುಗಳೆಲ್ಲಿ
ಎಲ್ಲಿ ಮರ್ತ್ಯಕ್ಕೆ ಸ್ವರ್ಗವ ತಂದ ನಿಸರ್ಗ
ಎವೆಯದುರಿತೆ ಮುಟ್ಟಿದ ಕೈ ಕಂಪಿಸಿತೆ
ಉಳಿಯ ಹೊಡೆತವೊ ಅದು ನಾಡಿ ಮಿಡಿತವೊ
ಯಾರೂ ಇರದಲ್ಲಿ ಉತ್ತರಿಸುವವರಾರಿಲ್ಲ
ಅವರವರ ಭಾವಕ್ಕೆ ತಕ್ಕಂತೆ ರೆಕ್ಕೆ
ತೆರೆಯುವ ಮನಸ್ಸು ಹೂಡುವ ಪ್ರತ್ಯೇಕ ತಪಸ್ಸು
ಅದೋ ಅದೋ! ನೋಡಿ ಸಾವಿರ ಕಣ್ಣು ಒಮ್ಮೆಲೆ ಮೂಡಿ
ಆಹ! ಪ್ರತಿಯೊಂದು ಕಲ್ಪಕೂ ಪ್ರತ್ಯೇಕ ಶಿಲ್ಪ
ಪ್ರತಿಯೊಂದು ಅಬ್ದಕೂ ಅದರದೇ ಶಬ್ದ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...