Home / ಕವನ / ಕವಿತೆ / ನಾನು ಪ್ರೀತಿಸಿದ ಹುಡುಗಿಯರು

ನಾನು ಪ್ರೀತಿಸಿದ ಹುಡುಗಿಯರು

ಅವರೆಲ್ಲಿದ್ದಾರೆ ಈಗ? ಕಾಲ ಕಾಲಕ್ಕೆ ನನ್ನೆದೆಯ
ತಿದಿಯೊತ್ತಿ ಜೀವಕ್ಕೆ ಜೀವ ಕೊಡುತಿದ್ದವರು?
ಕೆಲವರಿದ್ದರು ಕಾಸರಗೋಡಿನ ಹಳೆಮನೆಗಳಲ್ಲಿ
ದೀಪಗಳಂತೆ ಉರಿಯುತ್ತ-ಇನ್ನು ಕೆಲವರು
ತಿರುವನಂತಪುರದಲ್ಲಿ, ತೀರ ಕೊನೆಯವಳು
ಬಾರ್ಸಿಲೋನಾದ ಯಾವುದೋ ಬೀದಿಯಲ್ಲಿ

ಈಗೆಲ್ಲಿಯೆಂದು ಹೇಳುವುದು ಹೇಗೆ-ಒಬೊಬ್ಬರಿಗು
ಕೊನೆಯ ಪತ್ರ ಬರೆದು ಎಷ್ಟೋ ಕಾಲವಾಗಿದೆ.
ಅವರ ವಿಳಾಸಗಳನ್ನೂ ಹರಿದು ಹಾಕಿದ್ದೇನೆ-
ಅಚಾನಕವಾಗಿ ಎಂದಾದರೂ ಎದುರು ಸಿಕ್ಕಿದರೆ
ಅವರ ಮುಖ ಕೆಂಪಾಗುತ್ತದೆ, ಹೆಜ್ಜೆ ತಡವುತ್ತದೆ,
ಕೈಚೀಲ ಕೆಳಗೆ ಬೀಳುತ್ತದೆ-ಎಂಬ ಭ್ರಮೆ ನನಗಿಲ್ಲ.

ಒಬ್ಬಳಿದ್ದಳು ದೈವವಿಶ್ವಾಸಿ-ಪ್ರೇಮದಲ್ಲಿ ತನ್ನ
ದೈವವನ್ನು ಕಾಣಬೇಕೆನ್ನುತ್ತಿದ್ದಳು, ಇನ್ನೊಬ್ಬಾಕೆ
ಕ್ರಾಂತಿಕಾರಿಣಿ ಇಡಿಯ ಸಮುದಾಯವನ್ನೆ ತಿದ್ದಲೆಳಸಿದ್ದಳು;
ಮಗದೊಬ್ಬಳು ಕನಸುಗಾರ್ತಿ, ಎಲ್ಲ ಕಡೆಯೂ ತನ್ನ
ಪ್ರತಿಬಿಂಬಗಳನ್ನೆ ಕಾಣುತಿದ್ದಳು-ನನ್ನ ಮಾನಸದಲ್ಲಿ
ಒಬ್ಬರ ಮೇಲೊಬ್ಬರಂತೆ ಅಲೆಯೆಬ್ಬಿಸಿ ಹೋದರು

ಕೈಗೊಳ್ಳಲೆ ನಾನೊಂದು ತೀರ್ಥಯಾತ್ರೆ. ಒಬ್ಬೊಬ್ಬರನು
ಹುಡುಕುತ್ತ ಅರಿಯದ ಪ್ರದೇಶಗಳಲ್ಲಿ ಅಪರಿಚಿತ ದೇಶಗಳಲ್ಲಿ
ಅವರಿವರ ಕೇಳುತ್ತ ತೋಚಿದ ಕಾರಣಗಳ ಕೊಡುತ್ತ
ಸಂತೆ ಸೇರಿದಲ್ಲಿ ಸೇರಿ ರಾತ್ರಿಗೆ ಮೊದಲೆ ಹರದಾರಿ ಸಾಗಿ
ಕತ್ತಲಾದಲ್ಲಿ ಮಲಗಿ ಮುಂಜಾವದ ಬೆಳಕಿನಲ್ಲಿ ನಡೆದು
ಕಾಣುವೆನೆ ನಾನು ಕಾಣಬೇಕೆಂದು ಬಯಸಿದವರ?

ಗುರುತು ಬದಲಾಗಿರಬಹುದೆ? ಮಕ್ಕಳಾಗಿರಬಹುದೆ?
ಮೈಮನಸ್ಸಿನ ಬಿಗಿತ ಸಡಿಲಗೊಂಡಿರಬಹುದೆ?
ಹಳೆಯ ಹಟಗಳನೀಗ ಬಿಟ್ಟುಕೊಟ್ಟಿರಬಹುದೆ ?
ಗತಕಾಲದ ನೆನಪು-ಹೂವಿನಂತಹ ಕದಪು
ಜರ್ಜರಿತವಾಗಿರಬಹುದೆ ಇನ್ನೆಂದು ಮರುಕಳಿಸದಂತೆ
ಬೇರೆ ಗಂಡಸರ ನಿರಂಕುಶ ಪ್ರಭುತ್ವಕ್ಕೆ ಸಿಕ್ಕು?

ಹೀಗೊಂದು ಬೀದಿಯಲಿ ಕಂಡೆನೊಬ್ಬಳನೆನಿಸಿ
ಬದಿಯ ಹೋಟೆಲ ಹೊಕ್ಕು ದಿಕ್ಕು ತೋಚದೆ ಕುಳಿತೆ.
ಕುಳಿತಿದ್ದನೊಬ್ಬಾತ ಇಳಿವಯಸ್ಕ ಅನ್ಯಮನಸ್ಕ
ಗುಳಿಬಿದ್ದ ಕಣ್ಣುಗಳ ಹಾಯಿಸಿ ಬೀದಿಯ ಕಡೆಗೆ
ಹಾಯುತಿದ್ದುವು ಅವನ ಮುಖದ ಸುಕ್ಕುಗಳ ಮೇಲೆ
ಎಷ್ಟೋ ಚಿತ್ರಗಳ ಸರಮಾಲೆ ಎಷ್ಟೋ ಸಮುದ್ರಗಳ ಅಲೆ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...