Home / ಕವನ / ಕವಿತೆ / ಸ್ವಲ್ಪ ತಡಿ, ಮೋಡ ಹೋಗಲಿ, ಚಂದ್ರ ಬರುತ್ತಾನೆ

ಸ್ವಲ್ಪ ತಡಿ, ಮೋಡ ಹೋಗಲಿ, ಚಂದ್ರ ಬರುತ್ತಾನೆ

ಸ್ವಲ್ಪ ತಡಿ, ನೋಡ ಹೋಗಲಿ, ಚಂದ್ರ ಮತ್ತೆ ಬರುತ್ತಾನೆ.
ಅಲ್ಲಿ ಕಾಣುವ ಗೋಡೆಯ ಮೇಲೆ ಬಾಗಿಲ ಸಂದಿನಿಂದ ಬಿದ್ದಿರುವ
ಬೆಳಕನ್ನು ಹಿಡಿಯುವುದಕ್ಕೆ ಆಗುವುದಿಲ್ಲ.
ನೀನು ಹೇಗೆ ಇರಬೇಕು ಅಂದುಕೊಳ್ಳುತ್ತೀಯೋ
ಹಾಗೆ ಇರುವುದಕ್ಕೆ ಆಗುವುದಿಲ್ಲ.
ಚಳಿಗಾಲದಲ್ಲಿ ಗೋಪುರದ ದೊಡ್ಡ ಗಂಟೆಯ ಸದ್ದಿನ ಹಾಗೆ
ಮನಸ್ಸು ಕಲಕುವ ರಾಗದ ಹಾಗೆ
ನಿನ್ನ ಮನಸ್ಸು ಭಾರವಾಗಿದೆ.
ವಿಷ ತಿಂದ ನೋಣ ಸಾಯುವ ಮೊದಲು
ತಲೆ ತಿರುಗಿ ಹಾರಿ ಹಾರಿ ಕೆಳಗೆ ಬಿದ್ದು ಒದ್ದಾಡುವ ಹಾಗೆ
ನಿನ್ನ ಮನಸ್ಸು ಅಲ್ಲಲ್ಲಿ ರೆಕ್ಕೆ ಬಡಿಯುತ್ತೆ, ಒದ್ದಾಡುತ್ತೆ,
ನಿನ್ನೆ ಆಗಿದ್ದು ಜ್ಞಾಪಿಸಿಕೊಂಡು ನೋಯುತ್ತೆ.

ಮಾತು ಚುಚ್ಚುತ್ತೆ, ಮಾತು ನೋಯಿಸುತ್ತೆ
ಯಾವುದೋ ಮಾತು ಗೊತ್ತಿಲ್ಲದ ಯಾವುದೋ ಮುಖವನ್ನು ತೋರಿಸುತ್ತೆ-
ನಮ್ಮ ಮುಖ, ಜನದ ಮುಖ.
ಸಗಣಿ ನೀರಿನಂಥ ಡಾಂಬರಿನಂಥ, ಕಲ್ಲಿದ್ದಲಿನಂಥ ಮಾತು
ಮಾತು ಗಾಳಿಯಾಗುವುದಕ್ಕಿಂತ ಬೇಗ
ಜನದ ಮುಖ ಬದಲಾಯಿಸುತ್ತೆ.
ನಗು ಸೇಡಿನ ಸೂಜಿಯಾಗಿ ರೊಚ್ಚಿನ ಹೊಲಿಗೆ ಹಾಕುತ್ತೆ
ಮರೆತು ಹೋಗುತ್ತೆ, ದ್ವೇಷ ಆತ್ಮೀಯತೆ ಆಗುತ್ತೆ.
ಅದೂ ಮರೆತು ಹೋಗುತ್ತೆ.
ಭಿಕ್ಷುಕರು,- ಯಾರು ಕಾಸು ಕೊಟ್ಟರು
ಯಾರು ತಿಂಡಿ ಕೊಟ್ಟರು, ಯಾರು ಮುಖಕ್ಕೆ ಉಗಿದು ಬಯ್ದರು
ಎನ್ನುವುದೆಲ್ಲಾ ಮರೆತು ಹೋಗುತ್ತಾರೆ.
ಕಂಡಿದ್ದು ಕಾಣುವಷ್ಟು ಹೊತ್ತು ನಿಜ.
ಆದರೆ ನೊಂದವರಿಗೆ ಮಾತ್ರ ನೆನಪು.

ಸಾಕು ನಿಲ್ಲಿಸು. ಸುಮ್ಮನೆ ಹೆಣ್ಣು ಕೋಗಿಲೆಯ ಹಾಗೆ
ವಟವಟಾ ರಾಗ ಹಾಡಬೇಡ. Sorry.
ಹೀಗೆ ಒಳ್ಳೆ ತಿದೀ ಹಾಗೆ ನಿಟ್ಟುಸಿರು ಬಿಡಬೇಡ.
ನೆಲದ ಮೇಲೆ ಬಿದ್ದು ಒದ್ದಾಡಿ ಹೊರಳಾಡಬೇಡ
ಹಾವಿನ ಪೊರೆ ಕಳಚುವಾಗ,
ಹಳೆಯ ಎಲೆ ಉದುರಿ ಹೊಸ ಚಿಗುರು ಬರುವಾಗ,
ಬೆಳೆಯುವಾಗ, ಇನ್ನೂ ಹೆಚ್ಚು ಹಿಂಸೆಯಾಗುತ್ತೆ, ಗೊತ್ತ.

ದುಃಖದ ಸಮುದ್ರವನ್ನು ನಿನ್ನ ರೆಪ್ಪೆಯ ಹಿಂದೆ,
ತೆಳ್ಳನೆ ತುಟಿಗಳ ಹಿಂದೆ ಬಚ್ಚಿಡಬೇಡ.
ಮಳೆಗೆ ಮುಂಚೆ ಇರುವ ಧಗೆಯ ಹಾಗೆ ಬೇಯುತ್ತ ಇರಬೇಡ.
ಅಳುವುದಿದ್ದರೆ ನನ್ನ ತೋಳಿನೊಳಗೆ ನನ್ನ ಎದೆಗೆ ಒರಗಿಕೊಂಡು ಅತ್ತುಬಿಡು.
ನಿಜವಾದ ದುಃಖ ಅಮೂಲ್ಯ.
ನಿನ್ನ ದುಃಖಕ್ಕೆ ಒಂದು ಆಕಾರ ಕೊಡು.
ದೇವರೆ, ಇವಳೇಕೆ ಹೀಗೆ ನನ್ನ ತಪ್ಪು ತಿಳಿಯುತ್ತಾಳೆ-
ನನ್ನ ಮೈ ಬಿಸಿಯನ್ನು ಅವಳ ಬಿಸಿಯೊಡನೆ ಕರಗಿಸಿ
ಎರಕ ಹೊಯ್ಯುವ ಆಸೆ ಭುಗಿಲೆದ್ದಿದೆ ಎಂದೇಕೆ ಅರ್ಥಮಾಡಿಕೊಳ್ಳುತ್ತಾಳೆ?
ಅವಳ ಹಿಂಸೆಯಿಂದ ನನಗೂ ಹಿಂಸೆಯಾಗುತ್ತಿದೆ,
ಸಮಾಧಾನ ಮಾಡಲಾಗದ ಹಿಂಸೆ,
ನಾನು ಅವಳಿಗೆ ಅರ್ಥವಾಗದ ಹಿಂಸೆ,
ಅವಳ ದುಃಖದ ಬಿಸಿ ಕಡಿಮೆಯಾಗುತ್ತಿದ್ದ ಹಾಗೆ
ನನ್ನ ಮನಸ್ಸಿನ ಮುಂದೆ ಕಂಡು ಕರೆಯ ತೊಡಗುವ,
ಅವಳ ದುಃಖದ ಬೆಲೆ ಇಳಿಸುವ
ಬೇರೆ ಮುಖಗಳ, ಮಾತುಗಳ ಹಿಂಸೆ.

ಕಾಲದ ನೀರಿನಲ್ಲಿ ಎಲ್ಲ ಕರಗಿ ಹೋಗುತ್ತೆ.
ನೀನು ನಾನು ದಿನ ನಿತ್ಯದ ಸಾವಿರ ವಿವರಗಳಲ್ಲಿ ಹಂಚಿಹೋಗುತ್ತ
ನಿನ್ನೆಯ ಘಟನೆ ಮರೆಯುತ್ತಾ ಹೋಗುತ್ತೆ.
ಮುಂದೆ ಯಾವತ್ತಾದರೂ ಜ್ಞಾಪಕ ಆದರೆ
ಮರೆತು ಹೋದ ಹಾಡಿನ ಪಲ್ಲವಿ ಮಾತ್ರ ಜ್ಞಾಪಕ ಬಂದ ಹಾಗಿರುತ್ತೆ.
ಆಮೇಲೆ, ಇನ್ನೂ ಕೆಲವು ಕಾಲ ಆದಮೇಲೆ, ಅದು
ಮನಸ್ಸು ಸ್ವಲ್ಪ ಹೊತ್ತು ಬಿಕೋ ಅನ್ನಿಸುವ ಹಾಗೆ
ಮಾಡುವ ಭಾವನೆ ಆಗುತ್ತೆ.
ಇನ್ನೂ ಆಮೇಲೆ, ಎಷ್ಟು ಜ್ಞಾಪಿಸಿಕೊಂಡರೂ
ಜ್ಞಾಪಕ ಬರದ ರಾತ್ರಿಯ ಕನಸಿನ ಹಾಗಾಗುತ್ತೆ.
ಆಗ ನಾವು ಸತ್ತು ಹೋಗುತ್ತೇವೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...