Home / ಕವನ / ಕವಿತೆ / ಹಾಲಾಹಲಕ್ಕೆ ನಿಮ್ಮಲ್ಲಿ ಮದ್ದುಂಟೇನು?

ಹಾಲಾಹಲಕ್ಕೆ ನಿಮ್ಮಲ್ಲಿ ಮದ್ದುಂಟೇನು?

ನನ್ನೊಳಗೆ ನಿನ್ನ ಕಾಪಿಟ್ಟುಕೊಳ್ಳುದಕ್ಕೆ
ಪಕ್ಕಾಗಿದ್ದೇನೆ.
ಅನ್ಯಥಾ ನೀರಿನಲೆಗಳ ನಡುವೆ
ಸುಳಿಯ ನರ್ತನಕೆ ಕುಣಿವ ತರಗಲೆಯಲ್ಲ ನಾನು
ಗೋಣು ಅಲ್ಲಾಡಿಸುವುದ ಮರೆತುಬಿಟ್ಟವಳು.
ಸೊಕ್ಕಿನವಳೆಂದು ಜರಿದು ಅನೇಕ ಮೂಗುತಿಗಳು
ನನ್ನೊಂದಿಗೆ ಮಾತುಬಿಟ್ಟವು. ಆದರೂ
ಬಯಲ ಗಾಳಿಗೆ ಬೇಲಿ ಹಾಕಲು ಕಂಬಗಳ
ಜೋಡಿಸುತ್ತಿರುವೆ.
ನನ್ನೊಂದಿಗೆ ನೀವು ಬರುವಿರೇನು?

ನನ್ನೊಂದಿಗೆ ನಿನ್ನುಸಿರ ಬೆಸೆದುಕೊಂಡಿದ್ದೇನೆ.
ಅನ್ಯಥಾ ಕಾಲಬೆರಳಿಂದ ನೆಲವ ಬಗಿಯುತ್ತ
ನಿಂತ ನೀರೆಯರಂತೆ ನಿನ್ನ ಕೆಂಗಣ್ಣಿಗೆ
ನಖಶಿಖಾಂತ ನಡುಕದ ಶಾಲು ಹೊದ್ದುಕೊಳ್ಳಲಾರೆ ನಾನು.
ಉರಿವಾಗ್ನಿಯಾಗೇ ಪ್ರಜ್ವಲಿಸಬಲ್ಲವಳು.
ಗಂಡಿಗಿಲ್ಲದ ಕೊಬ್ಬಿನವಳೆಂದು ಅನೇಕ ಹೂಮುಡಿಗಳು
ಹಂಗಿಸಿ ಮುಖತಿರುವಿದವು. ಆದರೂ
ಮನೆಯ ಜಂತಿಯ ನಾಜೂಕಾಗೇ ಜೋಡಿಸುತಿರುವೆ.
ನನ್ನೊಂದಿಗೆ ನೀವು ಬರುವಿರೇನು?

ನನ್ನ ದೇಹದ ತುಂಬಾ ನಿನ್ನತ್ತರಿನ
ಪರಿಮಳವ ಪೂಸಿಕೊಂಡಿದ್ದೇನೆ.
ಅನ್ಯಥಾ ನಿನ್ನ ಕಣ್ಣೋಟದಂಚಲ್ಲಿಯ
ಅಪರಿಮಿತ ವಿಪರೀತ ವಾಂಛೆಯ ಅರಿಯದೇ
ಕೆರೆಯ ದಂಡೆಯ ಅಲೆಗಳಿಗೆ ಅಳಿಸಿಹೋಗುವ
ಮರಳ ಹೆಜ್ಜೆಯಾಗಲಾರೆ ನಾನು.
ನನ್ನೊಳಗಿನ ಒರತೆಗೆ ನಾನೇ ಸೆಲೆಯಾಗಬಲ್ಲವಳು
ಪ್ರಾಯದ ಹೆಣ್ಣಿನ ಪರಕಾಯ ಪ್ರವೇಶವೆಂದು ಅನೇಕ
ನೆರೆತ ಕೂದಲ ಹೆಪ್ಪುಗಟ್ಟಿದ ಕೈಗಳು
ಕೊಂಕು ನುಡಿದು ಮರೆಯಾದರು. ಆದರೂ
ಉಷ್ಣವಲಯದ ಬಿಸಿಗೆ ಬೆಣ್ಣೆಯ ಕಾಯಲಿಟ್ಟಿರುವೆ
ತುಪ್ಪದ ಘಮ ಬೆರೆಸಲು.
ನನ್ನೊಂದಿಗೆ ನೀವು ಬರುವಿರೇನು?

ನನ್ನ ಹೃದಯರಾಗ ಮೀಟುವ ತಂಬೂರ ನೀನು
ಅನ್ಯಥಾ ನೀರೆ ನಿಯಾಮಕಳಲ್ಲ
ಎಂಬ ನಿನ್ನ ಎತ್ತಿದ ಕಂಠದ ಕುಹಕ ಗಾನಕ್ಕೆ
ಕಿವುಡಾಗಲಾರೆ ನಾನು.
ನಿನಗಾಗೇ ಕಂಚಿನ ಕಂಠವ ಎರವಲು ಪಡೆದವಳು.
ನಯನಾಜೂಕಿನ ನಕಲು ಪಡೆದ ಹೆರಳುಗಳು
ತುಟಿಕೊಂಕಿಸಿ ಬೆನ್ನು ತಿರುವಿದರು. ಆದರೂ
ರಾಗಮಾಲಿಕೆಯ ಮಧುರ ಮಂಜುಳಗಾನಕ್ಕೆ
ತಾಲೀಮು ರಂಗವನ್ನು ಸಿದ್ಧಗೊಳಿಸುತ್ತಿರುವೆ.
ನನ್ನೊಂದಿಗೆ ನೀವು ಬರುವಿರೇನು?

ಕಣ್ಣೊರೆಸುವ ಹಸ್ತಗಳು ಮಸಿಯಲ್ಲಾಡಿಸಿ ಕೈಗಳ
ಮುಖಕ್ಕೆ ಬಳಿಯುತ್ತ ನಗುತ್ತಿವೆ
ಬೆಂಕಿಯನ್ನು ಎದೆಗಿಳಿಸುವುದನ್ನೇ ಕಲಿತು ಬಂದ
ತೊಗಟೆ ಕೈಗಳು ಕುತ್ತಿಗೆ ಹಿಸುಕುತ್ತಿವೆ.
ಮೃದ್ವಂಗಿಯ ಮೆತ್ತಗೆ ಹಿಡಿದು ಹಸ್ತದೊಳಗೆ
ಜೋಪಾನ ಎನ್ನುತ್ತಾ ಅಲ್ಲೆ ಅದುಮಿ ಬಿಡುವ
ಹಸ್ತಗಳದೇ ಭಯ.
ಮೈತುಂಬಾ ಬಿರುಬಿಸಿಲ ನೀರ ಬೊಕ್ಕೆಗಳು.
ತೈಲ ಮಾಲೀಷು ಕೂಡಾ ಶಮನಗೈಯದಂತೆ
ಮೈಮನದ ಹಾಲಾಹಲ ಹೆಚ್ಚುತ್ತಲೇ ಇದೆ.
ಉಪಶಮನಕ್ಕೆ ನಿಮ್ಮಲ್ಲಿ ಮದ್ದುಂಟೇನು?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...