Home / ಕವನ / ಕವಿತೆ / ಸೀಮಂತಿನಿ

ಸೀಮಂತಿನಿ

ಯಾರಿವಳು?
ಇದ್ದಕ್ಕಿದ್ದಂತೆ ಪಕ್ಕದಲೆ ಬದಲಾದವಳು?
ಗಂಡನೆಂಬವನನ್ನ ಕಂಡ ಕಂಡಂತೆಯೇ
ಕಂದ ಎಂಬಂತೆ ಮಮತೆಯಲಿ ಮಾತಾಡುವಳು!
ಅಪ್ಪ ಬಂದವನನ್ನು ತಪ್ಪು ಮಾಡಿದ ಎಳೆಯನಂತೆ
ಉಡಿಯಲ್ಲಿ ಹಾಕಿ ಶಮಿಸಿದವಳು
ಗುಟುರು ಮದವನು ಮೆಟ್ಟಿ ಎದ್ದ ಹೆಡೆಯನು ತಟ್ಟಿ
ಹೊಲೆಗಸದ ತೊಟ್ಟಿಯನು ಹೀಗೆ ತೊಳೆದವಳು?

ಇವಳೆ
ಬೆನ್ನ ಬಳಿ ಬಂದು ಕೊರಳಿಗೆ ತೂಗುತಿದ್ದವಳು?
ಕೈಯ ಪುಸ್ತಕವನ್ನು ಕಿತ್ತು ಗೂಡೊಳಗೆಸೆದು
ಸಾಕು ಬಿಡಿ ಸನ್ಯಾಸ ಎಂದು ತೋಳೆಳೆದವಳು!
ಕೆನ್ನೆಯಲಿ ಬೆರಳಿಟ್ಬು
ಕೊರಳ ಸರ ತುಟಿಗಿಟ್ಬು
ಏನೊ ಕಕಮಕ ಹಿಡಿಸಿ ಗೆದ್ದು ನಕ್ಕವಳು?
ಈಗ ಅದೆ ಹುಡುಗಿ
ಬೇಸಿಗೆಯ ಉರಿಗಣ್ಣ
ಬೆಳುದಿಂಗಳಲಿ ತೊಳೆದು
ಗರ್ಭಗುಡಿ ಹಣತೆಯನು ಹಚ್ಚಿರುವಳು ;
ಮೊನ್ನೆ ಸೀಮಂತದಲಿ ಹಸೆಯೇರಿದಾಗಿಂದ
ಜಗದಂಬೆ ಭಾವಕ್ಕೆ ಸಂದಿರುವಳು!

ಒಲೆ ಮೇಲೆ ಅನ್ನ ಸೀಯುತ್ತೆಲಿದೆ ಮೊನ್ನೆ;
ಎದುರಿಗೇ ಕುಳಿತು
ಹಾಲಪಾತ್ರೆಗೆ ಬಿದ್ದ ಇರುವೆಗಳ ಮೇಲೆತ್ತಿ
ನೆಲಕಿಳಿಸಿ ಹರಿಯಬಿಡುತಿದ್ದಾಳೆ, ಒಂದೊಂದೆ !
ಪೊರಕೆ ತುದಿಯಲಿ ಹಿಂದೆ
ಜಿರಲೆಗಳ ಬಡಿದವಳು ಇವಳೆ ?

“ಪಾಪ” ಎಂದರೆ – ‘ಅಹ! ಶುದ್ದ ಕನ್ನಡಿಗ’
ಎ೦ದು ಛೇಡಿಸಿದವಳು!
ಈಗ ಹೊರಳಿದೆ ಕರುಳು,
ಮೊದಲ ಬಾರಿಗೆ ಬಸಿರ ಸವರಿದೆ ಯಶೋದೆಯ
ಬೆಣ್ಣೆ ಬೆರಳು.

ಎಲ್ಲಿ ತಲೆಮರೆಸಿಕೊಂಡುವೊ ಏನೊ ಈಗಿವಳ
ಸಿನಿಮ ಹೋಟೆಲುಗಳಿಗೆ ಅಲೆವ ಚೆಪಲ,
ಆಗೀಗ (ನನ್ನನೂ ಜೊತೆಗೆಳೆದುಕೊಂಡು!)
ದೇವಸ್ಥಾನ ಯಾತ್ರೆಯಷ್ಟೇ ಈಗ ಎಲ್ಲ!
ಮುಡಿತುಂಬ ಹಣೆತುಂಬ ಕೈತುಂಬ ತನ್ನೆಲ್ಲ
ಮಾಂಗಲ್ಯ ಸೌಭಾಗ್ಯ ಮೆರೆಸಿ,
ಶಾಂತಮುಖದೊಳಗೊಂದು ಮರುಳುನಗೆ ನಿಲಿಸಿ,
ಇವಳೀಗ ಕಾರ್ತೀಕದಾಗಸದ ಹಾಡು,
ಕಣ್ಣೊ ಹುಣ್ಣಿಮೆಯಿರುಳ ಕಡಲ ಬೀಡು!

ಜೊತೆಗೆ ನಡೆವಾಗ
ನನ್ನ ಹೆಜ್ಜೆಗು ಹೆಜ್ಜೆ ಮುಂದೆಯಿಟ್ಬು,
ಈಗ? ಎಂಬಂತೆ ಹುಬ್ಬೆತ್ತರಿಸಿ ನಕ್ಕು ಸ್ಪರ್ಧಿಸಿದ್ದವಳು
ಈಗೆಲ್ಲ ಅಬ್ಬರ ಬಿಟ್ಟು
ಕಾಲೆಳೆಯುವಳು ಏಕೊ ತೀರ.
ಕನಸುಗಣ್ಣಿಗೆ ದಾರಿಯಲ್ಲು ಏನೋ ಧ್ಯಾನ,
ಮೈ ಮಾತ್ರ ಇಲ್ಲಿ ಮನಸೆಲ್ಲೊ ಹೊರಟಿದೆ ಯಾನ,
ಅಡಿಗಡಿಗು ಒ೦ದೊ೦ದು ಗುಡಿಕಟ್ಚಿ ಬಾಗಿಲಲಿ
ಹೊರಳಿ ಬೇಡಿದೆ ಮಗುವಿಗಭಯದಾನ.
ಎಲ್ಲ ಬಾಳಲಿ ಎಂಬ ಭಾವ
ಚೆಲ್ಲುತಿದೆ ಕಣ್ಣು, ಅಲುಗಿದೆ ಹೊಟ್ಟೆಯೊಳಗಿರುವ ಪುಟ್ಟ ಜೀವ;
ಗಟ್ಚಿ ಸ್ವಾರ್ಥಕೆ ಈಗ ಮಳೆ ಬಿದ್ದು ಮೈಯೊಡೆದು
ಉಸಿರಾಡುತಿದೆ ಮಣ್ಣ ತೇವ!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...