Home / ಕವನ / ಕವಿತೆ / ವೃತ್ತ

ವೃತ್ತ

ನಿಂತ ನೆಲವೆ ದ್ವೀಪವಾಗಿ
ಕೂಪದಾಳದಲ್ಲಿ ತೂಗಿ
ಕಂದಕವನು ಕಾವಲಾಗಿ
ತೋಡಿದಂತೆ ನನ್ನ ಸುತ್ತ
ಒಂದು ಕಲ್ಲ ವೃತ್ತ.
ಹೃದಯ ಮಿದುಳು ಕಣ್ಣು ಕಿವಿ
ಉಂಡ ಸವಿ, ಮನದ ಗವಿಯ
ತಳದಲೆಲ್ಲೊ ಪಿಸುಗುಟ್ಟುವ
ಪಿತಾಮಹರ ಚಿತ್ತ-
ಕೊರೆದುದಂತೆ ಈ ವಲಯ
ಇದೇ ನನ್ನ ಎಲ್ಲ ಕಲೆಯ
ಗರಡಿಮನೆ, ಗಣೆಯ ಕೊನೆ,
ಬಳಸಿ ಕವಿದ ಹುತ್ತ
ಒಳಗೆ ನೆಲದ ಕೆಳಗೆ ತಳವೆ
ಇರದ ಇರುಳ ಕೊಳವಿಯೊಳಗೆ
ಹತ್ತಿಳಿಯುವೆ ಸದಾ ಹಳಸು-
ಗಾಳಿಯ ಹೀರುತ್ತ.

ಒಂದಲ್ಲ ಹತ್ತಲ್ಲ
ಸುತ್ತ ಕಣ್ಣು ಹರಿವಲ್ಲೆಲ್ಲ
ಹುತ್ತದಂತೆ ಎದ್ದುನಿಂತ
ಇಂಥ ಲಕ್ಷ ವೃತ್ತ.
ಕೆಲಕೆಲವಕೆ ಕಿಂಡಿಯುಂಟು
ಕೆಲಕೆಲವಕೆ ಕಿಟಕಿಯುಂಟು
ದೊಡ್ಡ ದೊಡ್ಡ
ಬಾಗಿಲುಂಟು
ಲಕ್ಷದಲ್ಲಿ ನಾಲ್ಕಕೆ.
ಉಳಿದವುಗಳ ತಳದಲೆಲ್ಲೊ
ಸಣ್ಡದೊಂದು ಸಂದಿದಾರಿ
ಆಮದು ರಫ್ತಿಗೆ ಸಾಲದ
ಗಾಳಿ ಬೆಳಕ ವೈರಿ.

ಕಲ್ಲಗೋಡೆ ಹೊರಗೆ ದಿನಾ
ಬಿಲ್ಲು ಹಿಡಿದ ಎಷ್ಟೊ ಜನ
ಗವಿಯ ತಳದ ಸಂದಿಯಿಂದ
ತೆವಳಿ ಹೊರಗೆ ಬರುವರು.
ಬಾಣ ತೂಗಿ ಬೆನ್ನಿನಲ್ಲಿ
ಏನೊ ಉರಿದು ಕಣ್ಣಿನಲ್ಲಿ
ಬಿಸಿಲು ಕೆರಳುತಿದ್ದೆಂತೆಯೆ
ಸಂತೆ ಸೇರಿ ಕುಣಿವರು.
ನಾಯಿಯ ನಾಲಗೆಯಾದರು
ಕಿವಿಯಿಲ್ಲದ ನಾಗರು;
ಕೆನ್ನೆ ಕೆನ್ನೆ ತಿಕ್ಕಿ ಉಬ್ಬಿ
ಬೆನ್ನು ಬೆನ್ನು ಕೊಟ್ಟು ದಬ್ಬಿ
ಬೇತಾಳಕೆ ಕಾಮವರ್ಧಿನೀ ರಾಗವ ಹಬ್ಬಿ
ಸೊಕ್ಕಿ ಕೆರಳುಗೊರಳಿನಲ್ಲಿ
ಭೂತಕುಣಿತ ಕುಣಿವರು;
ಬಿಸಿಲಾರಿತೊ ಎಲ್ಲ ಓಡಿ ಗವಿಯ ತಳಕೆ ಸರಿವರು.

ಇವರ ನಡುವೆ ಬೆರೆಯದೆ
ಕಂಡವರನು ಕರೆಯದೆ
ಎಲ್ಲೊ ನಾಲ್ಕು ಜನರು ಅಲ್ಲೆ ದೂರದಲ್ಲಿ ನಿಲುವರು.
ಬಾವಿಗಣ್ಣು ಈಟಿಮೂಗು
ಬಡಕಲು ಮೈಯವರು.
ಗುಂಡಿಗೆನ್ನೆ ಬಟ್ಟತಲೆ
ಹೆಚ್ಚು ಹೊದೆಯದವರು.
ಶಾಂತರಾಗಿ ದೂರ ನಿಂತು
ಚಿಂತೆ ತುಡಿವ ಕಣ್ಣಿನಿಂದ
ಸಂತೆಯತ್ತ ನೋಡಿ ಖಿನ್ನರಾಗಿ ಹಿಂದೆ ಸರಿವರು.

ಸದಾ ಹೊರಗೆ ನಿಲುವ ಇವರು
ಅಪ್ಪಿತಪ್ಪಿ ಎಲ್ಲೊ ಒಮ್ಮೆ
ವೃತ್ತದಲ್ಲಿ ಸರಿವರು,
ಕಿಟಕಿ ಬಾಗಿಲನ್ನು ಮಾತ್ರ ಸದಾ ತೆರೆದೆ ಇರುವರು.
ಯಾರಿವರು, ಯಾರಿವರು?
ಎಷ್ಟು ಅಳೆದು ಸುರಿದರೂ
ಇಷ್ಟು ವರುಷ ಕಂಡರೂ
ತಿಳಿಯದೆ ಹೋದವರು?

ಬಿಸಿಲಿನಲ್ಲಿ ನೆರೆದ ಸಂತೆ
ಸಂಜೆಯಿಳಿದು ಕರಗುತಿದೆ,
ಸೊಕ್ಕಿ ಕುಣಿದ ಬೇಡರ ಪಡೆ
ಮತ್ತೆ ಗವಿಗೆ ತೆರಳುತಿದೆ,
ಜೊತೆಗಿದ್ದರು ಅವರು ಮಬ್ಬು ರೂಪವಷ್ಟೆ ಕಾಣುತಿದೆ.
ಕೇಳುತಿದೆಯ ಮಾತು? ಇಲ್ಲ.
ತುಂಬುತ್ತಿದೆ ಕಿವಿಯ ನನ್ನ ಕೂಗೆ ಗಿರಣಿ ಸಿಳ್ಳಿನಂತೆ.
ಬರೆಯುತ್ತಿರುವೆ ಸ್ವಂತ ಭಾಷ್ಯ
ಸುತ್ತಲಿರುವ ಜನರ ನಡೆಗೆ,
ಕಿರಿಚುತ್ತಿರುವೆ ‘ಉಳಿದುದೆಲ್ಲ ಸುಳ್ಳು
ಇಷ್ಟು ಮಾತ್ರ ಸತ್ಯ:
ನನ್ನ ಒಲೆಗೆ ಇಟ್ಟ ಸೌದೆ
ಗಡಿಗೆ ಮತ್ತು ಆದ ನಡಿಗೆ’

ಕಣ್ಣ ಮುಚ್ಚಿ ಕಿರಿಚುವಾಗ ಸರಕ್ಕನೆ ಏನೊ ನೆನಪು;
ದೂರ ನಿಲುವ ಸ್ವಲ್ಪ ಜನರ ಕಣ್ಣಲ್ಲಿದ್ದ ತಂಪು ಬೆಳಕು,
ಕುಣಿಯುತಿರುವ ಮಂದೆ ಕಡೆಗೆ ನೋವಿನಿಂದ, ಕರುಣೆಯಿಂದ
ನೋಡಿದಾಗ ಮೂಡುತಿದ್ದ ಬಿಚ್ಚಲಾಗದಂಥ ಒಡಪು
ಕಿರಿಚುಗೊರಳಿಗಡ್ಡವಾಗಿ
ಕಿವುಡು ಕಿವಿಯ ಶೂಲವಾಗಿ
ಇರಿಯುತಿರಲು
ವೃತ್ತದಲ್ಲಿ
ಎಲ್ಲೂ ಗಾಳಿ ಬೆಳಕು!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...