Home / ಕವನ / ಕವಿತೆ / ವೃತ್ತ

ವೃತ್ತ

ನಿಂತ ನೆಲವೆ ದ್ವೀಪವಾಗಿ
ಕೂಪದಾಳದಲ್ಲಿ ತೂಗಿ
ಕಂದಕವನು ಕಾವಲಾಗಿ
ತೋಡಿದಂತೆ ನನ್ನ ಸುತ್ತ
ಒಂದು ಕಲ್ಲ ವೃತ್ತ.
ಹೃದಯ ಮಿದುಳು ಕಣ್ಣು ಕಿವಿ
ಉಂಡ ಸವಿ, ಮನದ ಗವಿಯ
ತಳದಲೆಲ್ಲೊ ಪಿಸುಗುಟ್ಟುವ
ಪಿತಾಮಹರ ಚಿತ್ತ-
ಕೊರೆದುದಂತೆ ಈ ವಲಯ
ಇದೇ ನನ್ನ ಎಲ್ಲ ಕಲೆಯ
ಗರಡಿಮನೆ, ಗಣೆಯ ಕೊನೆ,
ಬಳಸಿ ಕವಿದ ಹುತ್ತ
ಒಳಗೆ ನೆಲದ ಕೆಳಗೆ ತಳವೆ
ಇರದ ಇರುಳ ಕೊಳವಿಯೊಳಗೆ
ಹತ್ತಿಳಿಯುವೆ ಸದಾ ಹಳಸು-
ಗಾಳಿಯ ಹೀರುತ್ತ.

ಒಂದಲ್ಲ ಹತ್ತಲ್ಲ
ಸುತ್ತ ಕಣ್ಣು ಹರಿವಲ್ಲೆಲ್ಲ
ಹುತ್ತದಂತೆ ಎದ್ದುನಿಂತ
ಇಂಥ ಲಕ್ಷ ವೃತ್ತ.
ಕೆಲಕೆಲವಕೆ ಕಿಂಡಿಯುಂಟು
ಕೆಲಕೆಲವಕೆ ಕಿಟಕಿಯುಂಟು
ದೊಡ್ಡ ದೊಡ್ಡ
ಬಾಗಿಲುಂಟು
ಲಕ್ಷದಲ್ಲಿ ನಾಲ್ಕಕೆ.
ಉಳಿದವುಗಳ ತಳದಲೆಲ್ಲೊ
ಸಣ್ಡದೊಂದು ಸಂದಿದಾರಿ
ಆಮದು ರಫ್ತಿಗೆ ಸಾಲದ
ಗಾಳಿ ಬೆಳಕ ವೈರಿ.

ಕಲ್ಲಗೋಡೆ ಹೊರಗೆ ದಿನಾ
ಬಿಲ್ಲು ಹಿಡಿದ ಎಷ್ಟೊ ಜನ
ಗವಿಯ ತಳದ ಸಂದಿಯಿಂದ
ತೆವಳಿ ಹೊರಗೆ ಬರುವರು.
ಬಾಣ ತೂಗಿ ಬೆನ್ನಿನಲ್ಲಿ
ಏನೊ ಉರಿದು ಕಣ್ಣಿನಲ್ಲಿ
ಬಿಸಿಲು ಕೆರಳುತಿದ್ದೆಂತೆಯೆ
ಸಂತೆ ಸೇರಿ ಕುಣಿವರು.
ನಾಯಿಯ ನಾಲಗೆಯಾದರು
ಕಿವಿಯಿಲ್ಲದ ನಾಗರು;
ಕೆನ್ನೆ ಕೆನ್ನೆ ತಿಕ್ಕಿ ಉಬ್ಬಿ
ಬೆನ್ನು ಬೆನ್ನು ಕೊಟ್ಟು ದಬ್ಬಿ
ಬೇತಾಳಕೆ ಕಾಮವರ್ಧಿನೀ ರಾಗವ ಹಬ್ಬಿ
ಸೊಕ್ಕಿ ಕೆರಳುಗೊರಳಿನಲ್ಲಿ
ಭೂತಕುಣಿತ ಕುಣಿವರು;
ಬಿಸಿಲಾರಿತೊ ಎಲ್ಲ ಓಡಿ ಗವಿಯ ತಳಕೆ ಸರಿವರು.

ಇವರ ನಡುವೆ ಬೆರೆಯದೆ
ಕಂಡವರನು ಕರೆಯದೆ
ಎಲ್ಲೊ ನಾಲ್ಕು ಜನರು ಅಲ್ಲೆ ದೂರದಲ್ಲಿ ನಿಲುವರು.
ಬಾವಿಗಣ್ಣು ಈಟಿಮೂಗು
ಬಡಕಲು ಮೈಯವರು.
ಗುಂಡಿಗೆನ್ನೆ ಬಟ್ಟತಲೆ
ಹೆಚ್ಚು ಹೊದೆಯದವರು.
ಶಾಂತರಾಗಿ ದೂರ ನಿಂತು
ಚಿಂತೆ ತುಡಿವ ಕಣ್ಣಿನಿಂದ
ಸಂತೆಯತ್ತ ನೋಡಿ ಖಿನ್ನರಾಗಿ ಹಿಂದೆ ಸರಿವರು.

ಸದಾ ಹೊರಗೆ ನಿಲುವ ಇವರು
ಅಪ್ಪಿತಪ್ಪಿ ಎಲ್ಲೊ ಒಮ್ಮೆ
ವೃತ್ತದಲ್ಲಿ ಸರಿವರು,
ಕಿಟಕಿ ಬಾಗಿಲನ್ನು ಮಾತ್ರ ಸದಾ ತೆರೆದೆ ಇರುವರು.
ಯಾರಿವರು, ಯಾರಿವರು?
ಎಷ್ಟು ಅಳೆದು ಸುರಿದರೂ
ಇಷ್ಟು ವರುಷ ಕಂಡರೂ
ತಿಳಿಯದೆ ಹೋದವರು?

ಬಿಸಿಲಿನಲ್ಲಿ ನೆರೆದ ಸಂತೆ
ಸಂಜೆಯಿಳಿದು ಕರಗುತಿದೆ,
ಸೊಕ್ಕಿ ಕುಣಿದ ಬೇಡರ ಪಡೆ
ಮತ್ತೆ ಗವಿಗೆ ತೆರಳುತಿದೆ,
ಜೊತೆಗಿದ್ದರು ಅವರು ಮಬ್ಬು ರೂಪವಷ್ಟೆ ಕಾಣುತಿದೆ.
ಕೇಳುತಿದೆಯ ಮಾತು? ಇಲ್ಲ.
ತುಂಬುತ್ತಿದೆ ಕಿವಿಯ ನನ್ನ ಕೂಗೆ ಗಿರಣಿ ಸಿಳ್ಳಿನಂತೆ.
ಬರೆಯುತ್ತಿರುವೆ ಸ್ವಂತ ಭಾಷ್ಯ
ಸುತ್ತಲಿರುವ ಜನರ ನಡೆಗೆ,
ಕಿರಿಚುತ್ತಿರುವೆ ‘ಉಳಿದುದೆಲ್ಲ ಸುಳ್ಳು
ಇಷ್ಟು ಮಾತ್ರ ಸತ್ಯ:
ನನ್ನ ಒಲೆಗೆ ಇಟ್ಟ ಸೌದೆ
ಗಡಿಗೆ ಮತ್ತು ಆದ ನಡಿಗೆ’

ಕಣ್ಣ ಮುಚ್ಚಿ ಕಿರಿಚುವಾಗ ಸರಕ್ಕನೆ ಏನೊ ನೆನಪು;
ದೂರ ನಿಲುವ ಸ್ವಲ್ಪ ಜನರ ಕಣ್ಣಲ್ಲಿದ್ದ ತಂಪು ಬೆಳಕು,
ಕುಣಿಯುತಿರುವ ಮಂದೆ ಕಡೆಗೆ ನೋವಿನಿಂದ, ಕರುಣೆಯಿಂದ
ನೋಡಿದಾಗ ಮೂಡುತಿದ್ದ ಬಿಚ್ಚಲಾಗದಂಥ ಒಡಪು
ಕಿರಿಚುಗೊರಳಿಗಡ್ಡವಾಗಿ
ಕಿವುಡು ಕಿವಿಯ ಶೂಲವಾಗಿ
ಇರಿಯುತಿರಲು
ವೃತ್ತದಲ್ಲಿ
ಎಲ್ಲೂ ಗಾಳಿ ಬೆಳಕು!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...