Home / ಕಥೆ / ಕಿರು ಕಥೆ / ಜನ ಮೆಚ್ಚಿದ ಶಿಕ್ಷಕ

ಜನ ಮೆಚ್ಚಿದ ಶಿಕ್ಷಕ

ಕಾರ್ಯಾಲಯದಲ್ಲಿ ಶಿಕ್ಷಣಾಧಿಕಾರಿಗಳು ಕಡತ ನೋಡುವಲ್ಲಿ ಮಗ್ನರಾಗಿದ್ದರು. ಹೊರಗೆ ಕೂಗಾಟ ಕೇಳಿಸಿತು. “ಧಿಕ್ಕಾರ…. ಧಿಕ್ಕಾರ…. ಹಲ್ಕಾ ಶಿಕ್ಷಕನಿಗೆ ಧಿಕ್ಕಾರ.” ಧ್ವನಿ ಜೋರಾಗಿತ್ತು. ಸಾಹೇಬರು ಎದ್ದು ಹೊರಗೆ ಬಂದರು. ಆವರಣದ ತುಂಬ ಜನ. ಸಾಹೇಬರನ್ನು ಮತ್ತು ಅವರ ಹಿಂದೆ ಬಂದ ಸಿಬ್ಬಂದಿಯನ್ನು ಕಂಡು ಜನರ ಕೂಗು ಇನ್ನೂ ಮುಗಿಲಿಗೇರಿತ್ತು.

ಬಂದವರೆಲ್ಲ ಗ್ರಾಮಸ್ಥರು, ಅವರಲ್ಲಿ ಕೆಲವರನ್ನು ಗುರುತಿಸಿದ ಸಾಹೇಬರು “ಏನ್ರಿ ಗೌಡರೆ ಇದೆಲ್ಲ?” ಎಂದು ಕೇಳಿದರು. ಹಳ್ಳಿಯ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿದ್ದ ಅವರು ಮತ್ತು ಉಳಿದ ಸದಸ್ಯರು ಮುಂದೆ ಬಂದರು. “ನಮ್ಮೂರಿನ ಸಾಲಿಗೆ ಆ ಬೆಂಕಿಮಠ ಮಾಸ್ತರ ಬ್ಯಾಡ ಸಾಹೇಬರ” ಗೌಡರು ಪ್ರತಿಭಟನೆಯ ಧ್ವನಿಯಲ್ಲಿ ಹೇಳಿದರು. ಪರಿಸ್ಥಿತಿ ಗಂಭೀರವಾಗಿದೆಯೆಂದು ಸೂಕ್ಷ್ಮವಾಗಿ ಗ್ರಹಿಸಿಕೊಂಡ ಸಾಹೇಬರು ಅವರನ್ನು ಒಳಗೆ ಕರೆದುಕೊಂಡು ಹೋದರು.

ಕುಳಿತುಕೊಳ್ಳುತ್ತಿದ್ದಂತೆ ಗೌಡರು “ಸಾಹೇಬರ ಈಗಿಂದೀಗ ಆ ಹಲ್ಕಾ ಮಾಸ್ತರನನ್ನ ಟ್ರಾನ್ಸ್‌ಫರ್‍ ಮಾಡ್ರಿ. ನಮ್ಮ ಸಾಲಿಗೆ ಬ್ಯಾರೆ ಮಾಸ್ತರನ್ನ ಕೊಡ್ರಿ” ಎಂದು ತೀವ್ರವಾಗಿ ಒತ್ತಾಯಿಸಿದರು. ಈಗವರು ಬೇಡವೆನ್ನುತ್ತಿರುವ ಶಿಕ್ಷಕರಿಗೆ ಇದೇ ಗೌಡರು ಕಳೆದ ವರ್ಷ `ಜನ ಮೆಚ್ಚಿದ ಶಿಕ್ಷಕ’ ಪ್ರಶಸ್ತಿ ಕೊಡಿಸಿಕೊಂಡು ಮೆರವಣಿಗೆ ಹೋಗಿದ್ದರ ದೃಶ್ಯ ಕಣ್ಮುಂದೆ ತೇಲಿ ಹೋಯಿತು. ಈಗವರೇ ಮೆರವಣಿಗೆಯಲ್ಲಿ ಬಂದು ಅವನ ಬಗ್ಗೆ ಧಿಕ್ಕಾರ ಹೇಳುತ್ತಿರುವುದು ಸೋಜಿಗವೆನಿಸಿ “ಏನ್ರಿ ಗೌಡ್ರೆ ಹಕೀಕತ್ತು?” ಎಂದು ಪ್ರಶ್ನಿಸಿದರು.

“ಅಂವಾ ಮಾಸ್ತರ ಆಗಾಕ ಅಯೋಗ್ಯದಾನ ಸಹೇಬರ” ಎಂದು ಬೆಂಕಿಮಠನ ಬಗ್ಗೆ ವಿವರ ನೀಡಿದರು ಗೌಡರು. ಶಾಲೆಗೆ ಗೈರು ಆಗುವುದು, ಶಿಕ್ಷಕಿಯೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುವುದು. ಪುಸ್ತಕ ಮಾರಿಕೊಳ್ಳುವುದು, ಶಾಲೆಯಲ್ಲಿ ವಾಸ್ತವ್ಯ ಹೂಡಿ ಇಸ್ಪೀಟ್ ಆಡುವುದು, ಕುಡಿಯುವುದು, ತಿನ್ನುವುದು, ಎಂಟು ದಿನಗಳ ಹಿಂದೆ ಏಳನೆಯ ತರಗತಿಯ ಹುಡುಗಿಯೊಬ್ಬಳ ಮೇಲೆ ಬಲಾತ್ಕರಿಸಲು ಯತ್ನಿಸಿದ್ದರ ಬಗ್ಗೆ ಹೇಳಿ “ಆ ನಾಲಾಯಕ ಮಾಸ್ತರ ನಮ್ಮ ಕೈಯಾಗ ಸಿಗಲಿಲ್ಲ. ಇಷ್ಟು ದಿನಾತು ಅವನ ಪತ್ತಾನೂ ಇಲ್ಲ. ಅಂವಾ ಶಿಕ್ಷಣ ಇಲಾಕೆಯಾಗ ಇರ್ಲಿಕ್ಕೆ ಅಯೋಗ್ಯ ಅದಾನ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಗೌಡರೆ, ಕಳೆದ ವರ್ಷ ಆ ಶಿಕ್ಷಕ ಛಲೋ ಸಜ್ಜನ ಮನುಷ್ಯ ಅದಾನ, ನೀವು ಅವನಿಗೆ ಪ್ರಶಸ್ತಿ ಕೊಡದಿದ್ರ ಇಲಾಖೆ ಎದುರು ಉಪವಾಸ ಕುಂದ್ರಿತೀನಿ ಅಂದ್ರಿ. ರಾಜಕೀಯ ಮಂದಿಯ ಒತ್ತಡ ತಂದ್ರಿ. ಅವನ ವರ್ತನೆ ನಿಮ್ಮ ಗಮನಕ್ಕೆ ಬಂದಿದ್ದಲೇನ್ರಿ?” ಸಾಹೇಬರು ಕೇಳಿದರು.

“ಹುತ್ತಿನ್ಯಾಗಿಂದ ಹೊರಗ ಬಂದಾಗ ಗೊತ್ತಾಗೊದಲ್ರಿ ಯಾವ ಹಾವು ಅಂತ!”

ಗೌಡರ ಮಾತು ಕೇಳುತ್ತಲೇ ಸಂಬಂಧಿಸಿದ ಕಾರಕೂನರನ್ನು ಕರೆಯಿಸಿದ ಸಾಹೇಬರು “ಈಗಿಂದೀಗ ಆ ಬೆಂಕಿಮಠ ಶಿಕ್ಷಕರನ್ನ ಸಸ್ಪೆಂಡ್ ಮಾಡಿದ ಕಾಗದ ಟೈಪ್ ಮಾಡಿಸ್ಗಂಡು ಬರ್‍ರಿ” ಎಂದರು.

“ಸಸ್ಪೆಂಡ್ ಮಾಡಿದ್ರ ಮತ್ತ ಆ ಮಾಸ್ತರಗ ಬಲ ಹೆಚ್ಚಿಗ ಬರ್ತೈತಿ ಸಾಹೇಬರ. ದೊಡ್ಡ ದೊಡ್ಡವರ ಕೈಗಳು ಸಸ್ಪೆಂಡ್ ಆದವರನ್ನು ಉಳಿಸಿಕೊಳ್ಳಾಕ ನೋಡ್ತಾವು. ಆ ಮಾಸ್ತರನ ಡಿಸ್ಮಿಸ್ ಮಾಡಬೇಕು. ಒಂದು ಹುಳಾ ನೂರು ಹುಳಾನ್ನ ಹುಟ್ಟುಸ್ತಾವು!” ಗೌಡರು ಒತ್ತಾಯಿಸಿದರು.

“ಗೌಡರೆ ನನ್ನ ಅಧಿಕಾರದ ಮಿತಿಯಾಗ ನಾನು ಕೆಲಸ ಮಾಡಬೇಕು. ನೀವು ಅದರ ಬಗ್ಗೆ ಕಾಗದ ಕೊಡ್ರಿ. ನಾನು ಮೇಲಿನ ಸಾಹೇಬರಿಗೆ ಕಳಿಸ್ತೀನಿ” ಹೀಗೆ ಹೇಳಿ ಕುಳಿತರು ಸಾಹೇಬರು.

ಹೊರಗೆ ಬೆಂಕಿಮಠ ಮಾಸ್ತರನ ವಿರುದ್ಧದ ಕೂಗು ಕೇಳಿಸುತ್ತಲೇ ಇತ್ತು.

*****

 

 

Tagged:

Leave a Reply

Your email address will not be published. Required fields are marked *

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...