Home / ಕಥೆ / ಕಿರು ಕಥೆ / ಸಿದ್ಧಾಂತ

ಸಿದ್ಧಾಂತ

ಉಗ್ರಪ್ಪ ನಾಲ್ಕನೆಯ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಹ್ಯಾಟ್ರಿಕ್ ಸಾಧಿಸಿದ್ದ. ಅಭಿಮಾನಿಗಳು ಅತ್ಯಂತ ವೈಭವದಿಂದ ಅವನ ವಿಜಯೋತ್ಸವ ಆಚರಿಸಿದರು. ತೆರೆದ ವಾಹನದಲ್ಲಿ ಊರ ತುಂಬ ಮೆರೆಸಿದರು.

ಗೆಲುವಿನಿಂದ ಬೀಗಿಕೊಂಡಿದ್ದ ಉಗ್ರಪ್ಪನ ಬಳಿಗೆ ಬಂದ ಪತ್ರಕರ್ತನೊಬ್ಬ “ನೀವು ಕೂದಲೆಳೆಯಲ್ಲಿ ಸೋಲು ತಪ್ಪಸಿಕೊಂಡಿರಿ” ಎಂದ.

“ನಾನು ಸೋಲಿಲ್ಲದ ಸರದಾರ” ಅತ್ಯುತ್ಸಾಹದಿಂದ ಉದ್ಗರಿಸಿದ ಉಗ್ರಪ್ಪ.

“ನಿಮ್ಮ ಅಧಿಕಾರದ ಅವಧಿಗಳಲ್ಲಿ ಮತಕ್ಷೇತ್ರದ ಎಲ್ಲ ರಸ್ತೆಗಳನ್ನು ರಾಜಮಾರ್ಗಗಳನ್ನಾಗಿ ರೂಪಿಸುತ್ತೇನೆ ಎಂದಿದ್ದೀರಿ” ಪರ್ತಕರ್ತ ಹೇಳಿದ.

“ಹೌದು” ಚುಟುಕಾಗಿ ಉಲಿದ ಉಗ್ರಪ್ಪ.

“ಉದ್ದಿಮೆ ಸ್ಥಾಪಿಸಿ ನಿರುದ್ಯೋಗಿ ಯುವಕರಿಗೆ ಭವಿಷ್ಯ ನೀಡುತ್ತೇನೆಂದು ಪ್ರಮಾಣ ಮಾಡಿದ್ದೀರಿ”.

“ಅದು ನಿಜ”

“ರೈತರಿಗೆ ಉಚಿತ ವಿದ್ಯುತ್, ಪಂಪ್‌ಸೆಟ್ಟು, ಬೀಜ, ಗೊಬ್ಬರ ಪೂರೈಸಿ ಅನ್ನದಾತರನ್ನು ಬದುಕಿಸುತ್ತೇನೆ ಎಂದು ಘೋಷಿಸಿದ್ದೀರಿ”.

“ಹೌದು”.

“ಕುಡಿಯುವ ನೀರಿಗೆ ತೊಂದರೆ ಬಾರದಂತೆ ನೋಡಿಕೊಳ್ಳುತ್ತೇನೆ. ಹಸಿವಿನ ಸಂಕಟದಿಂದ ಜನರು ಸಾಯದಂತೆ ಎಚ್ಚರಿಕೆ ವಹಿಸುತ್ತೇನೆ. ನೂರಕ್ಕೆ ನೂರರಷ್ಟು ಜನರನ್ನು ಸಾಕ್ಷರರನ್ನಾಗಿಸಲು ಹೋರಾಡುತ್ತೇನೆ. ರೋಗ-ರುಜಿನಗಳಿಂದ ಜನರು ಸತ್ತು ಹೋಗದಂತೆ ಅಮೃತ ಕುಡಿಸುತ್ತೇನೆ ಎಂದು ನೂರಾರು ಸಭೆಗಳಲ್ಲಿ ಹೇಳುತ್ತಿದ್ದಿರಿ.”

“ಹೌದು… ಹೌದು… ಹೌದು.”

“ಆದರೆ ನೀವು ಏನನ್ನೂ ಮಾಡಲಿಲ್ಲ” ವಿಷಾದ ವ್ಯಕ್ತಪಡಿಸಿದ ಪತ್ರಕರ್ತ.

“ನನ್ನ ಗೆಲುವಿಗೆ ಅದೇ ಆಧಾರವಲ್ಲವೆ?” ನಗುತ್ತ ಕೇಳಿದ ಉಗ್ರಪ್ಪ.

ಅವನ ಪ್ರಶ್ನೆಗೆ ದಿಗಿಲುಗೊಂಡ ಪತ್ರಕರ್ತ ತುಸು ಏರುಧ್ವನಿಯಲ್ಲಿ ಹೇಳಿದ “ನೀವು ರಾಜಕಾರಣಿಗಳು ಬರಿ ಸುಳ್ಳು ಹೇಳುತ್ತೀರಿ. ಭರವಸೆಯ ಗಾಳಿ ಊದಿ ಜನರನ್ನು ರಬ್ಬರಿನ ಬಲೂನ್ ಆಗಿಸುತ್ತೀರಿ.”

“ಎಷ್ಟೇ ಆಗಲಿ ನೀವೂ ಪತ್ರಕರ್ತರು. ರಾಜಕಾರಣದ ಸಿದ್ಧಾಂತವನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದೀರಿ” ಹ್ಹ ಹ್ಹ ಹ್ಹ…. ಎಂದು ಹಗುರಾಗಿ ನಕ್ಕ ಉಗ್ರಪ್ಪ. ಆ ಲಜ್ಜೆಗೇಡಿ ನಗೆ ಕಂಡು ಕೋಪಿಸಿಕೊಂಡ ಪತ್ರಕರ್ತ “ಇಂಥ ರಾಜಕಾರಣದಿಂದ ದೇಶಕ್ಕೇನು ಲಾಭ?” ಎಂದು ವ್ಯಂಗ್ಯದ ಬಾಣ ಎಸೆದ.

“ದೇಶಕ್ಕೇನೋ ಗೊತ್ತಿಲ್ಲ. ನನಗಂತೂ ಇದೆ. ನನ್ನ ನಂಬಿಕೊಂಡವರಿಗೂ ಅನುಕೂಲವಿದೆ” ಯಾವ ಮುಜುಗರವಿಲ್ಲದೆ ಹೇಳಿದ ಉಗ್ರಪ್ಪ.

“ಒಂದಿಲ್ಲ ಒಂದಿನ ಜನ ನಿಮ್ಮ ಸ್ವಾರ್ಥದ ಎದುರು ನಿಂತರೆ?”

“ಬಲೂನಿಗೆ ಗಾಳಿ ತುಂಬುವುದರಲ್ಲಿ ನಾನು ಚಾಣಾಕ್ಷ. ಹಾಗೆಯೇ ಉಬ್ಬಿದ ಬಲೂನುಗಳ ಗಾಳಿ ತೆಗೆಯುವ ತಂತ್ರದಲ್ಲಿ ನಾನು ಎಕ್ಸ್‌ಪರ್ಟು ಮಾರಾಯರೆ!” ಆತ್ಮವಿಶ್ವಾಸ ವ್ಯಕ್ತಪಡಿಸಿದ ಉಗ್ರಪ್ಪ.

ಪತ್ರಕರ್ತ ತುಟಿ ಹೊಲಿದುಕೊಂಡಂತೆ ಕುಳಿತ.

*****

 

Tagged:

Leave a Reply

Your email address will not be published. Required fields are marked *

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...