Home / ಕವನ / ಕವಿತೆ / ಸುದ್ದವ್ವ

ಸುದ್ದವ್ವ

ಸುದ್ದವ್ವ ಈ ಊರವಳಲ್ಲ ವಲಸೆ ಬಂದ ಹುಡುಗಿ
ಇಲ್ಲಿ ನಿಂತವಳೂ ಅಲ್ಲ ಊರೂರಲೆಯುವ ಚಪಲಿ;
ಅವಳಿಗೆ ಮಿಂಡನೆ ತಂದೆ ರಂಡೆಯೆ ತಾಯಿ
ಹುಟ್ಟಿದ ಕೂಡಲೆ ಫಟ್ಟನೊಡೆದುವಂತೆ ಮೈಯೆಲ್ಲ ಬಾಯಿ;
ಅಪ್ಪನ ನೆರಳಿಲ್ಲದೆ ಅವಳಿಗೆ ಜಾತಕ ತಪ್ಪಿತು
ಕುಂಡಲಿ ಕುಲ ಇಲ್ಲವೆಂದು ಮದುವೆ ಕೆಟ್ಟಿತು;
ಇಕ್ಕಟ್ಟು ತಪ್ಪಿದ ಹುಡುಗಿ ಹತ್ತು ದಿಕ್ಕಲ್ಲಿ ಉಂಡಳು
ಮುಟ್ಟು ಕಟ್ಟಿಲ್ಲದೆ ಬೆಳೆದಳು
ತೊಂಡುಗಂಡುಗಳ ಶಿಳ್ಳೆಗೆಲ್ಲ ಹೆಡೆಯಾಡಿಸಿ
ಧರ್ಮಶಾಲೆಯಲ್ಲಿ ಮೈತೆಗೆದಳು.

ಸುದ್ದವ್ವ ಯಾವೂರವಳೂ ಅಲ್ಲ, ಕಲಸಿ ಬಂದ ತುಡುಗಿ
ಎಂಥ ಶಾಖದಲ್ಲೂ ಮೈಸೊಕ್ಕು ಬೇಯದ ಹಡದಿ.
ಅಜ್ಜ ಅವಳ ಜೊತೆ ಗಜ್ಜುಗವಾಡಿದ್ದ
ಬುಗುರಿ ತಿರುವಿದ್ದ;
ಹಲ್ಲು ಬಿದ್ದು ಅವನೀಗ ಬಿಲ್ಲಾಗಿದ್ದರೂ
ಈ ಪಂಚರಂಗಿ ಮಾತ್ರ ಘಮಘಮಾಯಿಸುವ ಪುನುಗು ಜವ್ವಾಜಿ.

‘ಸುದ್ದಿ’ ರಾತ್ರಿರಾಣಿ, ಹಗಲು ಭಿಕಾರಿಣಿ.
ಹಗಲಲ್ಲಿ ಅವಳ ಬಸಿರಿಗೆ ಉಗಿವವರೂ
ಗುತ್ತಿಗೆಯಾಗುತ್ತಾರೆ ಮೈಗೆ ಕತ್ತಲಲ್ಲಿ;
ಮನೆಮುಂದೆ ಗೊನೆಬೀಗಿ ನಡೆದಾಗ
ಕದಮುಚ್ಚುವ ಮಠದ ಕರ್‍ಮಠರೂ
ಹಣಿಕುತ್ತಾರೆ ಕಣ್‌ತಪ್ಪಿಸಿ ಕಿಟಕಿಯಲ್ಲಿ,
“ಈ ನಿತ್ಯಹಾದರಿಯ ಗತ್ತು ಗಮ್ಮತ್ತು ಮಿತಿಮೀರಿ
ಇವಳು ತೊಡುವುದಿಲ್ಲಿ ಬಿಡುವುದಲ್ಲಿ
ಕೊಳೆ ಬೆಳೆದು ನಾರುತ್ತಿದೆ ಮಠದ ಮಗ್ಗುಲ ಗಲ್ಲಿ” ಎಂದು
ಊರು ಊರೇ ನೂರುಬಾಯಾಗಿ ಚೀರುತ್ತದೆ ದೂರು,
ಆದರೆ ಯಾರೂ ಬಗೆದದ್ದಿಲ್ಲ ಈವರೆಗೆ
ಕತ್ತರಿಸಿದಂತೆಲ್ಲ ಬೆಳೆಯುವ ಈ ದಂಡುರುಂಬೆಯ ಬೇರು.

ಮೊನ್ನೆ ನರಸಜ್ಜ ಬದಿಗೆ ಕರೆದು ಹೇಳಿದ-
“ಮಗನೆ ಸುದ್ದವ್ವನ ಗಾಳಿಗಾಲು ನೋಡಿದೆಯಾ,
ಆ ಹರಿಯದ ಪ್ರಾಯ, ಕರೆಯುವ ಕಣ್ಣ ಕಂಡೆಯಾ!
ಹುಷಾರು ಮಗನೇ, ಅಕೆ ಸ್ಮಶಾನದಲ್ಲಿ
ಕೊಳ್ಳಿಹಿಡಿದು ಅಲೆಯುತ್ತಾಳೆ ನಡುರಾತ್ರಿಯಲ್ಲಿ;
ಗೋರಿಗಳನ್ನು ಅಗೆದು ಹೆಣಗಳನ್ನು ತೆಗೆದು
ಉಸಿರೂದುತ್ತಾಳೆ ನಿಲ್ಲಿಸಿ ಹೊಕ್ಕುಳಲ್ಲಿ!
ಹರಕೆ ಸಲ್ಲಿಸಿ ದೆವ್ವದ ಕುಲ ತಣಿಸುತ್ತಾಳೆ.
ದೆವ್ವಗಳೆಲ್ಲ ಬಂದು ‘ಅವ್ವಾ’ ಎಂದಪ್ಪುತ್ತವೆ
‘ಅವ್ವನ’, ‘ಅಪ್ಪನ’ ಎಂದು ಕೊಳ್ಳಿ ಬೀಸಿ ಹಾಡುತ್ತವೆ.
ಸುಸ್ತಾಗುವ ತನಕ ಬತ್ತಲೆ ಕುಣಿತ ಕುಣಿದು
ಎದ್ದು ಬಂದ ಗೋರಿಯಲ್ಲೆ ಬಿದ್ದುಬಿಡುತ್ತವೆ ಕಡೆಗೆ.

ಮಗನೇ ಬುದ್ಧಿ ಕೈಯಲ್ಲಿರಲಿ
ಸುದ್ದಿಯ ಮುರಕಕ್ಕೆ ಮಾರು ಹೋದೀಯಾ!
ಬಲಿದು ನಕ್ಕಾಳು ಅದಕ್ಕೆ ಅರಳೀಯ!
ಉಕ್ಕುವ ಜವ್ವನಿಗರನ್ನೆ ಆ ವಿಷಹಲ್ಲಿನ ನಾಗಿಣಿ
ಅಪ್ಪಿ ಮುಕ್ಕುತ್ತಾಳೆ ಸಕ್ಕರೆಯೆನ್ನುವಂತೆ
ಮುತ್ತಿಡುವಾಗ ಮುಖದಲ್ಲಿ ಮೆಲ್ಲಗೆ ಹಲ್ಲೂರುತ್ತಾಳೆ
ರಕ್ತದ ರುಚಿಹಿಡಿದು ಮೈಯ ಗುರುತು ಹಾಕುತ್ತಾಳೆ
ಹಲ್ಲೂರಿದ ಮೈಯಲ್ಲಿ ಗುಲ್ಲೊಂದು ಸೇರುತ್ತದೆ
“ಮೈ ಬಿಡುವವರೆಗೆ ದೆವ್ವವಾಗಿ ಕಾಡುತ್ತದೆ”

ಅಜ್ಜನ ಮಾತು ಕೇಳಿ ತುಟಿಮರೆಯಲ್ಲಿ ನಕ್ಕೆ
ಜೊತೆಗೇ ದುಃಖಪಟ್ಟೆ!
ಅರುಳು ಮರುಳಾದ ಮೇಲೆ ನಾನಂತೂ ಇರಬಾರದೆಂದು
ಅಗಲೇ ಉರುಳು, ಹೊಳೆ, ಬಾವಿಯೆಲ್ಲ ಯೋಚಿಸಿ
ಮಲಗಿದೆ.

ಬೆಳಿಗ್ಗೆ ಎದ್ದು ತೆರೆದರೆ ಬಾಗಿಲು
ಒಳಗೆ ಬಿತ್ತು ಬೆಳೆದ ಹಗಲು,
ಜೊತೆಗೇ ಒಳತೂರಿತು ಸುದ್ದಿಯ ಹೆಗಲು.
ಅವ್ವನ್ನ ಅರಸುವಾಗ ದೆವ್ವ ಕಂಡಂತಾಗಿ
ಗಾರಾಗಿ ಜೋರಾಗಿ ಕೂಗಿದೆ.
“ನೀ ಯಾರೆ ಇಲ್ಲಿ, ನನಗೇನು ಸಂಬಂಧ” ಎಂದೆ
ಸುದ್ದಿ ನಕ್ಕಳು, ಬೆನ್ನು ತಿರುವಿದಳು-ಅಲ್ಲಿ
ವಿಳಾಸ ನನ್ನದೆ, ಸೀಲು ಶಿವಮೊಗ್ಗೆಯದೆ
ಸಂಬಂಧವಿರದಿದ್ದರೂ ಇವಳು ನನ್ನವಳೆ!
ಉಕ್ಕಿದ ಕೋಪದಲ್ಲಿ ಥಟ್ಟನ ತೋಳು ಸೊಕ್ಕಿ
ಎತ್ತಿ ಒಂದು ಕೊಟ್ಟೆ.
ಬಿಗಿದರೆ ಕೆನ್ನೆಗೆ ಬಾಯಿಬಿಟ್ಟದ್ದು ಹೊಟ್ಟೆ
ಬಸಿರಿನಲ್ಲೋ ಒಂದು ಕೊಳೆತ ಮೊಟ್ಟೆ!
ಜೀವವಾಗಿ ಬೆಳೆಯಬೇಕಿದ್ದ ಭ್ರೂಣ
ಗರ್‍ಭಸ್ರಾವವಾಗಿ ಸಾಯುವುದೆ?
ಅನ್ಯಾಯಕ್ಕೆ ಉಸ್ಸೆನಿಸಿ ಉಸಿರು ಸೋತು
ಎಲ್ಲ ಆಚೆ ಚೆಲ್ಲಿದೆ;
ತೋಚದೆ,
ಗೂಬೆ ಮೆಟ್ಟಿದ ಮನೆಯಲ್ಲಿ ಕೂತೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...