Home / ಕವನ / ಕವಿತೆ / ಅದೇ ಕಥೆ

ಅದೇ ಕಥೆ

ಆಡುಗೂಲಜ್ಜಿ ಕಣ್ಣುಮುಚ್ಚಿ ಹೇಳುತ್ತಾಳೆ ಕಥೆಯ,
ನೇಯುತ್ತಾಳೆ ರಾಗವಾಗಿ ವರ್ತಮಾನ ವ್ಯಥೆಯಾಗುವ
ಸತ್ತ ಸುಖದ ಸ್ಮೃತಿಯ.
ಕಣ್ಣಿಂದ ದಳದಳ ನೀರು
ಹೆಪ್ಪುಮುಪ್ಪಿನ ಸುಕ್ಕುತೆರೆ ಸರಿಸಿ ಮುಖದಲ್ಲಿ
ಏಳುವುವು ನೂರು
ಜೇನುಗೂಡನು ಹಿಂಡಿಬಂದ ಅನುಭವ ಸಾಲು:
“ಅಯ್ಯೋ ದೇವರೆ ಆಗೆಲ್ಲ ಎಂಥ ಕಾಲ!
ಎಂಥ ಬಾಲ ಕಪ್ಪೆಗೆ, ಏನು ಕೋಡು ಕುದುರೆಗೆ
ಅರಳಿಯೆಲೆಯ ಕೆಂಪುಚಿಗುರೆ ಮೇವು ಹಂಸಪಕ್ಷಿಗೆ;
ಬೇಲಿಯಿರದ ಬೇಟ
ಕಾವಲಿರದ ತೋಟ
ದನಕಾಯುವ ದಡ್ಡ ಕೂಡ ತಪ್ಪಿ ಮೇಲೆ ಕೂತರೆ
ತಟಕ್ಕನೆಯೆ ಜೀವತುಂಬಿ ನುಡಿವ ಧರ್ಮಪೀಠ;
ಎಂಥ ಕೆಟ್ಟ ಹೆಣ್ಣಿಗೂ ಸರಸ್ವತಿಯ ಕಂಠ
ಅಪ್ಸರೆಯರ ಸೊಂಟ
ಗಂಡಸಾದರಂತು ಬಿಡು ಇಂದ್ರ ಅವನ ನೆಂಟ”.
ಹರಿಹರಿದಂತೆ ನೆರೆ ಬರುವುದು
ಕೊರಕಲಿನಲ್ಲಿ ಕಿಳಪಿಳ ಸರಿವ ಬಡಕಲು ತೊರೆಗೆ;
ಬಿಟ್ಟ ಬಾಯಾಗಿ
ನೆಟ್ಟ ಕಣ್ಣಾಗಿ
ಕೇಳುವುವು ಮಕ್ಕಳು
ಆತು ಅಜ್ಜಿ ಮೈಗೆ,
ಬೆರಗಾಗಿ ಕತ್ತಲಲ್ಲಿ ಕುರುಡ ಬಣ್ಣಿಸುತ್ತಿರುವ
ಬೆಳುದಿಂಗಳ ಕಥೆಗೆ.

ನಮಗೇನು ಗೊತ್ತು
ಹೋಮಧೂಮದಲಿ ಬುದ್ಧಪ್ರೇಮದಲಿ
ಅಶೋಕಧರ್ಮದ ಚಕ್ರಚಲನದಲಿ
ಗಾಡಿ ನಡೆದ ಗತ್ತು?
ಮನೆಯಿತ್ತು
ಮನೆಗೆ ಮಾಡಿತ್ತು;
ಹೆಂಚುದೋಣಿಗಳ ನಡುವೆ ಅಲ್ಲಲ್ಲಿ ತೂತೂ ಇತ್ತು;
ಹಗಲಲ್ಲಿ ಹೊನ್ನ ಸರಳು
ಇರುಳಲ್ಲಿ ಬೆಳುದಿಂಗಳ ಕೊರಳು
ದೇವರ ಮನೆಗೆ ಬೆಳಕ ಹಾಡಿತ್ತು.
ಮಳೆಗಾಲದಲ್ಲಿ ಮನೆ ಕೆರೆಯಾಗಿರಲಿಲ್ಲವೆ,
ಬೆಲ್ಲದ ವರ್ಣನೆಯಲ್ಲೇ ಬೇವಿನ ಮಾಹಿತಿ ಇಲ್ಲವೆ?
ಎದ್ದ ಕಲ್ಲು ಪೂಜಾರಿಯ ಲೆಕ್ಕಕ್ಕೆ ಜಮವಾಗಿ
ಜಾಗಟೆ ಮೊಳಗಿ
ಆರತಿ ಬೆಳಗಿ ಗುಡಿಯಲ್ಲಿ,
ಬಿದ್ದ ಕಲ್ಲುಗಳ ಪಾಡು
ಅಗಸನ ಬಟ್ಟೆಯ ಬಡಿತದ ತಾಳಕೆ ನುಡಿಸಿದ ಹಾಡು!

ಇತ್ತು ಆಗಲೂ ಎಲ್ಲ ಇತ್ತು
ಅಜ್ಜಿಯ ಹಾಡಿನ ಮಲ್ಲಿಗೆ ಜಾಡಿನ ತಳದ ಕೆದಕಿನಲಿ
ಮೂಳೆ ಮಜ್ಜೆಗಳ ನಾರುವ ಗೊಬ್ಬರವಿತ್ತು
ಕರ್ಣನ ಶೌರ್ಯ
ಧರ್ಮನ ಧೈರ್ಯ
ಅಂಬೆಯ ಪ್ರೀತಿ
ಭೀಷ್ಮನ ನೀತಿ
ಎಲ್ಲಕು ಕೂಡಿಯೆ
ಕಾಲಜ್ಞಾನದ ಕತ್ತಲ ಕೊಳದಲಿ ಕಾಲುಜಾರಿತ್ತು.

ಆ ವನದಿಂದಲೆ ತಂದುದು ಈ ಆಲದ ಸಸಿಯ
ಬಳಿಯಬಹುದೆ ನಾವು ಪರಂಪರೆಯ ಮುಖಕೆ ಮಸಿಯ?
ಅಳಿಸಬಹುದೆ ನಿನ್ನೆಯಿಂದ ಇಂದು ಬಂದ ನನ್ನಿಯ?
ಹಾಗೆಂದೇ ಇಂದು ಕೂಡ
ಮಕ್ಕಳಿರುವ ಮನೆನೆತ್ತಿಯ ಮೇಲೆ ಗೂಬೆ ಕೂಗಿದೆ
ತೆಂಗುಗರಿಯ ಮೇಲೆ ಮಂಗ ಕುಣಿದು ಲಾಗ ಹಾಕಿದೆ
ಕಣಜದಲ್ಲೆ ಹೆಗ್ಗಣ
ಅಡಿಗೆಮನೆ ಮದ್ದಿನ
ದೀಪಾವಳಿ ಷಾಪಾಗಿದೆ, ಹೊಂಚುತ್ತಿದೆ ದುರ್ದಿನ?

ಬಿದ್ದಮನೆ ಗುರುತಲ್ಲೆ ಹೊಸಮನೆಗೆ ಅಡಿಪಾಯ
ಆಗೆಯುತ್ತಿದ್ದೇವೆ;
ಹುತ್ತ ಕಂಡೊಡನೆಯೇ ಹಾವಾಗಿ
ನೀರು ಕಂಡೊಡನೆಯೇ ಹೊಳೆಯಾಗಿ
ಎತ್ತಿಟ್ಟಕಾಲ ಮುತ್ತಿಟ್ಟದರ ಮೆಟ್ಟಾಗಿ
ಹೊಟ್ಟಾಗಿ ಈ ಕೆಟ್ಟ ಹೊಟ್ಟೆ ಹೊರೆದಿದ್ದೇವೆ;
ತಿದ್ದ ಬಂದವರನ್ನು ಗುದ್ದಿ ತೆಗೆದಿದ್ದೇವೆ
ಪ್ರತಿಕ್ಷಣವು ಅದಕೆ ಕೊರಗುತ್ತಲೂ ಇದ್ದೇವೆ;
ಕಷ್ಟ ಉಳಿದರು ಕಡೆಗೆ ನಾವು ಮುಗಿಯುವೆವೆಂದು
ಕತ್ತಲೆಯನೇ ನೆಮ್ಮಿ
ನಡೆಯುತ್ತಿದ್ದೇವೆ
ನಡೆಯುತ್ತಿರುತ್ತೇವೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...