Home / ಕವನ / ಕವಿತೆ / ಮಾತಿನವರು

ಮಾತಿನವರು

ಬರಿ ಗಂಗೆ ಗೌರೀಶಂಕರ
ರಾವಣಾಸುರ ಮಥನ ದಿವ್ಯನಡತೆಯ ಕಥನ
ಹಗಲಲ್ಲಿ
ಹತ್ತು ಜನರೆದುರಲ್ಲಿ
ಸತ್ತರೂ ನಿಲ್ಲುವ ಶಾಸನದಲ್ಲಿ;
ಕೊಳೆವ ಗದ್ದಲದ ವಠಾರ
ನಿಂತ ನೀರ ಗಬ್ಬುಗಟಾರ
ಬಾಗಿದವನ ಬೆನ್ನ ಕುತಾರ
ಹಿತ್ತಿಲಲ್ಲಿ
ಗುಪ್ತಚಾರರ ಜೊತೆ ಕತ್ತಲಲ್ಲಿ
ಗಾಳಿ ಹಾರಿಸಿಬಿಡುವ ಮಾತಿನಲ್ಲಿ
ಕೈಹಿಡಿದ ಬರೆಹಕ್ಕೆ ಕಣುತಪ್ಪಿಸಿ ಇವರ
ನಾಲಿಗೆಯ ಹೆರಿಗೆ.
ನ್ಯಾಯ ಒಪ್ಪಿಸಿ ಎಂದು ಕೇಳುವಂತಿಲ್ಲ,
ದಾಖಲೆ ಸುಟ್ಬು ಕೋರ್ಟಿನ ಕಣ್ಣು ತಪ್ಪಿಸುವ ಜೋಕೆ
ಬೇಕಾದಷ್ಟಿದೆ ಈ ಮಳ್ಳರಿಗೆ.

ಯಾವುದರ ದರಕಾರ ಹೊಣೆ ಹೊರೆ ಇರದ ಧಣಿಗೆ?
ಮಾತಿಗೆ ತೊಡಗಿದರೆ ಕೂತವರಿಗೆ ಕಾಣದೆ
ಹಿಗ್ಗತೊಡಗುತ್ತದೆ ಸುತ್ತಲ ಬೇಲಿ
ಬೆಚ್ಚಗಾಗುತ್ತದೆ ಕೈ ಬೆಚ್ಚಗಾಗುತ್ತದೆ ಎದೆ
ಸ್ವಿಚ್ಚು ಒತ್ತಿ ಬಿಡುತ್ತದೆ ನಾಲಿಗೆ, ಕೂಡಲೆ
ಮುಳ್ಳು ಸುರಿಸತೊಡಗುತ್ತದೆ ನಿಂತ ನೆಲಕ್ಕೆ ಜಾಲಿ.
ಆಡುತ್ತ ಆಡುತ್ತ ಮೂಡಿನಲ್ಲಿ ಮಾತು ಕೊಂಕುತ್ತದೆ
ಕೊಂಕುತ್ತ ಕೊಂಕುತ್ತ ಯಾವುದೊ ತಿರುವಿನಲ್ಲಿ ಬೊಂಕುತ್ತದೆ.

ಆಡಿದ್ದೆಲ್ಲ ಹಾಡಾಗಿ
ಹಾಡಿಗೆ ಹಾವು ಹೆಡೆತೂಗಿ
ಗೆದ್ದಿಲ ಸದ್ದಿಲ್ಲದೆ ಕಲೆ ಯಮದೂತನ ಬೀಡಾಗುತ್ತದೆ.
ಅರವತ್ತರ ಎಚ್ಚರಕ್ಕೆ
ಇಪ್ಪತ್ತರ ಪರವಶತೆ
ಸರಿಬೆಸ ಕೇಳುತ್ತದೆ
ರೂಪ ರುಚಿ ರಸದಲ್ಲಿ ಸತ್ಯ ಸಾಯುತ್ತದೆ.

ಬೆತ್ತಲೆ ಬುದ್ಧಿಗೆ ಮಾರಕ ಹಿತ್ತಾಳೆ ಕಿವಿ
ಆಗ ತತ್ವಕ್ಕೆ ಮುತ್ತಿಡುತ್ತದೆ ತುಟಿ, ಮನಸ್ಸು ಶುದ್ಧ ಭವಿ,
ಮುತ್ತೈದೆ ನಾಲಿಗೆಮುಡಿಗೆ
ಸೂಳೆ ಮನಸ್ಸಿನ ತೊಡೆಗೆ
ನಿತ್ಯ ನಿತ್ಯ ನಡೆಯುತ್ತದೆ ಭಾರಿ ಹಣಾಹಣಿ
ಎಲ್ಲ ಒಳಗೊಳಗೆ.
ಬೆರಳು ಚೀಪುವ ‘ಘ’ಗಳೆದುರಿಗೆ
ನೀರಿಗೆ ಬಿದ್ದ ಎಣ್ಣೆಹನಿ,
ಎಲ್ಲ ಅಪ್ಪಿಯೂ ಎಲ್ಲೂ ತಪ್ಪದ
‘ಪದ್ಮಪತ್ರಮಿವಾಂಭಸ’ರ ದನಿ

ಇವರ ಕೋರೆಮಾತಿನ ಹಾರೆಯೇಟಿಗೆ
ಮುರಿದು ಬೀಳದೆ ಮನೆ
ಮುರಿದು ಬೀಳದೆ ಕೊನೆ
ಸುರಿದು ಹೋಗದೆ ತೊಟ್ಟುಮುರಿದು
ಕಾಯ ಬಾಯಿಂದ ಹಾಲು ಸೊನೆ?
ಬಿದ್ದ ಕೊನೆಯಲ್ಲಿ ಬಾಡುಮೈಯಾಗಿ
ಹಾಡದೆ ಸಂಧ್ಯಾರಾಗವ ಇನ್ನೂ
ಮಧ್ಯಾಹ್ನದ ಅರೆಬಿರಿದ ಮೊಗ್ಗುನನೆ?

ಚಟಕ್ಕೆ ಮಾತು ಹುಟ್ಟಿಸಿ ಹಟಕ್ಕೆ ಸಾಕುವುದ?
ರಂಗಿನ ಅಂಗಿ ತೊಡಿಸಿ ಸಿಂಗರಿಸಿ ಮರೆಸುವುದ?
ಹಣ್ಣಿನ ಬಳ್ಳಿಯ ಮೇಲೆ ಮಿಣ್ಣಗೆ ಮುಳ್ಳು ಹಬ್ಬಿಸಿ
ಸುಳ್ಳೇ ಅದರ ಬಾಳಿಗೆ ಎಳ್ಳು ನೀರು ಬಿಡುವುದ?

ಸದಾ ಇದೊಂದೆ ಬೆರಗು ನನಗೆ
ಬೆರಗಿನೊಡನೆ ಕೊರಗು ಮರೆಗೆ
ಹೇಗೆ ತಿಳಿದೇನು ಇವರ ಮಾತಿನ
ತಳಾತಳದ ಸುಳಿಯ?
ಹೇಗೆ ಹೊಡೆದೇನು ಇವರ ನಾಲಿಗೆ ಹಾವು ನುಗ್ಗಿದ
ಮನೆ ಬಿಲಕ್ಕೆ ಬೆಣೆಯ?
ಹಿಡಿದೇನು ಹೇಗೆ ಪೊದೆ ಮರೆಯಲ್ಲಿ ಅಡಗಿದ
ಪಳಗಿದ ನರಿಯ
ಈ ನಾಟಕಕಾರರ ಕೃಷ್ಣವೇಷದ ನಿಜವ
ತಿಳಿವೆನೆಂದರೆ ಅವನ
ಕುಚೇಲರಷ್ಟೆ ಬಲ್ಲರು ಗೆಳೆಯ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...