Home / ಕವನ / ಕವಿತೆ / ಧವಳಪುರದ ಪವಾಡ

ಧವಳಪುರದ ಪವಾಡ

ಹಾರುವ ವಿಮಾನ ಹಾಗೇ ಹದ್ದಾಗಿ ಹೋದರೆ ಗತಿ?
ಗಡಿ ರಕ್ಷಿಸಿಯಾಯಿತಲ್ಲ!
ತೊಟ್ಟ ಬಟ್ನೆಗಳೇ ಥಟ್ಟನೆ ಇಲ್ಲವೆನ್ನಿ
ಏಕಾಂತದಲ್ಲೆ ಮಾನವೆಲ್ಲ!
ಧವಳಪುರದಲ್ಲಿ ಇಂಥ ಆಟಂಬಾಂಬ್ ಅಲ್ಲದಿದ್ದರೂ
ಚಿನಕುರಳಿ ಸಿಡಿಯುತ್ತವೆ.
ಮಾಮೂಲು ಬದುಕಿನ ಒಂದು ಕೂದಲು ಕೊಂಕದಿದ್ದರೂ
ಬುದ್ಧಿಗೆ ಶೀರ್ಷಾಸನ ಮಾಡಿಸುವ
ಸಾವಿರ ಪವಾಡ ಜರುಗುತ್ತವೆ.

ಕಲ್ಯಾಣನಗರಿಯ ಕಾಲಿಗೇ
ಕೈಜೋಡಿಸಿ ನಿಂತಿದೆ ಧವಳಪುರ,
ಆಳುಕಾಳು ಅದ್ಧೂರಿ ಭವನ
ಚಟಿಕಿ ಸದ್ದಿಗೆ ಸುಳಿವ ಮಣ ಮಣ ಕಾಗದ ಹಣ;
ಖಾಯಿಲೆ ಮಗುವಿನ ತಾಯಿ
ಚುನಾವಣೆಗೆ ನಿಂತ ನಾಯಿ
ಮಾರ್ಕಿನ ತಿಮ್ಮಾಬೋವಿಯ
ಆಕಳಿಸಿದ ಅದೆ ಮಾರ್ಕಿನ ಬಾಯಿ;
ಮೈಲಿ ಕ್ಯೂ ಕಾರು
ಹೊಸಾ ಹೊಸ ಕಾಣಿಕೆ ಮಾಲು
ಸತಿಸುತ ಸರ್ವಿಸುಗಳ ಋಣ ಸಲ್ಲಿಸಿ
ಪಾದಪೂಜೆಗೆ ಕಾದ
ಕನ್ನಡ ಕವಿತಿಲಕಗಳ ಸೀನಿಯಾರಿಟಿ ಪ್ರಕಾರದ ಸಾಲು
ಭಜನೆ ಭಂಗಿಗೆ ಹಠಾತ್ ಪ್ರಾಪ್ತವಾಗಿ
ಕೂಗುತಿದೆ ಭಕ್ತಗಣ ಎತ್ತುಗೊರಳಲ್ಲಿ;
ಎಲ್ಲ ಮಿಥ್ಯ ನೀನೇ ಸತ್ಯ ಸಾಯಿ ಸೋ
ಇಲ್ಲ ಬಾಳಿಸೋ

ಧವಳಪುರದಲ್ಲಿ ದಿನದಿನವು ಭಾರಿಪವಾಡ;
ಹಾವಿಗೆ ಓಡುವ ಗರುಡ
ಕಾಯಿ ಒಡೆದರೆ ಒಳಗೆ ಪರಿಮಳಿಸುವ ಮರುಗ
ಮುಕ್ಕಣ್ಣನಾಗಿ ಮರಳಿದ ಹುಟ್ಟಾ ಕುರುಡ;
ಎಲ್ಲರ ಎದುರೆದುರೇ ಒನಕೆ ಚಿಗುರಿ
ತೆಂಗಿನ ಮರದಿಂದ ಬಾಳೇಹಣ್ಣು ಉದುರಿ
ತೆಂದು ಸುದ್ದಿ :
ಕರೆದ ಚಪ್ಪಲಿ ಶಾಲು ಖಾಲಿಹವೆಯಿಂದ
ಹಾಜರಿಯಾದದ್ದೇನೋ ಸ್ವಂತ ಬಾತ್ಮೀದಾರರ ವರದಿ.
ಮಂತ್ರಿಸಿದ ಬೂದಿ, ಪವಿತ್ರ ಖಾದಿ
ಬಡವರಿಗೆಂದೇ ಗಿರವಿಯಂಗಡಿ ತೆರೆದು
ಹಣ ಮರಳಿ ಪಡೆಯದ ಮಾರ್ವಾಡಿಯ ಗಾದಿ
ಎಲ್ಲ ಎಲೆ ಕಲೆಸಿ ಕೂತ ಆಧ್ಯಾತ್ಮದ ದಿಲ್ಲಿ ಈ ಜಾಗ
ಭಕ್ತಿಯಲ್ಲಿ ತಮ್ಮ ಸಲ್ಲಿಸಿಕೊಂಡ ಬಂಜೆಯರು
ಅಪವಾದವಿಲ್ಲದೆ ಫಲಿಸಿದ್ದಾರೆ ಇಲ್ಲಿ;
ಭದ್ರನಿಂತಿದೆ ಯೋಗಿಯ ಅಮೃತ ಹಸ್ತ
ಇಂದಿಗೂ ಭಕ್ತೆಯರ ಎದೆಯಾಳದಲ್ಲಿ.

ಇಲ್ಲಿ ಬಂದವರಲ್ಲಿ ಬಹಳ ಜನ ಕಳಿತವರು,
ಒಂದುದಿನ ತಡೆದಿದ್ದರೆ ಕೊಳೆತು ಹುಳಿಯುತ್ತಿದ್ದರು,
ಪೇಜು ಪ್ರೂಫಿಗೆ ಬಂದಿದ್ದಾರೆ ಈಗಾಗಲೆ;
ಅಲ್ಲಿ ತಲೆಕಟ್ಟು ಹಾಕಿ ಇಲ್ಲಿ ಹೊಕ್ಕಳು ಎಳೆದು ಉಲ್ಲಿ ಕೊಂಬುಸಿಗಿಸಿ
ಇಷ್ಟು ತಿದ್ದಿದರೆ,
ಅಚ್ಚಾಗಿ ಬೈಂಡಾಗಿ ಕೆಲಸ ಪೂರ್ತಿ ಖೈದಾಗಿ
ತಕ್ಕ ವ್ಯವಹಾರಕ್ಕೆ ಮುಕ್ತರೇ.

ಯುದ್ಧ ಪ್ರವಾಹ ಭಯಂಕರ ಭೂಕಂಪ,
ಹತೋಟಿ ದಾಟಿ ಬೆಳೆಯುವ ಭಾರತ ಜನಗಣ ರಂಪ
ಕ್ಕೆಲ್ಲ ಎಳ್ಳುನೀರು ಹಾಡಿ
ಧವಳಪುರದಲ್ಲಿ ಪಾದ ಹೂಡಿ
ಕಡಲೆಯಿಂದ ಹುರುಳಿ ಹುರುಳಿಯಿಂದ ಕಡಲೆ ತೆಗೆದು
ಕಡೆಗೆ ಎರಡೂ ಸಮವೇ ಉಳಿಯುವ ಜಾದು ನೋಡಿ
ಪುಳಕಿತ ಭಕ್ತವೃಂದ ಜಿಗಿದೆದ್ದು
ಜಯ ಹೇ ಜಯ ಹೇ ಎಂದು ಬೊಬ್ಬಿರಿದು-

ಆಹಾ!
ಎಲ್ಲಿದೆ ಸ್ವಾಮೀ ಇಂಥ ನಿರ್ಲಿಪ್ತತೆ!
ಮೋಕ್ಷಕ್ಕೆ ಒಂದೇ ದಿನ ಹಿಂದೆ ಸಾಧ್ಯ
ಈ ಪ್ರಶಾಂತತೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...