Home / ಕವನ / ಕವಿತೆ / ಧವಳಪುರದ ಪವಾಡ

ಧವಳಪುರದ ಪವಾಡ

ಹಾರುವ ವಿಮಾನ ಹಾಗೇ ಹದ್ದಾಗಿ ಹೋದರೆ ಗತಿ?
ಗಡಿ ರಕ್ಷಿಸಿಯಾಯಿತಲ್ಲ!
ತೊಟ್ಟ ಬಟ್ನೆಗಳೇ ಥಟ್ಟನೆ ಇಲ್ಲವೆನ್ನಿ
ಏಕಾಂತದಲ್ಲೆ ಮಾನವೆಲ್ಲ!
ಧವಳಪುರದಲ್ಲಿ ಇಂಥ ಆಟಂಬಾಂಬ್ ಅಲ್ಲದಿದ್ದರೂ
ಚಿನಕುರಳಿ ಸಿಡಿಯುತ್ತವೆ.
ಮಾಮೂಲು ಬದುಕಿನ ಒಂದು ಕೂದಲು ಕೊಂಕದಿದ್ದರೂ
ಬುದ್ಧಿಗೆ ಶೀರ್ಷಾಸನ ಮಾಡಿಸುವ
ಸಾವಿರ ಪವಾಡ ಜರುಗುತ್ತವೆ.

ಕಲ್ಯಾಣನಗರಿಯ ಕಾಲಿಗೇ
ಕೈಜೋಡಿಸಿ ನಿಂತಿದೆ ಧವಳಪುರ,
ಆಳುಕಾಳು ಅದ್ಧೂರಿ ಭವನ
ಚಟಿಕಿ ಸದ್ದಿಗೆ ಸುಳಿವ ಮಣ ಮಣ ಕಾಗದ ಹಣ;
ಖಾಯಿಲೆ ಮಗುವಿನ ತಾಯಿ
ಚುನಾವಣೆಗೆ ನಿಂತ ನಾಯಿ
ಮಾರ್ಕಿನ ತಿಮ್ಮಾಬೋವಿಯ
ಆಕಳಿಸಿದ ಅದೆ ಮಾರ್ಕಿನ ಬಾಯಿ;
ಮೈಲಿ ಕ್ಯೂ ಕಾರು
ಹೊಸಾ ಹೊಸ ಕಾಣಿಕೆ ಮಾಲು
ಸತಿಸುತ ಸರ್ವಿಸುಗಳ ಋಣ ಸಲ್ಲಿಸಿ
ಪಾದಪೂಜೆಗೆ ಕಾದ
ಕನ್ನಡ ಕವಿತಿಲಕಗಳ ಸೀನಿಯಾರಿಟಿ ಪ್ರಕಾರದ ಸಾಲು
ಭಜನೆ ಭಂಗಿಗೆ ಹಠಾತ್ ಪ್ರಾಪ್ತವಾಗಿ
ಕೂಗುತಿದೆ ಭಕ್ತಗಣ ಎತ್ತುಗೊರಳಲ್ಲಿ;
ಎಲ್ಲ ಮಿಥ್ಯ ನೀನೇ ಸತ್ಯ ಸಾಯಿ ಸೋ
ಇಲ್ಲ ಬಾಳಿಸೋ

ಧವಳಪುರದಲ್ಲಿ ದಿನದಿನವು ಭಾರಿಪವಾಡ;
ಹಾವಿಗೆ ಓಡುವ ಗರುಡ
ಕಾಯಿ ಒಡೆದರೆ ಒಳಗೆ ಪರಿಮಳಿಸುವ ಮರುಗ
ಮುಕ್ಕಣ್ಣನಾಗಿ ಮರಳಿದ ಹುಟ್ಟಾ ಕುರುಡ;
ಎಲ್ಲರ ಎದುರೆದುರೇ ಒನಕೆ ಚಿಗುರಿ
ತೆಂಗಿನ ಮರದಿಂದ ಬಾಳೇಹಣ್ಣು ಉದುರಿ
ತೆಂದು ಸುದ್ದಿ :
ಕರೆದ ಚಪ್ಪಲಿ ಶಾಲು ಖಾಲಿಹವೆಯಿಂದ
ಹಾಜರಿಯಾದದ್ದೇನೋ ಸ್ವಂತ ಬಾತ್ಮೀದಾರರ ವರದಿ.
ಮಂತ್ರಿಸಿದ ಬೂದಿ, ಪವಿತ್ರ ಖಾದಿ
ಬಡವರಿಗೆಂದೇ ಗಿರವಿಯಂಗಡಿ ತೆರೆದು
ಹಣ ಮರಳಿ ಪಡೆಯದ ಮಾರ್ವಾಡಿಯ ಗಾದಿ
ಎಲ್ಲ ಎಲೆ ಕಲೆಸಿ ಕೂತ ಆಧ್ಯಾತ್ಮದ ದಿಲ್ಲಿ ಈ ಜಾಗ
ಭಕ್ತಿಯಲ್ಲಿ ತಮ್ಮ ಸಲ್ಲಿಸಿಕೊಂಡ ಬಂಜೆಯರು
ಅಪವಾದವಿಲ್ಲದೆ ಫಲಿಸಿದ್ದಾರೆ ಇಲ್ಲಿ;
ಭದ್ರನಿಂತಿದೆ ಯೋಗಿಯ ಅಮೃತ ಹಸ್ತ
ಇಂದಿಗೂ ಭಕ್ತೆಯರ ಎದೆಯಾಳದಲ್ಲಿ.

ಇಲ್ಲಿ ಬಂದವರಲ್ಲಿ ಬಹಳ ಜನ ಕಳಿತವರು,
ಒಂದುದಿನ ತಡೆದಿದ್ದರೆ ಕೊಳೆತು ಹುಳಿಯುತ್ತಿದ್ದರು,
ಪೇಜು ಪ್ರೂಫಿಗೆ ಬಂದಿದ್ದಾರೆ ಈಗಾಗಲೆ;
ಅಲ್ಲಿ ತಲೆಕಟ್ಟು ಹಾಕಿ ಇಲ್ಲಿ ಹೊಕ್ಕಳು ಎಳೆದು ಉಲ್ಲಿ ಕೊಂಬುಸಿಗಿಸಿ
ಇಷ್ಟು ತಿದ್ದಿದರೆ,
ಅಚ್ಚಾಗಿ ಬೈಂಡಾಗಿ ಕೆಲಸ ಪೂರ್ತಿ ಖೈದಾಗಿ
ತಕ್ಕ ವ್ಯವಹಾರಕ್ಕೆ ಮುಕ್ತರೇ.

ಯುದ್ಧ ಪ್ರವಾಹ ಭಯಂಕರ ಭೂಕಂಪ,
ಹತೋಟಿ ದಾಟಿ ಬೆಳೆಯುವ ಭಾರತ ಜನಗಣ ರಂಪ
ಕ್ಕೆಲ್ಲ ಎಳ್ಳುನೀರು ಹಾಡಿ
ಧವಳಪುರದಲ್ಲಿ ಪಾದ ಹೂಡಿ
ಕಡಲೆಯಿಂದ ಹುರುಳಿ ಹುರುಳಿಯಿಂದ ಕಡಲೆ ತೆಗೆದು
ಕಡೆಗೆ ಎರಡೂ ಸಮವೇ ಉಳಿಯುವ ಜಾದು ನೋಡಿ
ಪುಳಕಿತ ಭಕ್ತವೃಂದ ಜಿಗಿದೆದ್ದು
ಜಯ ಹೇ ಜಯ ಹೇ ಎಂದು ಬೊಬ್ಬಿರಿದು-

ಆಹಾ!
ಎಲ್ಲಿದೆ ಸ್ವಾಮೀ ಇಂಥ ನಿರ್ಲಿಪ್ತತೆ!
ಮೋಕ್ಷಕ್ಕೆ ಒಂದೇ ದಿನ ಹಿಂದೆ ಸಾಧ್ಯ
ಈ ಪ್ರಶಾಂತತೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...