Home / ಕವನ / ಕವಿತೆ / ಅಪರೂಪದವನು

ಅಪರೂಪದವನು

ಬೆಟ್ಟದ ತಪ್ಪಲಲ್ಲೇ ಹುಟ್ಟಿ ಅಲ್ಲೇ ಬಾಳು ಕಟ್ಟಿದ್ದೇವೆ,
ಕೊಪ್ಪಲು ಬಿಟ್ಟು ಬೆಟ್ಟದ ನೆತ್ತಿ ಹತ್ತಲಾರದೆ ಹೋಗಿದ್ದೇವೆ.
ಇಲ್ಲೇ ಹುಟ್ಟಿದ ನೀನು
ಅಲ್ಲಿಗೆ ಮುಟ್ಟಿದ್ದಕ್ಕೆ
ನಗಾರಿ ಬಡಿದರು ಹೊರಗೆ
ನಡುಗಿದ್ದೇವೆ ಒಳಗೆ
ಅಲ್ಲಿಗೆ ಸೇರಿದ ನೀನು ಮಲ್ಲಿಗೆ ಪರಿಮಳವಾದೆ
ಗಾಳಿಸವಾರಿ ಹೊರಟು ದಿಗಂತದಲ್ಲಿ ಲಂಗರು ನಿಂತೆ
ನಾವೋ-
ಹಿಂಡು ಹಿಂಡಾಗಿ ಮೇವಿಗೆ
ಕಂಡ ಕಂಡಲ್ಲಿ ಅಲೆದಿದ್ದೇವೆ,
ಮುಟ್ಟಲೊಂದು ಗುರಿಯಿಲ್ಲದೆ ಉಟ್ಟಿದ್ದ ಬಿಚ್ಚಿ ಕುಣಿದಿದ್ದೇವೆ.

ಕಳೆದ ಕೆಲವು ದಿನ ಹಲವು ಸಲ ನೆನೆದಿದ್ದೇನೆ ಗಾಂಧಿ
ನನಗೆ ಏನೆಲ್ಲ ನೀನು ಎಂದು,
ಈ ಮಣ್ಣಿನ ಕುಡಿಕೆಯನ್ನ ಬಣ್ಣದ ಹೂಮಾಡಿ
ಆಕಾಶಕ್ಕೆ ಒದ್ದ ಮದ್ದು ಯಾವುದೆಂದು.
ನೀನು ಉರಿಹಗಲ ಗೆದ್ದು ಸಂಜೆ ಮುಗಿಲ ಹೊದ್ದು
ಗಿರಿ ಕಡಲುಗಳ ನುಡಿಸುವಾಗ
ನನಗೆ ಏಳರ ಬೆಳಗು
ಬೆಳೆಯದ ಒಳಗು
ತಲೆತುಂಬ ಕಪಿಗಳ ಲಾಗ.
ಆದರೂ ಆಗ ಕೈಯೆಟುಕಿಗೆ ಕಂಡ ಬಾನು
ಬರಬರುತ್ತ ಕನಸಿನ ಗಡಿಯೊಳಗೆ ಹೊರಳುತ್ತ
ಕಲ್ಪನೆಯನ್ನಷ್ಟೆ ಮುದ್ದಿಸಿದೆ,
ಮರುಳಾಗಿ ತೋಳೆತ್ತಿ ತಬ್ಬಲು ಹೋದರೆ
ಬರಿ ಬಯಲಷ್ಟೆ ಮೈಯನ್ನು ತಬ್ಬಿದೆ.

ತಪ್ಪಿದೆ ಮಹಾತ್ಮ ತಪ್ಪಿದೆ.
ಸಿಕ್ಕ ನೆಲದಲ್ಲೆಲ್ಲ ಸಂಶಯ ಬೆಳೆಯುವ ನಾನು
ಅದರ ಹೆಣವನ್ನು ಸಹ ಶ್ರದ್ಧೆಯಲ್ಲಿ ಸುಡುವ ನೀನು
ಎಲ್ಲಿಗೆ ಎಲ್ಲಿಯ ಮೇಳ?
ನಿಂತರೆ ಎದುರೆದುರು ನಾವು
ನಿಂತಂತೆ ಮುಖಮಾಡಿ ನೆಲಕ್ಕೆ ಬಾನು

ಗಾಂಧಿ, ನೀನು
ಹತ್ತು ಹುತ್ತಗಳಲ್ಲಿ ಕ್ಬೆಯಿಟ್ಟು ಹುಲಿಬಾಯ
ಮುತ್ತಿಟ್ಟು ಸಾಗಿದವನು,
ನಾವೆಲ್ಲ ಗೇಟಾಚೆ ಎಸೆದ ನಯನೀತಿಗಳ
ಮೈಯಲ್ಲಿ ನೆಟ್ಟು ಮರ ಬೆಳೆದು ಫಲಭಾರಕ್ಕೆ
ತಲೆಬಾಗಿದವನು;
ಸತ್ಯಶುಭಗಳ ಕಲ್ಪನೆಯ ಹಂಸತಲ್ಪದಲಿ
ಹೊರಳಿಯೂ ಮಣ್ಣನ್ನು ಮರೆಯದವನು;
ಗೊಬ್ಬರವಾಗಿ ಬಿದ್ದು
ಮಲ್ಲಿಗೆಯಾಗಿ ಎದ್ದು
ಹೆತ್ತ ಬಳ್ಳಿಗೆ ರತ್ನಕಿರೀಟವಾದವನು.

ನಿನ್ನ ಪ್ರಯೋಗಗಳೆಲ್ಲ ಪ್ರಾಣವಿಯೋಗದ ಜಾಡಲ್ಲೆ
ನಡೆದವಲ್ಲ!
ಸತ್ಯದ ಕಾಲರು ಹಿಡಿದು
ಕೆನ್ನೆಗೆ ಹೊಡೆದು
ಅದರ ಬಾಯಗಲಿಸಿ ಹಲ್ಲೆಣಿಸಲು ಹೋಗಿ ದಣಿದು
ಕಂಡ ಹದಿನಾಲ್ಕು ಲೋಕಕ್ಕೆ ತಲ್ಲಣಿಸಿ ಮಣಿದು
ಕಾಲಿಗೆ ಬಿದ್ದವನು,
ಬಿದ್ದ ವಿನಯಕ್ಕೆ ಗೌರೀಶಂಕರದಲ್ಲಿ ಎದ್ದವನು.

ಎಂದೂ ಬೇಕಾಗಲಿಲ್ಲ ನಿನಗೆ ಯಾರದೂ ದಯ
ಬೆತ್ತಲೆ ಇರುವವರಿಗೆ ಎತ್ತಲ ಭಯ? ಬದಲಿಗೆ
ನೀನು ನಿಂತರೆ ದೇಶ ನಿಂತಿತು – ನಿನಗೆ
ನೆಗಡಿಯಾದರೆ ಲೋಕ ಕೆಮ್ಮಿತು.
ಗೊತ್ತ ಗಾಂಧಿ ಏನಾಗಿದೆ ಈಗ?
ಒಡೆದು ಬಿದ್ದಿದೆ ಈ ಮಹಲ ಮರ್ಯಾದೆಯ ಬೀಗ,
ಹಾರು ಹೊಡೆದಿದೆ ಹೆಬ್ಬಾಗಿಲು
ಹಾಡಿದೆ ಕತ್ತಲು ರಾಗ :
ಎಲ್ಲ ರಾಣಿಯರೇ ಆಗಿ
ಬೆರಣಿ ತಟ್ಟುವರೇ ಇಲ್ಲವಾಗಿ
ಕಾಡಿದೆ ನಮ್ದನ್ನು ಪ್ರತಿಷ್ಠೆಯ ರೋಗ.
ಕಳ್ಳ ಮುತ್ತಿಟ್ಟರೆ ಹಲ್ಲೆಣಿಸಿಕೊಳ್ಳುವ ಕಾಲ,
ನೀ ಹಚ್ಚಿದ್ದ ಭಾವದಾದೇಗದುರಿಯಲ್ಲಿ
ಹಾಲುಕ್ಕಿ ಬಂದ ಶೀಲದ ಚೆಲುವು ಬತ್ತಿದೆ
ಉಳಿದಿದೆ ತಳ ಕರಿಗಟ್ಟಿದ ಖಾಲಿ ಪಾತ್ರೆ;
ಹರಿದ ಜೇಬಿಂದ ಎತ್ತಿದ ಹಣ
ಕಟ್ಟಿದ ಮಣಿ ಮಂಟಪದಲ್ಲಿ
ನಡೆದಿದೆ ಹೊಸಾ ಹೊಸ ದನಗಳ ಜಾತ್ರೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...