Home / ಕಥೆ / ಕಿರು ಕಥೆ / ರೊಟ್ಟಿ

ರೊಟ್ಟಿ

ರೈಲು ನಿಲ್ದಾಣದ ಒಂದು ಬೆಂಚಿನ ಮೇಲೆ ಗಂಡ ಹೆಂಡತಿ ಕುಳಿತಿದ್ದರು. ಗಾಡಿ ಬರುವುದು ತಡವೆಂದು ಪೋರ್ಟರ್‍ ಹೇಳಿದ. “ರೀ ಕುಡಿಯಲು ನೀರು ತಗೊಂಡು ಬರ್‍ರಿ. ಇಲ್ಲೇ ಊಟ ಮಾಡೂಣು, ಹ್ಯಾಂಗಿದ್ರೂ ಗಾಡಿ ತಡಾ ಆಗಿ ಬರುವುದು” ಎಂದು ಹೆಂಡತಿಯ ಮಾತಿಗೆ `ಹೂಂ’ ಎಂದು ಬಾಟಲಿ ತೆಗೆದುಕೊಂಡು ಹೋಗಿದ್ದ ಗಂಡ. ಆಕೆ ಚೀಲದಲ್ಲಿದ್ದ ಬುತ್ತಿಯ ಗಂಟನ್ನು ಬಿಚ್ಚಿದ್ದಳು.

ಎದುರು ಬೆಂಚಿನಲ್ಲಿ ಕುಳಿತ ವ್ಯಕ್ತಿಯೊಬ್ಬನ ದೃಷ್ಟಿ ಅವಳತ್ತ ಹರಿದಿತ್ತು. ಆಕೆಯೂ ಆಕಸ್ಮಿವೆನ್ನುವಂತೆ ಅವನನ್ನು ನೋಡಿದ್ದಳು. ಬಡಕಲು ಶರೀರದ, ಕುರುಚಲು ಗಡ್ಡದ ಆ ವ್ಯಕ್ತಿಯ ಕಣ್ಣು ತನ್ನ ಮೇಲೆ ಸುಳಿದಾಡುತ್ತಿವೆ ಅನಿಸಿ ಆಕೆ ಮುಖವನ್ನು ಬೇರೆ ಕಡೆ ಹೊರಳಿಸಿದ್ದಳು. ಪ್ಲಾಟ್‌ಫಾರ್ಮಿನ ಕಂಬಕ್ಕೆ ತೂಗು ಹಾಕಿದ್ದ ಫಲಕ ಕಂಡಿತ್ತು. “ಕಳ್ಳರಿದ್ದರೆ ಎಚ್ಚರಿಕೆ!” ಫಲಕದಲ್ಲಿನ ಅಕ್ಷರಗಳು ದಿಗಿಲು ಹುಟ್ಟಿಸಿದವು. ಮೈತುಂಬ ಸೆರಗು ಹೊದ್ದುಕೊಂಡು ಗಂಡ ಹೋದ ದಾರಿಯತ್ತ ಗಮನ ಹರಿಸಿದಳು. ತನ್ನ ಕೊರಳಿನಲ್ಲಿದ್ದ ನಾಲ್ಕೆಳೆಯ ಬಂಗಾರದ ಸರದ ಮೇಲೆ ಅವನ ಕಣ್ಣು ಬಿತ್ತು? ಅನುಮಾನಿಸಿದಳಾಕೆ. ಮತ್ತೊಮ್ಮೆ ಆ ವ್ಯಕ್ತಿಯತ್ತ ಓರೆ ನೋಟ ಬೀರಿದಳು. ಅವನು ರೆಪ್ಪೆ ಪಿಳುಕಿಸದೆ ನೋಡುತ್ತಲೇ ಇದ್ದ. ಒಂದು ಕ್ಷಣ ಭಯವೆನಿಸಿತು. ಹಾಡು ಹಗಲು, ಜನದಟ್ಟಣೆ ಇದೆ. ಅವನೇನು ಮಾಡಲು ಸಾಧ್ಯ? ಮತ್ತೆ ತಾನೇ ಸಮಾಧಾನ ಮಾಡಿಕೊಂಡಳು.

ಗಂಡ ನೀರು ತಂದ. ಆಕೆ ಅವನ ಕೈಗೆ ರೊಟ್ಟಿ – ಪಲ್ಲೆ ಹಚ್ಚಿಕೊಟ್ಟಳು. ತಾನೂ ರೊಟ್ಟಿ ಹಿಡಿದುಕೊಂಡಳು. ಒಂದು ತುತ್ತು ಬಾಯಲ್ಲಿಡುತ್ತಿದ್ದಂತೆ ಅವಳ ಕಣ್ಣು ಎದುರು ಬೆಂಚನ್ನು ದೃಷ್ಟಿಸಿತ್ತು. ಈಗ ಆಗಂತುಕ ವ್ಯಕ್ತಿ ಆಸೆಗಣ್ಣುಗಳಿಂದ ನೋಡ ತೊಡಗಿದ್ದ. ಅವಳ ಒಡಲಲ್ಲಿ ತುಮುಲವೆದ್ದಿತು. ಅವನು ಒಮ್ಮೆಲೆ ಎದ್ದು ನಿಂತಿದ್ದ. ಆಕ್ರಮಣಕ್ಕೆ ಸಜ್ಜಾಗುತ್ತಿದ್ದಾನೆ ಅನ್ನಿಸಿತು. ದಿಢೀರೆಂದು ಮೇಲೆ ಬಿದ್ದು ಕೊರಳ ಸರ ಕಿತ್ತು ಓಡಿದರೆ ಏನು ಮಾಡುವುದು? ಸರ ಹೋದರೆ ಹೋಗಲಿ ಚೂರಿ, ಬ್ಲೇಡು ಹಾಕಿದರೆ ಗತಿಯೇನು? ಆಕೆ ಆಗಂತುಕನ ಬಗ್ಗೆ ವಿಪರೀತವಾಗಿ ಊಹಿಸಿಕೊಂಡಳು. ಅವನು ನೋಡುವ ರೀತಿಯೇ ಅಪಾಯಕಾರಿ ಎಂಬ ಭಯ ಆವರಿಸಿತು. ಮತ್ತೆ ಆ ಆಗಂತುಕ ಕುಳಿತು ನಾಲಗೆಯಿಂದ ತನ್ನ ತುಟಿ ಸವರಿಕೊಳ್ಳತೊಡಗಿದ. ಭಯವಿಹ್ವಲಳಾದಳಾಕೆ.

“ರಿ, ಆ ಮನುಷ್ಯ ಎಷ್ಟೋ ಹೊತ್ತಾತು ನನ್ನ ಕಡೆಗೆ ನೋಡಾಕ ಹತ್ಯಾನ” ಎಂದಳು.

“ಯಾರವನು?”

“ಅಲ್ಲೆ ಎದುರಿಗೆ ಕುಂತಾನ ನೋಡ್ರಿ” ಕಣ್ಣು ಸಂಜ್ಞೆಯಿಂದಲೇ ತೋರಿಸಿದಳಾಕೆ.

ಗಂಡ ಅತ್ತ ನೋಡಿದ್ದ.

ಆಗಂತುಕನ ದೃಷ್ಟಿ ಬೇರೆ ಕಡೆಗೆ ಹೊರಳಿತ್ತು. “ಇನ್ನೊಂದ್ಸಲ ಈ ಕಡೆಗೆ ನೋಡ್ಲಿ. ಅವನ ಕಣ್ಣಗುಡ್ಡೆ ಕಿತ್ತು ಕೈಗೆ ಹಾಕ್ತಿನಿ” ಎಂದು ಊಟ ಮುಗಿಸಿ ನೀರು ಕುಡಿದ ಗಂಡ. ಆಗಂತುಕನು ಮತ್ತೆ ಮುಖ ಅತ್ತ ತಿರುಗಿಸಿದ್ದ. ಅದನ್ನು ಕಂಡದ್ದೆ ಗಂಡನ ಮೈಯೆಲ್ಲಾ ಬೆಂಕಿಯಾಗಿತ್ತು. ಅವನು ಎದ್ದು ಹೋಗಿ ಮುಸುರಿ ಕೈಯಿಂದಲೇ ಕಪಾಳಕ್ಕೆ ರಪ್ಪೆಂದು ಬಾರಿಸಿದ್ದ. ಆಗಂತುಕ ನೆಲಕ್ಕೆ ಉರುಳಿದ.

ಏಕಾಏಕಿಯಾಗಿ ಸಂಭವಿಸಿದ ಈ ಪ್ರಸಂಗ ಜನರ ಗಮನ ಸೆಳೆಯಿತು. ಗಬೋ ಎಂದರು ಜನ. “ಏನಾಯಿತು? ಏನಾಯಿತು?” ಎಲ್ಲರ ಮುಖದಲ್ಲೂ ಗಾಬರಿ, ಕೌತುಕ.

“ಬದ್ಮಾಶ್, ಅಕ್ಕ-ತಂಗೇರು ಇಲ್ಲೇನು ನಿನ್ಗ?” ಆಕ್ರೋಶದಿಂದ ಕುದಿಯತೊಡಗಿದ್ದ ಗಂಡ. ಅವನ ಧ್ವನಿಯೊಂದಿಗೆ ಧ್ವನಿ ಬೆರೆಸಿ ಹೆಂಡತಿಯೂ ಬೈಯತೊಡಗಿದಳು.

ಆಗಂತುಕ ಕಿಂಚಿತ್ತೂ ಮಿಸುಗಾಡಲಿಲ್ಲ. ಸತ್ತು ಹೋದನೆ ಅವನು? ಜನರ ಗುಂಪಲ್ಲಿ ಗುಸುಗುಸು ಎದ್ದಿತು. ಅಷ್ಟರಲ್ಲಿ ಪೋಲಿಸರು, ಸ್ಟೇಶನ್ ಮಾಸ್ಟರ್‍ ಬಂದರು. ಗಂಡ ನಡೆದುದನ್ನು ವಿವರಿಸಿದ. ಪೋರ್ಟರನೊಬ್ಬ ಅವಸರದಿಂದ ನೀರು ತಂದು ಆಗಂತುಕನ ಮುಖದ ಮೇಲೆ ಸಿಂಪಡಿಸಿದ. ಪೋಲಿಸ್ ಹೇಳಿದ “ಇವನು ಕಳ್ಳನಲ್ಲ ಇಲ್ಲಿಯ ಖಾಯಂ ಗಿರಾಕಿ”

“ಅವನು ನನ್ನ ಹೆಂಡತಿಯನ್ನು ನೋಡುತ್ತಿದ್ದ” ಆರೋಪಿಸಿದ್ದ ಗಂಡ.

ಸಾವಕಾಶವಾಗಿ ಎದ್ದು ಕುಳಿತ ಆಗಂತುಕನನ್ನು ಸ್ಟೇಶನ್ ಮಾಸ್ಟರ್‍ ಕೇಳಿದರು.

“ಹೀಗೇಕೆ ಮಾಡಿದಿಯೋ ನೀನು?”

ಆಗಂತುಕ ಕಣ್ಣಲ್ಲಿ ನೀರು ತುಂಬಿಕೊಂಡು ಹೇಳಿದ.

“ಸಾಹೇಬರ… ಎರಡು ದಿನಾ ಆತು ನಾನು ಊಟ ಮಾಡಿಲ್ಲ. ಹಸಿವು ತಡೀಲಾರದ ಆ ತಾಯಿ ಕಡೆ ನೋಡಿದ್ಯೆ ಒಂದು ರೊಟ್ಟಿ ಸಿಕ್ಕೀತು ಅಂತ”.

*****

 

 

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...