ರೋಜಾ

ಚಿತ್ರ: ಅಲೆಕ್ಸಾ / ಪಿಕ್ಸಾಬೇ
ಚಿತ್ರ: ಅಲೆಕ್ಸಾ / ಪಿಕ್ಸಾಬೇ

ಅಮಾವಾಸ್ಯೆಯ ಮರುದಿನ ಸಂಜೆಯಷ್ಟು ಹೊತ್ತಿಗೆ ಆಕಾಶದಲ್ಲಿ ಚಂದ್ರ ದರ್ಶನವಾಯಿತು.  ಗಲ್ಲಿಯಲ್ಲಿ ಸಂಭ್ರಮ.  ಸಾರಾಬೂ ಬೀದಿಗೆ ಬಂದು ತನ್ನ ನಾಲ್ಕು ಮಕ್ಕಳಿಗೂ ಚಂದ್ರನನ್ನು ತೋರಿಸಿದಳು.  “ನಾಳೆ ರೋಜಾ ಚಾಲು”  ಎಂದಳು.  ಅವಳ ಮೂರು ಗಂಡು ಮಕ್ಕಳು “ನಾವೂ ನಾಳೆಗೆ ರೋಜಾ ಇರ್ತೀವಿ” ಎಂದರು.

ಮಾತಿನಲ್ಲಿ ಚುರುಕಾಗಿದ್ದ ಎಂಟು ವರ್ಷದ ನಫೀಸಾ “ನಾನೂ ರೋಜಾ ಮಾಡ್ತೀನಿ ಅಮ್ಮಾ” ಎಂದಳು.

“ನಿನಗೆ ಆಗುದಿಲ್ಲ ಬಿಡು” ಎಂದ ಅವಳ ಅಣ್ಣ.

“ನಾನು ರೋಜಾ ಮಾಡ್ತೀನಿ” ನಫೀಸಾ ಹಟದ ಧೋರಣೆಯಲ್ಲಿ ಹೇಳಿದಳು.

“ಬೇಟಿ ರೋಜಾ ಅಂದ್ರ ಬಾಯಲ್ಲಿ ಹನಿ ನೀರೂ ಹಾಕಬಾರ್‍ದು.  ಹಾಗಾದರೆ ರೋಜಾ ಕಬುಲು ಆಗುವುದು.  ನೀನಿನ್ನೂ ಚಿಕ್ಕವಳು, ನಿನಗೆ ತ್ರಾಸಾಗುವುದು” ಸಾರಾಬೂ ಮಗಳನ್ನು ರಮಿಸಿದಳು.

“ನನ್ಗೇನೂ ಆಗುದಿಲ್ಲ ನಾನು ರೋಜಾ ಮಾಡ್ತೀನಿ” ಉತ್ಸಾಹ ತೋರಿದಳು ನಫೀಸಾ.

“ಒಂದು ಕಡ್ಡಿ ಕೂಡಾ ಬಾಯಲ್ಲಿ ಹಾಕಬಾರ್‍ದು.  ಅದೆಲ್ಲ ನಿನ್ನಿಂದ ಆಗುದಿಲ್ಲ.  ಇನ್ನಷ್ಟು ದೊಡ್ಡವಳಾದ ಮೇಲೆ ರೋಜಾ ಹಿಡಿಯುವಂತೆ ಬೇಟಿ” ತಂದೆ ಹುಸೇನಲಿ ಹೇಳಿದ.

“ನಾನು ರೋಜಾಮಾಡ್ತೀನಿ” ನಫೀಸಾ ಹಟ ಬಿಡಲಿಲ್ಲ.

“ಇನ್ ಷಾ ಅಲ್ಲಾ!” ಎಂದು ಸುಮ್ಮನಾದರು ಸಾರಾಬೂ-ಹುಸೇನಲಿ.

ಮಸೀದಿಯ ಮೀನಾರಿನಿಂದ ಸೈರಿಗೆ ಕರೆ ಕೇಳಿಸಿತು.  ಮಕ್ಕಳು ಉತ್ಸಾಹದಿಂದಲೇ ಎದ್ದರು.  ಮನೆಯಲ್ಲಿ ಇದ್ದದ್ದು ಮೂರು ರೊಟ್ಟಿ ಮಾತ್ರ.  ಮಕ್ಕಳು ಹಂಚಿಕೊಂಡು ತಿಂದು ನಿಯತ್ತು ಹೇಳಿ ರೋಜಾ ಹಿಡಿದರು.  ಸಾರಾಬೂ ಕರಿ ಚಹ ಕುಡಿದಳು.  ಹುಸೇನಲಿ ಹಮಾಲಿ ಮಾಡಬೇಕು ಅವನು ರೋಜಾ ಹಿಡಿಯಲಿಲ್ಲ.

ಹೊತ್ತೇರ ತೊಡಗಿದ್ದಂತೆ ಸಾರಾಬೂ ಚಿಂತೆಗೊಳಗಾದಳು.  ಮಗಳ ರೋಜಾ ಪೂರ್ತಿಯಾಗುವುದೋ ಇಲ್ಲವೋ ಎಂಬ ಅನುಮಾನ ಕಾಡಿತು.  “ಹೇ ಅಲ್ಲಾಹುವೆ!  ಮಗು ಉಪವಾಸ ಅರ್ಧಕ್ಕೆ ನಿಲ್ಲಿಸಿದರೆ ತಪ್ಪು ಮನ್ನಿಸು” ಎಂದು ಹತ್ತಾರು ಸಲ ಪ್ರಾರ್ಥಿಸಿದಳು.

ನಫೀಸಾ ಮಾತ್ರ ಲವಲವಿಕೆಯಿಂದಲೇ ಇದ್ದಳು.  ಶಾಲೆಗೂ ಹೋಗಿ ಬಂದಳು.  ಒಂದು ಹನಿ ನೀರೂ ಎನ್ನಲಿಲ್ಲ.  ಮಧ್ಯಾಹ್ನದ ಇಳಿ ಹೊತ್ತಿಗೆ ಆಟದಲ್ಲಿ ಮಗ್ನಳಾದಳು.

ಸೂರ್ಯ ಮುಳುಗಿದ.  ಅಂದಿನ ರೋಜಾದ ವ್ರತ ಮುಗಿಯಿತು.

“ಬೇಟಿ ನಿನಗೆ ಹಸಿವು ಅನಿಸಲಿಲ್ಲವೆ?” ಸಾರಾಬೂ ಕೇಳಿದಳು.

“ಇಲ್ಲಾ ಅಮ್ಮಾ”

“ಸ್ವಲ್ಪೂ ತ್ರಾಸು ಅನಿಸಿಲ್ಲ” ಕೆದಕಿ ಕೇಳಿದ ಹಿರಿಯಣ್ಣ.

“ರೋಜಾ ಅಂದ್ರ ಉಪವಾಸ.  ಅದು ನಮ್ಗ ರೂಢಿ ಐತಲ್ಲ ಭಯ್ಯಾ” ಎಂದು ಗಳಿಬಿಳಿ ಮಾತಾಡಿ ಒಣಚುರುಮುರಿಯನ್ನು ಬಾಯಿ ತುಂಬಿಕೊಂಡಳು ನಫೀಸಾ.  ಸಾರಬೂ ಕಣ್ಣಲ್ಲಿ ಹನಿಯೊಡೆದಿತ್ತು.

*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...