Home / ಕವನ / ಕವಿತೆ / ಕಂಕಣ

ಕಂಕಣ

ತಿರುಗಿದೆನು ಕರುನಾಡ ವರೆಯಿಡುತ ಪೂರವಕೆ
ಉರುಭಯಂಕರವಾಯ್ತು ನಡುಗಿತೆದೆಯುಡುಗಿ ಬಲ
ಪಡುವಲಿನ ಹೊಡೆತದಲಿ
ವಡಲೊಡೆದು ಬೇರೆನಿಸಿ
|| ಸಡಲಿರಲು ಪ್ರೇಮಬಂಧ ||

ಮರುಗಿದೆನು ಹಂಪೆಯಲಿ ಸೊರಗಿದೆನು ಸುಯಿಲಿಡುತ
ಅರಿಯಿರಿದ ರೂಪಗಳ ತಡವರಿಸಿ ತಬ್ಬಿದೆನು
ಮೃಡನಲ್ಲಿ ಬೇಡಿದೆನು
ಬಿಡುಯೆಂದು ಹಣೆಗಣ್ಣ
|| ಸುಡುಯೆಂದು ಸತ್ಯ ಕುರುಹ ||

ತಾಳಿದಾವೇಶಗಳು ಬಾಳದೆಯೆ ಅಳಿದಿಹುವು
ಬೀಳದಲೆ ತರ್ಪಣದ ಜಲ ಮೊಳೆಯುವುವೆ ಬೀಜ!
ಮೂಜಗದ ಭಂಡಾರ
ಸೋಜಿಗದ ಕರುನಾಡು
|| ಈ ಜಗದ ಚಿತ್ರ ಭಿತ್ತಿ ||

ಚಾಳೀಸೆ ಕಂಗಳಲಿ ಕಾಣಿಸವೆ ! ಕರುಹುಗಳು
ಸಾಲದೀವಿಗೆಯಿಟ್ಟು ತೋರಣವ ಸಿಂಗರಿಸಿ
ಸೋಗೆಗಂಗಳ ಭಾಗ್ಯ
ಬಾಗಿ ಬಳುಕುತ ಬಹಳು
|| ಈಗಲಿದೊ ಹರಕೆ ಫಲಿಸಿ ||

ಎಣಿಸುತಿದೆ ಹೆಜ್ಜೆಗಳ ಮಹಿಷರ ಶಿರವನ್ನು
ಚಿಣಿಚಿಣನೆ ಚಿಗಿದೋಡೆ ಧಾರ್ವಾಡ ಹೃದಯವದು
ಉರ್ವಿಯನು ಮೆಟ್ಟುವೆನು
ಓರ್ವನೆನೆ ದಕ್ಖಿಣನು
|| ಮರ್ಮದಲಿನಾಡು ಕರೆಯೆ ||

ಸೆಣಸಲೆನೆ ಭಾರತಿಗೆ ಕರ್ಣಾಟ ಖಡ್ಗವಿದೆ
ಹಣೆಗಿಡಲು ತಿಲಕಕ್ಕೆ ಕರುನಾಡ ಕತ್ತುರಿಯು
ತನ್ನಿರವ ನೋಡಲಿಕೆ ಕನ್ನಡದ ಕನ್ನ ಡಿಯು
|| ಇನ್ನುಂಟೆ ತಾಯ್ಗೆ ಕೊರತೆ ||

ಶರಧಿಗಳ ಸಂತವಿಸಿ ಹರಿದ ಕಾವ್ಯಗಳೆಲ್ಲಿ
ಚಿರದಿನಕೆ ಬೆಳಕೀವ ಲಾವಣ್ಯ ರೂಹೆಲ್ಲಿ
ಯಾವಲ್ಲಿ ಅಡಗಿಹವು
ಯಾವಗಿರಿ ಗುಹೆಯಲ್ಲಿ
|| ಭಾವನೆಗೆ ನಿಲುಕದಂತೆ ||

ಕರುನಾಡ ನಡುವಲಿದೆ, ಹೇಮಗಿರಿ ಅಡರದನು
ಹಿರಿಯರೆಮಗಿಟ್ಟಿರುವ ಭಂಡಾರ ನಿಲುಕುವುದು
ಕಂಡವನು ಕೆಳಗಿಳಿದು
ಮಂಡಲಕೆ ಬಿತ್ತಿದರೆ.
|| ಮಂಡಿಗೆಯ ಭೂಮ ಮಹಿಗೆ ||

ಪಾಳೆಯಗಳಲ್ಲಲ್ಲಿ ಅಲೆಯಿಟ್ಟ ನಾಡಲ್ಲಿ
ಏಳಿಗೆಯ ಕಂಪಿಲ್ಲ ಬೆಳವಿಗೆಯ ಸೊಂಪಿಲ್ಲ
ತಿಳಿವಿನಾ ಶಾಂತಿಯಲಿ
ಕೊಳೆಯುವುದು ದಿವ್ಯಛವಿ
|| ಇಳೆಯೆಲ್ಲ ಮೇಳೈಸಲು ||

ಏಳಿರೇಳೇಳಿರಿ ಬೇಲೂರ ಪುತ್ಥಳಿಯ
ಪೌಳಿಯನು ಹಂಪೆಯಲಿ, ತೊಳೆದಿಟ್ಟು ಎಲ್ಲೋರ
ತಿದ್ದಿಟ್ಟು ತಿಳಿರಂಗ
ಹೊತ್ತಿಟ್ಟು ಗೋದೆಯಲಿ
|| ಸುತ್ತಿಸುವ ತೆಪ್ಪೋತ್ಸವ ||

ಕೊಂಕಣರ ಶ್ರೀಧಾಟಿ ಪಡುವಣರ ಪದ ಸರಣಿ
ತೆಂಕಣರ ನಯನೀತಿ ನಡುವಣರ ಜೀವಕಳೆ
ಬೆಳೆಯಲಿದು ಕರುನಾಡು
ಬೆಳೆಸಿಡುವ ಗುಟ್ಟಿದುವೆ
|| ತಿಳಿದವರು ಕಂಡತೆರನು ||

ಬಹುದಿನದ ಕಾಂತಿಯಿದೆ ಶ್ರೀ ಕೃಷ್ಣ ರೂಪದಲಿ
ವಹಿಸಿರಿದ ಹೃದಯದಲಿ ಬೆಳೆವಹಿಯ ಸಜ್ಜೆಯಲಿ
ಬಾಳುವಿರಿ ಬಲು ದಿನದ
ಏಳಿಗೆಯ ಸೊಡರುರಿದು
|| ಕೇಳಿರಿದು ಬೆಳೆವ ಗುಟ್ಟು ||

ಮುಂದಿನಾ ಮಧು ಯುಗವು ಮೊಗ್ಗಿನೊಳಗಡಗಿಹುದು
ಮುಂದದನು ಆಳುವರು ನಿಮ್ಮೊಳಗೆ ಜನಿಸುವರು
ಬೊಮ್ಮ ವರ್ತನೆಯಲ್ಲಿ
ಮುಮ್ಮೊದಲು ಬೆಳೆದಿಹರು
|| ನಿಮ್ಮವರು ಹಿರಿಯರೆಲ್ಲ ||

ಒಂದಾಗಿರೊಂದಾಗಿ ಕಂಕಣದ ಬಂಧದಲಿ
ಒಂದಾಗಿ ಮುಂದಿರುತ ವಿಶ್ವಕರ್ಣಾಟಕ
ವಿಶ್ವಾಸದಾರತಿಯ
ವಿಶ್ವಕೆನಲೆತ್ತಲಿದು
||ಶ್ರೀ ವಿಶ್ವಕರ್ಣಾಟಕ ||
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...