Home / ಲೇಖನ / ಇತರೆ / ಮದುವೆಯ ಏಜಂಟ

ಮದುವೆಯ ಏಜಂಟ

ವಿಮಾ ಏಜಂಟರಿಗಿಂತ ಎರಡು ಮಾತುಗಳನ್ನು ಹೆಚ್ಚಾಗಿ ಮಾತಾಡಿ, ಆಡಿದ ಸುಳ್ಳನ್ನು ಸತ್ಯವೆಂದೇ ಹಟ ವಿಡಿದು ವಾದಿಸುವ ಏಜಂಟರಾರೂ ಇರುವರಾದರೆ- ಅವರೇ ಇವರು ಮದುವೆಯ ಏಜಂಟರು. ಅಷ್ಟೇ ಅಲ್ಲ, ವಿಮಾ ಏಜಂಟರು ತಿಳಿಯದ ಒಂದೆರಡು ಚಿಕ್ಕ ಆಟಗಳನ್ನು ಈ ಏಜಂಟರು ಅರಿತಿರುವರು.

ರಾಮಚಂದ್ರನಾಯ್ಕರು ತಮ್ಮ ಹೆಂಡತಿಯ ಅಕಾಲ ನಿಧನವನ್ನು ಚಿಂತಿಸುತ್ತ ಈ ಐವತ್ತನೆ ವಯಸ್ಸಿನಲ್ಲಿ ತನಗೆ ಮತ್ತೊಂದು ಹೆಣ್ಣನ್ನು ಕೊಡುವ ವಿವೇಕಿಯು ಈ ಮೂಢ ಜಗತ್ತಿನಲ್ಲಿರುವನೇ ಎಂದು ಆಶ್ಚರ್ಯ ಪಡುತ್ತಿರಲು, ಹರೆ ಕಳ ಗೋವರ್ಧನರಾಯರು- ಶತ್ರು ಸೈನ್ಯದಿಂದಾವೃತನಾಗಿ ಚಿಂತಿಸುತ್ತಿದ್ದ ಅರಸನ ಸಮ್ಮುಖಕ್ಕೆ ಬರುವ ಸಾಹಸೀ ಸೇನಾ ನಾಯಕನಂತೆ ನೆಟ್ಟಗೆ ಬಂದು, “ನಮಸ್ಕಾರ!” ಎಂದರು.

ಮಾತುಕತೆಗಳು ನಡೆದುವು. ಮೂಲ್ಕಿಯಲ್ಲಿ ಸಂಪದ್ಗಿರಿರಾಯರ ಮಗಳು ಬೆಳೆದಂತೆಯೂ, ಅವರು ರಾಮಚಂದ್ರ ನಾಯ್ಕರ ಧ್ಯಾನದಲ್ಲೆ ಇದ್ದಂತೆಯೂ ತಿಳಿದು ಬಂತು. ಗೋವರ್ಧನರಾಯರು ಜತೆಯಲ್ಲಿ, ಆ ಹುಡುಗಿಯ ಫೋಟೋವನ್ನೂ ತಂದಿದ್ದರು. ಸಂಪದ್ಗಿರಿರಾಯರು ಒಂದುವರೆ ಸಾವಿರ ವರದಕ್ಷಿಣೆ ಕೊಡುವರು; ವಿವಾಹಕ್ಕೆ ಒಪ್ಪಿಗೆಯನ್ನು ಮರುದಿನವೇ ಕಳುಹಬೇಕಾಗಿ ಹೇಳಿ ಕಳುಹಿರುವರು. ಗೋವರ್ಧನರಾಯರು ಪರೋಪಕಾರಾರ್ಥ ಇತ್ತ ಬಂದಿರುವರು; – ಇವಿಷ್ಟು ಸಂಗತಿಗಳು ಹೊರಬಿದ್ದುವು.

ರಾಮಚಂದ್ರನಾಯ್ಕರು ಅವರನ್ನು ಚೆನ್ನಾಗಿ ಸತ್ಕರಿಸಿದರು. ಮದುವೆಯಾಗಲು ತನ್ನ ಆಕ್ಷೇಪವೇನೂ ಇಲ್ಲವೆಂದರು. ಆ ಮೇಲೆ ಫೋಟೋ ನೋಡಿದರು. ಆನಂತರ, ಪುನಃ ತಮ್ಮ ಆಕ್ಷೇಪವೇನೇನೂ ಇಲ್ಲವೆಂದರು.

ತನಗೆ ಸಂತೋಷವಾಯಿತೆಂದರು ಗೋವರ್ಧನ ರಾಯರು, ಆ ರಾತ್ರೆ ಅಲ್ಲೆ ಉಳಕೊಂಡು, ಮರುದಿನ ಎದ್ದು, ನಾಯ್ಕ ರೊಂದಿಗೆ ಫಲಾಹಾರ ತೀರಿಸಿ, ಮೂಲ್ಕಿಗೆ ಹೋಗಿ ಬರಲು ಹತ್ತು ರೂಪಾಯಿಗಳನ್ನು ನಾಯ್ಕರಿಂದ ಪಡೆದು, ತಾನು ತಂದ ಫೋಟೋವನ್ನು ನಾಯ್ಕರೊಡನೆ ಬಿಟ್ಟು ತೆರಳಿದರು, ಅದೇ ಅವರ ಕೊನೆಯ ಭೇಟಿ.

ಒಂದು ತಿಂಗಳ ನಂತರ, ನಾಯ್ಕರು ಸಂಪದ್ಗಿರಿರಾಯರಿಗೆ ಕಾಗದ ಬರೆದರು. ತನಗೆ ಮಗಳೇ ಇಲ್ಲವೆಂದೂ, ನಾಯ್ಕರ ಪತ್ರವನ್ನು ನೋಡಿ ತಾನು ಆಶ್ಚರ್ಯಪಟ್ಟಿರುವೆನೆಂದೂ, ಗೋವರ್ಧನ ಎಂಬ ಹೆಸರಿನವರನ್ನು ತಾನರಿಯೆನೆಂದೂ ಸಂಪದ್ಗಿರಿರಾಯರಿಂದ ಉತ್ತರ ಬಂತು.

ನಾಯ್ಕರು, ಗೋವರ್ಧನರಾಯರು ತಂದ ಫೋಟೋವನ್ನು ಸಂಪದ್ಗಿರಿರಾಯರಿಗೆ ಕಳುಹಿದರು. ಎರಡು ದಿನಗಳಲ್ಲಿ ಸಂಪದ್ಗಿರಿರಾಯರಿಂದ ಪುನಃ ಉತ್ತರ ಬಂತು:- “ನೀವು ಕಳುಹಿಸಿದ ಫೋಟೋ ನನ್ನ ಮೃತಪತ್ನಿಯದು. ಒಂದು ತಿಂಗಳ ಹಿಂದೆ ‘ಶ್ರೀಧರರಾಯ’ ಎಂಬ ಹೆಸರಿನವ ರೊಬ್ಬರು ನನ್ನ ಮನೆಗೆ ಬಂದಿದ್ದರು. ಒಂದು ದಿನ ಉಳಕೊಂಡು,
ನನಗೆ ಎರಡನೆ ಸಂಬಂಧವೊಂದನ್ನು ಸೂಚಿಸಿ, “ಉಡುಪಿ ನಾರಾಯಣರಾಯರ ಮಗಳ ಫೋಟೋ” ಎನ್ನುತ್ತ ಒಂದು ಫೋಟೋ ಕೊಟ್ಟರು. ಮರುದಿನ ೫ ರೂಪಾಯಿ ಗಳೊಂದಿಗೆ ಹೋದವರು, ಈ ತನಕ ಪತ್ತೆಯಿಲ್ಲ. ಆಗಲೇ ನನ್ನ ಮೃತಪತ್ನಿಯ ಫೋಟೋ ಕಾಣೆಯಾಗಿತ್ತು …… ಎಂದು ಮುಂತಾಗಿ ಬರೆದು, ಆ ‘ಶ್ರೀಧರರಾಯ’ರ ರೂಪವನ್ನು ಕೊಂಚ ವರ್ಣಿಸಿದ್ದರು.

ರಾಮಚಂದ್ರನಾಯ್ಕರಿಗೆ ಎದೆ ಧಸಕ್ಕೆಂದಿತು. ಒಳಗಿನ ಕೊಠಡಿಗೆ ಹೋಗಿ ತಮ್ಮ ಮಗಳ ಫೋಟೋ ಕಡೆಗೆ ನೋಡಿದರು. ಅವರೆಣಿಸಿದುದೇ- ಫೋಟೋ ಕಾಣೆಯಾಗಿದೆ!

ಇನ್ನೊಬ್ಬ ವಿವಾಹಾತುರ ವಿದುರನು ರಾಮಚಂದ್ರನಾಯ್ಕರಿಗೆ- “ನಿಮ್ಮ ಮಗಳ ಫೋಟೋ ನೋಡಿ ಒಪ್ಪಿಗೆಯಾಯಿತು. ಎಷ್ಟು ವರದಕ್ಷಿಣೆ ಕೊಡುವಿರಿ?” ಎಂದು ಪತ್ರ ಬರೆವ ತನಕ ಶ್ರೀಧರ ಯಾನೆ ಗೋವರ್ಧನ ರಾಯರ ಪತ್ತೆ ಮಾಡದೆ ಸುಮ್ಮನೆ ಕುಳಿತುಕೊಳ್ಳುವುದು ತಪ್ಪು – ಎಂದು ಕೊಳ್ಳುತ್ತ ನಾಯ್ಕರು ಪತ್ತೆಗಾರಂಭಿಸಿರುವರು.

ಆದರೆ ………!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...