Home / ಲೇಖನ / ಇತರೆ / ನಿಮ್ಮ ಕುರಿತು ಅಭಿಪ್ರಾಯ

ನಿಮ್ಮ ಕುರಿತು ಅಭಿಪ್ರಾಯ

ಸಾಯಂಕಾಲ ಮದರಾಸಿನಿಂದ ಬಂದ ಮೈಲ್ ಬಂಡಿಯು ಕಾಸರಗೋಡು ನಿಲ್ದಾಣದಲ್ಲಿ ನಿಲ್ಲುತ್ತಲೇ ಅದನ್ನು ಹತ್ತಿದ ಕೆಲವು ಪ್ರಯಾಣಿಕರಲ್ಲಿ ಅಚುತನೂ ಒಬ್ಬ. ಅಚ್ಯುತನೆಂದರೆ – ಮಾತಿನ ಮಲ್ಲ. ಅವನಿಗೆ ಪರಿಚಿತರನ್ನು ಕಂಡರೆ ಮಾತ್ರ ಮಾತು ಬರುವುದಲ್ಲ – ಅಪರಿಚಿತರನ್ನು ಕಂಡರೂ ಆಷಾಢ ಮಾಸದ ಮಳೆಯಂತೆ ಎಡೆಬಿಡದೆ ಮಾತಾಡುವವನೇ! ಮಾತಾಡುವಾಗ, ಆ ಸಂಭಾಷಣೆಯಲ್ಲಿ ಬರುವ ವ್ಯಕ್ತಿಗಳನ್ನು ಟೀಕಿಸುವನು: ಬಾರದ ವ್ಯಕ್ತಿಗಳನ್ನು ತಾನೇ ತಂದು, ಅವರ ಜೀವನ, ನಡೆ, ನುಡಿ, ಪೋಷಾಕು ಎಲ್ಲವುಗಳ ಮೇಲೆ ಅಭಿಪ್ರಯ ಕೊಡುವನು.

ರೈಲು ಹತ್ತುತ್ತಲೇ ಅವನು ಹೋಗಿ ಕುಳಿತುದು ಒಬ್ಬ ಹಳೇ ಮನುಷ್ಯನ ಜತೆಯಲ್ಲಿ, ‘ಹಳೇ ಮನುಷ್ಯ’ನೆಂದರೆ – ಕ್ರಾಪ್ ಇಲ್ಲದ, ಆಧುನಿಕ ವಿಧದ ಪೋಷಾಕುಗಳಿಲ್ಲದ, ಕೇವಲ ‘ಶಟ್ ಕೋಟ’ನ್ನು ಹಾಕಿ, ಮುಂಡಾಸಿಟ್ಟು, ಅದರ ಎಡೆಯಿಂದ ನರೆತ ಕೂದಲನ್ನು ಪ್ರದರ್ಶಿಸುತ್ತಿರುವ ಹಳಬನೆಂದರ್‍ಥ.

“ತಾವು ಎಲ್ಲಿಂದ ಬಂದಿರಿ ಸ್ವಾಮಿ?” ಎಂದು ಮೊದಲು ಮಾಡಿದನು ಅಚ್ಯುತ.

ಹಳಬನು ಕೊಂಚ ಬಾಯಿ ಬಿರಿದು- “ಪೊದನೂರಿ ನಿಂದ!” ಎಂದನು.

“ಪೊದನೂರು!…. ನಾನು ಆ ಸ್ಟೇಷನನ್ನು ಒಮ್ಮೆ ದಾಟಿದ್ದೇನೆ!” ಎನ್ನುತ್ತ ಅಚ್ಯುತನು ತನ್ನ ಮಾತಿನ ಭಾಂಡಾಗಾರವನ್ನು ಅಡಿ ಮೇಲಾಗಿಯೇ ಹಿಡಿದು, ಅದರ ಬಾಯಿ ತೆರೆದನು. ಮಾತುಗಳು ಬಡಬಡನೆ ಉದುರಲಾರಂಭಿಸಿದುವು. ಮಾತನಾಡುತ್ತ, ಮಂಗಳೂರಿನ ಪಂಡಿತ ಶಿವಣ್ಣಯ್ಯನ ವಿಷಯವೂ ಬಂತು.

“ಪಂಡಿತ ಶಿವಣ್ಣಯ್ಯ! ಯಾರೋ ಒಬ್ಬ ಹಳಬ ಸ್ವಾಮಿ, ತಾನೊಬ್ಬ ವಿದ್ವಾನನೆಂದು ಗರ್‍ವ ಆ ಮುದಿ ಗೂಬೆಗೆ! ಚಿಕ್ಕ ಬಾಲಕರು ಬರೆದುದನ್ನೂ, ಬೆಳೆದ ಯೌವನಸ್ಥರು ಪ್ರಕಟಿಸಿದುದನ್ನೂ ದೂರುವುದೇ ಕೆಲಸ! ಪುಣ್ಯಾತ್ಮ ತಾನೊಂದೂ ಪಂಕ್ತಿ ಬರೆದುದಿಲ್ಲ. ನವಕವಿತೆಯೆಂದರೆ, ಬರೆದವರಿಗೇ ಅರ್ಥವಾಗದ, ನಿಷ್ಪ್ರಯೋಜಕವಾದ, ಸಂಗೀತ ವಿಹೀನವಾದ, ಛಂದೋಶಾಸ್ತ್ರದ ಕೊಲೆ ಮಾಡಿ ಅದರ ಬೂದಿಯ ಮೇಲೆ ಕಟ್ಟಲ್ಪಟ್ಟ ಮುರುಕು ಗುಡಿಸಲುಗಳಂತೆ! ಒಮ್ಮೆ ಅವನನ್ನೆ ಕೆಲವರು ಒಂದು ಲೇಖನಕ್ಕಾಗಿ ಒತ್ತಾಯ ಪಡಿಸಲು, – ಭಾಮಿನಿ ಷಟ್ಪದಿಯಲ್ಲಿ ಎರಡು ಪದ್ಯಗಳನ್ನು ಬರೆದುಕೊಟ್ಟನು; ಜತೆಯಲ್ಲಿ ಒಂದು ಕತೆಯನ್ನು ಕಳುಹಿಸಿ “ಇದು ಸಣ್ಣ ಕತೆಗೆ ಮಾದರಿ” ಎಂದನು. ಓದಿದವರೆಲ್ಲ ನೋಡಿ ನಕ್ಕುಬಿಟ್ಟರು ಸ್ವಾಮಿ! ವಿದ್ವಾನರಾದರೇನು, ಆತನಿಗೆ ಕೆಲವು ಶಬ್ದಗಳು ಹೆಚ್ಚಿಗೆ ಬರಬಹುದು – ಇತರ ಸಾಮಾನ್ಯ ಬರಹಗಾರರಿಗೆ ಕೆಲವು ಕಡಿಮೆ; ಆದರೆ, ಕೇವಲ ಶಬ್ದ ಭಾಂಡಾಗಾರವು ದೊಡ್ಡದೆಂದು ಚಲೋ ಕಲ್ಪನೆಗಳನ್ನು ತಮಗೆ ತಿಳಿದ ಭಾಷೆಯಲ್ಲಿ ಪ್ರಕಟಿಸುವ ತರುಣರನ್ನು ದೂರುವುದೇ? ಹಾಗೆ ದೂರುವವರು ತಾವೇ “ಮಾದರಿ”ಯೆಂದು ಬರೆದೂ ನಗೆಗೀಡಾಗುವುದೇ? ನನಗೆ ಆ ಶಿವಣ್ಣಯ್ಯ ದೊರೆತರೆ – ‘ನೀನಿನ್ನು ಕೇವಲ ವಿದ್ವಾನನೆಂಬ ಬಿರುದನ್ನು ಹಿಡಿದು ಕೊಂಡು ತಣ್ಣಗೆ ಮನೆಮೂಲೆಯಲ್ಲಿ ಪಂಪಭಾರತವನ್ನೋದಿ ಪುಣ್ಯಗಳಿಸಿಕೊಂಡಿರುವುದೊಳ್ಳಿತೆ’ಂದು ಹೇಳುತಿದ್ದೆ ಸ್ವಾಮಿ, ಆದರೆ, ಹೋಗಲಿ, ನಮಗೇನು?”

ಹಳಬನು ಇದನ್ನೆಲ್ಲ ಮಂದಸ್ಮಿತದಿಂದ ಕೇಳುತ್ತಲೇ ಇದ್ದನು, ಚಾ-ಚೂ ಎನ್ನಲಿಲ್ಲ. ರೈಲು ಬಂಡಿಯು ಮಂಗಳೂರು ನಿಲ್ದಾಣಕ್ಕೆ ಬಂದು ತಲಪಿತು. ಅಚ್ಯುತನು, ಆ ಹಳಬನೊಂದಿಗೆ ಕೆಳಗಿಳಿಯುತ್ತ, “ನಮಸ್ಕಾರ ಸ್ವಾಮಿ, ಹೋಗುತ್ತೇನೆ. ಇನ್ನೊಮ್ಮೆ ಎಲ್ಲಾದರೂ ನಾವು ಭೇಟಿಯಾಗಬಹುದು. ಬಂಡಿಯಲ್ಲಿ ನೀವಿದ್ದುದರಿಂದ ಸಮಯ ಕಳೆದು ಹೋದುದೇ ತಿಳಿಯಲಿಲ್ಲ. . . . . ನಮಸ್ಕಾರ . . . . ನಿಮ್ಮ ಹೆಸರು?”

ಹಳಬನು ನಗುತ್ತ “ನನ್ನ ಹೆಸರು . . . . . ಅಗತ್ಯ ವಿದೆಯೇ?” ಎಂದು ಕೇಳಿದನು.

“ಹೊಸ ಪರಿಚಯ – ಹೆಸರನ್ನು ತಿಳಿಯದುಂಟೇ”

ಹಳಬನು ತನ್ನ ಕಿಸೆಯಿಂದೊಂದು ಕಾಗದವನ್ನು ತೆಗೆದು, ಪೆನ್ಸಿಲಿನಿಂದ ಅದರ ಮೇಲೆ ತನ್ನ ಹೆಸರನ್ನು ಬರೆದು ಕೊಟ್ಟನು. ಅಚ್ಯುತನು ಓದಿದನು: –

“ಪಂಡಿತ ಶಿವಣ್ಣಯ್ಯ, ವಿದ್ವಾನ್.”
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...