Home / ಕವನ / ಕವಿತೆ / ತೆಂಕಣ ಗಾಳಿಯಾಟ

ತೆಂಕಣ ಗಾಳಿಯಾಟ

(ರಗಳೆಯ ಪ್ರಭೇದ)

ಬರಲಿದೆ! ಅಹಹಾ! ದೂರದಿ ಬರಲಿದೆ-

ಬುಸುಗುಟ್ಟುವ ಪಾತಾಳದ ಹಾವೊ? |
ಹಸಿವಿನ ಭೂತವು ಕೂಯುವ ಕೂವೊ? ||
ಹೊಸತಿದು ಕಾಲನ ಕೋಣನ -ಓವೊ! |
ಉಸಿರಿನ ಸುಯ್ಯೋ? – ಸೂಸೂಕರಿಸುತ,

ಬರುವುದು! ಬರಬರ ಭರದಲಿ ಬರುವುದು- ||೧||

ಬೊಬ್ಬೆಯ ಹಬ್ಬಿಸಿ, ಒಂದೇ ಬಾರಿಗೆ |
ಉಬ್ಬರ ಎಬ್ಬಿಸಿ ಕಡಲಿನ ನೀರಿಗೆ, ||
ಬೊಬ್ಬುಳಿ ತೆರೆಯನು ದಡಕ್ಕೆ ಹೊಮ್ಮಿಸಿ, |
ಅಬ್ಬರದಲಿ ಭೋರ್ ಭೋರೆನೆ ಗುಮ್ಮಿಸಿ,

ಬರುತದೆ! ಮೈತೋರದೆ ಬರುತದೆ! ಅದೆ- ||೨||

ನಡುಮುರಿಯುತ ನಗನಾವೆಗೆ, ಕೂವೆಗೆ |
ಉಡಿಸಿದ ಹಾಯಿಯ ಹರಿಯುತ ಬಿರಿಯುತ, ||
ಹಡಗನು ಕೀಲಿಸಿ, ತುಮುರನು ತೇಲಿಸಿ, |
ದಡದಲಿ ಝಾಡಿಸಿ, ದೋಣಿಯನಾಡಿಸಿ,

ಇದೆ! ಇದೆ! ಬರುತಿದೆ! ಇದೆ! ಇದೆ! ಬರುತಿದೆ – ||೩||

ಹಕ್ಕಿಯ ಕಣ್ಣಿಗೆ ಧೂಳಿನ ಕಾಡಿಗೆ |
ಇಕ್ಕುತ, ಹೊಲದೆತ್ತಿಗೆ ದನಕಾಡಿಗೆ ||
ಫಕ್ಕನೆ ಹಟ್ಟಿಗೆ ಅಟ್ಟಿಸಿ, ಕಾಡಿಗೆ |
ಸಿಕ್ಕಿದ ಕಿಚ್ಚನು ಊದಲು ಹಾರುತ,

ಬರುತಿದೆ! ಇದೆ! ಇದೆ! ಇದೆ! ಇದೆ! ಬರುತಿದೆ- ||೪||

ಸಡಲಿಸಿ ಮಡದಿಯರುಡಿಯನು ಮುಡಿಯನು,
ಬಡಮುದುಕರ ಕೊಡೆಗರಿ ಹರಿದಾಡಿಸಿ,
ಹುಡುಗರ ತಲೆ ತಲೆ ಟೊಪ್ಪಿಯ ಆಟವ
ದಡಬಡನಾಡಿಸಿ ಮನೆಮನೆತೋಟವ
ಅಡಿಮೇಲಾಗಿಸಿ, ತೆಂಗನು ಲಾಗಿಸಿ,
ಅಡಿಕೆಯ ಬಾಗಿಸಿ, ಪನೆ ಇಬ್ಭಾಗಿಸಿ,
ಬುಡದೂಟಾಡಿಸಿ, ತಲೆ ತಾಟಾಡಿಸಿ,
ಗುಡಿಸಲ ಮಾಡನು ಹುಲುಹುಲುಮಾಡಿಸಿ,

ಬಂತೈ! ಬಂತೈ! ಇದೆ! ಇದೆ! ಬಂತೈ!- ||೫||

ಗಿಡಗಿಡದಿಂ-ಚೆಲು ಗೊಂಚಲು ಮಿಂಚಲು-
ಮಿಡಿಯನು ಹಣ್ಣನ್ನು ಉದುರಿಸಿ ಕೆದರಿಸಿ
ಎಡದಲಿ ಬಲದಲಿ ಕೆಲದಲಿ ನೆಲದಲಿ,
ಪಡುವಣ ಮೋಡವ ಬೆಟ್ಟಕೆ ಗಟ್ಟಕೆ
ಹೊಡೆದಟ್ಟುತ, ಕೋಲ್‌ ಮಿಂಚನು ಮಿರುಗಿಸಿ,
ಗುಡುಗನು ಗುಡುಗಿಸಿ, ನೆಲವನು ನಡುಗಿಸಿ,
ಸಿಡಿಲನು ತಾಳೆಗೆ ಬಾಳೆಗೆ ಎರಗಿಸಿ,
ಜಡಿಮಳೆ ಸುರಿವೋಲ್‌, ಬಿರುಮಳೆ ಬರುವೋಲ್‌,
ಕುಡಿ ನೀರನು ಒಣಗಿದ ನೆಲಕೆರೆವೋಲ್.
ಬಂತೈ ಬೀಸುತ! ಬೀಸುತ ಬಂತೈ!
ತೆಂಕಣ ಗಾಳಿಯು ಕೊಂಕಣ ಸೀಮೆಗೆ
ಬಂತೈ! ಬಂತೈ! ಬಂತೈ! ಬಂತೈ! ||೬||
*****
(ಪದ್ಯ ಪುಸ್ತಕ)

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...