Home / ಕವನ / ಕವಿತೆ / ಹುತ್ತರಿ ಹಾಡು

ಹುತ್ತರಿ ಹಾಡು

ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಬಿಮ್ಮನೆ ಬಂದಳೋ?
ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ?
ಎಲ್ಲಿ ಮುಗಿಲಲಿ ಮಿಂಚಿನೋಲ್‌ ಕಾವೇರಿ ಹೊಳೆ ಹೊಳೆ ಹೊಳೆವಳೋ?
ಎಲ್ಲ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ?
ಅಲ್ಲೆ ಆ ಕಡೆ ನೋಡಲಾ!
ಅಲ್ಲೆ ಕೊಡಗರ ನಾಡಲಾ!
ಅಲ್ಲೆ ಕೊಡಗರ ಬೀಡಲಾ!

ಸವಿದು ಮೆದ್ದರೊ ಯಾರು ಪೂರ್ವದಿ ಹುಲಿಯ ಹಾಲಿನ ಮೇವನು?
ಕವಣೆ ತಿರಿ ಕಲ್ಲಾಟ ಹಗ್ಗಕೆ ಸೆಳೆದರೋ ಹೆಬ್ಬಾವನು?
ಸವರಿ ಆನೆಯ ಸೊಂಡಿಲಲಿ ರಣಕೊಂಬನಾರ್‌ ಭೋರ್ಗರೆದರೋ?
ಸವೆದು ಸವೆಯದ ಸಾಹಸತ್ವದ ಕ್ಷಾತ್ರ ಬೇಟೆಯ ಮೆರೆದರೋ?
ಅವರೆ ಸೋಲ್‌ ಸಾವರಿಯರು!
ಅವರೆ ಕಡುಗಲಿ ಗರಿಯರು!
ಅವರೆ ಕೊಡಗಿನ ಹಿರಿಯರು!

ತಮ್ಮ ನಾಡಿನ ಕೊರಳು ದಾಸ್ಯದ ನೊಗದ ಭಾರಕೆ ಬಗ್ಗದೊಲ್‌,
ಹೆಮ್ಮೆಹಗೆಗಳ ಹೊಡೆದು ಹಿರಿಯರು ಹಸಿದು ಹಾರುವ ಬಗ್ಗದೊಲ್‌,
ಬೊಮ್ಮಗಿರಿಯಿ೦ ಪುಷ್ಪಗಿರಿಪರ್ಯಂತ ಬೆಳೆದೀ ದೇಶವು
ಧರ್ಮದಾನದ ಕಟ್ಟುಕಟ್ಟಳೆ ರೀತಿನೀತಿಯ ಕೋಶವು!
ನಮ್ಮ ಕೊಡಗಿದು ಜಮ್ಮದು;
ಜಮ್ಮ ಕೊಡಗಿದು ನಮ್ಮದು;
ನಮ್ಮೊಡಲ್ ಬಿಡಲಮ್ಮದು!

ಇದು ಅಗಸ್ತ್ಯನ ತಪದ ಮನೆ, ಕಾವೇರಿ ತಾಯ ತವರ್ಮನೆ
ಕದನಸಿರಿಗುಯ್ಯಾಲೆ ತೂಗಿದನಿಲ್ಲಿ ಚಂದಿರವರ್ಮನೆ!
ಇದಕೊ! ಚೆಂಗಾಳ್ವರಸರಾಡಂಬರವು ಕುಣಿದ ಶ್ರೀರಂಗವು!
ಇದೊ! ಇದೊ! ಇಲ್ಲುರುಳ್ದ ಹಾಲೇರಿಯರ ಬಲಗಿರಿಶೃಂಗವು!
ವಿಧಿಯ ಮಾಟದ ಕೊಡಗಿದು!
ಮೊದಲೆ ನಮ್ಮದು, ಕಡೆಗಿದು
ಕದಲದೆಮ್ಮನು; ಬೆಡಗಿದು!

ಒಮ್ಮತವು ಒಗ್ಗಟ್ಟು ಒಂದೇ ಮನವು ಎಲ್ಲಿದೆ ಹೇಳಿರಿ?
ಸುಮ್ಮನಿತ್ತರೊ ದಟ್ಟಿಕುಪ್ಪಸ! ಹಾಡು ಹುತ್ತರಿಗೇಳಿರಿ?
ಚಿಮ್ಮಿ ಪಾತುರೆಕೋಲ ಹೊಯ್ಲಿಗೆ ಕುಣಿವ ಪದ ಹೊರ ಹೊಮ್ಮಲಿ!
ಅಮ್ಮೆ ಹರಸಿದ ಸೀಮೆ ನಮಗಿದು ಇರಲಿ ನಮ್ಮದೆ ನಮ್ಮಲ್ಲಿ!
ನೆಮ್ಮದಿಯನಿದು ತಾಳಲಿ!
ಆಮ್ಮೆಯಾ ಬಲ ತೋಳಲಿ
ನಮ್ಮ ಕೊಡಗಿದು ಬಾಳಲಿ!
*****
(ಪದ್ಯ ಪುಸ್ತಕ)

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...