Home / ಕವನ / ಕವಿತೆ / ಅಣ್ಣನ ವಿಲಾಪ

ಅಣ್ಣನ ವಿಲಾಪ

(ಚೌಪದಿ)

ಎಲ್ಲಿ ಹೋದನು ಅಮ್ಮ ಪುಟ್ಟಣ್ಣ ನಮ್ಮಾ? |
ನಿಲ್ಲದವನನು ತರುವೆ ಹುಡುಕಿ ನಾನಮ್ಮಾ| ||
ಅಲ್ಲಿಲ್ಲ, ಇಲ್ಲಿಲ್ಲ, ಎಲ್ಲಿಹನು ತಮ್ಮಾ? |
ತಲ್ಲಣಿಸುತಿದೆ ಮನವು; ಹೇಳು ಸೀತಮ್ಮಾ! ||೧||

“ಹಸೆಯ ಮಗುವನು ಮೊನ್ನೆ ಬಂದವರು ನೋಡಿ, |
ಮಸುಕು ಬಿಳಿ ಕಣ್ಣುಗಳ ಕದಗಳನು ಹೂಡಿ, ||
ಹಸಿ ತುಳಸಿದಳ ನೀರ ಒಣ ಬಾಯೊಳೂಡಿ, |
ಬಿಸಿಲುಕನ್ನಡಿಯನ್ನು ಮಾಡಿನಲ್ಲಿ ಮಾಡಿ,” ||೨||

“ಸುದ್ದ ನೀರನು ಮೀಸಿ, ಅರಸಿನವ ಪೂಸಿ, |
ಗದ್ದೆ ಗೋರುವ ಹಲಗೆಯಲ್ಲಿ ಎಲೆ ಹಾಸಿ, ||
ಮುದ್ದು ಪುಟ್ಟನನುಡಿಗೆಯಿಂದ ಸಿಂಗರಿಸಿ, |
ಸದ್ದಿಲ್ಲದೆಲ್ಲಿಗೊಯ್ದರು ಹೆಗಲೊಳಿರಿಸಿ?” ||೩||

ಚೆನ್ನಾಗಿ ಸೇಸೆಮಳೆ ಸೂಸುತಿರೆ ಕನ್ನೆ, |
ನಿನ್ನೊಡನಿರುಳ್ ನಿದ್ದೆಯಲ್ಲಿ ಕಂಡ ನಿನ್ನೆ- ||
‘ಬನ್ನಿ ಬಾ ಬಾ’ ಎಂದು ಮಾಡಿ ಕೈಸನ್ನೆ |
ನನ್ನೆದುರು ಬಂದು ಹೋದಾ ಪುಟ್ಟನನ್ನೆ. ||೪||

ಮಬ್ಬು ತೆರೆ ಹಿಂದುಗಡೆ ಜಾರಿದುದು ತಾರೆ. |
ಹೆಬ್ಬಿಸಿಲ ಉಗುಳುವಂತಿಹುದು ಹೊತ್ತಾರೆ. ||
ಉಬ್ಬಸರಿ ಮೊದಲೆ ಬಾಲನ ಮೈಯು ತಾರೆ, |
ಅಬ್ಬೆ! ನಡೆಯುವನೆಂತು? ಬೇಗ ಕರತಾರೆ. || ೫||

ಬಳ್ಳಿ ಉಯ್ಯಾಲೆಯಲ್ಲಿ ಗಿಳಿಯ ಮರಿ ತೂಗಿ, |
ಉಳ್ಳಲರ ಜೇನ್‌ಗುಡಿದು ಮರಿದುಂಬಿ ಕೂಗಿ, ||
ಬೆಳ್ಳಿ ನೀರ್‌ ಬಿಸಿಲಲ್ಲಿ ಮುಳುಗಿದಂತಾಗಿ |
ಹಳ್ಳಿ ಹಗಲಿರೆ-ಪುಟ್ಟನಾಡುವನೆ ಹೋಗಿ? ||೬||

ತಾಯ್ದನದ ಬಳಿ ಹೋಗದೀ ಕರುವು ನಿಂದು, |
ಕಾಯ್ದನಂ ಕರೆಯುತಿದೆ ನೆನಸಿ ‘ಮ್ಬೇ’ ಎಂದು. ||
ನಾಯ್ದುಗುಡದಲಿ ಬಿಡದೆ ಮಗುವಿದ್ದ ಸ್ಥಲವಾ, |
ಬಾಯ್ದೆರೆಯದಾಗಾಗ ಮೂಸುತಿದೆ ನೆಲವಾ. ||೭||

“ಇವನ ಚಿಲುವಿನ ಪುಂಜ ಹೋಯ್ತೆ ಮರಿಯಲ್ಲೆ! |
ಸವೆಯಿತೇ ಕಾಲವಂಕುರದ ಪರಿಯಲ್ಲೆ! ||
ಕುವರನಾ ಬಾಳೆ ಕಂದಿತೆ ಕಂದಿನಲ್ಲೆ! |
ಸವಿ ಬಂದುಗೇನಾಯ್ತು ನನೆಸಂದಿನಲ್ಲೆ! ||೮||

ದೀಪಾವಳಿಯ ದಿನ ಬಲೀಂದ್ರ ಮರ ನೆಡಿಸಿ, |
ಕೇಪಳಂಬಳ ಕಾಯಿ ಗುಂಡುಸರ ತೊಡಿಸಿ, ||
ಆ ಪೂಜೆಯಾಗುತಿರೆ ತಮ್ಮನನು ಬಿಟ್ಟು, !
ಕೈಪರೆ ಹೊಡೆವುದೆಂತು? ಬರುವುದೇ ಪುಟ್ಟು,? ||೯||

ನರಿಮೊಗರು ಜಾತ್ರೆಯಲಿ ನನ್ನನ್ನು ಕಂಡು, |
ಅರರೆ ತಮ್ಮನನೇಕೆ ನಾನು ಕರಕೊಂಡು |
ಬರಲಿಲ್ಲ? ಎಂದಾ ಗೆಳೆಯರೆನ್ನ ಕೇಳೆ, |
ಮರುಮಾತು ನಾನೇನು ಕೊಡಲಮ್ಮ ನಾಳೆ? ||೧೦||

ಒಬ್ಬನೇ ತಿನಿಸುಣಿಸು ನಾ ಬೇಡಲಾರೆ. |
ಇಬ್ಬರಿಲ್ಲದೆ ಈಗ ನಾನಾಡಲಾರೆ, ||
ತಬ್ಬಿಕೊಂಡೆನ್ನ ನೀಂ ಅಳುವುದೇನಿ೦ತು? |
ಅಬ್ಬೆ, ಅಳದಿರು ಪುಟ್ಟ ಎಲ್ಲಿಹನು ನಿಂತು? ||೧೧||

ತಾಯಿ- ಮುತ್ತಿನಾ ಸರಪಳಿಯೆ! ಮಾತಿನರಗಿಳಿಯೆ! |
ಎತ್ತ ಹೋದನು ತಮ್ಮ ಎಂಬುದು ತಿಳಿಯೆ. ||
ಇತ್ತವನೆ ಎತ್ತಿದನು! ಕೇಳು, ಪುತ್ಥಳಿಯೇ! |
ಬಿತ್ತಿದವ ಒತ್ತರಿಸಿದನು ತನ್ನ ಬಳಿಯೆ? ||೧೨||

ಮುಗುವು ಮುದ್ದಿನ ಮೊಗವು, ಅವನಿಲ್ಲಿ ಬಾರಂ |
ಆಗಲಿ ನಮ್ಮನು ಹೋದ ಹೋದ ಬಹುದೂರಂ ||
ಜಗದಂಬೆ ತೊಡೆಯಲ್ಲಿ ಲಾಲಿ ಕೇಳುತ್ತ |
ಸೋಗನಿದ್ದೆಗೊಂಡವನು ಬರುವನೇ ಇತ್ತ? ||೧೩||

ಮಗು- “ಈಗಲೇ ಹೊರಡುವೆನು, ಕೈ ಬಿಡೌ, ಅಮ್ಮಾ ! |
ಬೇಗ ಅಪ್ಪನು ಬರುವ ಮುಂಚೆಯೇ, ಅಮ್ಮಾ! ||
ಹೋಗುವೆನು, ಹೋಗುವೆನು; ಹೊರ ಹೊರಡು; ಅಮ್ಮಾ! |
ಕೂಗಿ ಅಳದಿರು; ದಾರಿ ತೋರಿಸೌ! ಅಮ್ಮಾ! || ೧೪ ||

ತಾಯಿ-ಚಂದು ಕೇಳ್! ದಾರಿಯಲಿ ನಾ ಪೋಪೆ ಮುಂದೆ |
ಬಂದವನು ಬಳಿಕ ನಿನ್ನಯ ಮುದ್ದು ತಂದೆ ||
ಮಂದಿ ಮಕ್ಕಳು ಪಡೆದು ಬಾ ನೀನು ಹಿಂದೆ. |
ಎಂದವನ ಬಾಯಿ ಬಿಗಿದಳು ಮುದ್ದಿನಿಂದೆ. ||೧೫||

ಆರಲಿಲ್ಲವು; ತಾಯ ಮನದ ಪರಿತಾಪಂ |
ಆರಿದುದು ಮಾತೆಯಾ ಮನೆಯ ಮಣಿದೀಪಂ. ||
ಆರಲಿಲ್ಲವು ತಾಯ ಕಂಬನಿಯ ಕೂಪಂ |
ಆರಿದುದು ಭಾಗ್ಯಾಬ್ಧಿ, ಅಯ್ಯಯ್ಯೋ ಪಾಪಂ! ||೧೬||
*****
(ಪದ್ಯ ಪುಸ್ತಕ)

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...