Home / ಕವನ / ಕವಿತೆ / ಅಣ್ಣನ ವಿಲಾಪ

ಅಣ್ಣನ ವಿಲಾಪ

(ಚೌಪದಿ)

ಎಲ್ಲಿ ಹೋದನು ಅಮ್ಮ ಪುಟ್ಟಣ್ಣ ನಮ್ಮಾ? |
ನಿಲ್ಲದವನನು ತರುವೆ ಹುಡುಕಿ ನಾನಮ್ಮಾ| ||
ಅಲ್ಲಿಲ್ಲ, ಇಲ್ಲಿಲ್ಲ, ಎಲ್ಲಿಹನು ತಮ್ಮಾ? |
ತಲ್ಲಣಿಸುತಿದೆ ಮನವು; ಹೇಳು ಸೀತಮ್ಮಾ! ||೧||

“ಹಸೆಯ ಮಗುವನು ಮೊನ್ನೆ ಬಂದವರು ನೋಡಿ, |
ಮಸುಕು ಬಿಳಿ ಕಣ್ಣುಗಳ ಕದಗಳನು ಹೂಡಿ, ||
ಹಸಿ ತುಳಸಿದಳ ನೀರ ಒಣ ಬಾಯೊಳೂಡಿ, |
ಬಿಸಿಲುಕನ್ನಡಿಯನ್ನು ಮಾಡಿನಲ್ಲಿ ಮಾಡಿ,” ||೨||

“ಸುದ್ದ ನೀರನು ಮೀಸಿ, ಅರಸಿನವ ಪೂಸಿ, |
ಗದ್ದೆ ಗೋರುವ ಹಲಗೆಯಲ್ಲಿ ಎಲೆ ಹಾಸಿ, ||
ಮುದ್ದು ಪುಟ್ಟನನುಡಿಗೆಯಿಂದ ಸಿಂಗರಿಸಿ, |
ಸದ್ದಿಲ್ಲದೆಲ್ಲಿಗೊಯ್ದರು ಹೆಗಲೊಳಿರಿಸಿ?” ||೩||

ಚೆನ್ನಾಗಿ ಸೇಸೆಮಳೆ ಸೂಸುತಿರೆ ಕನ್ನೆ, |
ನಿನ್ನೊಡನಿರುಳ್ ನಿದ್ದೆಯಲ್ಲಿ ಕಂಡ ನಿನ್ನೆ- ||
‘ಬನ್ನಿ ಬಾ ಬಾ’ ಎಂದು ಮಾಡಿ ಕೈಸನ್ನೆ |
ನನ್ನೆದುರು ಬಂದು ಹೋದಾ ಪುಟ್ಟನನ್ನೆ. ||೪||

ಮಬ್ಬು ತೆರೆ ಹಿಂದುಗಡೆ ಜಾರಿದುದು ತಾರೆ. |
ಹೆಬ್ಬಿಸಿಲ ಉಗುಳುವಂತಿಹುದು ಹೊತ್ತಾರೆ. ||
ಉಬ್ಬಸರಿ ಮೊದಲೆ ಬಾಲನ ಮೈಯು ತಾರೆ, |
ಅಬ್ಬೆ! ನಡೆಯುವನೆಂತು? ಬೇಗ ಕರತಾರೆ. || ೫||

ಬಳ್ಳಿ ಉಯ್ಯಾಲೆಯಲ್ಲಿ ಗಿಳಿಯ ಮರಿ ತೂಗಿ, |
ಉಳ್ಳಲರ ಜೇನ್‌ಗುಡಿದು ಮರಿದುಂಬಿ ಕೂಗಿ, ||
ಬೆಳ್ಳಿ ನೀರ್‌ ಬಿಸಿಲಲ್ಲಿ ಮುಳುಗಿದಂತಾಗಿ |
ಹಳ್ಳಿ ಹಗಲಿರೆ-ಪುಟ್ಟನಾಡುವನೆ ಹೋಗಿ? ||೬||

ತಾಯ್ದನದ ಬಳಿ ಹೋಗದೀ ಕರುವು ನಿಂದು, |
ಕಾಯ್ದನಂ ಕರೆಯುತಿದೆ ನೆನಸಿ ‘ಮ್ಬೇ’ ಎಂದು. ||
ನಾಯ್ದುಗುಡದಲಿ ಬಿಡದೆ ಮಗುವಿದ್ದ ಸ್ಥಲವಾ, |
ಬಾಯ್ದೆರೆಯದಾಗಾಗ ಮೂಸುತಿದೆ ನೆಲವಾ. ||೭||

“ಇವನ ಚಿಲುವಿನ ಪುಂಜ ಹೋಯ್ತೆ ಮರಿಯಲ್ಲೆ! |
ಸವೆಯಿತೇ ಕಾಲವಂಕುರದ ಪರಿಯಲ್ಲೆ! ||
ಕುವರನಾ ಬಾಳೆ ಕಂದಿತೆ ಕಂದಿನಲ್ಲೆ! |
ಸವಿ ಬಂದುಗೇನಾಯ್ತು ನನೆಸಂದಿನಲ್ಲೆ! ||೮||

ದೀಪಾವಳಿಯ ದಿನ ಬಲೀಂದ್ರ ಮರ ನೆಡಿಸಿ, |
ಕೇಪಳಂಬಳ ಕಾಯಿ ಗುಂಡುಸರ ತೊಡಿಸಿ, ||
ಆ ಪೂಜೆಯಾಗುತಿರೆ ತಮ್ಮನನು ಬಿಟ್ಟು, !
ಕೈಪರೆ ಹೊಡೆವುದೆಂತು? ಬರುವುದೇ ಪುಟ್ಟು,? ||೯||

ನರಿಮೊಗರು ಜಾತ್ರೆಯಲಿ ನನ್ನನ್ನು ಕಂಡು, |
ಅರರೆ ತಮ್ಮನನೇಕೆ ನಾನು ಕರಕೊಂಡು |
ಬರಲಿಲ್ಲ? ಎಂದಾ ಗೆಳೆಯರೆನ್ನ ಕೇಳೆ, |
ಮರುಮಾತು ನಾನೇನು ಕೊಡಲಮ್ಮ ನಾಳೆ? ||೧೦||

ಒಬ್ಬನೇ ತಿನಿಸುಣಿಸು ನಾ ಬೇಡಲಾರೆ. |
ಇಬ್ಬರಿಲ್ಲದೆ ಈಗ ನಾನಾಡಲಾರೆ, ||
ತಬ್ಬಿಕೊಂಡೆನ್ನ ನೀಂ ಅಳುವುದೇನಿ೦ತು? |
ಅಬ್ಬೆ, ಅಳದಿರು ಪುಟ್ಟ ಎಲ್ಲಿಹನು ನಿಂತು? ||೧೧||

ತಾಯಿ- ಮುತ್ತಿನಾ ಸರಪಳಿಯೆ! ಮಾತಿನರಗಿಳಿಯೆ! |
ಎತ್ತ ಹೋದನು ತಮ್ಮ ಎಂಬುದು ತಿಳಿಯೆ. ||
ಇತ್ತವನೆ ಎತ್ತಿದನು! ಕೇಳು, ಪುತ್ಥಳಿಯೇ! |
ಬಿತ್ತಿದವ ಒತ್ತರಿಸಿದನು ತನ್ನ ಬಳಿಯೆ? ||೧೨||

ಮುಗುವು ಮುದ್ದಿನ ಮೊಗವು, ಅವನಿಲ್ಲಿ ಬಾರಂ |
ಆಗಲಿ ನಮ್ಮನು ಹೋದ ಹೋದ ಬಹುದೂರಂ ||
ಜಗದಂಬೆ ತೊಡೆಯಲ್ಲಿ ಲಾಲಿ ಕೇಳುತ್ತ |
ಸೋಗನಿದ್ದೆಗೊಂಡವನು ಬರುವನೇ ಇತ್ತ? ||೧೩||

ಮಗು- “ಈಗಲೇ ಹೊರಡುವೆನು, ಕೈ ಬಿಡೌ, ಅಮ್ಮಾ ! |
ಬೇಗ ಅಪ್ಪನು ಬರುವ ಮುಂಚೆಯೇ, ಅಮ್ಮಾ! ||
ಹೋಗುವೆನು, ಹೋಗುವೆನು; ಹೊರ ಹೊರಡು; ಅಮ್ಮಾ! |
ಕೂಗಿ ಅಳದಿರು; ದಾರಿ ತೋರಿಸೌ! ಅಮ್ಮಾ! || ೧೪ ||

ತಾಯಿ-ಚಂದು ಕೇಳ್! ದಾರಿಯಲಿ ನಾ ಪೋಪೆ ಮುಂದೆ |
ಬಂದವನು ಬಳಿಕ ನಿನ್ನಯ ಮುದ್ದು ತಂದೆ ||
ಮಂದಿ ಮಕ್ಕಳು ಪಡೆದು ಬಾ ನೀನು ಹಿಂದೆ. |
ಎಂದವನ ಬಾಯಿ ಬಿಗಿದಳು ಮುದ್ದಿನಿಂದೆ. ||೧೫||

ಆರಲಿಲ್ಲವು; ತಾಯ ಮನದ ಪರಿತಾಪಂ |
ಆರಿದುದು ಮಾತೆಯಾ ಮನೆಯ ಮಣಿದೀಪಂ. ||
ಆರಲಿಲ್ಲವು ತಾಯ ಕಂಬನಿಯ ಕೂಪಂ |
ಆರಿದುದು ಭಾಗ್ಯಾಬ್ಧಿ, ಅಯ್ಯಯ್ಯೋ ಪಾಪಂ! ||೧೬||
*****
(ಪದ್ಯ ಪುಸ್ತಕ)

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...