Home / ಕವನ / ಕವಿತೆ / ಪಾಣಿಪತ

ಪಾಣಿಪತ

(ಒಂದು ಯಕ್ಷಗಾನ ದೃಶ್ಯ)
[ವಾರ್ಧಿಕ ಷಟ್ಪದಿ]

ಜಂಬುದ್ವೀಪದ ಹೊರಗೆ ನೆಲಸಿದ್ದ ಅಫ್ಘಾನ
ರಂ ಬಹಳ ಕಾಲದಿಂದಾಳ್ವಹಮ್ಮದ ಶಹನ್
ಎಂಬಾ ದುರಾಣಿ ಕುಲದಗ್ರಣಿ ಮುಸಲ್ಮಾನರೊಡನೆ ಪಾಣೀಪತಕ್ಕೆ ||
ಜಂಭದಿಂದೆಯ್ತಂದು ಪಾಳೆಯರ ಬಿಟ್ಟಿರಲು
ಕುಂಭಜನ ಚಕ್ರಕೋಟೆಗೆ ನಡೆವ ಅಭಿಮನ್ಯು
ವೆಂಬವೋಲ್ ಮಾರಾಟದಳವೆರಸಿ ಪೊರಮಟ್ಟನಾ ಸದಾಶಿವ ಭಾವುವೂ

[ಸೌರಾಷ್ಟ್ರ ತ್ರಿವಿಡೆ]
ಆ ಸಮರದಲ್ಲಿ ಭಾವು ಓಲಗ
ದಾ ಸಭೆಯ ರಚಿಸಿದನು ಸಿಂಧ್ಯ ವಿ
ಲಾಸಿ ಗಾರ್ಡಿಯ ಹೋಳಕರ ವಿಶ್ವಾಸರಾವೊಡನೆ ||

ಭಾವು:- ಹೊಳೆಯ ಕಳೆದೆವು; ಹೊಳಲು ಹಿಡಿದೆವು;
ತುಳಿದೆವಫ್ಘಾನ್‌ ಸರ್ಪವನು ಇ
ನ್ನುಳಿದು ಹೋದರೆ ಕಚ್ಚದಂದದಿ ತಿಳಿಪುದಿಂದೆನಗೆ ||

[ಭಾಮಿನಿ ಷಟ್ಪದಿ]
ಭಾವುವಿನ ನುಡಿಕೇಳಿ ಮಂತ್ರಿ ಸ
ಭಾವಲಯ ಭಟರಂತರಂಗದ
ಭಾವ ತೋರದೆ, ಓರ್ವರೋರ್ವರ ಮೊಗವ ನೋಡುತಿರೆ; |
ನಾವು ತಳುವುದೊ? ತಳರುವುದೂ? ಮೇಣ್
ಸಾವಿಗಂಜುತ ಹಿಂದುಳಿವುದೋ?
ನೀವು ಯೋಚಿಸಿ ಹೇಳ್ವುದೆಂದನು ಕೈಯಮೀಸೆಯಲಿ |

(ಕಾಂಬೋಧಿ-ಝಂಪೆತಾಳ)
ಹೋಳಕರ:- ದಳವಾಯಿ ಲಾಲಿಪುದು ಹಳಬರ ನುಡಿಯೆಂದು
ಹುಲುಗೆಡಹಿ ಹೊಳೆಯ ದಾಟಿರುವೆ!
ತಲೆಗಟ್ಟಿ ಎಂದು ಕಲ್ಲನು ಹಾಯ್ದೆ ಭಾವುವೇ
ತಿಳಿಗೇಡಿ, ಹೊರ ಕುರುಬನಿಗೆ ಕುರಿಯ ಕೊಟ್ಟೆ |
ಘೋರ ಸೈನ್ಯಗಳಿಂದ ಹೋರದೆ, ಕೆಲಮಂದಿ
ವೀರರಿಂ ಕಾದಾಡಿ ಹಗೆಯಾ
ಮಾರಾಯ ಮೇಲ್ಬಿದ್ದು ಹಾರಿಸುವುದನು ತೊರೆದೆ.
ದೂರ ಸೀಮೆಯು! ದವಸ ಪೂರೈಕೆ ಅಹುದೆ ||

[ಸಾರಂಗ-ಅಷ್ಟತಾಳ]
ಗಾರ್ಡಿ:- ವಂಚನೆಯಲಿ ವೈರಿಯನು ಕೊಲ್ಲಲಾಗದು-ಭಾವು ಕೇಳು-ಒಳ
ಸಂಚಿನ ರಣವಿದ್ಯೆಯನ್ನು ತೋರಲಾಗದು, ಭಾವು ಕೇಳು, ||
ಫ್ರೆಂಚರು ಜಯಲಕ್ಷ್ಮಿ ಸೆಳೆಯುವ ಹಂಚಿಕೆ-ಭಾವು ಕೇಳು-ಸಿಡಿ
ಲ್ಮಿಂಚಿನೊಲ್‌ ಒಮ್ಮೆಯೇ ಬಾಳುತ, ಬಡಿವುದು;- ಭಾವುಕೇಳು, ||

[ಮಾರವಿ-ಏಕತಾಳ]
ಹೋಳಕರ:- ಉದ್ಧತ ಗಾರ್ಡಿ, ಪ್ರಸಿದ್ಧನೆ ನಿನ್ನ ಪ್ರಬುದ್ಧಿಯ ಕಾರಣದಿ,||
ಯುದ್ಧದಿ ನುರಿತೀ ವೃದ್ಧರಿಗಪ್ಪುದೆ ಪದ್ಧತಿ ಇದು ರಣದಿ?||
ಹಿರಿಯರ ಕಲೆಯಿಂ ದೊರಕಿತು ಮಾರಾಟರ ರಾಜ್ಯೋದಯವು||
ಬರುವುದು ಗಾರ್ಡಿಯ ಪರದೇಶದ ಹೊಸ ಹರಿಬದಿ ಅಪಜಯವು||
ಹೊತ್ತಿತು ಕಲಹವು ಕತ್ತಿಯನಿಬ್ಬರು ಎತ್ತಲು ಸಭೆಯಲ್ಲಿ
ಮುತ್ತುಗ ಮುಳ್ಳನು ತೆತ್ತಿಸಿದಂತೆಯೆ ನಿತ್ತನು ದೊರೆ ಆಲ್ಲಿ||

[ವಾರ್ಧಿಕ ಷಟ್ಪದಿ]
ಕಾಳಗಕ್ಕನುವಾಗಿ ಬಂದಿದ್ದ ಭಾವುವಿನ
ಪಾಳೆಯದಿ ಕಚ್ಚಾಟವೆಂಬಂತೆ ಮಲ್ಹಾರಿ
ಹೋಳಕರ ಮಹದಾಜಿ ಸಿಂಧ್ಯದಾಮಾಜಿ ಗಾಯಕವಾಡ ವೀರಗಾರ್ಡಿ ||
ಹಾಳುನೆವ ಹೂಡಿ ಜಗಳಾಡಿ ಕೆಲರೋಡಿದರು
ಮಳವಕೆ ಬಳಿಕಾ ಮರಾಟ ಸೈನ್ಯವನೊತ್ತಿ
ತೂಳಿದುದು ಶಹನಪಡೆ ಗೂಡಿನಲಿ ಸಿಲುಕಿದಿಲಿಯಂತಾದನಾ ಭಾವುವು ||

ಎಳೆ ಅಡಕೆ ಕತ್ತರಿಯ ಬಾಯೊಳಗೆ ಬಿದ್ದಂತೆ
ಮಳೆ ಹೊಯ್ವ ಹೊಯ್ಲಿನಲಿ ಹಸಿ ಮಡಕೆ ಅದ್ದಂತೆ,
ಬೆಳೆಯ ತೆಂಗಿನ ಗಿಡಕೆ ಕಾಡ್ಗಿಚ್ಚು ಹೊದ್ದಂತೆ ರಣರಂಗದಬ್ದಾಲಿಯಾ ||
ದಳದುಳಕ್ಕಿಂಬಾಗಿ ಬಾಗಿ ಬೇಸತ್ತು ಸ
ತ್ತುಳಿದು ತುಳಿದಳವಳಿದು ಕೊಳುಗುಳದೊಳಾ ಭಾವು
ದಳವಾಯಿ ಪಡೆಯೊಡನೆ ಪವಡಿಸಿದ ವೀರ ಶ್ರೀ ಹಾರವಂ ಜೋಗುಳಿಸಲು

[ಮೋಹನ-ಏಕತಾಳ]
ಮಂಗಲಮ ಜಯ ಮಂಗಲಂ ಶುಭ ಮಂಗಲಂ ಜಯ ಮಂಗಲಂ,
ನೆತ್ತರ ಮೂಲಕ ಧರ್ಮವನು-ಹಾ!
ಇಂಬು ಗೊಂಡುದ್ರೇಕದಿಂದ ನಿಂದಿರಲಿತ್ತ.
ಬಿತ್ತರಿಸುವ ದುಷ್ಕರ್ಮವನು ||
ಎತ್ತಲು ಮುಂದಕೆ ಸಲ್ಲದು ಎಂಬೀ
ಉತ್ತಮ ಭೇಧವ ತಂದವಗೆ, ||
ಬಲವಂತರು ತಮ್ಮಯ ಬಲದೆ-ದು
ರ್ಬಲರನು ಕಾಳಗದಲಿ ಕೊಲದೆ, ||
ಒಲಿದವರವರಾತ್ಮೋನ್ನತಿಯನು ಗಳಿ
ಸಲು ಬೇಕನ್ನುತ ಸಾರುವಗೆ ||
ಹಿಂದು ಮುಸಲ್ಮಾನ ಸುನ್ನಿ ಶೇಕ್-ಜೈ
ನಾಂಧ್ರ ಕಿರಿಸ್ತಾನ್ ಫಾರಸಿ ಶೀಕ್ ||
ಇಂದಾ ಐದನೆ ಜೋರ್ಜರ ಕೊಡೆಯಲಿ
ಒಂದಾಗಿರಿಸಿದ ಮಹಿಮನಿಗೆ, ||
ಸನ್ನುತ ಜನತೆ ಪ್ರಮುಖವೆಂದು-ರಾ
ಷ್ಟ್ರೋನ್ನತಿಯೇ ಇಹಸುಖವೆಂದು, ||
ಇನ್ನೀ ಮಂತ್ರವನೆಲ್ಲರು ಪಠಿಸಲಿ
ಎನ್ನುತ ಉಪದೇಶಿಸಿದವಗೆ ||
-ಭಕ್ತಿಸಂದೇಶ
(ರೌದ್ರಿ ಸಂವತ್ಸರ)
*****

Tagged:

Leave a Reply

Your email address will not be published. Required fields are marked *

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...