Home / ಕವನ / ಕವಿತೆ / ಪಾಣಿಪತ

ಪಾಣಿಪತ

(ಒಂದು ಯಕ್ಷಗಾನ ದೃಶ್ಯ)
[ವಾರ್ಧಿಕ ಷಟ್ಪದಿ]

ಜಂಬುದ್ವೀಪದ ಹೊರಗೆ ನೆಲಸಿದ್ದ ಅಫ್ಘಾನ
ರಂ ಬಹಳ ಕಾಲದಿಂದಾಳ್ವಹಮ್ಮದ ಶಹನ್
ಎಂಬಾ ದುರಾಣಿ ಕುಲದಗ್ರಣಿ ಮುಸಲ್ಮಾನರೊಡನೆ ಪಾಣೀಪತಕ್ಕೆ ||
ಜಂಭದಿಂದೆಯ್ತಂದು ಪಾಳೆಯರ ಬಿಟ್ಟಿರಲು
ಕುಂಭಜನ ಚಕ್ರಕೋಟೆಗೆ ನಡೆವ ಅಭಿಮನ್ಯು
ವೆಂಬವೋಲ್ ಮಾರಾಟದಳವೆರಸಿ ಪೊರಮಟ್ಟನಾ ಸದಾಶಿವ ಭಾವುವೂ

[ಸೌರಾಷ್ಟ್ರ ತ್ರಿವಿಡೆ]
ಆ ಸಮರದಲ್ಲಿ ಭಾವು ಓಲಗ
ದಾ ಸಭೆಯ ರಚಿಸಿದನು ಸಿಂಧ್ಯ ವಿ
ಲಾಸಿ ಗಾರ್ಡಿಯ ಹೋಳಕರ ವಿಶ್ವಾಸರಾವೊಡನೆ ||

ಭಾವು:- ಹೊಳೆಯ ಕಳೆದೆವು; ಹೊಳಲು ಹಿಡಿದೆವು;
ತುಳಿದೆವಫ್ಘಾನ್‌ ಸರ್ಪವನು ಇ
ನ್ನುಳಿದು ಹೋದರೆ ಕಚ್ಚದಂದದಿ ತಿಳಿಪುದಿಂದೆನಗೆ ||

[ಭಾಮಿನಿ ಷಟ್ಪದಿ]
ಭಾವುವಿನ ನುಡಿಕೇಳಿ ಮಂತ್ರಿ ಸ
ಭಾವಲಯ ಭಟರಂತರಂಗದ
ಭಾವ ತೋರದೆ, ಓರ್ವರೋರ್ವರ ಮೊಗವ ನೋಡುತಿರೆ; |
ನಾವು ತಳುವುದೊ? ತಳರುವುದೂ? ಮೇಣ್
ಸಾವಿಗಂಜುತ ಹಿಂದುಳಿವುದೋ?
ನೀವು ಯೋಚಿಸಿ ಹೇಳ್ವುದೆಂದನು ಕೈಯಮೀಸೆಯಲಿ |

(ಕಾಂಬೋಧಿ-ಝಂಪೆತಾಳ)
ಹೋಳಕರ:- ದಳವಾಯಿ ಲಾಲಿಪುದು ಹಳಬರ ನುಡಿಯೆಂದು
ಹುಲುಗೆಡಹಿ ಹೊಳೆಯ ದಾಟಿರುವೆ!
ತಲೆಗಟ್ಟಿ ಎಂದು ಕಲ್ಲನು ಹಾಯ್ದೆ ಭಾವುವೇ
ತಿಳಿಗೇಡಿ, ಹೊರ ಕುರುಬನಿಗೆ ಕುರಿಯ ಕೊಟ್ಟೆ |
ಘೋರ ಸೈನ್ಯಗಳಿಂದ ಹೋರದೆ, ಕೆಲಮಂದಿ
ವೀರರಿಂ ಕಾದಾಡಿ ಹಗೆಯಾ
ಮಾರಾಯ ಮೇಲ್ಬಿದ್ದು ಹಾರಿಸುವುದನು ತೊರೆದೆ.
ದೂರ ಸೀಮೆಯು! ದವಸ ಪೂರೈಕೆ ಅಹುದೆ ||

[ಸಾರಂಗ-ಅಷ್ಟತಾಳ]
ಗಾರ್ಡಿ:- ವಂಚನೆಯಲಿ ವೈರಿಯನು ಕೊಲ್ಲಲಾಗದು-ಭಾವು ಕೇಳು-ಒಳ
ಸಂಚಿನ ರಣವಿದ್ಯೆಯನ್ನು ತೋರಲಾಗದು, ಭಾವು ಕೇಳು, ||
ಫ್ರೆಂಚರು ಜಯಲಕ್ಷ್ಮಿ ಸೆಳೆಯುವ ಹಂಚಿಕೆ-ಭಾವು ಕೇಳು-ಸಿಡಿ
ಲ್ಮಿಂಚಿನೊಲ್‌ ಒಮ್ಮೆಯೇ ಬಾಳುತ, ಬಡಿವುದು;- ಭಾವುಕೇಳು, ||

[ಮಾರವಿ-ಏಕತಾಳ]
ಹೋಳಕರ:- ಉದ್ಧತ ಗಾರ್ಡಿ, ಪ್ರಸಿದ್ಧನೆ ನಿನ್ನ ಪ್ರಬುದ್ಧಿಯ ಕಾರಣದಿ,||
ಯುದ್ಧದಿ ನುರಿತೀ ವೃದ್ಧರಿಗಪ್ಪುದೆ ಪದ್ಧತಿ ಇದು ರಣದಿ?||
ಹಿರಿಯರ ಕಲೆಯಿಂ ದೊರಕಿತು ಮಾರಾಟರ ರಾಜ್ಯೋದಯವು||
ಬರುವುದು ಗಾರ್ಡಿಯ ಪರದೇಶದ ಹೊಸ ಹರಿಬದಿ ಅಪಜಯವು||
ಹೊತ್ತಿತು ಕಲಹವು ಕತ್ತಿಯನಿಬ್ಬರು ಎತ್ತಲು ಸಭೆಯಲ್ಲಿ
ಮುತ್ತುಗ ಮುಳ್ಳನು ತೆತ್ತಿಸಿದಂತೆಯೆ ನಿತ್ತನು ದೊರೆ ಆಲ್ಲಿ||

[ವಾರ್ಧಿಕ ಷಟ್ಪದಿ]
ಕಾಳಗಕ್ಕನುವಾಗಿ ಬಂದಿದ್ದ ಭಾವುವಿನ
ಪಾಳೆಯದಿ ಕಚ್ಚಾಟವೆಂಬಂತೆ ಮಲ್ಹಾರಿ
ಹೋಳಕರ ಮಹದಾಜಿ ಸಿಂಧ್ಯದಾಮಾಜಿ ಗಾಯಕವಾಡ ವೀರಗಾರ್ಡಿ ||
ಹಾಳುನೆವ ಹೂಡಿ ಜಗಳಾಡಿ ಕೆಲರೋಡಿದರು
ಮಳವಕೆ ಬಳಿಕಾ ಮರಾಟ ಸೈನ್ಯವನೊತ್ತಿ
ತೂಳಿದುದು ಶಹನಪಡೆ ಗೂಡಿನಲಿ ಸಿಲುಕಿದಿಲಿಯಂತಾದನಾ ಭಾವುವು ||

ಎಳೆ ಅಡಕೆ ಕತ್ತರಿಯ ಬಾಯೊಳಗೆ ಬಿದ್ದಂತೆ
ಮಳೆ ಹೊಯ್ವ ಹೊಯ್ಲಿನಲಿ ಹಸಿ ಮಡಕೆ ಅದ್ದಂತೆ,
ಬೆಳೆಯ ತೆಂಗಿನ ಗಿಡಕೆ ಕಾಡ್ಗಿಚ್ಚು ಹೊದ್ದಂತೆ ರಣರಂಗದಬ್ದಾಲಿಯಾ ||
ದಳದುಳಕ್ಕಿಂಬಾಗಿ ಬಾಗಿ ಬೇಸತ್ತು ಸ
ತ್ತುಳಿದು ತುಳಿದಳವಳಿದು ಕೊಳುಗುಳದೊಳಾ ಭಾವು
ದಳವಾಯಿ ಪಡೆಯೊಡನೆ ಪವಡಿಸಿದ ವೀರ ಶ್ರೀ ಹಾರವಂ ಜೋಗುಳಿಸಲು

[ಮೋಹನ-ಏಕತಾಳ]
ಮಂಗಲಮ ಜಯ ಮಂಗಲಂ ಶುಭ ಮಂಗಲಂ ಜಯ ಮಂಗಲಂ,
ನೆತ್ತರ ಮೂಲಕ ಧರ್ಮವನು-ಹಾ!
ಇಂಬು ಗೊಂಡುದ್ರೇಕದಿಂದ ನಿಂದಿರಲಿತ್ತ.
ಬಿತ್ತರಿಸುವ ದುಷ್ಕರ್ಮವನು ||
ಎತ್ತಲು ಮುಂದಕೆ ಸಲ್ಲದು ಎಂಬೀ
ಉತ್ತಮ ಭೇಧವ ತಂದವಗೆ, ||
ಬಲವಂತರು ತಮ್ಮಯ ಬಲದೆ-ದು
ರ್ಬಲರನು ಕಾಳಗದಲಿ ಕೊಲದೆ, ||
ಒಲಿದವರವರಾತ್ಮೋನ್ನತಿಯನು ಗಳಿ
ಸಲು ಬೇಕನ್ನುತ ಸಾರುವಗೆ ||
ಹಿಂದು ಮುಸಲ್ಮಾನ ಸುನ್ನಿ ಶೇಕ್-ಜೈ
ನಾಂಧ್ರ ಕಿರಿಸ್ತಾನ್ ಫಾರಸಿ ಶೀಕ್ ||
ಇಂದಾ ಐದನೆ ಜೋರ್ಜರ ಕೊಡೆಯಲಿ
ಒಂದಾಗಿರಿಸಿದ ಮಹಿಮನಿಗೆ, ||
ಸನ್ನುತ ಜನತೆ ಪ್ರಮುಖವೆಂದು-ರಾ
ಷ್ಟ್ರೋನ್ನತಿಯೇ ಇಹಸುಖವೆಂದು, ||
ಇನ್ನೀ ಮಂತ್ರವನೆಲ್ಲರು ಪಠಿಸಲಿ
ಎನ್ನುತ ಉಪದೇಶಿಸಿದವಗೆ ||
-ಭಕ್ತಿಸಂದೇಶ
(ರೌದ್ರಿ ಸಂವತ್ಸರ)
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...