Home / ಕವನ / ಕವಿತೆ / ೨೬-೧-೫೦

೨೬-೧-೫೦

ತಲೆಯ ಮೇಲಿನ ಹೆಜ್ಜೆ ಎಂದೋ ತೆರಳಿತು
ಪಡುವಲಿನ ಬಿಳಿ ಕೆಂಪು ನೀಲಿ ನೀರನು ದಾಟಿ,
ಮರಕತ ದ್ವೀಪದಮನೆಗೆ. ದಣಿಗೂ ದಣಿವು!
ಇತ್ತ ಈ ಬಿಡುಗಡೆಯೂ ಮೈಮುರಿದು ಪರಶಿವನ
ತ್ರಿಶೂಲದಂತಾಯ್ತು ನೋಡುನ ಕಣ್ಣಿಗೆ!

ತಲೆಯ ಮೇಲಿನ ಹೆಜ್ಜೆ. -ಈ ಮಾತು ಮುಗಿಯಿತು;
‘ಹೆಜ್ಜೆಯೇ ಅಲ್ಲ ಮಕುಟದ ಮುತ್ತು ಅದು,
ಇರಲಿ ರಾಜತ್ವ ನೆಪಮಾತ್ರ’ ಎನುವಂತಿಲ್ಲ,-
ಮಕುಟ ರಹಿತ ಸಾಮ್ರಾಜ್ಞಿ ಭಾರತಲಕ್ಷ್ಮಿ,
ರಾಜತ್ವ ರಹಿತ ರಾಜ್ಯಾಂಗ ಮನೋಮಂದಿರೆ.

ನೆನೆ ನೆನೆ ಓ ಮನನೆ ನಿನ್ನ ಎದೆಗತ್ತಲೆಯೆ
ಬಲಿಗೊಟ್ಟ ತಂದೆ ಬಾಳಿನ ಚಂದ್ರಬಿಂಬವನು.
ಆ ನೋಟ ನಿನ್ನ ಕಣ್ಣಾಗಿ, ಅಮೃತವೆ ತುಂಬಿ,
ಗಾಂಧಿಜಿಯ ಮಂದಹಾಸವೆ ಗುರುವಾಗಲಿ !

ಬಾಂಬಿನ ಅಲಂಕಾರ ನಿನಗಿಲ್ಲ, ತಾಯೆ,
ಶಾಂತಿ ಪ್ರಿಯೆ, ಚಂದ್ರಕಾಂತಿ ಪ್ರಿಯೆ,
ಗಂಗಾ ಯಮುನಾ ನದನದೀ ಸ್ನಾತೆ,
ಉಪನಿಷದ್ವಿಪಿನ ಹೋಮಾಗ್ನಿ ಸಂಜಾತೆ !

ಚಳಿಗಾಲ ಬಂದಿರಲು, ಮುದುಕಿ ಮುಮ್ಮೂಲೆಯಲಿ
ಒಂದು ಕಿಡಿ ಕೆಂಡದೆದುರಿನಲಿ ಮೈ ಹಿಡಿಯಾಗಿ
ಬೆದರಿ ಕುಳಿತಂತೆ, ಚಿಂತೆಗೆ ಆತ್ಮನನು ತೆತ್ತು
ಸಂಗ್ರಾಮ ಭೀತಿಯಲಿ ಸೋತು ಸೊರಗಿ ಜಗತ್ತು
ದೂರ ಸಭೆಗಳಲಿ ಮುಗಿಯುವ ಮುನ್ನ ಎಚ್ಚರಿಸು.
ನಿನ್ನ ಗಂಭೀರವಾಣಿಯ ಪಾರಿವಾಳಗಳ
ಬೆಳ್ಗರಿಯ ಬೀಸಿ ಶಾಂತಿಯ ಶಿಶುವನುಪಚರಿಸು;
ಅದು ಬೆಳೆದು ಲೋಕನಾಯಕನಾಗಿ ರಾರಾಜಿಸಲಿ!

ಜಗಜ್ಜನನಿಯಲ್ಲ ನೀನು; ಜಗನ್ಮೋಹಿನಿಯೂ ಅಲ್ಲ;
ಜಗದ್ಧಾತ್ರಿಯಾಗಿರು ನೀನು; ಅಹಿಂಸಾವತ್ಸಲೆ,
ನಿನ್ನ ಶಾಸನವಿದು (ನಡೆ ನಗಾರಿಯ ಮೇಲೆ;
ಈ ಧರ್ಮ ನಿನ್ನ ಬಾವುಟದ ಇನ್ನೂ ಮೇಲೆ):

“ವಯಂ ಪುನಃ ಏವಂ ಆಚಕ್ಷಾಮಹೇ,
ಏನಂ ಭಾಷಾಮಹೇ, ಏವಂ ಪ್ರರೂಯಾಮಃ,
ಏವಂ ಪ್ರಜ್ಞಾಪಯಾಮಃ,-
ಸರ್ವೇ ಪ್ರಾಣಾಃ, ಸರ್ವೇ ಭೂತಾಃ, ಸರ್ವೇ ಜೀವಾಃ,
ಸರ್ವೇ ಸತ್ವಾಃ,
ನ ಹಂತಾವ್ಯಾಃ
ನ ಆಜ್ಞಾಪರಿಯಿತವ್ಯಾಃ
ನ ಪರಿಗ್ರಹೀತವ್ಯಾಃ
ನ ಪರಿತಾಪಯಿತವ್ಯಾಃ
ನ ಉಪದ್ರೋತವ್ಯಾಃ
ಆರ್ಯವಚನಮೇತತ್
ಓಂ ತತ್‍ಸತ್.”
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...