Home / ಕಥೆ / ಕಿರು ಕಥೆ / ಪಾರಿವಾಳ ಮತ್ತು ಮನುಷ್ಯ

ಪಾರಿವಾಳ ಮತ್ತು ಮನುಷ್ಯ

ಆ ಊರು ಪ್ರಕ್ಷುಬ್ಧವಾಗಿತ್ತು. ಅಲ್ಲಿನ ಜನರಿಗೆ ಬದುಕು ಎನ್ನುವುದು ದುಸ್ತರವೆನಿಸಿತ್ತು. ಆಗಾಗ ಹಲವಾರು ಕೋಮುಗಳ ನಡುವೆ ಕಲಹ ಉದ್ಭವಿಸುತ್ತಿದ್ದವು. ಕ್ಲುಲ್ಲಕ ಕಾರಣಗಳು ಮನುಷ್ಯರಲ್ಲಿ ಹಿಂಸಾ ಪ್ರವೃತ್ತಿ ಹುಟ್ಟುಹಾಕಿ ಊರೆಂಬೋ ಊರನ್ನು ಸ್ಮಶಾನಮಾಡುತ್ತಿದ್ದವು. ಒಂದಿಷ್ಟು ದಿನ ಶಾಂತ ವಾತಾವರಣ ನೆಲೆಸಿದ್ದರೆ ಧರ್ಮಾಂಧರ ಮನಸ್ಸುಗಳಿಗೆ ಕಸಿವಿಸಿ ಆಗುವುದು. ಮೈಗಳ್ಳರು, ಪುಂಡ ಪೋಕರಿಗಳು, ಹರಾಮಿ ಗಬ್ಬು ಗೌಲಿನ ಆಸೆಬುರುಕರು ಆಯಾ ಧರ್ಮಗಳ ಲಾಂಛನ ಧರಿಸಿ ಭಯೋತ್ಪಾದಕ ತಲ್ಲಣ ಹುಟ್ಟಿಸುವುದರಿಂದ ದೇವರು, ಧರ್ಮಗಳೇ ನಡುಗ ತೊಡಗಿದ್ದರಿಂದ ಅಮಾಯಕರ ಆರ್ತತೆಯನ್ನು ಕೇಳುವವರೆ ಇರಲಿಲ್ಲ.

ಉರಿಯುವ ಮನೆಯಂಗಳ ಹಿರಿದುಕೊಳ್ಳುವ ಕ್ಷುದ್ರ ಚಾಳಿಯ ರಾಜಕಾರಣಿಗಳಿಂದ ಸೈತಾನರ ಅಟ್ಟಹಾಸ ಹಗಲೆಂಬೊ ಹಗಲನ್ನು, ರಾತ್ರಿಯೆಂಬೊ ರಾತ್ರಿಯನ್ನು ಭಯಾನಕಗೊಳಿಸಿದ್ದವು. ಇವರೊಂದಿಗೆ ಕೈಜೋಡಿಸಿದಂತೆ ವದಂತಿ ಎಂಬ ಖೋಜಾ ಮಿಥ್ಯದ ಸಂಗತಿಗಳಿಗೆ ಜೀವದುಂಬಿ, ಬಣ್ಣತುಂಬಿ ಮನುಷ್ಯ ಸಂಬಂಧಗಳ ಮೇಲೆ, ಮಾನವೀಯತೆಯ ಮೇಲೆ ಗದಾ ಪ್ರಹಾರ ಮಾಡುತ್ತಲೇ ಚಾಕು, ಚೂರಿ, ಹತ್ಯಾರ-ತ್ರಿಶೂಲ, ಬಂದೂಕು-ಬಾಂಬು, ಆಸಿಡ್ಡು-ಚೈನು, ಹಿಂದೂ-ಮುಸ್ಲಿಮ, ಜೈನ-ಬೌದ್ಧ, ಕ್ರೈಸ್ತ-ಸಿಖ್, ಪಾರಸಿಗಳನ್ನು ಬಲಿ ತೆಗೆದುಕೊಳ್ಳುತ್ತಲೇ ಇದ್ದವು. ಧರ್ಮಗಳ ಗುತ್ತಿಗೆದಾರರು ಸತ್ತವರಲ್ಲಿ ಯಾರು ಹೆಚ್ಚುಯೆಂದು ಲೆಕ್ಕವಿಡುತ್ತಲೇ ಮತ್ಸರದ ಕೊಳ್ಳಿ ಉರಿಸುತ್ತಿದ್ದರು.

ಈ ಸಲದ ಗಲಭೆ ಭೀಕರವಾಗಿತ್ತು. ಊರಿನ ಬೀದಿ ಬೀದಿಗಳಲ್ಲಿ ಪೋಲೀಸರ ಬೂಟು ಗಾಲಿನ ಸದ್ದು ಕೇಳಿಸುತ್ತಿತ್ತು. ಜನರು ಮುಚ್ಚಿಕೊಂಡ ಬಾಗಿಲು ತೆರೆದು ಹೊರಬರುವ ಧೈರ್ಯ ತೋರಿರಲಿಲ್ಲ. ಯಾರದೋ ಸ್ವಾರ್ಥಕ್ಕೆ ಅವರ ಬದುಕು ಹಿಂಸೆ ಅನುಭವಿಸತೊಡಗಿತ್ತು. ಆದರೆ ಅವರೊಂದಿಗೆ ಗೂಡುಗಳಲ್ಲಿ ಬೆಚ್ಚಗಿರುತ್ತಿದ್ದ ಸುಂದರ ಪಾರಿವಾಳಗಳು ಮಾತ್ರ ಪ್ರಳಯಾಂತಕರ ಕ್ರೌರ್ಯ ಲೆಕ್ಕಿಸದೆ, ಪೋಲಿಸರ ಗುಂಡಿನ ಸದ್ದಿಗೆ ಧೈರ್ಯಗೆಡದೆ ಕರ್ಫ್ಯೂವನ್ನು ಉಲ್ಲಂಘಿಸಿ ನೆಲದಿಂದ ಆಕಾಶಕ್ಕೆ ಆಕಾಶದಿಂದ ನೆಲಕ್ಕೆ ಸ್ವಚ್ಛಂದವಾಗಿ ಹಾರಾಡಿಕೊಳ್ಳುತ್ತಿದ್ದವು.

ಪಾರಿವಾಳ ಸಾಕಿದ ಮನುಷ್ಯ ಕಿಟಕಿಯೊಳಗಿಂದಲೆ ಕಾಳು ತೂರಿ,

“ಪಾರಿವಾಳಗಳೇ, ಊರಲ್ಲಿ ಕರ್ಫ್ಯೂ ಇದೆ. ನೀವು ಗೂಡು ಬಿಟ್ಟು ಹೋಗಬೇಡಿರಿ” ಎಂದಿದ್ದ.

“ನಮಗೆ ಬಂಧನ ಹಿಡಿಸುವುದಿಲ್ಲ ಹಾರುವುದು ನಮ್ಮ ಸಹಜ ಸ್ವಭಾವ.”

“ಜನರ ಗಲಭೆ, ಗುಂಡಿನ ಸದ್ದು ನಿಮಗೆ ಭಯ ತರುವುದಿಲ್ಲವೆ?”

“ನಾವು ಮನುಷ್ಯರಂತಲ್ಲ.”

“ಅಂದರೆ?”

“ಮನುಷ್ಯರು ಅತ್ಮತೃಪ್ತರು. ಅವರಿಗೆ ಗಲಭೆ ಮುಖ್ಯ. ನಮಗೆ ಶಾಂತಿ ಮುಖ್ಯ.”

“ಊರು ಆತಂಕದಲ್ಲಿರುವಾಗ ನೀವು ಶಾಂತಿಯಿಂದ ಇರಲು ಹೇಗೆ ಸಾಧ್ಯ?”

“ನಮ್ಮಲ್ಲಿ ಮತೀಯ ಭಾವನೆ ಇಲ್ಲ ಅದಕ್ಕೆ.”

“ನಾವೂ ನಿಮ್ಮಂತೆ ಇರಲು ಏಕೆ ಸಾಧ್ಯವಾಗುವುದಿಲ್ಲ?”

“ನಮಗೆ ಈ ಜಗತ್ತು ಒಂದೇ. ಇಲ್ಲಿನ ಗಾಳಿ, ನೀರು, ಬೆಳಕು ಒಂದೆ. ನಾವು ಅನೇಕ ಸಲ ಮಸೀದಿಯ ಮಿನಾರುಗಳಲ್ಲಿ ಕುಳಿತು ಇಮಾಮನ ಕುರ್‌ಆನ್ ಉಕ್ತಿ ಕೇಳುತ್ತೇವೆ. ಮತ್ತೆ ಕೆಲವು ಸಲ ಮಂದಿರದ ಗೋಪುರದ ಮೇಲೆ ಕುಳಿತು ವೇದ ಉಪನಿಷತ್ತುಗಳ ಸಾರ ಅರಿಯುತ್ತೇವೆ. ಇನ್ನೊಮ್ಮೆ ಚರ್ಚಿನ ಗಂಟೆಯ ಬಳಿ ಕುಳಿತು ಫಾದರನ ಪ್ರೀತಿಯ ಸ್ತುತಿ ಆಲಿಸುತ್ತೇವೆ. ದೇವರು ದಯಾಮಯ. ನಮಗೆ ಅಂಥ ಭಾಗ್ಯವನ್ನು ಕರುಣಿಸಿದ್ದಾರೆ” ಎಂದು ಪುರ್‍ರನೆ ಆಕಾಶದತ್ತ ಪಾರಿವಾಳ ಹಾರಿ ಹೋದವು.

ಕಿಟಕಿಯ ಸರಳುಗಳ ಹಿಂದೆ ನಿಂತ ಮನಷ್ಯ ಮುಖ ತಗ್ಗಿಸಿದ್ದ.

******

 

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...