ಕೃಷಿ

ಅದೊಂದು ಪುಟ್ಟ ಗ್ರಾಮ. ಅಲ್ಲಿನ ತರುಣ ಸಂಘವರು ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸನ್ಮಾನಿತನಾದವನು ಹೆಸರಾಂತ ಕವಿ. ಅವನೂ ಅದೇ ಹಳ್ಳಿಯವನು. ಸಾಹಿತ್ಯ ಅಕಾಡಮಿಯ ಪ್ರಶಸ್ತಿ ದೊರಕಿಸಿಕೊಂಡಿದ್ದರಿಂದ ಊರ ಜನ ಪ್ರೀತಿ, ಅಭಿಮಾನದಿಂದ ಕವಿಯನ್ನು ಬರಮಾಡಿಕೊಂಡಿದ್ದರು. ಮತ್ತು ಸಂಭ್ರಮದಿಂದ ಕವಿಗೆ ಶಾಲು ಹೊದಿಸಿ, ಹಾರ ಹಾಕಿ, ಅಮೂಲ್ಯ ಕಾಣಿಕೆಯೊಂದಿಗೆ ಸನ್ಮಾನಿಸಿದ್ದರು.

ಸಮಾರಂಭದಲ್ಲಿ ಆರಂಭದಿಂದ ಕೊನೆಯತನಕ ಕವಿಯ ಸಾಹಿತ್ಯ ಕೃಷಿಯ ಕುರಿತು ಪ್ರತಿಯೊಬ್ಬರು ಮಾತನಾಡಿದರು. ಘನವಾದ ಶಬ್ದಗಳಿಂದ ಕವಿಯೂ ತನ್ನ ಕಾವ್ಯಕೃಷಿ ಕುರಿತು ಮಾತನಾಡಿದ. ಅವನು ವೇದಿಕೆ ಇಳಿದು ಬರುತ್ತಿದ್ದಂತೆ ಕಾತರದಿಂದ ಹತ್ತಿರ ಬಂದ ರೈತನೊಬ್ಬ “ಏ, ಕವಿ ನಂದು ಗುರ್ತು ಹತ್ತೇನೊ?” ಎಂದ. ಅವನ ಧ್ವನಿಯಲ್ಲಿ ಹುಂಬತನವಿತ್ತು. ಅದನ್ನು ಯಾವಾಗಲೋ ಕೇಳಿದ, ಅವನನ್ನು ಎಲ್ಲೋ ನೋಡಿದ ನೆನಪು. ಒಮ್ಮೆ ದಿಟ್ಟಿಸಿ ನೋಡಿ “ನೀವು ಯಾರು?” ಎಂದು ಘನಗಂಭೀರವಾಗಿ ಕೇಳಿದ ಕವಿ.

“ಈಗ ನೀ ದೊಡ್ಡ ಕವಿಯಾಗಿಯಪ್ಪ. ನನ್ನಂಥ ಹಳ್ಳಿಯಾಂವ ನಿನ್ಗೆ ನೆಪ್ಪ ಹ್ಯಾಂಗಾಗಬೇಕು. ನಾ ನಿನ್ನ ಕೂಡ ಗೌಂಟಿ ಸಾಲ್ಯಾಗ ಕಲ್ತಾಂವ” ಎಂದ ರೈತನನ್ನು ಒಂದು ಕ್ಷಣ ದಿಟ್ಟಿಸಿದವನೇ ಕವಿ “ನೀನು ಚೆನಮಲ್ಲು” ಎಂದ. “ಹೌದೋ ವಾಮನ” ಎಂದು ಹಿಗ್ಗಿಕೊಂಡ ರೈತ.

“ಹೌದೋ, ನಿನ್ನ ಮಂಜಾಳ ಹೋಗ್ಲಿ” ಎಂದು ಕವಿಯ ಬೆನ್ನಿಗೆ ಲಘುವಾಗಿ ಗುದ್ದಿ ನಕ್ಕ ರೈತ. “ನಿನ್ನೋಡಿ ಬಹಳ ದಿನಾ ಆತು” ಎನ್ನುತ್ತ ರೈತನೊಂದಿಗೆ ಹೆಜ್ಜೆ ಹಾಕಿದ ಕವಿ. ಬಾಲ್ಯದ ಕ್ಷಣಗಳನ್ನು ಮೆಲುಕು ಹಾಕಿಕೊಳ್ಳುತ್ತ ಹಾದಿ ತುಳಿಯುತ್ತಿದ್ದಂತೆ ರೈತ ಕವಿಯನ್ನು ಕೇಳಿದ.

“ನಿಮ್ಮ ಜಮೀನಿನ್ಯಾಗ ಏನೇನು ಬೆಳೀತಿಯಪಾ ನೀನು?”

“ನಮ್ದು ಜಮೀನಽಽ ಇಲ್ಲ.”

“ಮತ್ತ ಕೃಷಿ ಮಾಡ್ತೀನಿ ಅಂತ ಭಾಸನದಾಗ ಹೇಳ್ದಿ. ನಿನ್ನ ಬಗ್ಗೆ ಮಾತಾಡಿದವರೂ ನಿನ್ನ ಕೃಷಿ ಬಗ್ಗೆ ಹೇಳಿದ್ರು” ಸೋಜಿಗ ವ್ಯಕ್ತಪಡಿಸಿದ ರೈತ.

“ನಂದು ಸಾಹಿತ್ಯ ಕೃಷಿ!” ಎಂದ ಕವಿ.

“ಅಂದ್ರ ಅದಕ್ಕ ಯಾವ ಬೀಜ ಬಿತ್ತಿ, ಯಾವ ಗೊಬ್ಬರ ಹಾಕ್ತಿ?” ಕುತೂಹಲವಿತ್ತು ರೈತನ ದನಿಯಲ್ಲಿ.

“ಬೀಜ ಇಲ್ಲ, ಗೊಬ್ಬರ ಇಲ್ಲ, ನೀರೂ ಇಲ್ಲದ ಕೃಷಿ ನಂದು”

“ಅದೆಂತ ಕೃಷಿನೋ ಮಾರಾಯ?”

“ಕಾವ್ಯ, ಕಥಿ, ಕಾದಂಬರಿ, ನಾಟಕ, ವಿಮರ್ಶೆ ಬರೀತೀನಿ.”

“ಅದರಿಂದ ನಿನಗೇನು ಲಾಭ?”

“ಹೆಸರು, ಕೀರ್ತಿ, ಪ್ರತಿಷ್ಠೆ, ಗೌರವ, ಸನ್ಮಾನ.”

“ಮತ್ತೆ ನಿನ್ನ ಸಂಸಾರಕ ಏನು ಮಾಡ್ತಿ?”

“ನಾನು ಕಾಲೇಜಿನ್ಯಾಗ ರೀಡರ್‍ ಇದ್ದೀನಿ.”

“ಅಂದ್ರ ದೊಡ್ಡ ಪಗಾರನಽಽ ಇರಬೇಕಲ್ಲ.”

“ಹೌದು.”

“ಬಂಗ್ಲೇನೂ ಕಟ್ಟಿಸಿರಬೇಕಲ್ಲ.”

“ಹೂಂ.”

“ಬಂಗ್ಲೆದಾಗ ಕುಂತು ಕಥಿ, ಕವನ ಬರೀತಿ ಅನ್ನು.”

“ಹೂಂ.”

“ಅದರಿಂದ ಉಪಯೋಗವೇನು?”

“ಜನರ ಮನಸ್ಸಿಗೆ ಆನಂದ, ಹಿತ.”

ಹೊಲ, ಬೀಜ, ಬೆವರು, ಫಲದ ತನ್ನ ಕೃಷಿಯನ್ನು ರೈತ ಕವಿ ಕೃಷಿಯೊಂದಿಗೆ ಸಮೀಕರಿಸಿಕೊಂಡು ಯೋಚಿಸಿದ. ಕೊನೆಗೆ ಕೇಳಿದ “ನಿನ್ನ ಕೃಷಿಯಿಂದ ಹಸಿದ ಹೊಟ್ಟೆಗೆ, ಕಷ್ಟದ ಜೀವನಕ್ಕೆ ಎಂತ ಉಪಯೋಗ ಆಗತ್ತೊ ವಾಮನ?”

ಕವಿ ದಿಙ್ಮೂಡನಾದ.

*******

 

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...