ಸತ್ಯ

ಚಿತ್ರ: ಕರಿನ್ ಹೆನ್ಸೆಲರ್‍
ಚಿತ್ರ: ಕರಿನ್ ಹೆನ್ಸೆಲರ್‍

ಆಕೆ ಚಿಕ್ಕವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡ ಹೆಂಗಸು.  ನೋಡಲು ಸುಂದರಿ.  ತವರುಮನೆಯಲ್ಲಿದ್ದ ಆಕೆ ವಿಧವಾ ಬದುಕನ್ನು ಸಹಜವಾಗಿ ಅನುಭವಿಸತೊಡಗಿದ್ದಳು.  ಪುರಾಣ, ಪುಣ್ಯಕಥೆಗಳನ್ನು ಆಲಿಸುವಲ್ಲಿ, ಮಠ, ದೇವಾಲಯಗಳಿಗೆ ಹೋಗುವಲ್ಲಿ ಶ್ರದ್ಧೆ ಬೆಳೆಸಿಕೊಂಡಿದ್ದಳು.  ಅವಳ ಅಲೌಕಿಕ ತುಡಿತಗಳನ್ನು ಊರಿನ ಮಠದ ಸ್ವಾಮಿಗಳು ತುಂಬಾ ಮೆಚ್ಚಿಕೊಂಡಿದ್ದರು.  ಮತ್ತು ಅವಳನ್ನು ಗೌರವಿಸುತ್ತಿದ್ದರು.  ಅವಳ ಪರಿಶುದ್ಧ ಜೀವನ ಬಗೆ ಜನರಿಗೂ ಹೆಮ್ಮೆ ತಂದಿತ್ತು.

ಮನುಷ್ಯನ ಜೀವನದ ಘಟನೆಗಳು ತೀರ ಆಕಸ್ಮಿಕ.

ಅಂಥದೊಂದು ಪ್ರಸಂಗ ಅವಳನ್ನು ಆತಂಕಕ್ಕೀಡು ಮಾಡಿಬಿಟ್ಟಿತು.  ಈಗವಳ ಬಗ್ಗೆ ಜನರ ನಾಲಗೆಗಳು ಪಿಸುಪಿಸು ನುಡಿಯಲಾರಂಭಿಸಿದವು.  ಆಕೆಯ ಬಸಿರು ಅದಕ್ಕೆ ಕಾರಣ.

ಹೊಟ್ಟೆ ಬೆಳೆಯುತ್ತಿದ್ದಂತೆ ಮನೆಯ ಜನರಂತೂ ಮುಳ್ಳಿನ ಮೇಲೆ ಮಲಗಿದಂತೆ ಒದ್ದಾಡತೊಡಗಿದರು.  ಜನರು ತಮ್ಮ ಗೊಡವೆಗಳನ್ನು ಬದಿಗಿಟ್ಟು ಅವಳ ಬಸಿರಿನ ಮೂಲ ಜಾಲಾಡುತ್ತ ರೋಚಕ ಸಂಗತಿಗಳನ್ನು ಹೆಣೆಯತೊಡಗಿದರು.  ಆದರೆ ಆಕೆ ಮಾತ್ರ ಮೌನಿಯಾಗಿದ್ದಳು.

ಈ ಬಸಿರಿಗೆ ಕಾರಣರಾದ ಪುರುಷ ಯಾರು?  ಎಲ್ಲರದೂ ಇದೆ ಪ್ರಶ್ನೆ-ಆದರೆ ಆಕೆ ಮಾತ್ರ `ಗೊತ್ತಿಲ್ಲ’ ಎನ್ನವಳು.  ರಮಿಸುವ, ಶಿಕ್ಷಿಸುವ, ಬೆದರಿಸುವ ಎಲ್ಲ ತಂತ್ರಗಳಿಗೂ ಅವಳದು ಒಂದೇ ಉತ್ತರ.  ಕೊನೆಗೆ ಮನೆಯವರು ಅವಳನ್ನು ಮಠಕ್ಕೆ ಕರೆದುಕೊಂಡು ಬಂದು ಸ್ವಾಮಿಗಳೆದುರು ನಿಲ್ಲಿಸಿದರು.

ಮಠದ ಬಗ್ಗೆ, ಸ್ವಾಮಿಗಳ ಬಗ್ಗೆ ಬಹಳ ಭಕ್ತಿ, ಶ್ರದ್ಧೆ, ಗೌರವ ಇರಿಸಿಕೊಂಡಿದ್ದ ಆಕೆ ಅಲ್ಲಿ ನಿಜಸಂಗತಿಯನ್ನು ಹೇಳುತ್ತಾಳೆಂದು ತಾಯಿ-ತಂದೆಗಳ ನಂಬಿಕೆಯಾಗಿತ್ತು.

“ಮನುಷ್ಯ ತಪ್ಪು ಮಾಡುವುದು ಸಹಜ.  ಆದರೆ ಅದಕ್ಕೆ ಪಶ್ಚಾತ್ತಾಪ ಪಟ್ಟರೆ ದೇವರಿಗೆ ಇಷ್ಟವಾಗುವುದು” ಎಂದು ಸ್ವಾಮೀಜಿ ಅವಳ ಗರ್ಭದ ಸತ್ಯ ಹೊರಗೆ ಹಾಕಲು ಯತ್ನಿಸಿದರು.

“ನನ್ನ ತಪ್ಪು ಒಪ್ಪಿಕೊಳ್ಳುತ್ತೇನೆ.  ಆದರೆ ಈ ಬಸಿರಿಗೆ ಕಾರಣರಾದವರ ಹೆಸರು ಹೇಳುವುದಿಲ್ಲ”  ಆಕೆ ಮೊದಲ ಬಾರಿ ಇಷ್ಟು ಮಾತನಾಡಿದ್ದಳು.

“ಇದು ನಿನ್ನ ಚಾರಿತ್ರ್‍ಯದ ಪ್ರಶ್ನೆ.  ನಿನ್ನ ಮನೆಯವರ ಮಾನದ ಪ್ರಶ್ನೆ.  ಎಲ್ಲರಿಗೂ ಸತ್ಯ ಗೊತ್ತಾಬೇಕು.  ನಿನ್ನ ಬದುಕಿಗೆ ಅನ್ಯಾಯವಾಗಬಾರದು” ತುಸು ಏರುಧ್ವನಿಯಲ್ಲಿ ಸ್ವಾಮೀಜಿ ನಿಗೂಢತೆಯನ್ನು ಬಯಲುಗೊಳಿಸಲು ಪ್ರೇರೇಪಿಸಿದರು.

“ನಾನು ಬಸಿರಾಗಿದ್ದೇನೆ ಇದು ಸತ್ಯ” ತಲ್ಲಣಕ್ಕೀಡಾಗದೆ ಹೇಳಿದಳಾಕೆ.

“ನೀನು ಅಂತರಂಗದ ಸತ್ಯವನ್ನು ಹೇಳುತ್ತಿಲ್ಲ”  ಸಮಾಜದ ಮುಖ್ಯಸ್ಥನೊಬ್ಬ ಕೆರಳಿದ್ದ.

“ನೀವು ಈ ಜೀವ ತೆಗೆದರೂ ನಾನು ಈ ಬಸಿರಿಗೆ ಕಾರಣರಾದವರ ಬಗ್ಗೆ ಹೇಳುವುದಿಲ್ಲ” ಅವಳು ದೃಢವಾಗಿದ್ದಳು.

ಜನರು ಸ್ತಂಭೀಭೂತರಾಗಿ ಕುಳಿತರು.  ಸ್ವಾಮಿಗಳೆದುರು ಅವಳು ಉದ್ಧಟತನ ತೋರುತ್ತಿದ್ದಾಳೆಂದು ಒಳಗೊಳಗೆ ಸಿಟ್ಟು.  ಮತ್ತೊಬ್ಬ ಎದ್ದು ನಿಂತು ಹೇಳಿದ “ಸ್ವಾಮಿಗಳು ನಮಗೆ ಪೂಜ್ಯರು.  ನಿರ್ಮಲ ಚಿತ್ತದವರು.  ಅವರೆದುರಾದರೂ ಸತ್ಯ ಹೇಳು” ಕೂಡಿದ ಜನರೂ ಈ ಮಾತಿಗೆ ಬೆಂಬಲಿಸಿದರು.

ಆಕೆ ತನ್ನ ನಿಲುವನ್ನು ಪ್ರಕಟಿಸಲಿಲ್ಲ.

ಸಭೆಯಲ್ಲಿ ಹಿಂಸಾತ್ಮಕ ಧೋರಣೆಯ ಪ್ರವೃತ್ತಿ ಕಾವುಗೊಳ್ಳುತ್ತಿರುವಂತೆ ಸ್ವಾಮೀಜಿ “ಸತ್ಯ ಕಠೋರ ಮತ್ತು ನಿಷ್ಠುರ.  ಅದು ಬಹಿರಂಗವಾದರೆ ಆಗುವ ಪರಿಣಾಮ ಎಂಥದೋ?  ಅವಳಿಗೆ ಒಂದಿಷ್ಟು ಸಮಯ ಕೊಡಿರಿ” ಎಂದರು.

ಸಭೆ ಸಮ್ಮತಿಸಿತು.  ಕೂಡಿದ ಜನ ನಾಳೆ ಸೇರೋಣವೆಂದು ಎದ್ದು ನಡೆದರು.  ಆಕೆ ನಿಂತಲ್ಲಿಯೆ ಕುಳಿತಳು.  “ನೀನು ಸತ್ಯ ಹೇಳುವ ತನಕ ನಮ್ಮ ಮನೆಗೆ ಬರಬೇಡ” ಎಂದು ತಾಯಿ-ತಂದೆಗಳು ಹೊರಟು ಹೋದರು.

ಮರುದಿನ ಸತ್ಯ ಬಯಲಾಗಿತ್ತು.  ಸ್ವಾಮೀಜಿ ಬರೆದಿಟ್ಟಿದ್ದರು.

“ಅವಳ ಬಸಿರಿಗೆ ಕಾರಣ ನಾನು.  ಕಾವಿಯಲ್ಲಿ ಕಾಮನೆಗಳನ್ನು ಬಚ್ಚಿಟ್ಟುಕೊಂಡು ನಿಮ್ಮನ್ನು ವಂಚಿಸಲು ನನ್ನಿಂದ ಸಾಧ್ಯವಿಲ್ಲ.  ಕ್ಷಮಿಸಿ, ನಾವು ದೂರ ಹೋಗುತ್ತಿದ್ದೇವೆ.”

*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...