Home / ಕವನ / ಕವಿತೆ / ಒಪ್ಪಿಕೊ ಪರಾಭವ!

ಒಪ್ಪಿಕೊ ಪರಾಭವ!

ಮಾತಲ್ಲ ಮಂತ್ರ, ಅರ್ಥದಾಚೆಗೆ ಮಾತ
ಹಾರಿಸಿಬಿಡುವ ತಂತ್ರ; ಕತ್ತಿಗೆ ಗಂಟು ಬಿದ್ದ
ಅರ್ಥದ ಕಣ್ಣಿ ಕಳಚಿ ಅಂತರಿಕ್ಷಕ್ಕೆ ಜಿಗಿದು
ನಕ್ಷತ್ರವಾಯಿತು ಶಬ್ಧ.
ನಾದಲಯಗಳ ಜೋಡು ಸಾರೋಟು ಹತ್ತಿ
ರೂಪಕದ ಮೆರವಣಿಗೆ ಬರವಣಿಗೆ;
ಬಡ ಪದವ ಕವಿತೆ ಮಾಡುವ ಅತಾರ್ಕಿಕ ಹೆಣಿಗೆ ಯಕ್ಷಿಣಿಗೆ.
ಲೋಟದಲ್ಲಿದೆ ಹೌದೆ ನೀರು ? ತಟ್ಟೆಯ ಮುಚ್ಚಿ
ಮತ್ತೆ ತೆಗೆದರೆ ಬಿಯರು!
ಆಟಕ್ಕೆ ಮಾತನ್ನು ಹೂಡಿ ಎಸೆದನೊ ದಾಳ
ಕೇಳುಕೇಳಿದ ಗರ,
ನಾಲ್ಕೇ ಜಿಗಿತ ಕಾಯಿ ಹಣ್ಣಾಗಿ ಬಿಡುವ ವರ.
ಖಿಯಾಲಿ ಹತ್ತಿತೊ ಹರಟೆ ಕಣ್ಣೆದುರೆ ಒಣಗೊರಟೆ
ಕುಡಿಯೊಡೆದು ಸಸಿಯಾಗಿ ಗಿಡವಾಗಿ ಮರವಾಗಿ
ಚಿಗುರಿ ಹೂತುಂಬಿ ಹರೆಯಾಡಿ ಹಬ್ಬುವ ನೆರಳು!

ಸಾಧನಕೇರಿಯಲ್ಲಿ ಸಿದ್ಧಿಗೇರಿದ ಜೋಗಿ
ಖಾಲಿ ಜೇಬಿನ ಆರ್ಥಶ್ರೀಮಂತ; ಹೋಗಂತ
ಹೇಳಿದನೊ ಹೋಗಿ, ಬಾ ಎಂದನೋ ತಲೆಬಾಗಿ
ಠಣ್ಣೆಂದು ಕುಣಿಕುಣಿದು ಶಬ್ಧವರಹದ ಸಾಲು
ಹೇಗೆ ಬರುವುವು ನೋಡಿ! ಅರ್ಥ ಆತ್ತಿರಲಿ ಬಿಡಿ
ಅನರ್ಥ ಅಪಾರ್ಥಗಳ ಗಲ್ಲಿ ಪಡಖಾನೆಯಲಿ
ಕುಡಿದು ಮತ್ತೇರಿ
ದನಿಯೆತ್ತಿ ಹಾಡಿ ಪದ ಬಾರಿಸಿವೆ ಜಯಭೇರಿ

ಕುಡುಗೋಲ ಹಿಡಿದ ಏ ಉನ್ಮತ್ತ ಕರಿಯ !
ಏನು ಕೆಲಸವೊ ಇಲ್ಲಿ ನಿನಗೆ ?
ಕುಡುಗೋಲ ಕೆಳಗಿಟ್ಟು, ಕೈಯೆತ್ತಿ ಹಣೆಗಿಟ್ಟು
ಸಲ್ಲಿಸು ನಮಸ್ಕಾರ, ಒಪ್ಪಿಕೊ ಪರಾಭವ!
****

ನಭದಲ್ಲಿ ಬೇರು, ನೆಲದಲ್ಲಿ ಅರಳಿರುವ ಫಲ
ಜ್ವಲಿಸುವ ಆತ್ಮ ತೊಟ್ಟ ಹಿಡಿಮೂಳೆಗಳ ಚೀಲ
ಮೈಯ ಮುಚ್ಚದ ಅರಿವೆ, ಬೋಳುತಲೆ, ಪಾದುಕೆ
ಬಡಪಾಯಿ ರೈತನೆ, ಮಹಿಮಾವಂತ ಋಷಿಯೆ?
ಎರಡೂ ಕೂಡಿ ಮೊಳೆತ ಲೋಕಾಲೋಕ ಕಸಿಯೆ
ಒಮ್ಮೊಮ್ಮೆ ಕೂತನೋ ಚಂಡಿ ಉಪವಾಸ ಹಿಡಿದು
ಮಿಲಿಯಗಟ್ಟಲೆ ಜನ ಇಡಿಕಿರಿದ ಭೂಖಂಡ
ಕಾಯುತ್ತದೆ ಕಳವಳಿಸಿ ತುದಿಗಾಲಿನಲ್ಲಿ ನಿಂತು,
ಬೇಡುತ್ತದೆ ಕೈಮುಗಿದು ಉಪವಾಸ ನಿಲ್ಲಿಸು ಎಂದು.
ಅಲ್ಲಾಡದ ಕಲ್ಲುಜೀವ, ಕಟ್ಟಿಟ್ಟ ಬಿರುಗಾಳಿ
ನಿಜನಡತೆ; ಆದರೂ ಕಂಪನಿ ನಾಟಕದ ಶೈಲಿ!
ತಿಳಿಯದು ಹಡಗಿಗೆ ತನ್ನ ತೇಲಿಸಿ ಮುಂದೊಯ್ಯುವ
ಕಡಲಿನ ನಿಗೂಢ ಜಾಲ, ಮಣ್ಣುಮಂತ್ರದ ಮೇಳ.
ಗೀತೆಯ ಹಾಲು ಹೀರಿ ಗಟ್ಟಿ ಮುಟ್ಟಾದ ಮುದುಕ
ವಾಸ್ತವದ ಬಟ್ಟಲಲ್ಲಿ ಚರಿತ್ರೆ ಪುರಾಣಗಳ
ಕಲೆಸಿ ಉಂಡ ಆಧುನಿಕ.
ಮುಟ್ಟುವಂತಿಲ್ಲ ಹಿಮಾಲಯಕ್ಕಿಂತ ಎತ್ತರ
ಬಿತ್ತದಲ್ಲಿ ಅಡಗಿರುವ ಅರಳಿಯ ವಿಸ್ತಾರ
ಮಡಿಲೊಳಗೆ ಏಳು ಬಣ್ಣಗಳ ಬಚ್ಚಿಟ್ಟ ಬೆಳಕು;
ರಾಜಕಾರಣದ ಸುಡುಗಾಡಿನಲ್ಲೂ
ಸತ್ಯಬ್ರಹ್ಮನ ಧ್ಯಾನ, ಎಲ್ಲವನ್ನೂ ಆತ್ಮದೊರೆಗೆ ಹಚ್ಚುವ ಮಾನ
ಕೊಲ್ಲುವ ಸಿಡಿಗುಂಡೂ ಹೊರಗೆ ತಂದದ್ದು ಅಮರ
‘ಹೇ ರಾಮ ರಾಮ’

ಕುಡುಗೋಲ ಹಿಡಿದ ಏ ಉನ್ಮತ್ತ ಕರಿಯ !
ಏನು ಕೆಲಸವೊ ಇಲ್ಲಿ ನಿನಗೆ ?
ಕುಡುಗೋಲ ಕೆಳಗಿಟ್ಟು ಪಾದುಕೆ ಮೇಲೆ ಹಣೆಯಿಟ್ಟು
ಸಲ್ಲಿಸು ನಮಸ್ಕಾರ, ಒಪ್ಪಿಕೊ ಪರಾಭವ!
* * * *

ಚಂದಿಯುಟ್ಟಿರುವ ಮಗು, ಮಲಮೂತ್ರ ಸುರಿವ ಮೈ
ತುಂಡುಬೆರಳಿನ ಕುಷ್ಠಕಾಯ; ಮಗುವನ್ನು
ಎತ್ತಿ ಎದೆಗಪ್ಪಿ ಉಪಚರಿಸಿ ಉಸಿರೂದಿ
ಮತ್ತೆ ಬದುಕಿಗೆ ಕಳಿಸಿಕೊಡುವ ಕೌಶಲ್ಯ,
ಸೀರೆಯುಟ್ಟಿದೆ ಕರುಣೆ ಬರೆದ ಕವಿತೆ.
ಯೌವನದ ದಿನದಲ್ಲಿ ತನ್ನ ಸೈನ್ಯ ಸಮೇತ
ಯುದ್ಧಕ್ಕೆ ಬಂದ ಮಾರ
ಮುಗ್ಗರಿಸಿ ಬಿದ್ದ ಇವಳ ಮನೆ ಹೊಸ್ತಿಲಿನ ಮೇಲೆ
ತುಂಡಾಗಿ ಹೋಯಿತು ಬಿಲ್ಲದಾರ,
ಕ್ರಿಸ್ತನೆದೆಗೇರಿತು ಈ ರತ್ನಹಾರ.

ಕರ್ತವ್ಯ ಕರುಣೆ ವಾತ್ಸಲ್ಯಗಳ ಗಾಯತ್ರಿ
ಸದಾ ಗಂಭೀರೆ
ಆಗೀಗ ನಕ್ಕರೀ ಧೀರೆ
ಆಕಾಶದಲ್ಲಿ ಫಕ್ಕನೆ ಹಾರಿ ಹೋಗುವುದು ಬಿಳಿಹಕ್ಕಿ ಹಿಂಡು
ಮಲ್ಲಿಗೆಯ ವನದಲ್ಲಿ ಸಿಳ್ಳು ಹಾಕುತ್ತ
ಎಲೆ ನಡುವೆ ಹಾಯುವುದು ತಂಗಾಳಿ ದಂಡು.
ಗದ್ದಲದ ನಡುವಿದ್ದೂ ಸುದ್ದಿ ಬೇಡದ ಸೇವೆ
ಬಂಧಿಸುವ ಕರ್ಮವೇ ಯೋಗವಾಗುವ ಪೂಜೆ,
ಗಂಡಿನ ಹಂಗೇ ಇರದೆ ಕೋಟಿ ಕೋಟಿ ಜನಕ್ಕೆ
ತಾಯಾದ ಭಾಗ್ಯ; ಮನುಕುಲದ ಆರೋಗ್ಯ.
ಎಲ್ಲಿ ಹುಟ್ಟಿದ ಹೆಣ್ಣು ಎಂದು ಜಾತಕ ಕುರಿತು
ಸೊಲ್ಲೆತ್ತಲಿಲ್ಲ ಯಾರೂ
ಜ್ವಲಂತ ಭಕ್ತಿ ಶ್ರದ್ಧೆ ಪ್ರೀತಿ ಪಥದಲ್ಲಿ
ಸಾಗಿ ಬಂದರೆ ತೇರು ಬಾಗದಿರುವವರಾರು ?
ಮಣ್ಣಗೂಡಿಂದ ಹರಿವ ಅನಂತ ಕರುಣೆಯ ತೊರೆಯ
ಬೆರಗಾಗಿ ನೋಡುತಿದೆ ಚುಕ್ಕಿಗಳ ಮೇಳ
ಲೋಕ ಹಾಡುತ್ತಿರುವ ಕರ್ಮಯೋಗಕ್ಕೆ
ಅಲೌಕಿಕದ ತಾಳ.

ಕಂಡುಗೋಲ ಹಿಡಿದ ಏ ಉನ್ಮತ್ತ ಕರಿಯ!
ಏನು ಕೆಲಸವೊ ಇಲ್ಲಿ ನಿನಗೆ ?
ಕುಡುಗೋಲ ಕೆಳಗಿಟ್ಟು, ಮಿಂದು ಮೈ ಮಡಿಯುಟ್ಟು
ಸಲ್ಲಿಸು ನಮಸ್ಕಾರ, ಒಪ್ಪಿಕೊ ಪರಾಭವ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...