Home / ಕವನ / ಕವಿತೆ / ದಾಸರೆಂದರೆ ಪುರಂದರ ದಾಸರಯ್ಯ

ದಾಸರೆಂದರೆ ಪುರಂದರ ದಾಸರಯ್ಯ

ಸ್ವಾಮಿ ಪುರಂದರರೆ
ಮಾತೆಲ್ಲ ಸ್ಫಟಿಕ ಮಣಿಮಾಲೆ ಎನ್ನಿಸುವಂತೆ
ಉಪನಿಷತ್ತಿನ ತಿರುಳೆ ಅರಳಿತೆನ್ನಿಸುವಂತೆ
ಚಳಿಯ ಕೆನ್ನೆಯ ಬಿಸಿಲು ನೇವರಿಸಿತೆಂಬಂತೆ
ನುಡಿದ ಋಷಿವರರೆ
ಎಲ್ಲಿ ಪಡೆದಿರಿ ನೀವು ಇದ್ದಕಿದ್ದಂತೆಯೇ
ನಭದೆತ್ತರಕೆ ನುಡಿವ ಇಂಥ ವರವ ?
ಹೇಗೆ ಪಡೆದಿರಿ ಸ್ವಾಮಿ ಎದೆಹುಣ್ಣ ಮಾಯಿಸಿ
ಜಗವ ಸಂತೈಸುವ ಇಂಥ ಸ್ವರವ ?
ಹೊರಳಿದ್ದು ಹೇಗೆ ನೀವು ಆಲ್ಲಿಂದ ಇಲ್ಲಿಗೆ,
ಕೋಟಿವರಹದ ಕೋಟೆಯಿಂದ ರಥಬೀದಿಗೆ?

ಎಲ್ಲಿ ಏನಾಯಿತು? ನಿಜಘಟನೆ ತಿಳಿಸಿ
ನಿಮಗೆ ಮಿಂಚಿದ ದಾರಿ ನಮಗಷ್ಟು ಉಳಿಸಿ
ನೆಚ್ಚಿದ್ದ ನಾಗನಿಧಿ ಕಚ್ಚಿ ಕೈಕೊಟ್ಟಿತೆ,
ಸುಖದ ಭ್ರಮೆಯ ಪಿಶಾಚಿ ಕೆಳಹಾಕಿ ಮೆಟ್ಟಿತೆ?
ಇರುವುದನು ಬಿಟ್ಟು ಇರದುದರೆಡೆಗೆ ತುಡಿದಿರಿ ಯಾಕೆ?
ಏನಾಯಿತು ಸ್ವಾಮಿ ಏನಾಯಿತು,
ಗಜಬಟ್ಟೆ ಹೇಗೆ ಬಾನಾಯಿತು?
ಸಿರಿಯ ಜರಿಸೆರಗ ನಾಟ್ಯಕ್ಕೆ ಕಣ್ ಕೋರೈಸಿ
ಗರಹೊಡೆದ ಹಾಗೆ ನಿಂತಿದ್ದ ನಾಯಕರೆ,
ಹೇಗೆ ಒಡೆದಿರಿ ಹರಿಗು ನಿಮಗೂ ನಡುವೆ ಇದ್ದ
ಮಣಿ ಹರಳ ಗೋಡೆಯ ?
ಹೇಗೆ ಮುರಿದಿರಿ ಹೇಳಿ ನಾನೆಂಬ ಮಾಯೆಯ
ಮದ್ದಾನೆ ದಾಡೆಯ?

ಏನೋ ವದಂತಿ ನಡುವೆ ಸಿಕ್ಕು ನಿಜಸಂಗತಿ
ದಂತಕಥೆಯಾಗಿದೆ ಸತ್ಯ ತಿಳಿಸಿ
ಏನೋ ಪವಾಡ ನಡೆದು ಬೆಚ್ಚಿ ಹರಿಚರಣಕ್ಕೆ
ಶರಣು ಹೋದಿರಿ ಎಂಬ ಸುಳ್ಳ ಅಳಿಸಿ.
ಸಲ್ಲದ ಪವಾಡಗಳ ಟೊಳ್ಳು ಚುಚ್ಚುವ ಮದ್ದು
ನಿಮ್ಮಲೆ ಇತ್ತು.
ತರ್ಕ ಶಂಕೆಗಳೆ ಗಟ್ಟಿ ವರ್ತಕನ ಗುಟ್ಟು
ಏನೋ ಸಂಕಟದ ಒಳಕೋಣೆ ಕದ ತೆರೆದು.
ಮಿಥ್ಯೆ ತನ್ನ ಕುರೂಪ ತೋರಿಸಿತ್ತೆ?
ಆ ಮುಹೂರ್ತಕ್ಕೇ ತುಡಿದು ಆಕಾಶ ಬಾಯ್ತೆರೆದು
ಗುಡುಗು ಸತ್ಯದ ದುಡಿಯ ಬಾರಿಸಿತ್ತೆ?

ಒಳ್ಳಿತೇ ಆಯಿತೆಂದಿರಿ ಆದದ್ದೆಲ್ಲ
ಆದದ್ದಾದರೂ ಏನು?
ಹಮ್ಮು ಬಿಮ್ಮನ್ನೆಲ್ಲ ಊರ ಮೋರಿಗೆ ತೂರಿ
ದಂಡಿಗೆ ಬೆತ್ತ ಹಿಡಿದದ್ದು ಹೇಗೆ?
ಸೆರಯಿಡಲು ಬಂದವರೆ ಬಿಡುಗಡೆಗೆ ಸಲಿಸಿದರೆ
ಮುಗಿಲ ಮದ್ದಲೆಗೆ ಕುಣಿದಿತ್ತೆ ಸೋಗೆ?

ಆಶ್ಚರ್ಯವೂ ಅಲ್ಲ ಆಕಸ್ಮಿಕವೂ ಅಲ್ಲ
ಆದ ರೂಪಾಂತರ
ಸಾಹಿತ್ಯ, ಸಂಗೀತ-ಒಳಗೆ ಕಡಲೆರಡೂ
ಅಪ್ಪಳಿಸಿ ದಡಕ್ಕೆ ಬಡಿದು
ಮೊರೆದಿದ್ದುವಲ್ಲವೆ?
ಬಡಿತಕ್ಕೆ ರತ್ನಪಡಿಯಂಗಡಿಯ ತಳ ಅದುರಿ
ದಡಬಡಿಸಿತ್ತಲ್ಲವೆ?
ಸರಸ್ವತೀ ಸ್ತನವೆರಡೂ ಧಾರಾಳ ಸುಧೆಯುಣಿಸಿ
ಓಲೆ, ತಂಬೂರಿ ಕರೆದಿದ್ದುವಲ್ಲವೆ?
ಹುಟ್ಟು ಪ್ರತಿಭೆ ಹೆದೆಯ ಬಿಗಿಯಲೆಂದೇ ವಂಶ
ಭಾಗವತ ದಂಡ ಕೈಗೆ ದಾಟಿಸಿತ್ತಲ್ಲವೆ?
ಹೂಡೇ ಬಿಟ್ಟಿರಿ ಹೆದೆಗೆ ಯಾವ ಎಗ್ಗಿಲ್ಲದೆ
ನಾರಾಯಣಾಸ್ತ್ರ
ಮೊದಲು ಸುಟ್ಟಿತು ಅದು ರತ್ನಪಡಿಯಂಗಡಿ
ಆಸ್ತಿ ಕ್ರಯಪತ್ರ!

ತಿರುಗಿದಿರಿ ಊರೂರು
ಮನೆಮನೆಗು ಕಲ್ಪತರು ಸಸಿಯ ಹಂಚುತ್ತ
ಹರಿನಾಮ ಹಾಡಿ ಪಡೆದನ್ನ ಭುಜಿಸುವ ನೆಪದಿ
ಭಕ್ತಿಯೋಡಿನಲಿ ‘ಅಹಂ-ಬೀಜ’ ಹುರಿಯುತ್ತ,
ಕಳಚಿದಿರಿ ಕೊರಳಿಂದ ಹೆನ್ನು ಹೊನ್ನಿನ ಕುಣಿಕೆ;
ಬಿದ್ದು ಫಟ್ಟೆಂದವು ಎಷ್ಟೋ ಜನ್ಮಗಳಿಂದ
ಹೆಗಲೇರಿಕೊಂಡಿದ್ದ ಮಣ್ಣಕುಡಿಕೆ.

ಕೆರೆಯ ನೀರನು ಕೆರೆಗೆ ಚೆಲ್ಲಿದಿರಿ, ಜೊತೆಗೇ
ವರವ ವಡೆದವದಂತೆ ಹಾಡಿದಿರಿ ಕೂಡ
ಈಸಿದಿರಿ ಇದ್ದು ಜೈಸಿದಿರಿ ಜೊತೆಗೇ
ಹರಿಭಕ್ತಿ ರಸದಲ್ಲಿ ತೊಯಿಸಿದಿರಿ ನಾಡ.
ಕಾಣಿಸದೆ ಕರೆವ ದನಿಯತ್ತ ಮುಗಿದಿರಿ ಕೈಯ
‘ದಾಸರೆಂದರೆ ಪುದಂದರ ದಾಸರಯ್ಯ’
*****

Tagged:

One Comment

  • ನನಗೂ ತುಂಬ ಆಪ್ತರಾದ ದಾಸಕವಿವರೇಣ್ಯ ಪುರಂದರರ ವ್ಯಕ್ತಿತ್ವ ಮತ್ತು ಚರಿತ್ರೆಯ ಮಹಿಮೆಯನ್ನು ಅಷ್ಟೇ ಆಪ್ತವಾಗಿ, ಪ್ರೀತಿಪೂರ್ವಕವಾಗಿ, ಸರಳವಾಗಿ ಕಟ್ಟಿಕೊಟ್ಟಿದ್ದಾರೆ ಶ್ರೀ ಲಕ್ಷ್ಮೀನಾರಾಯಣ ಭಟ್ಟರು. ಅವರಿಗೆ ನನ್ನ ಪ್ರೀತಿಪೂರ್ವಕ ನಮನಗಳು.
    ಶಿಹೊಂ

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...