Home / ಕವನ / ಕವಿತೆ / ದಾಸರೆಂದರೆ ಪುರಂದರ ದಾಸರಯ್ಯ

ದಾಸರೆಂದರೆ ಪುರಂದರ ದಾಸರಯ್ಯ

ಸ್ವಾಮಿ ಪುರಂದರರೆ
ಮಾತೆಲ್ಲ ಸ್ಫಟಿಕ ಮಣಿಮಾಲೆ ಎನ್ನಿಸುವಂತೆ
ಉಪನಿಷತ್ತಿನ ತಿರುಳೆ ಅರಳಿತೆನ್ನಿಸುವಂತೆ
ಚಳಿಯ ಕೆನ್ನೆಯ ಬಿಸಿಲು ನೇವರಿಸಿತೆಂಬಂತೆ
ನುಡಿದ ಋಷಿವರರೆ
ಎಲ್ಲಿ ಪಡೆದಿರಿ ನೀವು ಇದ್ದಕಿದ್ದಂತೆಯೇ
ನಭದೆತ್ತರಕೆ ನುಡಿವ ಇಂಥ ವರವ ?
ಹೇಗೆ ಪಡೆದಿರಿ ಸ್ವಾಮಿ ಎದೆಹುಣ್ಣ ಮಾಯಿಸಿ
ಜಗವ ಸಂತೈಸುವ ಇಂಥ ಸ್ವರವ ?
ಹೊರಳಿದ್ದು ಹೇಗೆ ನೀವು ಆಲ್ಲಿಂದ ಇಲ್ಲಿಗೆ,
ಕೋಟಿವರಹದ ಕೋಟೆಯಿಂದ ರಥಬೀದಿಗೆ?

ಎಲ್ಲಿ ಏನಾಯಿತು? ನಿಜಘಟನೆ ತಿಳಿಸಿ
ನಿಮಗೆ ಮಿಂಚಿದ ದಾರಿ ನಮಗಷ್ಟು ಉಳಿಸಿ
ನೆಚ್ಚಿದ್ದ ನಾಗನಿಧಿ ಕಚ್ಚಿ ಕೈಕೊಟ್ಟಿತೆ,
ಸುಖದ ಭ್ರಮೆಯ ಪಿಶಾಚಿ ಕೆಳಹಾಕಿ ಮೆಟ್ಟಿತೆ?
ಇರುವುದನು ಬಿಟ್ಟು ಇರದುದರೆಡೆಗೆ ತುಡಿದಿರಿ ಯಾಕೆ?
ಏನಾಯಿತು ಸ್ವಾಮಿ ಏನಾಯಿತು,
ಗಜಬಟ್ಟೆ ಹೇಗೆ ಬಾನಾಯಿತು?
ಸಿರಿಯ ಜರಿಸೆರಗ ನಾಟ್ಯಕ್ಕೆ ಕಣ್ ಕೋರೈಸಿ
ಗರಹೊಡೆದ ಹಾಗೆ ನಿಂತಿದ್ದ ನಾಯಕರೆ,
ಹೇಗೆ ಒಡೆದಿರಿ ಹರಿಗು ನಿಮಗೂ ನಡುವೆ ಇದ್ದ
ಮಣಿ ಹರಳ ಗೋಡೆಯ ?
ಹೇಗೆ ಮುರಿದಿರಿ ಹೇಳಿ ನಾನೆಂಬ ಮಾಯೆಯ
ಮದ್ದಾನೆ ದಾಡೆಯ?

ಏನೋ ವದಂತಿ ನಡುವೆ ಸಿಕ್ಕು ನಿಜಸಂಗತಿ
ದಂತಕಥೆಯಾಗಿದೆ ಸತ್ಯ ತಿಳಿಸಿ
ಏನೋ ಪವಾಡ ನಡೆದು ಬೆಚ್ಚಿ ಹರಿಚರಣಕ್ಕೆ
ಶರಣು ಹೋದಿರಿ ಎಂಬ ಸುಳ್ಳ ಅಳಿಸಿ.
ಸಲ್ಲದ ಪವಾಡಗಳ ಟೊಳ್ಳು ಚುಚ್ಚುವ ಮದ್ದು
ನಿಮ್ಮಲೆ ಇತ್ತು.
ತರ್ಕ ಶಂಕೆಗಳೆ ಗಟ್ಟಿ ವರ್ತಕನ ಗುಟ್ಟು
ಏನೋ ಸಂಕಟದ ಒಳಕೋಣೆ ಕದ ತೆರೆದು.
ಮಿಥ್ಯೆ ತನ್ನ ಕುರೂಪ ತೋರಿಸಿತ್ತೆ?
ಆ ಮುಹೂರ್ತಕ್ಕೇ ತುಡಿದು ಆಕಾಶ ಬಾಯ್ತೆರೆದು
ಗುಡುಗು ಸತ್ಯದ ದುಡಿಯ ಬಾರಿಸಿತ್ತೆ?

ಒಳ್ಳಿತೇ ಆಯಿತೆಂದಿರಿ ಆದದ್ದೆಲ್ಲ
ಆದದ್ದಾದರೂ ಏನು?
ಹಮ್ಮು ಬಿಮ್ಮನ್ನೆಲ್ಲ ಊರ ಮೋರಿಗೆ ತೂರಿ
ದಂಡಿಗೆ ಬೆತ್ತ ಹಿಡಿದದ್ದು ಹೇಗೆ?
ಸೆರಯಿಡಲು ಬಂದವರೆ ಬಿಡುಗಡೆಗೆ ಸಲಿಸಿದರೆ
ಮುಗಿಲ ಮದ್ದಲೆಗೆ ಕುಣಿದಿತ್ತೆ ಸೋಗೆ?

ಆಶ್ಚರ್ಯವೂ ಅಲ್ಲ ಆಕಸ್ಮಿಕವೂ ಅಲ್ಲ
ಆದ ರೂಪಾಂತರ
ಸಾಹಿತ್ಯ, ಸಂಗೀತ-ಒಳಗೆ ಕಡಲೆರಡೂ
ಅಪ್ಪಳಿಸಿ ದಡಕ್ಕೆ ಬಡಿದು
ಮೊರೆದಿದ್ದುವಲ್ಲವೆ?
ಬಡಿತಕ್ಕೆ ರತ್ನಪಡಿಯಂಗಡಿಯ ತಳ ಅದುರಿ
ದಡಬಡಿಸಿತ್ತಲ್ಲವೆ?
ಸರಸ್ವತೀ ಸ್ತನವೆರಡೂ ಧಾರಾಳ ಸುಧೆಯುಣಿಸಿ
ಓಲೆ, ತಂಬೂರಿ ಕರೆದಿದ್ದುವಲ್ಲವೆ?
ಹುಟ್ಟು ಪ್ರತಿಭೆ ಹೆದೆಯ ಬಿಗಿಯಲೆಂದೇ ವಂಶ
ಭಾಗವತ ದಂಡ ಕೈಗೆ ದಾಟಿಸಿತ್ತಲ್ಲವೆ?
ಹೂಡೇ ಬಿಟ್ಟಿರಿ ಹೆದೆಗೆ ಯಾವ ಎಗ್ಗಿಲ್ಲದೆ
ನಾರಾಯಣಾಸ್ತ್ರ
ಮೊದಲು ಸುಟ್ಟಿತು ಅದು ರತ್ನಪಡಿಯಂಗಡಿ
ಆಸ್ತಿ ಕ್ರಯಪತ್ರ!

ತಿರುಗಿದಿರಿ ಊರೂರು
ಮನೆಮನೆಗು ಕಲ್ಪತರು ಸಸಿಯ ಹಂಚುತ್ತ
ಹರಿನಾಮ ಹಾಡಿ ಪಡೆದನ್ನ ಭುಜಿಸುವ ನೆಪದಿ
ಭಕ್ತಿಯೋಡಿನಲಿ ‘ಅಹಂ-ಬೀಜ’ ಹುರಿಯುತ್ತ,
ಕಳಚಿದಿರಿ ಕೊರಳಿಂದ ಹೆನ್ನು ಹೊನ್ನಿನ ಕುಣಿಕೆ;
ಬಿದ್ದು ಫಟ್ಟೆಂದವು ಎಷ್ಟೋ ಜನ್ಮಗಳಿಂದ
ಹೆಗಲೇರಿಕೊಂಡಿದ್ದ ಮಣ್ಣಕುಡಿಕೆ.

ಕೆರೆಯ ನೀರನು ಕೆರೆಗೆ ಚೆಲ್ಲಿದಿರಿ, ಜೊತೆಗೇ
ವರವ ವಡೆದವದಂತೆ ಹಾಡಿದಿರಿ ಕೂಡ
ಈಸಿದಿರಿ ಇದ್ದು ಜೈಸಿದಿರಿ ಜೊತೆಗೇ
ಹರಿಭಕ್ತಿ ರಸದಲ್ಲಿ ತೊಯಿಸಿದಿರಿ ನಾಡ.
ಕಾಣಿಸದೆ ಕರೆವ ದನಿಯತ್ತ ಮುಗಿದಿರಿ ಕೈಯ
‘ದಾಸರೆಂದರೆ ಪುದಂದರ ದಾಸರಯ್ಯ’
*****

Tagged:

One Comment

  • ನನಗೂ ತುಂಬ ಆಪ್ತರಾದ ದಾಸಕವಿವರೇಣ್ಯ ಪುರಂದರರ ವ್ಯಕ್ತಿತ್ವ ಮತ್ತು ಚರಿತ್ರೆಯ ಮಹಿಮೆಯನ್ನು ಅಷ್ಟೇ ಆಪ್ತವಾಗಿ, ಪ್ರೀತಿಪೂರ್ವಕವಾಗಿ, ಸರಳವಾಗಿ ಕಟ್ಟಿಕೊಟ್ಟಿದ್ದಾರೆ ಶ್ರೀ ಲಕ್ಷ್ಮೀನಾರಾಯಣ ಭಟ್ಟರು. ಅವರಿಗೆ ನನ್ನ ಪ್ರೀತಿಪೂರ್ವಕ ನಮನಗಳು.
    ಶಿಹೊಂ

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...