Home / ಕಥೆ / ಕಿರು ಕಥೆ / ಎರಡು ಪರಿವಾರಗಳು

ಎರಡು ಪರಿವಾರಗಳು

ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು.

ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ ಹಸಿರಾದ ಎಲೆ ಚಿಗುರು; ಒತ್ತು ಒತ್ತಾಗಿ ಬೆಳೆದ ಗಿಡಗಳಲ್ಲಿ ಬಣ್ಣ ಬಣ್ಣದ ಹೂವುಗಳು, ಕಾಯಿಗಳು, ತೋಟಕ್ಕೆ ಬೇಲಿ ಇಲ್ಲ ಗೇಟು, ಬಾಗಿಲು ಇಲ್ಲ. ಅದು ಹಕ್ಕಿಯ ಪರಿವಾರದ ಪ್ರಕೃತಿದತ್ತ ಮನೆ ದಶ ದಿಕ್ಕುಗಳಿಂದಲೂ ಹಾರಿಹಾರಿ ಹಾಡಿಬರುವ ನಾನಾ ವಿದಧ ಸುಂದರ ಹಕ್ಕಿಗಳ ಚಿಲಿಪಿಲಿಯಲ್ಲಿ ಸ್ನೇಹ ಸಂಬಂಧಗಳ ಆತ್ಮೀಯ ಆಲಾಪಗಳು, ಎಲ್ಲಾ ನಿರಾತಂಕದ ವಾತಾವರಣ, ಕಿವಿಗೊಟ್ಟರೆ ಚಿಲಿಪಿಲಿಯ ಶಾಂತಿಮಂತ್ರ. ಹಕ್ಕಿಗಳ ರೆಕ್ಕೆ ಪುಕ್ಕದ ಅವರ್ಣನೀಯ ವರ್ಣಸಿಂಧುವಿನ ಸೊಬಗು ನಯನಮನೋಹರ. ಹಕ್ಕಿ ಪರಿವಾರಗಳಲ್ಲಿ ಅದೆಂತಹ ಶಿಸ್ತು, ಅದೇನು ಸೊಗಸು. ತಾಯಿ ಹಕ್ಕಿ ಪರಿವಾರದಲ್ಲಿ ಮರಿಗಳನ್ನು ನೋಡಿಕೊಂಡರೆ ಇನ್ನೊಂದರಲ್ಲಿ ಅದು ತಂದೆ ಹಕ್ಕಿಯ ಕೆಲಸ. ತಾಯಿಕೋಗಿಲೆ ಮೊಟ್ಟೆ ಇಟ್ಟು ಹೋದರೆ ಅಪರಿಚಿತ ಕಾಗೆಯ ಶುಶ್ರೂಷೆ. ಇದೆಂತಹಾ ಸೇವಾ ಮನೋಭಾವ! ಗೂಡು ಕಟ್ಟುವುದರಲ್ಲಿ ಗಂಡು ಹೆಣ್ಣು ಹಕ್ಕಿಯ ಸಹಕಾರ, ಕೌಶಲ್ಯ ಎಲ್ಲ ಬೆರಗು ತರುವಂತಹುದು. ಇನ್ನು ಉದಯ ರವಿಕಿರಣದೊಂದಿಗೆ ಸುಪ್ರಭಾತದ ನವೋದಯದ ಸಂದೇಶ, ಮತ್ತೆ ಆಹಾರ ವಿಹಾರ, ಮಕ್ಕಳಿಗೆ ಹುಳು ಹುಪ್ಪಟೆಗಳ ಫಲಹಾರ. ಎಲ್ಲದರಲ್ಲೂ ಒಂದು ಸೈನಿಕ ಶಿಸ್ತು ಒಂದು ಛಂದೋಬದ್ಧತೆ, ಬಿಗಿ ಬಾಂಧವ್ಯ, ಸರಾಗ ಸಂಸಾರ ಲೀಲೆ ಸಂಗೀತಮಯ ಚಿಲಿಪಿಲಿಯ ಸಂಸಾರ ಈ ಹಕ್ಕಿಗಳ ಪರಿವಾರದ್ದು. ಹಗುರವಾಗಿ ನೆರೆನೆರಿಗೆಯಲ್ಲಿ ಹರಡಿದ ಹಕ್ಕಿಯ ರೆಕ್ಕೆ ಪುಕ್ಕದ ಗರಿಗಳಲ್ಲಿ ಅದೆಷ್ಟು ಕಾರ್ಯಕ್ಷಮತೆ. ಎತ್ತರ ಎತ್ತರಕ್ಕೆ ಹಾರುವ ಆ ಭವ್ಯತೆ ಎಲ್ಲವೂ ಬೆರಗು ತರುವಂತಹುದು.

ಮರಿಗಳ ರೆಕ್ಕೆ ಬಲಿತ ಮೇಲೆ ಅವು ಹಾರಿ ಹೋಗುವಾಗ ತಾಯಿ ತಂದೆ ಹಕ್ಕಿಗೆ ಅದೆಷ್ಟು ಸಂತಸ? ಅವುಗಳ, ಆರೈಕೆ, ಪ್ರೀತಿಯಲ್ಲಿ ನಿರೀಕ್ಷೆಯಿಲ್ಲ, ಫಲಾಪೇಕ್ಷೆಯಿಲ್ಲ. ಹಾರುವ ಹಕ್ಕಿಗಳಲ್ಲಿ ಆಗಸದ ಮನೋವೈಶಾಲ್ಯ. ಮರದ ರೆಂಬೆಗಳಿಗೆ ಅಂಟಿ ಅಂಟಿಕೊಳ್ಳದ ಸ್ವಾತಂತ್ರಮಯ ಹಾರಾಟ. ಇದೇ ನನ್ನ ಮರ, ಇದೇ ನನ್ನ ರೆಂಬೆ ಎನ್ನುವ ಮಮಕಾರವಿಲ್ಲ. ಯಾವ ಗಿಡವಾದರೇನು? ಯಾವ ಮರವಾದರೇನು? ರೆಂಬೆ ಒಣಗಿದ್ದರೇನು? ಹಸಿರಾಗಿದ್ದರೇನು? ಬಂದು ಕುಳಿತು ಇತರ ಹಕ್ಕಿಗಳೊಂದಿಗೆ ಒಡನಾಡಿ ಹಾಡಿ ಹಾರಿ ಹೋಗುವ ಹಕ್ಕಿಗಳೆಲ್ಲಿ, ನಾವೆಲ್ಲಿ?

ಈಗ ಬರೋಣ ಮಾನವ ಪರಿವಾರದ ದೊಡ್ಡ ಮನೆಗೆ. ಇಲ್ಲಿ ಎಲ್ಲಿ ನೋಡಿದರೂ ಸಿಮೆಂಟಿನ, ಇಟ್ಟಿಗೆ, ಕಲ್ಲಿನ ಗೋಡೆಗಳು, ಇದಕ್ಕೆ ಜೋಡಿಸಿದ ಕಿಡಿಕಿಗಳು, ಬಾಗಿಲುಗಳು, ಅವುಗಳಿಗೆ ಭದ್ರಪಡಿಸುವ ಚಿಲಕಗಳು, ಅಗುಳಿಗಳು, ಬೋಲ್ಟುಗಳು, ಬೇಲಿಗಳು ಒಂದೇ ಎರಡೇ? ಇಲ್ಲಿ ಇರುವುದು ದುಡಿಯುವ ಅಪ್ಪ, ಬೆನ್ನು ಬಗ್ಗಿ ಹೃದಯ ಕೊಟ್ಟು ಮನೆಯ ಶ್ರೇಯಸ್ಸಿಗೆ ದುಡಿಯುವ ಅಮ್ಮ, ಬೆಳ್ಳಿ ಕೂದಲಿನಿಂದ ಹೊಳೆಯುವ ಜೋಲು ಚರ್ಮದ ಅಜ್ಜಿ, ತಾತ, ಪ್ರೀತಿಸಿದರೂ ಜಗಳ ಕದನ ಮಾಡುವ ಅಣ್ಣ ತಮ್ಮಂದಿರು. ಒಡಹುಟ್ಟಿದ್ದರು ಹೊಟ್ಟೆ ಕಿಚ್ಚಿನ ಅಕ್ಕ ತಂಗಿಯರು. ಬಾಂಧವ್ಯದ ಬಿಗಿಯರಿಯದ ಕೊಂಕು ಮಾತಿನ ಅತ್ತೆ ಮಾವಂದಿರು. ಅಪ್ಪ ಅಮ್ಮ ಮಕ್ಕಳ ನಡುವೆ ಪ್ರೀತಿಸೆರೆ ಹರಿದರೂ ಮುಂದೆ ತಮ್ಮ ಮುದಿತನದ ಕಾಲಕ್ಕೆ ಆಶ್ರಯರಾಗುತ್ತಾರೆಂಬ ಪ್ರತಿಫಲಾಪೇಕ್ಷೆ ಮತ್ತು ನಿರೀಕ್ಷೆಯ ಸ್ವಾರ್ಥ. ಮಕ್ಕಳು ನಾವು ಹೇಳಿದಂತೆ ಕೇಳಬೇಕೆಂಬ ಹಿರಿಯರ ಒತ್ತಡ. ಇಲ್ಲಿ ಸ್ವಚ್ಛಂದಕ್ಕೆ ಎಡೆಕೊಡುವ ಅತಿಯಾದ ಪ್ರೀತಿ. ಪರಿವಾರದಲ್ಲಿ ಈ ತೆರನಾದ ಉಸಿರು ಕಟ್ಟುವ ವಾತಾವರಣ ಮಕ್ಕಳಿದ್ದಾಗ ಮಮತೆಯ ಮಡಿಲಿನಲ್ಲಿ ಬೆಳೆದು ದೊಡ್ಡವರಾಗಿ ವಿದ್ಯೆಗಾಗಿ, ಉದ್ಯೋಗಕ್ಕಾಗಿ ದೂರ ದಡಗಳನ್ನು ಸೇರಿದಾಗ ಮನವನ್ನು ಕಾಡುವ ಭಾವಗಳು. ಇನ್ನು ಮಕ್ಕಳು ಮದುವೆಯಾಗಿ ಸಂಸಾರ ಹೂಡಿ ಸೊಸೆ ಒಡಗೂಡಿ ನಡೆದಾಗ ಅದೇಕೊ ಅನುಭವಿಸುವ ಹೃದಯದ ಅಧೀರತೆ, ಎಂದೂ ಪ್ರೀತಿಯ ಸೆರೆಹಾಕುವ ಮನದ ತೀವ್ರತೆ. ಹಕ್ಕಿ ಬಲಿತ ರೆಕ್ಕೆಯ ಮರಿಹಾರುವುದನ್ನು ನೋಡಿ ಪಡುವ ಸಂತಸ ನಮಗೇಕೆ ಆಗಲಾರದು?

ನಮ್ಮ ಪರಿವಾರಕ್ಕೂ ಹಕ್ಕಿಯ ಪರಿವಾರಕ್ಕೂ ಅದೆಷ್ಟು ಅಜಗಜಾಂತರ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...